ಲೇಖಕರು : ಪೂಜ್ಯಶ್ರೀ ಮ.ನಿ.ಪ್ರ. ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು

ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ, ಹೊಸಪೇಟೆ-ಬಳ್ಳಾರಿ, ಹಾಲಕೆರೆ.

(ಪೂಜ್ಯರು ಶ್ರೀ ಶಿವಯೋಗಮಂದಿರದಲ್ಲಿ ಅಧ್ಯಯನ ಮಾಡುವಾಗ ಬರೆದ ಲೇಖನ)

ವೀರಶೈವ-ಲಿಂಗಾಯತ ಸಮಾಜ ತನ್ನನ್ನು ಸದಾಚಾರ, ಸದ್ವಿಚಾರ, ಸಮಭಾವಗಳಿಂದ ಒಟ್ಟುಗೂಡಿಸಲು ಹೊರಟು ತನ್ನಲ್ಲಿಯೇ ಆ ತಾತ್ವಿಕ ನೆಲೆಯನ್ನೆ ಮರೆಮಾಡಿಕೊಂಡಿತ್ತು. ಇಂಥ ಸಾಮಾಜಿಕ ಹೊಯ್ದಾಟದ ಕಾಲದಲ್ಲಿ ಹಲವು ಚೇತನಗಳು ಅಪೂರ್ವಕಾರ್ಯ ನಡೆಸಲು ಅವತರಿಸಿದ್ದವು. ಇಂಥವರಲ್ಲಿ ಒರ್ವರು, ವಿರತಿ ತೇಜ ತುಂಬಿದ ಬಾಗಲಕೋಟೆಯ ಶ್ರೀ ವೈರಾಗ್ಯದ ಮಲ್ಹಣಾರ್ಯರು. ಸಂಚಾರ ಮೂರ್ತಿಗಳಾಗಿದ್ದ ಅವರು ತಮ್ಮಂತೆಯೆ ಸಾಮಾಜಿಕ ಕಳಕಳಿವುಳ್ಳ ಶ್ರೀ ಹಾನಗಲ್ಲ ಕುಮಾರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಧರ್ಮ ಪೀಠದಲ್ಲಿರುವ ತಮ್ಮಂಥವರು ನಡೆಸುವ ಕಾರ್ಯಗಳು ಸಮಾಜವನ್ನು ಸನ್ಮಾರ್ಗದೆಡೆಗೆ ಕೊಂಡೊಯ್ಯಬೇಕು. ಈ ಸಮಾಜದ ಗುರು-ವಿರಕ್ತ ಪೀಠಗಳಿಗೆ ಏರುವವರು ಶಿಕ್ಷಣ ಪಡೆಯುವ ಸಂಸ್ಥೆಯೊಂದು ಸ್ಥಾಪನೆಯಾಗಬೇಕು ಎಂದು ಪೀಠಿಕೆ ಹಾಕಿದ್ದರು. ಈ ಪೀಠಿಕೆಯೇ ಕುಮಾರ ಮಹಾಸ್ವಾಮಿಗಳವರ ಮನದಲ್ಲಿ ಹೆಮ್ಮರವಾಗಿ ಬೆಳೆದು, ಮುಂದೆ ಶಿವಯೋಗಮಂದಿರ ಸಂಸ್ಥೆಯನ್ನು ಸಾಕಾರಗೊಳಿಸಿತು. ಬಾಗಲಕೋಟೆಯ ೪ನೇ ವೀರಶೈವ ಮಹಾಅಧಿವೇಶನದಲ್ಲಿ ಅಂದಿನ ಸಮಾಜ ಪ್ರಮುಖರಲ್ಲಿ ಓರ್ವರಾದ ಶ್ರೀ ವಾರದ ಮಲ್ಲಪ್ಪನವರ ಅಧ್ಯಕ್ಷತೆಯಲ್ಲಿ ಶ್ರೀ ಶಿವಯೋಗಮಂದಿರ ಸ್ಥಾಪನೆಗೆ ನಿರ್ಣಯ ಮಂಡಿಸಿತು. ಪರಮ ತಪೋನಿಧಿಗಳಾದ ಇಲಕಲ್ಲ ಶ್ರೀ ವಿಜಯ ಮಹಾಂತ ಶಿವಯೋಗಿಗಳು ತೋರಿದ ಸ್ಥಳದಲ್ಲಿ, ಮಲಪಹಾರಿಣಿ ತಟದಲ್ಲಿ ೧೯೦೯ರ ರಥಸಪ್ತಮಿಯಂದು ಸ್ಥಾಪನೆಯಾಯಿತು. ಒಮ್ಮೆ ಶ್ರೀ ವಿಜಯಮಹಾಂತ ಶಿವಯೋಗಿಗಳು ತಾಡೋಲೆಗಳನ್ನು ಅಭ್ಯಸಿಸುವಾಗ ೭೦೦ ವರ್ಷಗಳ ಹಿಂದಿನ ಘಟ್ಟಿವಾಳ ಮುದ್ದಣ್ಣಗಳ ಕಾಲಜ್ಞಾನ ವಚನ ಕಣ್ಸೆಳೆಯಿತು. ಮುಂದೊಂದುದಿನ ದಿಟ ಜಂಗಮನೋರ್ವ ಶಿವಯೋಗ ಸಂಸ್ಥೆಯೊಂದನ್ನು ಹುಟ್ಟು ಹಾಕುವನೆಂಬ ಉಲ್ಲೇಖ ಆ ಕಾಲಜ್ಞಾನದಲ್ಲಿತ್ತು. ಘಟ್ಟಿವಾಳಯ್ಯ ಪರಮ ವೈರಾಗ್ಯಶಾಲಿ, ಇಂದ್ರಿಯಗಳನ್ನು ತೃಣೀಕರಿಸಿ ನಿರ್ಮೋಹಿತನಾಗಿದ್ದ. ‘ಸುವರ್ಣ ಎಂದರೆ

ಕಲ್ಲು, ಮನೆಯೆಂದರೆ ಸಂತೆ ಗುಡಿಸಲು’ ಎಂದು ಭಾವಿಸಿ ಸಕಲರಲ್ಲಿ ವಿಶ್ವಬಂದುತ್ವ ಕಾಣುವ ದೃಷ್ಟಿಉಳ್ಳವನಾಗಿದ್ದ. ಅವನು ಯಾರನ್ನೂ ಪೀಡಿಸುತ್ತಿರಲಿಲ್ಲ, ಯಾರ ಮನಸ್ಸನ್ನು ನೋಯಿಸುತ್ತಿರಲಿಲ್ಲ. ಅಹಿಂಸಾ ಧರ್ಮ ಪಾಲಕನಾಗಿದ್ದ. ಈ ಕಡುತರವಾದ ಆಚರಣಾ ಪ್ರವೃತ್ತಿಯನ್ನು ಕಂಡೇ ಜನರು ಘಟ್ಟಿವಾಳಯ್ಯನೆಂದು ಈ ಮುದ್ದಣ್ಣನನ್ನು ಕರೆಯುತ್ತಿದ್ದರು. ಮುದ್ದಣನೆಂಬುದು ಮರೆಯಾಗಿ ಘಟ್ಟಿವಾಳಯ್ಯನೆಂದೇ ಈತ ಪ್ರಸಿದ್ಧನಾಗಿದ್ದ.

ಬಸವಣ್ಣನವರು ನಡೆಸುವ ಅನುಭವ ಮಂಟಪದ ಕೀರ್ತಿಯನ್ನು ಕೇಳಿ ಕಲ್ಯಾಣಕ್ಕೆ ಬಂದಿದ್ದ ಈ ಘಟ್ಟಿವಾಳಯ್ಯ. ಬಸವಣ್ಣನವರ ಮಹಾಮನೆಯ ಮುಂದೆ ಜಾಗಟೆಯ ನಾದ ಕೇಳಿದಾಗ ಪ್ರಸಾದಕ್ಕೆ ಸಾಲು ಹಿಡಿದು ಹೋಗುವ ಜಂಗಮರನ್ನು ಕಂಡು ಘಟ್ಟಿವಾಳಯ್ಯ ‘ಇವರು ಉಪಾದಿಯಿಂದ ಶರೀರ ಪೋಷಕರು ಜ್ಞಾನ ಜಂಗಮ ಸ್ಥಲಕ್ಕೆ ಸಲ್ಲರು’ ಎಂದು ವಿಡಂಬಿಸಿದ್ದ.

“ತನುವ ಮರೆಯ ಬೇಕೆಂದು ಗುರುವ ತೋರಿ

ಮನವ ಮರೆಯ ಬೇಕೆಂದು ಲಿಂಗವ ತೋರಿ

ಧನವ ಮರೆಯ ಬೇಕೆಂದು ಜಂಗಮವ ತೋರಿ

ಲೇಸ ಮರೆದು ಕಷ್ಟಕ್ಕೆ ಕಡಿದಾದುವ ಭಾಷೆಹೀನರ ಕಂಡು

ನಾಚಿಕೆಯಾಯಿತ್ತು ಚಿಕ್ಕಯ್ಯ ಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲಾ ಎಂದೆ”

 

ಘಟ್ಟಿವಾಳಯ್ಯಗಳ ವಿಡಂಬನೆ ಹೀಗೆ ಮುಂದುವರೆದಿತ್ತು.

” ಕಾಯ ಜೀವವನರಿದೆನೆಂಬುವವರೆಲ್ಲರೂ ಹೋದರಲ್ಲಾ ಹೊಲಬುದಪ್ಪಿ!

ಹೊನ್ನು ಹೆಣ್ಣು ಮಣ್ಣಿಗಾಗಿ ಹೊರೆಯಾಡುವವರೆಲ್ಲರು

ಬಸವಣ್ಣನ ಬಾಗಿಲಲ್ಲಿ ಬಂದಿತರಾಗಿ ನೊಂದವರಿಗೇಕೆ

ಚಿಕ್ಕಯ್ಯ ಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲಾ ಎಂದೆ ”

 

ಹೀಗೆ ಘಟ್ಟಿವಾಳಯ್ಯ ಜಂಗಮ ಸಮೂಹವನ್ನು ವಿಡಂಬಿಸಿದಾಗ ಆ ಜಂಗಮದೇವರುಗಳು ಘಟ್ಟಿವಾಳಯ್ಯನನ್ನು ನೋಯಿಸಿ ಆತನ ಕೊರಳ ಇಷ್ಟಲಿಂಗವನ್ನು ಕಸಿದುಕೊಂಡರು ಆಗಲೂ ಘಟ್ಟಿವಾಳಯ್ಯ ವಚನದಲ್ಲೆ ನುಡಿದಿದ್ದ,

“ಗೋಕುಲರೆಲ್ಲರು ಕೂಡಿ ಗೋಪತಿಯಣ್ಣನ ಮನೆಗೆ ಉಣಬಂದರೆಲ್ಲರು,

ನಾ ನೀಸಕ್ಕಿ ಕೂಳ ಕೇಳಿದರೆ ವೇಷದಾರಿಗಳು

ಘಾಸಿಯ ಮಾಡಿದರೆನ್ನುವ ಜಗದೀಶ ನೀನೆ ಬಲ್ಲೆ

ಚಿಕ್ಕಯ್ಯ ಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲಾ ಎಂದೆ”

 

ಹೀಗೆ ಘಟ್ಟಿವಾಳಯ್ಯನ ಲಿಂಗದೇವನನ್ನು ಜಂಗಮದೇವರುಗಳು ತೆಗೆದುಕೊಂಡ ಮೇಲೆ, ಆತ ಗುಡ್ಡಕ್ಕೆ ಹೋಗಿ ಒಂದು ದೊಡ್ಡ ಗುಂಡಕಲ್ಲಿಗೆ ಹಗ್ಗವನ್ನು ಕಟ್ಟಿಕೊಂಡು ತನ್ನ ಕೊರಳಿಗೆ ಆ ಹಗ್ಗವನ್ನು ಶಿವದಾರದಂತೆ ಸುತ್ತಿಕೊಂಡು ಬಸವಣ್ಣನವರ ಮಹಾಮನೆಯತ್ತ ಬಂದಿದ್ದ. ಆ ದೊಡ್ಡ ಗುಂಡಕಲ್ಲು ಮಹಾಮನೆಯ ಬಾಗಿಲಿಗೆ ಅಡ್ಡವಾಗಿ ನಿಂತಿತ್ತು. ಒಳಗಿದ್ದವರು ಹೊರಗೆ; ಹೊರಗಿದ್ದವರು ಒಳಗೆ ಬರಲಾಗದೆ ಆ ಗುಂಡಕಲ್ಲು ದ್ವಾರವನ್ನು ಬಂದಿಸಿತ್ತು. ಶಿವಶರಣೆ ನಿಲಾಂಬಿಕೆಯವರು ಲಿಂಗದಲ್ಲಿ ಈ ಚೋದ್ಯವನ್ನು ಕಂಡು ಬಿಜ್ಜಳನ ಆಸ್ಥಾನದಲ್ಲಿರುವ ಬಸವಣ್ಣನವರಿಗೆ ಹೇಳಿ ಕಳುಹಿಸಿದ್ದರು. ಬಸವಣ್ಣ, ಅಲ್ಲಮ ಪ್ರಭುಗಳು, ಚನ್ನಬಸವಣ್ಣ, ಮಡಿವಾಳ ತಂದೆಗಳು ಮಹಾಮನೆಯತ್ತ ಬಂದಿದ್ದರು. ಘಟ್ಟಿವಾಳಯ್ಯನ ಜಂಗಮರ ವಿಡಂಬನೆ ಹೀಗೆ ಮುಂದುವರೆದಿತ್ತು.

“ಅಂಡಜ ಮುಗ್ದೆಯ ಮಕ್ಕಳಿರಾ, ಕೆಂಡದ ಮಳೆ ಕರೆವಲ್ಲಿ

ನಿಮ್ಮ ಹಿಂಡಿರು ಹಳುಹೊಕ್ಕು ಹೋದಿರಲ್ಲಾ! ಜಂಗಮವೆಂಬುದಕ್ಕೆ

ನಾಚಿರಿ, ನಿಮ್ಮ ಕಂಗಳ ಹಿಂಡಿರ ತಿಂಬಳೆಯನ್ನರಿಯಿರಿ, ಅವಳು

ಒಮ್ಮೆ ತಿಂಬಳು ಒಮ್ಮೆ ಕರುಣಿಸಿ ಬಿಡುವಳು

ಅವಳು ತಿಂದು ತಿಂದು ಉಗುಳುವ ಬಾಯೊಳಗಣದೆಲ್ಲಾ

ಜಂಗಮವೇ? ಲೋಕವೇಲ್ಲಾ ಅವಳು, ಅವಳು ವಿರಹಿತವಾದ

ಜಂಗಮರಾರೈ ಬಸವಣ್ಣ? ಅವಳು ವಿರಹಿತವಾದ

ಭಕ್ತರಾರೈ ಬಸವಣ್ಣ? ಅವಳ ಮಕ್ಕಳು ನಿನ್ನ ಕೈಯಲ್ಲಿ

ಆರಾಧಿಸಿಕೊಂಬ ಜಂಗಮಕಾಣೈ ಬಸವಣ್ಣ!

