ರಚನೆ:ಪೂಜ್ಯ ನಿಜಗುಣ ಶಿವಯೋಗಿಗಳು
ಹರನಾಮವನು ಬಿಡದೆ ಜಪಿಸಬಲ್ಲವರ ಭವ
ಮರಣಮಾಯಾಕರ್ಮಮಲಪಾಶಬಂಧಬಹು
ದುರಿತಸಂಸಾರಸಂತಾಪಸಂಚಯವಳಿದು ವರಭೋಗ ಮೋಕ್ಷವಹುದು |ಪ||
ಶಿವ ಮಹಾದೇವ ಶಂಕರ ಶರ್ವ ಪಾರ್ವತೀ
ಧವ ನಂದಿವಾಹ ದೇವೇಶಾನುದಕ್ಷ ವಾ
ಸವನತಪದಾಂಭೋಜ ನಗಚಾಪ ನಿರ್ಮಲ ನಿರಾತಂಕ ನೀಲಕಂಠ
ಭುವನೇಶ ವಿಜಯ ವೇದಾಂಗ ವೈಶ್ರವಣಸಖ
ಪವಮಾನ ಪಂಚಮುಖ ಪಶುಪತಿ ಸಹಸ್ರಾಕ್ಷ
ಭವ ಭರ್ಗ ಭಾಳಲೋಚನ ಮೇರುಕಾರ್ಮುಕ ಕಪರ್ದಿಯೆಂದು ||1||
ಸೋಮ ಶಾಂತಾಭಯ ವಿರೂಪಾಕ್ಷ ವಿಶ್ವಾಭಿ
ರಾಮ ಗಂಭೀರ ಕಾಲಾರಿ ಕೂಟಸ್ಥ ವಿಭು
ವಾಮದೇವಾಘೋರ ಪಂಚಾಕ್ಷರೋಂಕಾರ ತತ್ಪುರುಷ ರುದ್ರ ಭದ್ರ
ಭೀಮ ಸದ್ಯೋಜಾತ ಮೃಡ ಮಹಾಕಾಲ ಜಿತ
ಕಾಮ ಮೃತ್ಯುಂಜಯ ಪುರಾತನ ಪರಾತ್ಪರ ನಿ-
ರಾಮಾಯಾನಂತತೇಜೋರಾಶಿ ಸರ್ವಜ್ಞ ಶಾಶ್ವತ ಕಪಾಲಿಯೆಂದು ||2||
ಶೂಲಿ ಸುಜನೈಕೆಬಾಂಧವ ಸದಾಶಿವ ಚಂದ್ರ
ಮೌಳಿ ಮಹಿಮೋಗ್ರಚರ್ಮಾಂಬರಾಸುರಶಿರೋ
ಮಾಲಿ ಮಂದಾಕಿನೀಧರ ಮಹೇಶ್ವರ ಮೇಘವಾಹ ಮಂದಾರನಿವಾಸ
ನೀಲಲೋಹಿತ ಪಾರಿಜಾತ ಪಾವನ ಲೋಕ
ಪಾಲ ಕೈಲಾಸಮಂದಿರ ಮಂತ್ರಮಯ ಭಕ್ತಿ
ಲೋಲ ಪಂಚಬ್ರಹ್ಮ ಪರನಾದ ಬಿಂದು ಪರಮಾತ್ಮ ಪುರವೈರಿಯೆಂದು |3||
ವರದ ವಾಗೀಶ ವರ್ಣಾತೀತ ವಂದ್ಯ ಜಯ
ಪರಮ ಪರತರ ಪರಂಜ್ಯೋತಿ ಪರಮಾನಂದ
ನಿರಪಾಯ ನಿರುಪಮ ನಿರಾವರಣ ನಿರ್ಲೇಪ ನಿರವಯವ ನಿತ್ಯತೃಪ್ತ
ಉರಗಕಂಕಣ ವಿಶ್ವತೋಬಾಹು ವಿಶ್ವಾತ್ಮ
ಸುರಗಣಾರ್ಚಿತ ಸನಾತನ ಸದಾಗತಿ ಹಂಸ
ಗಿರಿಶ ಗಾಂಗೇಯಪಿತ ಗಣನಾಥ ಜಗದೀಶ ವಿಷಧರ ಪಿನಾಕಿಯೆಂದು || 4 ||
ಉದಯಾಸ್ತಮಾನದೊಳು ನೂರೆಂಟು ನಾಮವನು
ಪದುಳದಿಂದೋದಿಕೇಳಿದವರ್ಗೆ ಶಂಭುಲಿಂಗದ
ಕರುಣದಿಂದಿನಿತು ಕೊರತೆಯಿಲ್ಲದ ಸಕಲ ಸಂಪದದೊಳೊಂದುಗೂಡಿ
ಸದಮಲಜ್ಞಾನ ಸದ್ಭಕ್ತಿಗಳು ಮೇಲೆ ಮೇ-
ಲೊದವಿ ಕೈಸಾರುತಿಹವಿಲ್ಲಿ ಪರದೊಳೊಂ-
ದಿದ ಗಣಪದವನೈದಿ ನಿಜಸುಖದೊಳಿಹ ಮುಕ್ತಿ ದೊರೆವುದಿದು ಸತ್ಯವೆಂದು ||೫||