ಅವಳು ವಿರಹಿತವಾದ ಚಿಕ್ಕಯ್ಯ ಪ್ರಿಯ ಸಿದ್ಧಲಿಂಗ ನಲ್ಲದಿಲ್ಲನಿಲ್ಲು ಮಾಣು”

ಹೀಗೆ ಘಟ್ಟಿವಾಳಯ್ಯನ ವಿಡಂಬನೆ ಸಾಗಿದ್ದಾಗ ಅಲ್ಲಮ ಪ್ರಭುಗಳು ಶಿವಾನುಭವ ನಡೆಸಿದ್ದರು. ಜಂಗಮರಿಗೆ  ಹಾಗೂ ಘಟ್ಟಿವಾಳಯ್ಯನಿಗೆ ತಿಳಿಹೇಳಿ ಘಟ್ಟಿವಾಳಯ್ಯನ ಲಿಂಗವನ್ನು ಜಂಗಮರಿಂದ ಮರಳಿ ಕೊಡಿಸಿದ್ದರು. ಆಗ ಜಂಗಮದೇವರುಗಳು ಘಟ್ಟಿವಾಳಯ್ಯನನ್ನು ಅಣಕಿಸಿದ್ದರು. ‘ಏನು ಘಟ್ಟಿವಾಳಯ್ಯನವರೆ, ನಿಮಗೆ ಇಬ್ಬರು ಗಂಡಂದಿರೇನು.? ನಾವು ಕಟ್ಟಿದವನೊಬ್ಬ ನೀವು ಕಟ್ಟಿಕೊಂಡವನೊಬ್ಬ’. ಆಗ ಘಟ್ಟಿವಾಳಯ್ಯನವರು ತಮ್ಮ ಲಿಂಗಲೀಲೆ ಮೆರೆದಿದ್ದರು.

“ಲೀಲೆಗೊಳಗಾದ ಲಿಂಗವೇ, ಬಾರಯ್ಯ ಎನ್ನಂಗದೊಳಗಾಗು

ಶೃತ, ದೃಷ್ಟ, ಅನುಮಾನದಲ್ಲಿ ನೋಡುವವರೆಲ್ಲರಿಗೂ

ಅತೀತವಾಗು ಹಾಗೆಂಬುದಕ್ಕೆ ಮುನ್ನವೇ ಆ ಗುಂಡು

ಕಾಯದ ಕರಸ್ಥಲದಲ್ಲಿ ನಿರ್ಭಾವವಾಗಿ ಕಾಯವಡಗಿ ಭಾವವೆಂಬ

ಭಾವಬಯಲಾಯಿತ್ತು ಚಿಕ್ಕಯ್ಯ ಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲಾ ಎಂದೆ”

ಘಟ್ಟಿವಾಳಯ್ಯನವರು ಆ ಗುಂಡನ್ನು ಪರಬ್ರಹ್ಮವೆಂದು ತನ್ನ ಕಾಯದ ಕರಸ್ಥಲದ ಇಷ್ಟಲಿಂಗದಲ್ಲಿ ಅಡಗಿಸಿದ್ದರು. ಘಟ್ಟಿವಾಳಯ್ಯನವರು ಕಲ್ಯಾಣದ ಬೀದಿ ಬೀದಿಗಳಲ್ಲಿ ತಮ್ಮ ದೇಹವನ್ನು ಕೈಮಾಡಿ ತೋರಿಸುತ್ತ ‘ಇದು ಲಿಂಗಕಾಯ ಯಾರೂ ಸಮಾದಿ ಮಾಡ ಬೇಕಿಲ್ಲ, ಇದು ಲಿಂಗದಲ್ಲಿ ಐಕ್ಯವಾಗುತ್ತೆ’. ಎಂದು ನುಡಿಯುತ್ತಿದ್ದರು. ಇಂಥ ಘಟ್ಟಿವಾಳಯ್ಯನವರು ತಮ್ಮ ಲಿಂಗೈಕ್ಯ ಸಮಿಪಿಸಿದಾಗ ಕಲ್ಯಾಣದ ರಾಜ ಬೀದಿಯಲ್ಲಿ ದೇಹವನ್ನು ತ್ಯಜಿಸಿದರು. ಈ ಸುದ್ದಿಯನ್ನು ಚಾರರಿಂದ ತಿಳಿದ ಬಿಜ್ಜಳನು ಬಸವಣ್ಣನವರಿಗೆ ‘ನಿಮ್ಮ ಶರಣರಿಗೆ ನುಡಿದಂತೆ ನಡೆಯುವ ನಡೆಯಿಲ್ಲ, ಯಾರೋ ಒಬ್ಬ ತನ್ನ ಕಾಯಕ್ಕೆ ಸಮಾದಿ ಮಾಡ ಬೇಕಿಲ್ಲ ಎನ್ನುತ್ತಿದ್ದವನು ರಾಜ ಬೀದಿಯಲ್ಲಿ ಬಿದ್ದು ಸತ್ತಿರುವನಂತೆ ಅವನ ನುಡಿ ನಡೆಯಾಗಿಲ್ಲವಲ್ಲ?’ ಎಂದಿದ್ದನ್ನು ಕೇಳಿದ ಬಸವಣ್ಣನವರು ತಮ್ಮ ಶರಣ ಬಳಗದವರೊಂದಿಗೆ ಘಟ್ಟಿವಾಳಯ್ಯನವರು ಜೀವಬಿಟ್ಟ ರಾಜ ಬೀದಿಯಲ್ಲಿ ಬಂದಿದ್ದರು. ಘಟ್ಟಿವಾಳಯ್ಯನ ಲಿಂಗಕಾಯವನ್ನು ಸುತ್ತುವರೆದು ಸಮಾಧಿ ಕ್ರಿಯೆಗೆಂದು ಹೊತ್ತೊಯ್ಯಲು ಆ ಮಹಾಶಿವಶರಣನ ಕಾಯವನ್ನು ಮೇಲೆತ್ತುತ್ತಿದ್ದರು, ಹಾಗೆ ಎತ್ತಿದ ಬಸವಾದಿ ಶಿವಶರಣರ ಕರದಲ್ಲಿಯೇ ಅಡಗಿದಂತೆ ಘಟ್ಟಿವಾಳಯ್ಯನ ಲಿಂಗಕಾಯ ಬಯಲಾಗಿತ್ತು. ಈ ಸುದ್ದಿ ಚಾರರಿಂದ ಬಿಜ್ಜಳಗೆ ತಲುಪಿತ್ತು, ಆತ ಓಡೋಡಿ ಬಂದಿದ್ದ. ಈ ಮಹಾ ಶರಣನ ದರ್ಶನವಾಗಲಿಲ್ಲವಲ್ಲ ಎಂದು ಖಿನ್ನನಾಗಿದ್ದ. ಘಟ್ಟಿವಾಳಯ್ಯನ ಮಹಿಮೆಯನ್ನು ಶರಣರು ಕೊಂಡಾಡಿದ್ದರು.

ಘಟ್ಟಿವಾಳಯ್ಯನವರ ಈ ದೃಷ್ಟಾಂತದಲ್ಲಿ ‘ಶರಣ ಜ್ಞಾನದನಿಧಿ, ಜಂಗಮವೆಂಬುದು ಜ್ಞಾನದ ಸಂಖೇತ’ ಎಂಬುದನ್ನು ಜಂಗಮ ಸಮೂಹದಲ್ಲಿ ಮೂಡಿಸಲು ಯತ್ನಿಸಿರುವರು. ಕರದಿಷ್ಟಲಿಂಗದಲ್ಲಿ ಬೃಹದಾಕಾರದ ಕಲ್ಲುಗುಂಡನ್ನಡಗಿಸಿ ಲಿಂಗಮಹಾತ್ಮೆ ಮೆರೆದ ಮಹಾಮಹಿಮನಾಗಿದ್ದುದು ಮಿಂಚಿನಂತೆ ಹೊಳೆಯುತ್ತದೆ. ಇಂಥ ಘಟ್ಟಿವಾಳಯ್ಯ ಮುಂದೊಂದು ದಿನ ದಿಟ ಜಂಗಮನೊರ್ವ ಈ ಭುವಿಯಲ್ಲಿ ಉದಯಿಸುವನೆಂಬ ಕಾಲಜ್ಞಾನ ವಚನವನ್ನು ಹೇಳಿದ್ದ,

“ಗಿಡಮಾಗಡಿ ಎಂಬ ಪುರದ ಜಂಗಮದೇವ

ಮೃಡಕಣಾ ಭಿಕ್ಷವ ಬೇಡ್ಯಾನು!

ಪೊಡವಿಗೆ ಬಾಗಿ ನೀಡಲು ದೃಢದಿಂದ

ನೀಡಿಸಿಕೊಂಡಾನು !

ಮಲಪುರಿಯ ತೀರದಿ ವಿರಕ್ತಜಂಗಮನೊಬ್ಬ

ನಲವಿಂದ ಹುಚ್ಚನೆನಿಸ್ಯಾನು !

ಲೋಲ ಜನಗಳು ಹೆಸರನೇ ಇಟ್ಟಾರು ಆ

ಸ್ಥಳದಲ್ಲಿಯೇ ಹೂಳಿಸಿಕೊಂಡಾನು”

(ಹಳ್ಳೂರು ಕಾಲಜ್ಞಾನ)

ತಮ್ಮ ಅಂತಃ ಚಕ್ಷುವಿನಲ್ಲಿ ಭೂತ-ಭವಿಷತ್-ವರ್ತಮಾನ ತ್ರಿಕಾಲದ ಆಗುಹೋಗುಗಳನ್ನು ಶಿವಶರಣರು ಕಾಣುತ್ತಿದ್ದರು. ಕಂಡದನ್ನು ಬೆಡಗಿನಲ್ಲಿ ನುಡಿಯುತ್ತಿದ್ದರು. ಈ ಕಾಲಜ್ಞಾನ ವಚನ ಅಂತಹದು. ಮಲಪುರಿ ಎನ್ನುವದೇ ಮಲಪಹಾರಿಣಿ ನದಿತೀರ. ಇಲ್ಲಿಯ ವಿರಕ್ತಜಂಗಮ ಬೇರಾರು ಅಲ್ಲ, ಶ್ರೀ ಹಾನಗಲ್ಲ ಕುಮಾರ ಮಹಾಸ್ವಾಮಿಗಳು. ೭೦೦ ವರ್ಷಗಳ ಹಿಂದೆಯೇ ನುಡಿದ ಈ ಕಾಲಜ್ಞಾನ ವಚನ

ಇಂದು ತಮ್ಮ ಪಾರಾಯಣ ಸಂದರ್ಭದಲ್ಲಿ ಕಂಡು ವಿವೇಚಿಸಲಾಗಿ ಅದು ದಿಟವಾದುದ್ದನ್ನು ಕಂಡು ಶ್ರೀ ಚಿತ್ತರಗಿ ವಿಜಯ ಮಹಾಂತ ಶಿವಯೋಗಿಗಳಿಗೆ ಘಟ್ಟಿವಾಳಯ್ಯನ ಕಾಲಜ್ಞಾನ ಆಶ್ಚರ್ಯ ಮೂಡಿಸಿತ್ತು. ತಮ್ಮ ಸುತ್ತಮುತ್ತ ಇದ್ದವರಿಗೆ ಈ ವಚನ ತೋರಿಸಿ ಎಂಥ ವಿರಕ್ತ ಜಂಗಮನೀತನೆಂದು ಕೊಂಡಾಡಿದ್ದರು. ಇದು ಬೇರಾರು ಅಲ್ಲ ಶ್ರೀ ಕುಮಾರ ಮಹಾಸ್ವಾಮಿಗಳು ಎಂದಾಗ ಶ್ರೀಗಳು ಮುದಡಿಕೊಂಡಿದ್ದರು. ಆತ್ಮಸ್ತುತಿಗೆ ತಮ್ಮ ಜೀವಿತಾವದಿಯಲ್ಲಿ ಎಂದೂ ಅನುಗೊಡದ ಶ್ರೀ ಕುಮಾರ ಮಹಾಸ್ವಾಮಿಗಳಿಗೆ ತಮ್ಮ ಬಗ್ಗೆ ಯಾರಾದರೂ ಬರೆದಿದ್ದು ತಿಳಿದರೆ ಅದನ್ನು ಹರಿದು ಹಾಕುತ್ತಿದ್ದರು. ‘ಬರೆಯುವುದಾದರೆ ಬಸವಾದಿ ಪ್ರಮಥರನ್ನು, ಬಿದರಿ ಕುಮಾರ ಶಿವಯೋಗಿಗಳನ್ನು, ಅಥಣಿ ಶಿವಯೋಗಿಗಳನ್ನು ಕುರಿತು ಬರೆಯಿರಿ’ ಎನ್ನುತ್ತಿದ್ದರಂತೆ. ಇಂಥ ಮಹಾಮಹಿಮರಿಂದ ಸ್ಥಾಪನೆಗೊಂಡ ಶಿವಯೋಗ ಮಂದಿರ ೧೦೦ ಸಂವತ್ಸರಗಳನ್ನು ಪೂರೈಸಿದೆ. ಕಾಲದ ಪರೀಕ್ಷೆಯಲ್ಲಿ ಶಿವಯೋಗದ ಅಂತಃ ಸತ್ವವನ್ನು ಗುಪ್ತವಾಗಿರಿಸಿಕೊಂಡ ೧೧೧ರ ಬೆಳಗನ್ನು

ಜಗತ್ತಿಗೆ ಬೆಳಗುತ್ತಿದೆ. ನಾಡಿನ ಹಲವೆಡೆ ಹಲವಾರು ಸಂಘ ಸಂಸ್ಥೆಗಳು ಸ್ಥಾಪನೆಗೊಳ್ಳುತ್ತವೆ. ಕೆಲವು ಅಲ್ಪಾವದಿಯಲ್ಲಿಯೆ ಅಳಿಯುತ್ತವೆ ಆದರೆ ಶ್ರೀ ಕುಮಾರ ಮಹಾಸ್ವಾಮಿಗಳು ಸ್ಥಾಪಿಸಿದ ಶ್ರೀ ಶಿವಯೋಗ ಮಂದಿರ ಸಂಸ್ಥೆ ಶತಮಾನದಾಟಿ ಮತ್ತೊಂದು ಶತಮಾನ ಉರುಳಿಸಲು ಹೆಜ್ಜೆ ಇರಿಸಿದೆ. ಈ ಶಿವಯೋಗ ಮಂದಿರ ಪರಂಪರೆಯಲ್ಲಿ ಈ ಹಿಂದೆ ಶಿವಶರಣರ ಕಾಲಕ್ಕೆ ಶ್ರೀಶೈಲ, ಕೊಟ್ಟೂರು, ಲಿಂಗನಾಯಕನಹಳ್ಳಿ, ಬಳ್ಳಾರಿಯಲ್ಲಿ ಇಂಥ ಶಿವಯೋಗ ಶಿಕ್ಷಣ ಕೇಂದ್ರಗಳು ಇದ್ದ ದಾಖಲೆಗಳಿವೆ. ಆದರೆ ಇಷ್ಟುವರ್ಷದ ಪ್ರಮಾಣದಲ್ಲಿ ಶಿವಯೋಗದ ಬೆಳಗನ್ನು ಲೋಕಕ್ಕೆ ತೋರಿದ ತೋರುತ್ತಿರುವ ಶ್ರೇಯಸ್ಸು ಶಿವಯೋಗಮಂದಿರ ಸಂಸ್ಥೆಗೆ ಮಾತ್ರ ಸಲ್ಲುವಂತೆ ನಮ್ಮ ಕಣ್ಣೆದುರಿಗೆ ಚರಿತ್ರೆ ನಿರ್ಮಿಸಿದೆ. ಈ ಸಂಸ್ಥೆಯಿಂದ ಹೊರಹೊಮ್ಮಿದವರಲ್ಲಿ ಕಪನಳ್ಳಿಯ ರುದ್ರಮುನಿ ಶಿವಯೋಗಿಗಳಂಥ ಕಾಯಕ ಯೋಗಿಗಳಾಗಿದ್ದಾರೆ, ಶ್ರೀ ಜಚನಿಯವರಂಥ ವಿದ್ವತ್ ಕಲೆಮೆಳೈಸಿದವರಿದ್ದಾರೆ, ನಿಡಗುಂದಿಕೊಪ್ಪದ ಚನ್ನವೀರಸ್ವಾಮಿಗಳಂಥ ದೇಸಿ ಚಿಕಿತ್ಸಾಯೋಗಿಗಳದ್ದಾರೆ, ಗಡಿನಾಡಿನಲ್ಲಿ ಸಾಹಿತ್ಯ ಸಂಸ್ಕೃತಿಗಾಗಿ ನಾಗನೂರಿನ ಶ್ರೀ ಶಿವಬಸವ ಸ್ವಾಮಿಗಳು ಭಾಲ್ಕಿಯ ಚನ್ನಬಸವ ಪಟ್ಟಾಧ್ಯಕ್ಷರು ಹಾಗೂ ಪ್ರಬುಕುಮಾರ ಪಟ್ಟಾಧ್ಯಕ್ಷರಂಥ ಯೋಗಿಗಳಾಗಿದ್ದಾರೆ. ಇವರೆಲ್ಲರು ಶಿವಯೋಗ ಮಂದಿರ ಸಂಸ್ಥೆಯಲ್ಲಿ ತಮ್ಮ ವೈಶಿಷ್ಟತೆ ಮೆರೆಯುವ ಹಾದಿಹಿಡಿದರು. ಶ್ರೀ ಪಂ ಪಂಚಾಕ್ಷರಗವಾಯಿಗಳು ಪುಟ್ಟರಾಜಗವಾಯಿಗಳಂಥವರು ಅಪರೂಪದ ಸಂಗೀತ ಪ್ರತಿಭೆ ಮೆರೆಯಲು ಶ್ರೀ ಕುಮಾರ ಮಹಾ ಸ್ವಾಮಿಗಳವರ ಕೃಪಾಶಿರ್ವಾದವೇ ಮೂಲವಾಗಿದೆ.

ಈ ಮೇಲಿನ ಪರಮ ಪೂಜ್ಯರೆಲ್ಲಾ ಶ್ರೀಕುಮಾರಸ್ವಾಮಿಗಳವರ ಒಡನಾಟದಲ್ಲಿದ್ದು ತಮ್ಮ ಪ್ರತಿಭೆ ಮೆರೆದಿರುವಂತವರು. ಶ್ರೀ ಕುಮಾರಮಹಾಸ್ವಾಮಿಗಳವರ ಲಿಂಗೈಕ್ಯವಾದನಂತರ ಅವರ ಕಾರ್ಯವನ್ನು ಹಲವರು ಮುನ್ನೆಡೆಸುತ್ತ ಪ್ರಸಿದ್ದರಾಗಿದ್ದಾರೆ.ಅಂತವರಲ್ಲಿ ಹೊಸಪೇಟೆ, ಹಾಲಕೆರೆ ಪೀಠದ ಜಗದ್ಗುರು ಡಾ.ಸಂಗನಬಸವ ಮಹಾಸ್ವಾಮಿಗಳು ಶ್ರೀಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷರಾಗಿ ಎರಡು ದಶಕದಿಂದ ಅನೇಕ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾವಯವ ಕೃಷಿಯಂತಹ ಅನೇಕ ಸಾಮಾಜಿಕ ಕಾರ್ಯಗಳನ್ನು ತಮ್ಮ ಮಠಗಳಲ್ಲಿ ಹಾಗೂ ಶ್ರೀಮದ್ವೀರಶೈವ ಶಿವಯೋಗಮಂದಿರ ಸಂಸ್ಥೆಯಲ್ಲಿ ಮಾಡಿ; ಮಾಡುತ್ತಲಿದ್ದಾರೆ. ಮುಂಡರಗಿ ಜಗದ್ಗುರುಗಳು,

ಮೂರುಸಾವಿರಮಠದ ಲಿಂ.ಮೂಜಗಂ ಮೊದಲು ಮಾಡಿ ಅನೇಕರಿರುವರು. ಶ್ರೀ ಕುಮಾರ ಶಿವಯೋಗಿಗಳ ಮಹಾ ಚೇತನ ಸಮಾಜಕ್ಕೆ ಹೇಗೆ ಅಂತಃಶಕ್ತಿ ತುಂಬುತ್ತಿದೆ ಎಂಬುದನ್ನು ಅವಲೋಕಿಸಿದರೆ ಅವರ ಕಾರಣಿಕತನ ಗೋಚರಿಸುತ್ತದೆ.

ಶ್ರೀ ಕುಮಾರ ಮಹಾಸ್ವಾಮಿಗಳು ನಮ್ಮ ಸಂಸ್ಕೃತಿಯೊಳಗಣ ಲೋಕಧರ್ಮಿಣಿ ಹಾಗೂ ಶಿವಧರ್ಮಿಣಿ ವಿದ್ಯೆಯ ಅರಿವುಳ್ಳವರು. ಲೋಕಧರ್ಮಿಣಿ ವಿದ್ಯೆ ಇಹಬಾಳಿನ ಸಾಫಲ್ಯಕಷ್ಟೇ, ಶಿವಧರ್ಮಿಣಿ ವಿದ್ಯೆ ಭವಚಕ್ರದಿಂದ ಪಾರುಗಾಣುವತ್ತಲೂ ಹಾದಿ ತೋರುವಂತಹದ್ದು. ಶಿವಧರ್ಮಿಣಿ ವಿದ್ಯೆ ಕಾಲ ಪ್ರವಾಹದಲ್ಲಿ ಕೊಚ್ಚಿಹೋಗುವಂತಹದ್ದಲ್ಲ. ಅಂತಃ ಶಿವಧರ್ಮಿಣಿ ವಿದ್ಯೆ ನೀಡುವುದು ಶಿವಯೋಗ ಮಂದಿರದ ಗುರಿಯಾಗಿದೆ. ಮಾನವ ಹುಟ್ಟಿನ ನಿಗೂಢ ಶಿವಧರ್ಮಿಣಿಯಲ್ಲಿ ಮಾತ್ರ  ಗೋಚರಿಸುವಂತಹದ್ದು. ಶಿವಧರ್ಮಿಣಿಯ ಸರಳೀಕೃತ

ವಿಚಾರದಲ್ಲಿ ಆತ್ಮದ ನಂಬುಗೆಯಲ್ಲಿ ಬ್ರಹ್ಮಾಂಡದಾಚೆಗಿನ ರುದ್ರಾಂಡದಲ್ಲಿಯ ಅತೀತ ನಿಗೂಢಗಳತ್ತ ಸಾಗುವಂತಹದ್ದು .ಅಗೆದಷ್ಟು ನವನವೋನ್ಮೇಶಾಲಿನಿ ಯಾಗುತ್ತದೆ. ನೂರ ಹನ್ನೊಂದು ವರ್ಷಗಳ ದಾಟಿದ ಶ್ರೀಶಿವಯೋಗಮಂದಿರ ಸಂಸ್ಥೆಯಲ್ಲಿ ಈ ಶಿವಧರ್ಮಿಣಿ ಶಿಕ್ಷಣ, ವಿಭೂತಿ ನಿರ್ಮಾಣ,  ಗೋಪಾಲನೆ, ದಾಸೋಹ, ಆಯುರ್ವೇದ ಚಿಕಿತ್ಸಾ ಕೇಂದ್ರ ಹಾಗೂ ಮುಂತಾದ ಧರ್ಮೋತ್ತೇಜಕ ಕಾರ್ಯಗಳು ಲೀಲಾತ್ಮಕವಾಗಿ ನಿರಂತರವಾಗಿ ನಡೆಯುತ್ತಲಿವೆ. ಅಂತಃಚಕ್ಷುವುಳ್ಳವರಿಗೆ ಶ್ರೀ ಕುಮಾರ ಶಿವಯೋಗಿಗಳ ಚಿನ್ಮಯ ನಿರಂಜನ ಜ್ಯೋತಿ ಅವರ ಗದ್ದುಗೆಯಲ್ಲಿ ದರ್ಶನಗೊಂಡೀತು. ಆ ಕಾರಣಿಕ ಶಿವಯೋಗಿಯ ಅನುಗ್ರಹ ಸರ್ವಜೀವರ ಆತ್ಮ ಆ ಶಿವಯೋಗಿ, ಶಿವಶರಣರ ಹಾದಿಯಲ್ಲಿ ಮುನ್ನಡೆಯಲಿ ಎಂದು ಆಶಿಸುವೆ.

 

 

(ಹಾನಗಲ್ಲ ಶ್ರೀ ಕುಮಾರ ಸ್ವಾಮಿಗಳು ಒಂದು ಅಧ್ಯಯನ ಡಾ.ಜಿ.ಕೆ.ಹಿರೇಮಠ)

 

  1. ಮೋಹಕ್ಕಿಂತ ಸುಡುವ ಬೆಂಕಿಯಿಲ್ಲ ,
  2. ದ್ವೇಷಕ್ಕಿಂತ ಚುಚ್ಚುವ ಅಲಗಿಲ್ಲ .
  3. ಭ್ರಾಂತಿಗಿಂತ ಬೇರೆ ಪಾಶವಿಲ್ಲ .
  4. ದುರಾಸೆಗಿಂತ ಬೇರೆ ಶತ್ರುವಿಲ್ಲ
  5. ಕಲ್ಲಿನಲ್ಲಿರುವ ನಿರಾಶೆ ಕನಕದಲ್ಲಿಯೂ ಬರಬೇಕು .
  6. ಪರಮತದ ಅಪಚಾರಕ್ಕೆ ಕೈ ಹಾಕಬಾರದು . ಸ್ವಮತದ ಅಪಜಯಕ್ಕೆ ಕೈಕಟ್ಟಿಕೊಂಡು ಕೂಡ್ರಬಾರದು .
  7. ಜಾತ್ರೆಗಳಲ್ಲಿ ಜರಗುವ ಜೀವವಧೆಯನ್ನು ನಿಲ್ಲಿಸಬೇಕು
  8. ಜೀವದಯಾ ಸಂಘಕ್ಕೆ ಸಹಾಯ ನೀಡಬೇಕು .
  9. ಗೋಲಿಯಾಟದಲ್ಲಿ ಗುರಿಯಿಡುವದರ ಮೂಲಕ ದೃಷ್ಟಿಶುದ್ಧಿ ಮಾಡಿಕೊಳ್ಳಬೇಕು .
  10. ಡೊಂಬರಾಟದಿಂದ ಹಟಯೋಗದ ಮರ್ಮವರಿಯಬೇಕು .
  11. ನಿಜಗುಣರ ಷಟ್‌ಶಾಸ್ತ್ರದ ಅಧ್ಯಯನ ಮಾಡಬೇಕು .
  12. ಅರ್ಚನ , ಅರ್ಪಣ , ಅನುಭಾವಗಳು ನಿತ್ಯವೂ ನಡೆಯಬೇಕು .
  13. ದೃಷ್ಟಿಯನ್ನು ಒಂದೇ ಕಡೆಗೆ ನಿಲ್ಲಿಸುವುದು ಯೋಗ ಸಾಧನೆಯಿಂದ ಸಾಧ್ಯ .
  14. ಒಳ್ಳೇ ಧೈಯವನ್ನು ಸಾಧಿಸಲು ಸದಾ ಪ್ರಯತ್ನಿಸುತ್ತಿರಬೇಕು .
  15. ಧರ್ಮದಿಂದ ಸದಾಚಾರದಿಂದ ನಡೆಯುವವನೇ ಮಾನವ .
  16. ಸಾಧಕರಾದವರು ಬ್ರಾಹ್ಮೀ ಮುಹೂರ್ತದಲ್ಲಿ ಏಳಬೇಕು .
  17. ನಿತ್ಯವೂ ಪ್ರಾತಃಕಾಲದಲ್ಲಿ ಆಸನ ಹಾಕಬೇಕು .
  18. ಪ್ರಾಣಾಯಾಮ ಮಾಡಬೇಕು .
  19. ಪರಮಾತ್ಮನನ್ನು ಧ್ಯಾನಿಸಿ ಮಲಗಬೇಕು .
  20. ಬಾಹ್ಯಾದ್ವೈತಕ್ಕೆ ಮನಸ್ಸು ಹಾಕಬಾರದು .
  21. ಗುರುವಚನವನ್ನು ಮೀರಬಾರದು .
  22. ಆಹಾರ – ಶುದ್ಧಿಯೇ ಸತ್ವಶುದ್ಧಿ .
  23. ಜಗದ್ಗುರುತ್ವ ಪಡೆದವರು ಸಮಾಜ – ಸೇವಾಕಾರ್ಯನಿರತರಾಗಬೇಕು .
  24. ಮಠಾಧಿಕಾರಿಗಳ ಆಚಾರ ವಿಚಾರಗಳನ್ನು ಸುಧಾರಿಸುವುದೇ ಶಿವಯೋಗ ಮಂದಿರದ ಮೂಲೋದ್ದೇಶ .
  25. ಶಕ್ತಿ ವಿಶಿಷ್ಟಾದ್ವೈ ತ ಸಿದ್ಧಾಂತವನ್ನು ತುಲನಾತ್ಮಕವಾಗಿ ವಿವೇಚಿಸಿ ಶಿಕ್ಷಣವನ್ನು ನೀಡುವುದು ಶಿವಯೋಗಮಂದಿರದ ಮುಖ್ಯೋದ್ದೇಶ .
  26. ಭಾರತದ ಎಲ್ಲ ವೀರಶೈವಮಠಗಳು ‘ ‘ ಶಿವಯೋಗ ಮಂದಿರ ‘ ‘ ಗಳಾಗಬೇಕು .
  27. ದೇಶ ವಿದೇಶಗಳಲ್ಲಿ ಶಕ್ತಿವಿಶಿಷ್ಟಾದ್ವೈ ತ ಪ್ರಚಾರ ಮಾಡಬೇಕು .
  28. ವಿರಕ್ತರಾದವರು ಕಾಮ , ಕ್ರೋಧ , ಲೋಭ , ಮೋಹ , ಮದ , ಮತ್ಸರ ತೊರೆಯಬೇಕು .
  29. ಸತ್ಯಕ್ಕಾಗಿ ಮಿತಭಾಷಿಯಾಗಿರಬೇಕು .
  30. ದುರ್ಗುಮ ತುಂಬಿರುವ ಮೌನ ಅಪಾಯಕಾರಿ .
  31. ಗುರು – ವಿರಕ್ತರು ಸಮಾಜಸೇವೆ ಮಾಡಬೇಕು .
  32. ದ್ವಿತೀಯ ಶಂಭು ಬಸವಣ್ಣನ ತತ್ವ ಪ್ರಚಾರ ಮಾಡಬೇಕು
  33. ಸಮಾಜಕ್ಕಾಗಿ ದೇಹ ಸವೆಯಿಸಬೇಕು
  34. ಘಟದಿಂದ ಮಠ ಬೆಳಗಬೇಕಲ್ಲದೆ ಮಠದಿಂದ ಘಟ ಬೆಳಗಬಾರದು .
  35. ಗೋಸಂರಕ್ಷಣೆಯನ್ನು ಮಠಾಧಿಪತಿಗಳು ಮಾಡಬೇಕು .
  36. ವಿಭೂತಿಯ ಮಹಿಮೆಯನ್ನು ತಿಳಿಯಬೇಕು

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,‌

ವಚನಪಿತಾಮಹ ಶ್ರೀ ಫ.ಗು.ಹಳಕಟ್ಟಿಯವರ  ಶಿವಾನುಭವ ಫೆ. ೧೯೩೦  ಅವರ ಸಂಪಾದಕೀಯ ಲೇಖನದ ಆಯ್ದ ಭಾಗ

ಸಮಾಜವು ಹಿಂದೆ ಬಿದ್ದ ಕಾಲಕ್ಕೆ ಅದನ್ನು ಮುಂದಕ್ಕೆ ದೂಡಲು ಒಬ್ಬಾನೊಬ್ಬನು ಮೊದಲು ಪ್ರವೃತ್ತನಾಗುತ್ತಾನೆ. ಅವನು ಈ ಪ್ರಕಾರ ಉದ್ಭವಿಸಿ ಅದಕ್ಕೆ ಯೋಗ್ಯ ದಾರಿಯನ್ನು ತೋರಿಸಿಕೊಡುತ್ತಾನೆ. ಆ ಮೇಲೆ ಅವನ ತರುವಾಯ ಅವನು ಹಾಕಿಕೊಟ್ಟ ಹಾದಿಯಂತೆ ಸಮಾಜವು ಕೆಲದಿವಸ ಹೋದ ಬಳಿಕ ಅದು ಪುನಃ ಸ್ತಬ್ಧವಾಗುವ ಪ್ರಸಂಗವು ಬರಲು ಮತ್ತೊಬ್ಬರು ಉತ್ಪನ್ನರಾಗಿ ಅದರಲ್ಲಿ ಹೊಸ ಚೈತನ್ಯವನ್ನು ಹುಟ್ಟಿಸುತ್ತಾರೆ. ಇಂಥವರೆಲ್ಲರೂ ಮಹಾವಿಭೂತಿಗಳೇಸರಿ. ಇಂಥವರ ವರ್ಗ ದಲ್ಲಿ ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಇರುತ್ತಾರೆ.

ಶ್ರೀ, ಹಾನಗಲ್ಲ ಕುಮಾರ ಸ್ವಾಮಿಗಳು ಮುಂದಕ್ಕೆ ಬಂದು ವೀರಶೈವ ಸಮಾಜದಲ್ಲಿ ಧರ್ಮದ ನಿಜವಾದ ಸಂಸ್ಕೃತಿಯನ್ನು ಹಬ್ಬಿಸಲಿಕ್ಕೆ ಕಾರಣವಾದರು. ಧರ್ಮ ಸಂಸ್ಕೃತಿಯೇ ಸಮಾಜದ ತಳಹದಿಯಾಗಿರುತ್ತದೆಂದು ಭಾವಿಸಿ ಅದಕ್ಕೋಸ್ಕರವೇ ಅವರು ತಮ್ಮ ಇಡೀ ಆಯುಷ್ಯವನ್ನೇ ಅರ್ಪಿಸಿದರು.

ವೀರಶೈವ ಮಹಾಸಭೆಯು ಇರುವ ವರೆಗೆ ವೀರಶೈವ ಜನ ಸಮುದಾಯದಲ್ಲಿ ಅದು ವಿಶೇಷ ಚಳವಳಿಯನ್ನು ಹಬ್ಬಿಸಲಿಕ್ಕೆ ಸಾಧನೀಭೂತವಾಯಿತು. ಅದರ ಮೂಲಕ ಸಾರ್ವಜನಿಕ ಕಾರ್ಯ ಮಾಡಲಿಚ್ಛಿಸುವವರಿಗೆ ತಮ್ಮ ಚಳವಳಿಗಳನ್ನು ಸಾಗಿಸಲಿಕ್ಕೆ ಬಹಳ ಉಪಯೋಗವಾಯಿತು. ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಈ ಮಹಾಸಭೆಯನ್ನು ಆರಂಭಿಸಿ, ಅದರ ೭-೮ ಅಧಿನಿವೇಶನಗಳಲ್ಲಿ ಪ್ರತ್ಯಕ್ಷ ಕಾರ್ಯ ಮಾಡಿ.ಜನರಲ್ಲಿ ಜಾಗ್ರತೆಯನ್ನು ಹುಟ್ಟಿಸಿದರು. ಇದು ಅವರು ಮಾಡಿದ ಮಹತ್ವದ ಕಾರ್ಯವಾಗಿದೆ. ಶ್ರೀ ಸ್ವಾಮಿಗಳು ಧಾರ್ಮಿಕ ಕಾರ್ಯಗಳಲ್ಲಿ ಅತ್ಯಂತ ಉತ್ಸುಕರಾದ್ದರಿಂದ ಮಹಾಸಭೆಯು ಜಾಗ್ರತೆಯ ಮೂಲಕ ಅವರು ಬದಾಮಿ ಮಹಾಕೂಟದಲ್ಲಿ ಶಿವಯೋಗಮಂದಿರವೆಂಬ ಮಹತ್ವದ ಸಂಸ್ಥೆಯನ್ನು ಸ್ಥಾಪಿಸಿದರು. ಇದು ಅವರು ಮಾಡಿದ ಎರಡನೇ ಮಹತ್ವದ ಕಾರ್ಯವಾಗಿದೆ.

ಶಿವಯೋಗವು ವೀರಶೈವ ಧರ್ಮದಲ್ಲಿ ಒಂದು ವಿಶಿಷ್ಟ ಯೋಗಪದ್ಧತಿಯಾಗಿರುತ್ತದೆ. ಇದನ್ನು ಪ್ರಸಾರಗೊಳಸಬೇಕೆಂಬುದೇ ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳ ಮುಖ್ಯ ಧ್ಯೇಯವಾಗಿತ್ತು. ಇದಕ್ಕೋಸ್ಕರವಾಗಿಯೇ ಅವರು ಶಿವಯೋಗ ಮಂದಿರವನ್ನು ಸ್ಥಾಪಿಸಿದರು. ಹೀಗೆ ಶಿವಯೋಗ ಮಂದಿರದಲ್ಲಿ ಶಿಕ್ಷಣಹೊಂದಿ ಮಠಾಧಿಕಾರಿಗಳು ಮಠಗಳಲ್ಲಿ ಪಟ್ಟಾಧ್ಯಕ್ಷರಾಗುವದರಿಂದ ಸಮಾಜದ ಪ್ರಗತಿಯು ಬಹು ಬೇಗನೆ ಆಗುವದೆಂದು ಅವರ ಪೂರ್ಣ ತಿಳುವಳಿಕೆಯಾಗಿತ್ತು

ಈ ಶಿವಯೋಗ ಸಾಧನೆಗೋಸ್ಕರ, ಅತ್ಯಂತ ಬಿಗಿತರವಾದ ವರ್ತನೆಯು ಅವಶ್ಯವೆಂದು ಅವರ ಭರವಸೆ ಇದ್ದ ದರಿ೦ದ ಅವರು ಅಲ್ಲಿ ಶಿಕ್ಷಣ ಹೊಂದುವವರಿಗೆ ಬಹು ಕಟ್ಟಾಚರಣೆಗಳನ್ನು ಕಲ್ಪಿಸಿದರು. ಆ ಪ್ರಕಾರ ಈ ಆಚರಣೆಗೆ ಒಳಗಾಗಿ ಈ ಸಂಸ್ಥೆಯಿಂದ ಅನೇಕರು ಹೊರಬಿದ್ದು ಬಹುಕಡೆಗೆ ಮಠಾಧಿಕಾರಿಗಳಾಗಿದ್ದದ್ದೂ ಅವರು ಅನೇಕ ಬಗೆಯ ಸಮಾಜ ಕಾರ್ಯಗಳಲ್ಲಿ ತೊಡಗಿದ್ದೂ ತೋರಿಬರುತ್ತಿದೆ. ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಮಾಡಿದ ಈ ಕಾರ್ಯವು ಸಾಮಾನ್ಯವಾದುದಲ್ಲ.

ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಈ ಪ್ರಕಾರ ಕೇವಲ ಧಾರ್ಮಿಕ ಭಾವನೆಯುಳ್ಳವರಾಗಿದ್ದರೂ ಅವರು ವ್ಯವಹಾರವನ್ನು ತಿರಸ್ಕರಿಸಿಬಿಡಲಿಲ್ಲ. ಅವರು ಆಧುನಿಕ ಸುಧಾರಣೆಗಳನ್ನು ಕೈಕೊಳ್ಳಲು ಯಾವಾಗಲೂ ಉತ್ಸುಕರಾಗಿರುತ್ತಿದ್ದರು. ಅವರು ಅಸಂಖ್ಯ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣವನ್ನು ದೊರಕಿಸಲು ಬಹಳ ಸಹಾಯ ಮಾಡಿದರು. ಮತ್ತು ತಮ್ಮ ಶಿವಯೋಗಮಂದಿರದಲ್ಲಿಯೇ ಒಂದು ಇಂಗ್ಲಿಷ್ ಶಿಕ್ಷಣ ಸಂಸ್ಥೆಯನ್ನೂ ಸ್ಥಾಪಿಸಿದರು. ಅವರು ಶಿವಯೋಗಮಂದಿರದ ಹಣದಿಂದಲೇ ಗಿರಣಿಯನ್ನು ಸ್ಥಾಪಿಸಿದ್ದು. ಅವರು ಶಿವಯೋಗಮಂದಿರದ ಜಮೀನುಗಳಲ್ಲಿ ಹೊಸ ತರದ ಒಕ್ಕಲುತನ ಸುಧಾರಣೆಗಳನ್ನು ಕೈಕೊಳ್ಳಲು ಬಹಳ ಆತುರ ಪಡುತ್ತಿದ್ದರು. ಮತ್ತು ಈ ದೃಷ್ಟಿಯಿಂದಲೇ ಅವರು ಅನೇಕ ಕಡೆಗೆ ಶಿವಯೋಗಮಂದಿರಕ್ಕೋಸ್ಕರ ಜಮೀನುಗಳನ್ನು ಸಂಪಾದಿಸಿರುವರು. ಅವರ ಮನಸ್ಸಿನಲ್ಲಿ ಶಿವಯೋಗ ಮಂದಿರದ ಮುಖಾಂತರ ಇಡೀ ದೇಶದಲ್ಲಿ ಧಾರ್ಮಿಕ ಪ್ರಚಾರ ಕಾರ್ಯಮಾಡಬೇಕೆಂದು ಬಹಳ ಇದ್ದ ದರಿಂದ ಅವರು ಅನೇಕ ಕಡೆಗೆ ಕೀರ್ತನಕಾರರೂ ಉಪನ್ಯಾಸಕರೂ ಹೋಗಿ ಉಪದೇಶ ಮಾಡಲು ಬಹಳ ಪ್ರೋತ್ಸಾಹಿಸುತಿದ್ದರು. ಹಾಗೆಯೇ ಅವರು ಗವಾಯಿಗಳಿಗೂ ಉತ್ತೇಜನ ಕೊಡುತ್ತಿದ್ದರು.

ಶ್ರೀಕುಮಾರ ತರಂಗಿಣಿ  ೨೦೨೩ ಅಕ್ಟೋಬರ  ಸಂಚಿಕೆಯ ಲೇಖನಗಳ ವಿವರ

  1. ಕೊಡು ಮಂಗಲವನು ಬೇಗನೆ ಶಿವನೆ ನೀನಿದನು” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೯ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3.   ಪುಸ್ತಕದ ಒಂದು ಸನ್ನಿವೇಶ: ಶ್ರೀಕಂಠ.ಚೌಕೀಮಠ
  4.  
  5. ೨ : ಶ್ರೀಕುಮಾರೇಶ್ವರ ಅಭಂಗ

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

ರಚನೆ :-ಪರಮ ಪೂಜ್ಯ ಲಿಂ.ಹಾನಗಲ್ಲ ಕುಮಾರ ಮಹಾಸ್ವಾಮಿಗಳವರು

ಕೊಡು ಮಂಗಲವನು ಬೇಗನೆ ಶಿವನೆ ನೀನಿದನು

(ರಾಗ – ದೇಸ್)

ಕೊಡು ಮಂಗಲವನು ಬೇಗನೆ ಶಿವನೆ ನೀನಿದನು |

ಭವರೋಗವನು, ತವೆಹರಿಪುದನು ಸುವಿಲಾಸದೊಳು || ಪ ||

ಘೋರವೆನಿಪವೃತ್ತಿ | ಸಾರಿ ಕಾಡುವದತಿ |

ಕ್ರೂರತನದಿ ಮುತ್ತಿ | ಗಾರುಗೊಳಿಸಿ ಶಾಂತಿ |

ಪೂರವಳಿದು ಗತಿ | ಸೇರದಿರುವೆ || 1 ||

ಮುತ್ತಿ ತಾಮಸವದು | ವೃತ್ತಿ ಮೂಢವದು |

ಚಿತ್ತ ದಾವರಣದು | ಸತ್ಯ ಬ್ರಹ್ಮವ ಮರೆದು |

ಅತ್ತಿತ್ತಲೋಗದಂತೆ | ಸುತ್ತಕೊಂಡಿರುವೆ || 2 ||

ಆಂತು ಸತ್ಸಂಗವನು | ಕಂತು ಮರ್ದನನನು |

ಚಿಂತಿಸುತ್ತಿರುವದನು | ಭ್ರಾಂತಿ ನೀಗಿರುವದನು |

ಕಾಂತಿ ಹೊಂದುವದನು | ಇಂತು ಬೇಡುವೆ || 3 ||

ಲೇಖಕರು :

ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ

ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ.

ಮುಂಡರಗಿ

ನರಮನುಜನು ಪಟ್ಟ ದರಸಾಗಲವಗೆ ನೀ

ಶಿರಬಾಗದಿರಲು-ಶಿರದೊಳಗೆ ಲಿಂಗವನು

ಧರಿಸೆಂದ ಗುರುವೆ ಕೃಪೆಯಾಗು    || ೧೩೧ ||

ಭಕ್ತನು ಶಿವಶರಣರ ಕಿಂಕರರ ಕಿಂಕರನಾಗಲು ಬಯಸುತ್ತಾನೆ. ಆದರೆ ಭವಿಯಾದ ಅರಸನ ಆಸರವನ್ನೂ ಇಚ್ಛಿಸುವದಿಲ್ಲ. ಶಿವಭಕ್ತನಲ್ಲದ ಮನುಜನಿಗೆ ಮಣಿಯುವದೂ ಇಲ್ಲ. ಇಂಥ ಛಲವುಳ್ಳವನೇ ಶಿವಲಿಂಗವನ್ನು ಶಿರದಲ್ಲಿ ಧರಿಸ ಬೇಕೆಂಬುದನ್ನು ಶಿವಕವಿಯು ಲಿಂಗಧರಿಸುವ ನಾಲ್ಕನೆಯ ಸ್ಥಾನವನ್ನಾಗಿ ನಿರೂಪಿಸಿದ್ದಾನೆ.

ಭಕ್ತನಲ್ಲದ ಸಾಮಾನ್ಯ ನರನು ಪೂರ್ವದ ಪುಣ್ಯವಿಶೇಷದಿಂದ ರಾಜ್ಯಕ್ಕೆ ಪಟ್ಟದರಸನಾದರೆ ಶರಣನಾದವನು ಅವನನ್ನು ಶಿರಬಾಗಿ ವಂದಿಸಲಾರನು. ಭವಿಗೆ ಬಾಗದ ಭಕ್ತನು ಮಸ್ತಕದೊಳಗೆ ಮಹಾಲಿಂಗವನ್ನು ಧರಿಸಬೇಕೆಂಬುದು ಶ್ರೀಗುರುವಿನ ಬೋಧೆಯಾಗಿದೆ. ಕಾಯಕನಿಷ್ಠನಾದ ಭಕ್ತನು ಭವಿಯನ್ನು ಬೇಡನು. ಅವನಿಂದ ಯಾವ ಆಶೆಯನ್ನು ಮಾಡನು. ಅವನ ಹಂಗೂ ಅವನಿಗೆ ಇರದು. ಅರವತ್ತು ಮೂವರು ಪುರಾತನರಲ್ಲೊಬ್ಬರಾದ ಶರಣ ರಕ್ಷಕನಾದ ಕಲಿಗಣನಾಥನೆಂಬ ಶೂರ- ಶರಣನಾದ ಅರಸನು ಭವಿಯಾಗಿ ಬಂದ ಶಿವನಿಗೂ ವಂದಿಸಲಿಲ್ಲ. ಆದರೆ ಭವಿಯಾದ ಅವನಿಗೆ ಶಿಕ್ಷಿಸಿ ಲಿಂಗಧಾರಣಮಾಡಿದ ಕಥೆ ಅದ್ಭುತವಾದುದು. ಶರಣರು ನ್ಯಾಯನಿಷ್ಠುರರು. ದಾಕ್ಷಿಣ್ಯಪರರಾಗಿ ಬಾಳುವದಿಲ್ಲ. ಅಂತೆಯೇ ಭವಿಯಾದವನು ಅರಸನಾಗಿದ್ದರೂ ಅವನನ್ನು ಮನ್ನಿಸಲಾರರು. ಇಂಥ ಧೀರೋದಾತ್ತತೆಯಲ್ಲಿಯೇ ವೀರಶೈವನ ವೀರತ್ತ್ವವು ಪ್ರಕಟಗೊಳ್ಳುವದು.

ಭಕ್ತಿಭಾಂಡಾರಿಯೆನಿಸಿದ ವೀರಶೈವ ನಿರ್ಣಯಪರಮಾವತಾರಿಯೆನಿಸಿದ ಅಣ್ಣಬಸವಣ್ಣನವರು ಭವಿಯಾದ ಬಿಜ್ಜಳನಲ್ಲಿ ಕಾಯಕ ಮಾಡುತ್ತಿದ್ದರೇ ಹೊರತು   ಅವನಿಗೆ ವಂದಿಸುತ್ತಿರಲಿಲ್ಲ; ಆದರೆ ತನ್ನ ಬೆರಳಿನ ನಂದಿಯುಂಗುರವನ್ನು ಮುಂದೆ ಮಾಡಿ ಇಷ್ಟಲಿಂಗವನ್ನು ಗುರು-ಜಂಗಮ ಧ್ಯಾನಪೂರ್ವಕ ಔಪಚಾರಿಕವಾಗಿ, ರಾಜಗೌರವೋಚಿತಕ್ಕಾಗಿ ಬಿಜ್ಜಳನಿಗೆ ಕೈಮುಗಿಯುತ್ತಿದ್ದನು; ಅರ್ಥಾತ್ ತಮ್ಮ ಹಸ್ತದ ನಂದೀಶ್ವರನಿಗೆ ವಂದಿಸುವ ಭಾವವಿರುತ್ತಿತ್ತು. ಇದರ ರಹಸ್ಯವನ್ನರಿತ ಕೊಂಡೆಯವರು ರಾಜನಿಗೆ ತಿಳಿಸಿದರು. ಸಾರಾಸಾರ ವಿವೇಕವಿಲ್ಲದ ಅರಸನು ಅಣ್ಣನವರಿಗೆ ಉಂಗುರ ತೆಗೆದಿರಿಸಿ ಸಿಂಹಾಸನಕ್ಕೆ ಮಣಿಯ ಬೇಕೆಂದಾಗ ಬಸವ ಮಹಾನುಭಾವರು ಬಿಜ್ಜಳನನ್ನು ಕೆಳಗಿರಿಸಿ ವಂದಿಸುತ್ತಿರಲು ಆ ಸಿಂಹಾಸನವು ಧಗಧಗನೆ ಉರಿಯ ಹತ್ತುವದು. ದಿಗ್ಭ್ರಮೆಗೊಂಡ ಅರಸನು ದಂಡಾಧೀಶನಲ್ಲಿ ಕ್ಷಮೆ ಕೇಳಿದನು ಎಂಬ ಚರಿತ್ರೆ ಬಸವ ಪುರಾಣದಲ್ಲಿ ಕಾಣಸಿಕ್ಕುವದು.

ಶರಣರಿಂದ ವಂದಿಸಿಕೊಳ್ಳುವ ವ್ಯಕ್ತಿಯು ಮಹಾ ಮಹಿಮನೇ ಆಗಿರಬೇಕು. ದೊಡ್ಡವರಿಗೆ ಮಣಿಯುವದು ಲೋಕಾಚಾರ. ಅದಕ್ಕಪಚಾರ ಮಾಡಿದರೆ ಅನಾಹುತಕ್ಕೇನೆ ಔತಣ ಕೊಟ್ಟಂತಾಗುವದು. ಇದಕ್ಕೆ ಬಿಜ್ಜಳನ ಉದಾಹರಣೆಯೇ ಸಾಕ್ಷಿಯಾಗಿದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಮಾತುಗಳು ಎರಡು. ಭಕ್ತನಲ್ಲದವನು ಭಕ್ತರಿಂದ ನಮಸ್ಕರಿಸಿಕೊಳ್ಳಬಾರದು. ಇನ್ನೊಂದು ಭಕ್ತನಾದವನು ಭವಿಗಳ ಆಮಿಷಾದಿಗಳಿಗೆ ಆಶಿಸದೆ ಸ್ವತಂತ್ರ ಧೀರನಾಗುವ ಮನೋಭಾವವುಳ್ಳವನಾಗಬೇಕು.

ಈ ತ್ರಿಪದಿಯನ್ನು ರಚಿಸಿದ ಶಿವಕವಿಯು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಅಭ್ಯಸಿಸಿದ್ದನೆಂಬುದು ಸ್ಪಷ್ಟವಾಗುತ್ತದೆ. ಪ್ರಸ್ತುತ ತ್ರಿಪದಿಯ ಅರ್ಥವನ್ನು  ಚನ್ನಬಸಣ್ಣನವರ ವಚನವು ಪುಷ್ಟಿಕರಿಸಿದೆ.

 ಉತ್ತಮಾಂಗದಲ್ಲಿ ಲಿಂಗವ ಧರಿಸಿದ ಬಳಿಕ

 ಅನ್ಯರಿಗೆ ತಲೆಬಾಗದಿರಬೇಕು; ಮಾನವರ ಬೇಡದಿರಬೇಕು.

 ಹಸಿವು ತೃಷೆ ವಿಷಯಂಗಳು ಲಿಂಗದಲ್ಲಿ ನಿಕ್ಷೇಪವಾಗಿರಬೇಕು

 ಜಾಗೃತ್ -ಸ್ವಪ್ನ-ಸುಷುಪ್ತಿಯಲ್ಲಿ ಲಿಂಗದ

ನಿಲುಕಡೆಯನರಿದು ತೆರಹಿಲ್ಲದಿರಬೇಕು.

 ಉತ್ತಮಾಂಗದಲ್ಲಿ ಲಿಂಗವ ಧರಿಸಿದ ಮಹಾತ್ಮಂಗೆ

ಇದೆ ಮುಕ್ತಿ ಪಥವಯ್ಯ ಕೂಡಲ ಚನ್ನಸಂಗಮದೇವಾ. II ಚ. ಬ. ವ. ೯೧೦ |

 ಉರದಿಂದ ಉತ್ತಮಾಂಗಕ್ಕೆ ಲಿಂಗವನ್ನು ಬರಮಾಡಿಕೊಂಡ ಮಹಾತ್ಮನು ಸರ್ವಾಂಗ ಲಿಂಗಮಯನಾಗಿರುತ್ತಾನೆ. ಸಕಲವೂ ಲಿಂಗವೆಂದರಿದ ಬಳಿಕ ಲಿಂಗವಲ್ಲದ ಅನ್ಯ ವಸ್ತುವಿಗೆ, ಅನ್ಯವ್ಯಕ್ತಿಗೆ ವಂದಿಸಲಾರನು. ಸಕಲವನ್ನು ದಯಪಾಲಿಸುವವನು ದೇವನೇ ಎಂದರಿದು ಮಾನವರನ್ನು ಬೇಡುವದಿಲ್ಲ. ಜೀವಗುಣವೆನಿಸಿದ ಹಸಿವು, ತೃಷೆ; ವಿಷಯಗಳು ಲಿಂಗದಲ್ಲಿ ಅಡಗಿ ಲಿಂಗದ ಮಹಾಪ್ರಸಾದವಾಗುವವು. ತ್ರಿವಿಧಾವಸ್ಥೆ ಯಲ್ಲಿಯೂ ಲಿಂಗದ ನೆಲೆ-ಕಲೆಗಳನ್ನು ಅಳವಡಿಸಿಕೊಂಡು ಜ್ಞಾನಿಯಾಗಿರುತ್ತಾನೆ.

ಅಂದಮೇಲೆ ಲೋಕದ ಮಾನವರಿಂದ ಅವನಿಗೇನಾಗಬೇಕು ? ಶರಣನ ಪರಿಯೇ ಲೋಕಕ್ಕೆ ಭಿನ್ನವಾಗಿರುವುದು. ಸರ್ವಸಂಗವನ್ನು ಪರಿಹರಿಸಿದ ಶರಣನು ಶಿವಭಕ್ತ ನಲ್ಲದವನಿಗೆ ಶಿರಬಾಗುವ ಅವಶ್ಯಕತೆಯೂ ಬೀಳಲಾರದು. ಉತ್ತಮಾಂಗದಲ್ಲಿ

ಲಿಂಗವನ್ನು ಧರಿಸುವ ಯೋಗ್ಯತೆಯನ್ನು ಪಡೆದ ಮಹಾನುಭಾವಿಗೆ ಇಂದಿನ ಕಾಲದಲ್ಲಿಯೂ ಅನ್ಯರಿಗೆ ವಂದಿಸುವ ಯಾವ ಅವಸರ ಬರಲಾರದು.

ಸಕಲರ್ಗೆ ಸಟೆಯು ಪಾ | ತಕವೆಂದು ನೀಗಿ ಚಿತ್

 ಸುಖದ ಲಿಂಗವನು-ಮುಖಸಜ್ಜೆಯೊಳಿಡಬೇಕೆಂ-

ದಕಳಂಕ ಗುರುವೆ ಕೃಪೆಯಾಗು     || ೧೩೨ ॥

ಶರಣರಿಗೆ ಶಿರಬಾಗಿಸುವದೇ ಶಿರಕ್ಕೆ ಭೂಷಣವಾಗಿರುವಂತೆ; ಮುಖಕ್ಕೆ ಸತ್ಯವಚನವೇ ಭೂಷಣವೆಂಬುದನ್ನು ಶಿವಕವಿಯು ತತ್ತ್ವಮಯವಾಗಿ ಪ್ರತಿಪಾದಿಸಿದ್ದಾನೆ. ಸತ್ಸ್ವರೂಪನಾದ ಶಿವನೊಲುಮೆಗೆ ಸತ್ಯವೇ ಮೂಲ. ಸಟೆಯೇ ಪಾತಕದ ಸತ್ಯದ ಪರಿಭಾಷೆ.ಮೂಲ. ಶಿವಭಕ್ತನಲ್ಲಿ ಸತ್ಯವು ನಿತ್ಯವಾಗಿರಬೇಕು. ನಡೆ-ನುಡಿಯೊಂದಾಗುವದೇ

ನಾಸತೋ ವಿದ್ಯತೇ ಭಾವಃ ನಾಭಾವೋ ವಿದ್ಯತೇ ಸತಃ

ಅಸತ್ಯಕ್ಕೆ ಅಸ್ತಿತ್ವವಿಲ್ಲ. ಸತ್ಯಕ್ಕೆ ಅಭಾವವಿಲ್ಲವೆಂಬ ಗೀತಾರ್ಥವೂ ಸತ್ಯದ ಘನತೆಯನ್ನೇ ಘೋಷಿಸುತ್ತದೆ. ಷಣ್ಮುಖ ಶಿವಯೋಗಿಗಳು-

ಸತ್ಯದ ಮನೆಯಲ್ಲಿ ಶಿವನಿರ್ಪನಲ್ಲದೆ,

ಅಸತ್ಯದ ಮನೆಯಲ್ಲಿ ಶಿವನಿರ್ಪನೆ ?

ಇಲ್ಲಿಲ್ಲ ನೋಡಿರೋ

! ಇದು ಕಾರಣ

ನಮ್ಮ ಅಖಂಡೇಶ್ವರ ಲಿಂಗವನೊಲಿಸಬೇಕಾದಡೆ

ಸತ್ಯವನೆ ಸಾಧಿಸಬೇಕು ಕಾಣಿರೋ |

ಎಂದು ಸತ್ಯದ ನಿಲವನ್ನು ಸಾರಿದರೆ, ಅಣ್ಣ ಬಸವಣ್ಣನವರು-

ದಿಟವ ನುಡಿವುದು, ನುಡಿದಂತೆ ನಡೆವುದು

ಹುಸಿಯ ನಡೆದು ತಪ್ಪುವ

ಪ್ರಪಂಚಯನೊಲ್ಲ ಕೂಡಲ ಸಂಗಮದೇವ

ಎಂದು ದಿಟದ ಮಾಟವನ್ನು ಮೂಡಿಸಿದ್ದಾನೆ. ವೈರಾಗ್ಯನಿಧಿ ಅಕ್ಕನು

ಸಟೆ-ದಿಟವೆಂಬುವೆರಡು-ವಿಡಿದು ನಡೆವುದೀ ಲೋಕವೆಲ್ಲವು.

ಸಟೆ-ದಿಟವೆಂಬುವರೆದು ಎಡಿದು ನಡೆವ ಲೋಕದೊಡನೆ

ಶರಣನು ಗುರು-ಲಿಂಗ-ಜಂಗಮದಲ್ಲಿ ಸಟೆಯ ಬಳಸಿದೊಡನೆ

ಆತನು ತ್ರಿವಿಧಕ್ಕೆ ದ್ರೋಹಿ, ಅಘೋರ ನರಕಿ,

ಉಂಬುದೆಲ್ಲ ಕಿಲ್ಪಿಷ, ತಿಂಬುದೆಲ್ಲ ಅಡಗು,

ಕುಡಿವುದೆಲ್ಲ ಸುರೆ, ಹುಸಿಯೆಂಬುದೇ ಹೊಲೆ

ಶಿವಭಕ್ತಂಗೆ ಹುಸಿಯೆಂಬುದುಂಟೆ ಅಯ್ಯಾ ?

ಹುಸಿಯನಾಡಿ ಲಿಂಗವ ಪೂಜಿಸಿದೊಡೆ

ಹೊಳ್ಳ ಬಿತ್ತಿ ಫಲವನರಸುವಂತೆ ಕಾಣಾ ಚನ್ನಮಲ್ಲಿಕಾರ್ಜುನಾ |

ಸಟೆಯೆಂದರೆ ಅಸತ್ಯ. ದಿಟವೆಂದರೆ ಸತ್ಯ. ಈ ಸತ್ಯಾಸತ್ಯಗಳ ಸಮ್ಮಿಶ್ರಣವೇ ಸಂಸಾರದ ಇರವು. ಸಟೆ-ದಿಟಗಳೆರಡನ್ನು ಒಂದುಗೂಡಿಸಿ ನಡೆಯುವ ಲೋಕದ ನಡತೆಗೂ, ಶರಣನ ಸತ್ಯವಾದ ಸದಾಚರಣೆಯ ಪರಿಗೂ ತೀರ ಭಿನ್ನವಾಗಿದೆ. ಬಾಹ್ಯ ಜೀವನದಲ್ಲಿ ಶರಣನೆನಿಸಿ ಗುರು-ಲಿಂಗ-ಜಂಗಮದಲ್ಲಿ ಸಟೆಯಾಡಿದರೆ ಶರಣತ್ವಕ್ಕೇನೆ ಕುಂದು. ಅವನು ನಿಜ ಶರಣನೆನಿಸನು. ಆ ತ್ರಿವಿಧ ಪೂಜ್ಯರಿಗೆ ದ್ರೋಹಿಯಾಗುವನು. ಅಘೋರ ನರಕಿಯೆನಿಸುವನು. ಯಾಕಂದರೆ ಶಿವನು ಸತ್ಯದಲ್ಲಲ್ಲದೆ ಅಸತ್ಯದಲ್ಲಿಲ್ಲ. ಅಸತ್ಯವಾದಿಯಾದ ಸಂಸಾರಿಯು ಶಿವನಿಗೆ ದೂರವಾಗುವನು. ಅಸತ್ಯವನ್ನು ನುಡಿದು

ಮಾಡಿದ ಶಿವಲಿಂಗಪೂಜೆಯೂ ಸಫಲವಾಗಲಾರದು. ಈ ಹುಸಿಯಲ್ಲಿಯೇ ಹೊಲೆತನವಿದೆ. ಹುಸಿಕ ಭೋಗಿಸಿದುದೆಲ್ಲ ಹೊಲಸಾಗುವದು. ಜೊಳ್ಳನ್ನು ಬಿತ್ತಿದರೆ ಮೊಳಕೆ ಹುಸಿಯಾಗುವಂತೆ; ಅಸತ್ಯದಿಂದ ಸತ್ಯದ ಫಲ ದೊರೆಯದು ಎಂದು ಮುಂತಾಗಿ ಶರಣರು ಸತ್ಯದ ಸತ್ಯವನ್ನು ಸಾರಿದ್ದಾರೆ. ಸತ್ಯದ ಅರಿವುಳ್ಳ ಅಲ್ಲಮಪ್ರಭುಗಳು ಸತ್ಯವಿಲ್ಲದವರೊಡನೆ ಸಹಸ್ರಕ್ಕೊಮ್ಮೆ ನುಡಿಯಲಾಗದು. ಲಕ್ಷಕ್ಕೊಮ್ಮೆ

ನುಡಿಯ ಲಾಗದು. ಕೋಟಿಗೊಮ್ಮೆ ನುಡಿಯಲಾಗದೆಂದು ಅಪ್ಪಣೆ ಮಾಡಿದ್ದಾರೆ. ಕೇವಲ “ನುಡಿಯಲ್ಲಿ ಎಚ್ಚೆತ್ತು ನಡೆಯಲ್ಲಿ ತಪ್ಪಿದರೆ ಹಿಡಿದಿರ್ದ ಲಿಂಗವು ಘಟಸರ್ಪ ವೆಂತಲೂ; ನುಡಿಗೆ ತಕ್ಕನಡೆಯ ಕಂಡೊಡ ಕೂಡಲ ಸಂಗಮದೇವನೊಳಗಿರುವನೆಂತಲೂ ಅಣ್ಣನವರು ನಡೆ-ನುಡಿಗಳ ಸಾಮರಸ್ಯದ ಸಾರವನ್ನು ಸೂಸಿದ್ದಾರೆ.

ಅಸತ್ಯವು ಜೀವಾತ್ಮನ ಜೀವನದಲ್ಲಿ ಅಪಾಯಕಾರಿಯೆನಿಸಿದರೂ ಮಾನವನು ಅದನ್ನೇ ಆಶಿಸುತ್ತಾನೆ. ಈ ಮಾತನ್ನು ತೋಂಟದ ಸಿದ್ಧಲಿಂಗ ಶಿವಯೋಗಿಗಳು-

ಹೆಣನ ಕಂಡರೆ ನಾಯಕಚ್ಚಿದಲ್ಲದೆ ಮಾಣ್ಣುದೇ ?

ಹಣವ ಕಂಡರೆ ಮನ ಕರಗಿದಲ್ಲದೆ ಮಾಣ್ಣುದೇ ?

ಬಿಸಿಯ ಕಂಡರೆ ಬೆಣ್ಣೆ ಕರಗಿದಲ್ಲದೆ ಮಾಣ್ಣುದೇ ?

ಹುಸಿಯ ಕಂಡರೆ ಲೋಕಮೆಚ್ಚುವದು, ನಚ್ಚುವದು

ಮಹಾಲಿಂಗ ಗುರುಶಿವಸಿದ್ಧೇಶ್ವರ ಪ್ರಭುವೇ !

ಸತ್ತಪ್ರಾಣಿಯನ್ನು ನೋಡಿದ ನಾಯಿ ಅಂದಣವನ್ನೇರಿದ್ದರೂ ಕೆಳಗೆ ಹಾರಿ ಕಚ್ಚದೆ ಬಿಡುವದಿಲ್ಲ. ಹಣಕಂಡು ಮನಕರಗದ ಮಾನವರಿಲ್ಲ. ಬೆಂಕಿಯ ಕಂಡು ಬೆವೆಯದ ಬೆಣ್ಣಿಯಿಲ್ಲ. ಇದರಂತೆ ಲೋಕದ ಮಾನವನು ಹುಸಿಯನ್ನು ಕಂಡು ಮೆಚ್ಚುತ್ತಾನೆ.ನಚ್ಚುತ್ತಾನೆಂದು ತಿಳಿಸಿದ್ದಾರೆ. ಬಹುಮುಖವಾದ ಪ್ರಪಂಚವು ಕೆಳಮುಖವಾಗಿಯೇ ಹರಿಯುವದು.ಅಧೋಮುಖವಾದ ಜಲವು ಹೊಂದಲಾರದೋ

ಊರ್ಧ್ವ ಗತಿಯನ್ನೆಂದೂ ಅದರಂತೆ ಅಸತ್ಯವನ್ನು ಅನುಸರಿಸುವ ನರನು ಸತ್ಯದ ನಿಲವನ್ನು

ಅರಿಯಲಾರನು. ಅಸತ್ಯ ಅನಿತ್ಯವಾದರೆ ಸತ್ಯವು ನಿತ್ಯವೆನಿಸುವದು.

ಮಹಾತ್ಮಾ ಗಾಂಧೀಜಿಯವರು ಸತ್ಯದ ಮಹತ್ವವನ್ನರಿತುಕೊಂಡು ನಿತ್ಯರಾದರು. ಅವರ ಭೌತಿಕ ದೇಹವು ಅನಿತ್ಯವಾಗಿ ನಾಶ ಹೊಂದಿದ್ದರೂ ಕೀರ್ತಿ ಕಾಯವು ಶಾಶ್ವತವಾಗಿದೆ. ನಿತ್ಯಸತ್ಯವೆನಿಸಿದೆ. ತಮ್ಮ ಜೀವನವನ್ನೇ ಸತ್ಯದ ಪ್ರಯೋಗದಲ್ಲಿ ಪ್ರಯೋಗಿಸಿಕೊಂಡ ಹಲವಾರು ಘಟನೆಗಳನ್ನು ಅವರ ಆತ್ಮಚರಿತ್ರೆಯಲ್ಲಿ ಕಾಣುತ್ತೇವೆ. ಸತ್ಯ ಹರಿಶ್ಚಂದ್ರನ ಜೀವನವನ್ನು ಚಿತ್ರಿಸಿದ ಮಹಾಕವಿ ರಾಘವಾಂಕನು ಆ ಮಹಾಕಾವ್ಯದಲ್ಲಿ “ಹರನೆಂಬುದೇ ಸತ್ಯ, ಸತ್ಯವೆಂಬುದೇ ಹರ” ಎಂಬ ತತ್ತ್ವವನ್ನು

ಓತಪ್ರೋತವಾಗಿ ತುಂಬಿದ್ದಾನೆ. ಇಂಥ ಸತ್ಯ ಸ್ವರೂಪವನ್ನು ಜೀವನದಲ್ಲಿ ಅಳವಡಿಸಿಕೊಂಡವನು ಶರಣನಾಗುವನು.

ಸತ್ಯದಲ್ಲಿ ಚಿತ್‌ಸುಖದ ಲಿಂಗವು ಚಿತ್ರಕ್ಕೆ ಚೇತನವನ್ನು ನೀಡುವದು. ಅವನು ಚೈತನ್ಯಮಯನಾಗುವನು. ಸತ್ಯವನ್ನು ಪರಿಪಾಲಿಸುವ ಲಿಂಗಭಕ್ತನು ಜ್ಞಾನಾನಂದ ಮಯಲಿಂಗವನ್ನು ಮುಖವೆಂಬ ಸೆಜ್ಜೆ (ಕರಡಿಗೆ) ಯೊಳಗಿಡಬೇಕೆಂಬುದು ಗುರುವಿನ ವಚನ. ಕಲಂಕ ರಹಿತನಾದ ಸದ್ಗುರುನಾಥನು ಸತ್ಯದ ಮರ್ಮವನ್ನು ತಿಳಿಸಿ ಚಿತ್ಸುಖದ ಲಿಂಗವನ್ನು ಮುಖ ಸಜ್ಜೆಯಲ್ಲಿ ಧರಿಸಬಹುದೆಂದು ಬಣ್ಣಿಸುತ್ತಾನೆ. ಮುಖವೆಂಬ ಕರಡಿಗೆಯಲ್ಲಿ ಲಿಂಗವನ್ನು ಧರಿಸುವ ಶರಣನ ವಾಣಿ ಪ್ರಸಾದ ವಾಣಿಯಾಗುವದು. ಅವನಲ್ಲಿ ಸುಳ್ಳು ಸೋಂಕಲಾರದು. ಪ್ರಸಾದವಾಣಿಯಲ್ಲಿಯೇ ಚಿತ್ಸುಖದ

ಪ್ರೋತವಿದೆ. ಸತ್ಯವೇ ನಿತ್ಯಲಿಂಗದ ನಿಜವು. ಅಂಥ ಸತ್ಯವನ್ನು ಸಾಧಿಸಿ ಚಿತ್‌ಸುಖದ ಲಿಂಗವನ್ನು ಧರಿಸುವ ಶಕ್ತಿಯನ್ನು ದಯಪಾಲಿಸುವ ಪರಮ ಗುರುವೆ ! ನಿರಂಜನ ಪ್ರಭುವೆ ! ಕೃಪೆದೋರು.

ಸ್ವಮತಮಾರ್ಗವ ಬಿಟ್ಟು ವಿಮುಖನಾಗದೊಡೆ ಸ

ತೃಮದ ಲಿಂಗವ-ನಮಳ್ಳೆಕ್ಯದಿ ಧರಿಸೆಂದ

ವಿಮಲ ಶ್ರೀಗುರುವೆ ಕೃಪೆಯಾಗು || ೧೩ ||

ಶಿವಕವಿಯು ಲಿಂಗವನ್ನು ಧರಿಸಲು ಯೋಗ್ಯವೆನಿಸಿದ ಕರ, ಕಕ್ಷೆ, ಉರ, ಶಿರ,ಮುಖಸಜ್ಜೆಗಳನ್ನು ನಿರೂಪಿಸಿ ಆರನೆಯ ಸ್ಥಾನವಾದ ಅಮಲೈಕ್ಯದಲ್ಲಿ ಲಿಂಗಧಾರಣೆಯ ಗರಿಷ್ಠತೆಯನ್ನು ಗುರುತಿಸುತ್ತಾನೆ. ಅಮಲೈಕ್ಯ ಸ್ಥಿತಿಯನ್ನು ಸಾಧಿಸಲು ಸ್ವಮತಾಚರಣೆ ಅತ್ಯವಶ್ಯವಾದುದು. ಸ್ವಮತದಲ್ಲಿ ಸತ್ಯಮವಿರುವದು. ಪರಮತಾವಲಂಬನೆಯಲ್ಲಿ ಸತ್ಯಮ ನಿಲ್ಲುವದಿಲ್ಲ. ಯಾಕಂದರೆ ಪರಮತದ ಪರಿಪೂರ್ಣ ಪರಿಚಯವಿರುವದಿಲ್ಲ. ಆದ್ದರಿಂದ ಸ್ವಮತಮಾರ್ಗಾಚರಣೆಯೇ ಸತ್ಯಮದ ತವರು.

ಇಲ್ಲಿ ಮತವೆಂದರೆ ಅಭಿಪ್ರಾಯ ಅಥವಾ ಧರ್ಮವೆಂದು ಗ್ರಹಿಸಬಹುದು.ಸ್ವಮತವೆಂದರೆ ತನ್ನದೇ ಆದ ಧರ್ಮ. ಸ್ವಕೀಯ ಸಿದ್ಧಾಂತವುಳ್ಳುದಾಗುವದು. ತಮ್ಮ ಹಿರಿಯರು ಅರಿತು ಆಚರಿಸಿ ಕಲಿಸಿ ತೋರಿಸಿಕೊಟ್ಟ ಧರ್ಮಾಚರಣೆಯು ಸ್ವಮತವಾದುದು. ಇಂಥ ಸ್ಪಧರ್ಮಾಚರಣೆಯನ್ನು ತಿಳಿಯದೆ, ಅರ್ಥೈಸಿಕೊಳ್ಳದೆ ತ್ಯಜಿಸಿ ಪರಮತಾಚರಣೆಯು ಮನವೆಳಸಿದರೆ ಅವನಿಗೆ ಪ್ರತಿಕೂಲವೇ ಕಾದಿರುವದು. ಸ್ವಮತದ ಕ್ರಮವನ್ನು ಬಿಟ್ಟಲ್ಲಿ ಕಷ್ಟ ಬಿಟ್ಟಿದ್ದಲ್ಲ, ಯಾಕಂದರೆ ಪ್ರಥಮತಃ ತನ್ನ ಧರ್ಮದಲ್ಲಿಯೇ ಅಭಿಮಾನವಿಲ್ಲದವನು ಇನ್ನೊಂದರಲ್ಲಿ ಶ್ರದ್ಧೆಯನ್ನು ಇಡಲಾರನು.ಅಲ್ಲದೆ ಚಾಚೂತಪ್ಪದೆ ಅದನ್ನು ಅನುಸರಿಸಲಾರನು. ಅಂತೆಯೇ ಕ್ರಮ ತಪ್ಪಿ ನಡೆವುದರಿಂದ ಕಷ್ಟಮಿನ್ನುಂಟೆ ?”

ಎಂದಿದ್ದಾರೆ ನಿಜಗುಣರು. ನೈತಿಕ ಧರ್ಮವು ಪ್ರತಿಯೊಬ್ಬರಲ್ಲಿ ಸಮಾನವಾಗಿರುತ್ತದೆ.ಆಚರಣೆಯು ಭಿನ್ನವಾಗಿರಬಹುದು. ಬೇರೆ ಬೇರೆಯಾದ ಆಚರಣೆಗಳನ್ನು ಅನುಸರಿಸುವದು ಸುಲಭವಲ್ಲ. ಅದಕ್ಕಾಗಿ ಶಿವಕವಿಯು ಲಿಂಗನಿಷ್ಠೆಯು ಬೆಳೆಯಲೆಂದು ಸ್ವಮತಮಾರ್ಗವನ್ನು ಬಿಟ್ಟು ವಿಮುಖನಾಗಬಾರದೆಂದು ತಿಳಿಸಿದ್ದಾನೆ. ಉತ್ತಮ ಜೀವನವನ್ನು ಧಾರಣಮಾಡಬಲ್ಲ ಹಾಗೂ ಅದನ್ನು ಪೋಷಿಸಬಲ್ಲ ನೈತಿಕ ಸಾಧನೆಯೇ ಧರ್ಮವೆನಿಸುವದು. ಆತ್ಮನ ಅಭ್ಯುದಯ ಮತ್ತು ಮುಕ್ತಿಯ ನಿಲವುಗಳನ್ನೊಳಗೊಂಡುದೇ ನಿಜವಾದಧರ್ಮವೆನಿಸುವದು. ಯಥಾರ್ಥವಾದ* ಧರ್ಮ ಮರ್ಮವನ್ನು ತಿಳಿಯದೇ ಪರಮತವನ್ನು ಗ್ರಹಿಸುವದು ಭಯಾಕನವೇ ಆಗಿದೆ. ಕ್ಷತ್ರಿಯನಾದ ಅರ್ಜುನನು ರಣರಂಗದಲ್ಲಿ ದಾಯಾದಿಗಳನ್ನು ಗುರುಗಳನ್ನು ಕಂಡು ಮೋಹವಿದ್ದಲವಾಗಿ ತನ್ನ ಕರ್ತವ್ಯ ಕರ್ಮವನ್ನು ಮರೆತು ಕೈಯಲ್ಲಿಯ ಬಿಲ್ಲು ಬಾಣಗಳನ್ನು ಕೆಳಗೆಸೆಯುತ್ತಾನೆ. ನಪುಂಸಕನಂತೆ ಕುಳಿತುಕೊಳ್ಳುತಿರಲು ಕೃಷ್ಣನು ಉಪದೇಶಿಸಬೇಕಾಯಿತು- ಅರ್ಜುನ ! ನೀನು ಕ್ಷತ್ರಿಯ, ಯುದ್ಧ ಮಾಡುವದೇ ನಿನ್ನ ಧರ್ಮ, ಯುದ್ಧದಲ್ಲಿ ಗೆದ್ದರೆ ರಾಜ್ಯ ನಿನ್ನದು. ಸತ್ತರೆ ವೀರಸ್ವರ್ಗ ಸಿಕ್ಕುವದು. ಮತ್ತು-

ಸ್ವಧರ್ಮೇ ನಿಧನಂ ಶ್ರೇಯಃ ಪರಧರ್ಮೋ ಭಯಾವಹಃ

ನಿನ್ನ ಕ್ಷತ್ರಿಯ ಧರ್ಮದಲ್ಲಿ ಮಡಿದರೂ ಮುಕ್ತನಾಗುವಿ. ಅದುಕಾರಣ ಭಯಕ್ಕೆ ಕಾರಣವಾದ ಪರಧರ್ಮವನ್ನು ಅವಲಂಬಿಸುವದು ಬೇಡ. ಕ್ಷತ್ರಿಯನಿಗೆ ಅಧೈರ್ಯ ಮೋಹಗಳು ಹೇಡಿಯನ್ನಾಗಿಸುತ್ತವೆ. ಕೃಷ್ಣನ ಉಪದೇಶದಂತೆ ಕರ್ಮಸನ್ಯಾಸ ಭಾವದಿಂದ ಸ್ವಕರ್ತವ್ಯವನ್ನು ನಿರ್ವಹಿಸಿ ವೀರತನದಿಂದ ಕ್ಷತ್ರಿಯಧರ್ಮವನ್ನು ಕಾಪಾಡಿ, ಕಳೆದುಕೊಂಡ ತಮ್ಮ ರಾಜ್ಯವನ್ನು ಪುನಃ ಪಡೆದನು. ವೀರಶೈವನು ಸ್ವಧರ್ಮವಾದ ಲಿಂಗನಿಷ್ಠೆಯಲ್ಲಿ ತತ್ಪರನಾಗಬೇಕು. ತ್ರಿವಿಧ ಪೂಜ್ಯರನ್ನು ಗೌರವಿಸಬೇಕು ಲಿಂಗನಿಷ್ಠೆಯನ್ನು ತ್ಯಜಿಸದೆ ಅನ್ಯದೇವತೆಗಳಲ್ಲಿ ಮನವೆಳಸದಿದ್ದರೆ ಮಾತ್ರ ಅಮಲೈಕ್ಯದಲ್ಲಿ ಲಿಂಗವನ್ನು ಧರಿಸುವದು ಸಾರ್ಥಕವಾಗುವದು ಅಮಲೈಕ್ಯದಲ್ಲಿ ಲಿಂಗವನ್ನು ಧರಿಸಬಲ್ಲವನು ಲಿಂಗವೇ ತಾನಾಗುವನು. ಶಿವನು ವಿಷವನ್ನು ಕಂಠದಲ್ಲಿರಿಸಿಕೊಂಡು ನೀಲಕಂಠನಾದಂತೆ ಲಿಂಗವನ್ನು ಅಮಲೈಕ್ಯ (ಕಂಠ) ದಲ್ಲಿ ಧರಿಸಿಕೊಳ್ಳುವ ಸಂಪ್ರದಾಯ ಬಂದಿದೆ. ಈ ಯೋಗ್ಯತೆ ಬಹುಜನರಿಗೆ ಸಾಧ್ಯವಾಗುವದಿಲ್ಲ. ಅಜಗಣ್ಣನ್ನು ಕೃಷಿಕಾಯಕ ಮಾಡುತ್ತಿರಲು ಒಮ್ಮೆ

ಹೊಲದಲ್ಲಿ ಘಟಸರ್ಪವು ತನ್ನ ಹಣೆಯಲ್ಲಿಯ ದಿವ್ಯರತ್ನವನ್ನು ಮುಂದಿಟ್ಟು ರಾತ್ರಿ ಸಮಯ ಆ ಪ್ರಕಾಶದಲ್ಲಿ ಮೇಯುತ್ತಿದ್ದುದನ್ನು ಕಂಡನು. ಇವನ ಸಪ್ಪಳದಿಂದ ಜಾಗ್ರತೆಗೊಂಡ ಹಾವು ತನ್ನ ರತ್ನವನ್ನು ಹೆಡೆಯಲ್ಲಿ ಸೇರಿಸಿಕೊಂಡಿತು. ಆಗ ಅಜಗಣ್ಣನಿಗೆ- ಇಂಥ ಪ್ರಾಣಿಯೂ ಸಹ ತನ್ನ ರತ್ನವನ್ನು ಗೌಪ್ಯವಾಗಿಟ್ಟು ಕೊಳ್ಳುವಾಗ ನಾನೇಕೆ ನನ್ನ ವರರತ್ನವೆನಿಸಿದ ಇಷ್ಟಲಿಂಗವನ್ನು ಅಮಳೆಕ್ಯ ಮಾಡಿಕೊಳ್ಳ ಬಾರದು ! ಎಂದು ವಿಚಾರಿಸಿ ತನ್ನ ಜೀವನಾಂತ್ಯದವರೆಗೂ ಲಿಂಗವನ್ನು ಅಮಲೈಕ್ಯದಲ್ಲಿಯೇ ಧರಿಸುತ್ತಿದ್ದನ್ನು ನಿಷ್ಠಾವಂತನೆನಿಸಿ ನಿಜೈಕ್ಯ ಪದವಿಯನ್ನು ಸಾಧಿಸಿ ಮಹಾಶರಣನೆನಿಸಿದನು.ಚನ್ನಬಸವಣ್ಣನವರು ಅಮಲೈಕ್ಯದಲ್ಲಿ ಲಿಂಗವನ್ನು ಧರಿಸುವ ಔಚಿತ್ಯವನ್ನು

ಹಾಗೂ ಯೋಗ್ಯತೆಯನ್ನು ತಮ್ಮ ವಚನದಲ್ಲಿ ವಿವರಿಸಿದ್ದಾರೆ.

ಅಮಳೋಕ್ಯದಲ್ಲಿ ಲಿಂಗವ ಧರಿಸುವಡೆ

ಅನ್ನಪಾನಾದಿಗಳ ಹಂಗಳಿಯಬೇಕು;

ಅಹಂಕಾರ, ಮಮಕಾರ, ಅಷ್ಟಮದಂಗಳಳಿಯಬೇಕು;

ಅನುಭಾವ ಘನವೇದ್ಯವಾಗಬೇಕು;

ಕಾಮದ ಕಣ್ಣ ತೆರೆಯದಿರಬೇಕು;

ಶಬ್ದ ನಿಃಶಬ್ದವಾಗಬೇಕು;

ಮಹದಾಶ್ರಯದಲ್ಲಿ ಮನವು ಲೀಯವಾಗಬೇಕು;

ಕೂಡಲ ಚನ್ನ ಸಂಗಯ್ಯನಲ್ಲಿ ಅಮಳೋಕ್ಯದಲ್ಲಿ ಲಿಂಗವ ಧರಿಸಿ

ಪರಮ ಪರಿಣಾಮಿಯಾಗಬೇಕು || ೯೦೯ ||

ಅಮಲೈಕ್ಯದಲ್ಲಿ ಲಿಂಗವನ್ನು ಧರಿಸುವ ಶರಣನ ಸತ್ಯಮವು ಇಂತಿದೆ. ಅನ್ನಪಾನಾದಿಗಳ ಹಂಗಳಿದು, ಪಾದೋದಕ ಪ್ರಸಾದಂಗಳಲ್ಲಿ ಶ್ರದ್ಧೆಯುಳ್ಳವನಾಗಬೇಕು, ಅಹಂಕಾರ,ಮಮಕಾರ, ಅಷ್ಟಮದಗಳಿಗೆ ಅವಕಾಶವಿಲ್ಲದಾಗಬೇಕು. ಅನುಭಾವವೇ ಮುಖ್ಯವಾಗಬೇಕು. ಕಣ್ಣ ನೋಟದಲ್ಲಿ ಕಾಮನಕಾಟವಳಿದು ಶಿವಮಯವಾಗಿ ಕಾಣುವ ನೋಟವು ಬಲಿಯಬೇಕು. ಲಿಂಗವಿಷಯವಲ್ಲದ ಶಬ್ದಗಳನ್ನು ಮಾತಾಡಲೂಬಾರದು ಕೇಳಲೂ ಬಾರದು. ಸಾಂಸಾರಿಕ ವ್ಯವಹಾರಕ್ಕಾಗಿ ಶಬ್ದಗಳನ್ನು ಬಳಸದೆ ಮಹಾಮಂತ್ರ ಜಪದಲ್ಲಿ ಮನಸ್ಸನ್ನು ಲೀನಗೊಳಿಸಿ ಬಾಹ್ಯ ಶಬ್ದಗಳನ್ನು ನಿಶ್ಯಬ್ದಗೊಳಿಸಬೇಕು. ಮಹಾಲಿಂಗದಲ್ಲಿಯೇ ಮನವು ಲೀನವಾದರೆ ಪರಮ ಪರಿಣಾಮಿಯೆನಿಸುವನು. ನಿಜೈಕ್ಯನಾಗುವನು.

ಇಂಥ ಸತ್ಯಮವನ್ನು ತಿಳಿಸಿ ಅಮಲೈಕ್ಯದಲ್ಲಿ ಲಿಂಗಧಾರಣೆಯನ್ನು ಬೋಧಿಸಿದ ಸದ್ಗುರುವೆ ! ಸದಾಕಾಲವೂ ನನ್ನವನಾಗಿರು. ನಿನ್ನವನನ್ನು ಲಿಂಗಮಯನನ್ನಾಗಿಸುವ ಶಕ್ತಿಯನ್ನು ಕರುಣಿಸು. ನಿನ್ನ ಕರುಣೆಯಿಲ್ಲದೆ ಅಂಗಾಂಗಗಳು ಲಿಂಗಗುಣವನ್ನು ಹೊಂದಲಾರವು.

ಪರಮೇಷ್ಟಲಿಂಗವನು | ಧರಿಸಿದಾಕ್ಷಣ ನಿನ್ನ

ಶರೀರವೇ ಲಿಂಗ-ದಿರವಾಗುತಿಹುದೆಂದು

ಅರುಹಿದೈ ಗುರುವೆ ಕೃಪೆಯಾಗು  || ೧೩೪ ||

ಹಿಂದೆ ವಿವರಿಸಿದಂತೆ ಆರವಯವಗಳಲ್ಲಿ ಧರಿಸಬೇಕಾದ ಗುಣ ಗೌರವಗಳನ್ನು ಮೈಗೂಡಿಸಿಕೊಳ್ಳುತ್ತ ಶಿವಲಿಂಗವನ್ನು ಧರಿಸುವದೇ ಸತ್ಯಮವು, ಆಯಾ ಸ್ಥಾನಗಳಲ್ಲಿ ಲಿಂಗಧಾರಣಮಾಡಲು ಭಕ್ತನು ಆ ಯೋಗ್ಯತೆಯನ್ನು ಅಳವಡಿಸಿಕೊಳ್ಳಲೇ ಬೇಕಾಗುವದು. ಅಂದರೆ ಲಿಂಗಭಕ್ತನು ಲಿಂಗಮಯನಾಗುವನೆಂದು ಶಿವಕವಿಯು ಮುಂದಿನ ಈ ನಾಲ್ಕು ತ್ರಿಪದಿಗಳಲ್ಲಿ ಉಪಸಂಹಾರಗೊಳಿಸುತ್ತಾನೆ. ಸದ್ಗುರು ಕೃಪೆ ಪಡೆದು ಲಿಂಗವನ್ನು ಪಡೆದು ಸದ್ಭಕ್ತನು ಪರರನ್ನೆಂದೂ ಬೇಡಬಾರದು. ಸ್ವತಃ ಕಾಯಕಮಾಡಿ ದಾಸೋಹಿಯಾಗಬೇಕು. ಇಂದ್ರಿಯೇಚ್ಛೆಗೆ ಹರಿವ ಮಂದಬುದ್ಧಿಯನ್ನು ಕಳೆದುಕೊಳ್ಳಬೇಕು. ಇಂದ್ರಿಯಗಳ ಆಧೀನನಾಗದೇ ಅವುಗಳನ್ನು ಲಿಂಗಮುಖಗೊಳಿಸಬೇಕು. ಸುಬುದ್ಧಿಯನ್ನು ಪಡೆದು ಸುಜ್ಞಾನಿಯಾಗಬೇಕು.ಮನಬಂದಂತೆ ಇಂದ್ರಿಯದಾಸನಾಗದೆ ಪರಸ್ತ್ರೀಯರ ಸಂಗವನ್ನು ಸಂಪೂರ್ಣ ತ್ಯಜಿಸಬೇಕು. ಶಿವಭಕ್ತರಲ್ಲದವರಿಗೆ ಶಿರಬಾಗದಿರುವ ಛಲವುಳ್ಳವನಾಗಬೇಕು.ತಪ್ಪಿಯಾದರೂ ಹುಸಿಯನ್ನಾಡಬಾರದು. ಸತ್ಯವೇ ತನ್ನದಾಗಬೇಕು. ಲಿಂಗಪೂಜಾಕ್ರಮದಲ್ಲಿ ತಪ್ಪದಂತೆ ನಡೆಯಬೇಕು. ಇದುವೇ ವೀರಶೈವರ ಅಥವಾ ಲಿಂಗಧಾರಕರ ಸತ್ಯ ಶುದ್ಧ ನಡೆ ಮತ್ತು ನುಡಿಯು, ಇಂಥ ನಡೆ ನುಡಿಯಿಲ್ಲದೆ ಕೇವಲ ಎದೆಯ ಮೇಲೆ

ಲಿಂಗಧರಿಸಿದರೆ ಪರಿಪೂರ್ಣ ಫಲಸಿಕ್ಕದು. ಅದುಕಾರಣ ಇಂಥ ತತ್ತ್ವವನ್ನು ಚನ್ನಾಗಿ ತಿಳಿದು ಲಿಂಗವನ್ನು ಧರಿಸಿಕೊಳ್ಳುವ ಭಕ್ತನ ಶರೀರವೆಲ್ಲ ಲಿಂಗಮಯವಾಗುವದರಲ್ಲಿ ಸಂಶಯವಿಲ್ಲ. ಅವನ ಅಂಗಾಂಗಗಳೆಲ್ಲ ಲಿಂಗಸ್ವರೂಪವನ್ನು ಹೊಂದುವವು. ಅಂಥ ಶರಣನು ಸತ್ಯವಾಗಿಯೂ ಲಿಂಗನಾಗುವನು. ಶಿವನೇ ತಾನಾಗುವನು. ಚನ್ನಬಸವಣ್ಣನವರು ಇಂಥ ಶರಣನ (ವರ್ಣನೆಯ) ನ್ನು ಮನವಾರೆ ಹೊಗಳಿದ್ದು ಗಮನೀಯವಾಗಿದೆ. ನೋಡಿ-

ಸಜ್ಜನ ಸದ್ಭಾವಿ ಅನ್ಯರ ಕೈಯಾಂತು ಬೇಡ

ಲಿಂಗವ ಮುಟ್ಟಿದ ಕೈ ಮೀಸಲು

ಕಂಗಳಲ್ಲಿ ಒಸೆದು ನೋಡ ಪರವಧುವ

ಮನದಲ್ಲಿ ನೆನೆಯ ಪರಹಿಂಸೆಯ

ಮಾನವರ ಸೇವೆಯ ಮಾಡ

ಲಿಂಗವ ಪೂಜಿಸಿ ಲಿಂಗವ ಬೇಡ

ಆ ಲಿಂಗದ ಹಂಗನೊಲ್ಲ

ಕೂಡಲ ಚನ್ನಸಂಗಮನೆ, ನಿಮ್ಮೊಳು

ಸಮರಸೈಕ್ಯವನರಿದ ನಿಜಶರಣನು.

ಬಾಹ್ಯ ಪ್ರಪಂಚದ ಮಾತೇಕೆ ?

ಲಿಂಗವೇ ತಾನಾದ ಶರಣನು ಲಿಂಗದ ಹಂಗಿನೊಳಗೂ ಇರುವದಿಲ್ಲವಾದ ಮೇಲೆ ಲಿಂಗಧಾರಣೆಯ ಮಹತ್ವ ಘನವಾದುದು. ಅಂತೆಯೇ ಶಿವಕವಿಯು ಈ ಲಿಂಗಧಾರಣೆಯ ಹಿರಿಮೆಯನ್ನು ಉದಾಹರಣೆಗಳಿಂದ ಮುಂದಿನ ಮೂರು ತ್ರಿಪದಿಗಳಲ್ಲಿ ವಿವರಿಸುತ್ತಾನೆ. ಅಲ್ಲದೆ ಸಚ್ಚಿಷ್ಯನಿಗೆ ಸದ್ಗುರುವು ಯಾವ ರೀತಿಯಿಂದ ವಾತ್ಸಲ್ಯ-ಪೂರ್ವಕ ತತ್ವವನ್ನು ಬೋಧಿಸುವನೆಂಬುದನ್ನು ತೋರಿಸಿಕೊಟ್ಟಿದ್ದಾನೆ.

ಶ್ರೀಕಂಠ.ಚೌಕೀಮಠ

ಶ್ರೀ ರುದ್ರಮುನಿ ಶಿವಯೋಗಿ ಚರಿತೆ

ಸಂಪಾದಕರು:ಶ್ರೀಗುರುಕಂದ

ಪ್ರಕಾಶಕರು:ಶ್ರೀ.ಮ.ನಿ.ಪ್ರ. ರೇವಣಸಿದ್ದ ಮಹಾಸ್ವಾಮಿಗಳು .ಶಿವಯೋಗಾಶ್ರಮ,ಕಾಳೇನಹಳ್ಳಿ ಶಿಕಾರಿಪುರ ಶಿವಮೊಗ್ಗ.

ಈ ಗ್ರಂಥವನ್ನು ಪೂಜ್ಯ ಶ್ರೀ ಗುರುಕಂದ ( ಶ್ರೀ ಸ್ವಾಮಿ ಶಿವಾತ್ಮಾನಂದ ಪುರಿ) ಯವರು ದಿ.೮ ಅಕ್ಟೋಬರ್‌೨೦೨೩ ರಂದು ಆಶೀರ್ವದಿಸಿದರು. ಮಾರ್ಗದುದ್ದಕ್ಕೂ ಪುಸ್ತಕವನ್ನು ಕಣ್ಣಾಡಿಸುತ್ತಿದ್ದ ನನಗೆ ಒಂದು ವಿಶೇಷ ವಿಷಯವೊಂದು ಗೋಚರವಾಯಿತು.

ನಾನು ಹಲವುಬಾರಿ ಹಲವು ಪುಸ್ತಕಗಳನ್ನು ಓದುವಾಗ ಓದಿದ್ದ ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರು ಮತ್ತು ಪರಮಪೂಜ್ಯ ಹಾವೇರಿಯ ಶ್ರೀ ಶಿವಬಸವ ಮಹಾಸ್ವಾಮಿಗಳು ದೇಹವೆರಡು ,ಆತ್ಮವೊಂದು ಎಂಬ ವಾಕ್ಯ ಬಹಳಬಾರಿ ಕೂತೂಹಲಕ್ಕೆಡೆಮಾಡಿತ್ತು.

ಆದರೆ ಈ ಪುಸ್ತಕ ಓದುವಾಗ ಒಂದು ಸನ್ನಿವೇಷವಂತೂ ಮಂತ್ರಮುಗ್ಧವನ್ನಾಗಿಸಿತು !.

ಶ್ರೀಗುರುಕಂದ ಅವರ  ಪುಸ್ತಕದ  ಕೆಲವು ಸಾಲುಗಳನ್ನೇ ಮತ್ತೆ ಮತ್ತೆ ಬರೆಯುತ್ತಿರುವೆ.

“ರುದ್ರಯ್ಯನ ಮುಖದಲ್ಲಿ ಶೋಭೆಗೊಂಡಿದ್ದ  ಶಿವಕಳೆಯನ್ನು ಶ್ರೀಕುಮಾರಸ್ವಾಮಿಗಳು ಸೂಕ್ಷ್ಮವಾಗಿ  ಗಮನಿಸಿದರು.ತನ್ನ ಮನದಿಂಗಿತವನ್ನು ನುಡಿಯಲಾಗದೆ ನಿಂತಿದ್ದ ರುದ್ರಯ್ಯನ ಬಯಕೆಯನ್ನು ಕೆಳದಿ ಶ್ರೀ ರೇವಣಸಿದ್ದ ಪಟ್ಟಾಧ್ಯಕ್ಷರು ನುಡಿದಿದ್ದರು.”ರುದ್ರಯ್ಯನ ಪ್ರೌಡಶಿಕ್ಷಣಕ್ಕೆ ಶಿವಯೋಗ ಮಂದಿರದಲ್ಲಿ ಅವಕಾಶ ಕಲ್ಪಿಸಿ ಬುದ್ಧಿ”

ಶ್ರೀಕುಮಾರಸ್ವಾಮಿಗಳು, ಕೆಳದಿ ಶ್ರೀಗಳವರ ಪ್ರಸ್ಥಾಪಕ್ಕೆ ಸಮ್ಮತಿಸಿದ್ದರು.ತಮ್ಮೊಡನೆ ರುದ್ರಯ್ಯ ಬರಲು ಅನುವಿತ್ತಿದ್ದರು.

ಆದರೆ ಶಿವಯೋಗಮಂದಿರದ ಆಡಳಿತ ವ್ಯವಸ್ಥೆಯ ವಿಶ್ವಸ್ಥ ಮಂಡಳಿ ವಯಸ್ಸಿನಲ್ಲಿ ಆಗಲೇ ಹಿರಿಯರಾಗಿದ್ದ ರುದ್ರಯ್ಯನಿಗೆ ಮಂದಿರದ ವಟುಗಳೊಂದಿಗೆ ಪ್ರವೇಶಕ್ಕೆ ಅನುಮತಿ ನೀಡಲಿಲ್ಲ.”ಸ್ವಾಮಿಗಳು ತಮ್ಮ ಜೊತೆ ಯಾವುದೋ “ಕರೆಮರಿ” ಕರಕೊಂಡು ಬಂದು ಸೇರಿಸೋಕೆ ನೋಡ್ತಾರೆ” ಎಂದು ಒಬ್ಬ ಸದಸ್ಯರು ಲಘುವಾಗಿ ಮಾತನಾಡಿದ್ದರು. ರುದ್ರಯ್ಯ ಕಪ್ಪಾಗಿದ್ದರಿಂದ “ಕರೆ ಮರಿ” ಎಂದು ಕರೆದಿದ್ದರು ! .

ಮಂದಿರದ ನಿಯಮಗಳಲ್ಲಿ ವಯೋಮಾನ ಮೀರಿದ್ದ ರುದ್ರಯ್ಯನಿಗೆ ಪ್ರವೇಶ  ನಿರಾಕರಿಸಲ್ಪಟ್ಟಿದ್ದನ್ನು ತಮ್ಮ ಅಧಿಕಾರದಲ್ಲಿ ಶ್ರೀಕುಮಾರಸ್ವಾಮಿಗಳು ನಿಯಮ ಸಡಿಲಿಸಿ ಪ್ರವೇಶಕ್ಕೆ ಅನುವು ನೀಡಬಹುದಾಗಿತ್ತು;

ಆದರೆ ಅವರು ಹಾಗೆ ವರ್ತಿಸಲಿಲ್ಲ.

ಒಬ್ಬ ಯೋಗ್ಯ  ಸಾಧಕನಿಗೆ ಮಂದಿರದ ಶಿಕ್ಷಣ ಲಭ್ಯವಾಗಬೇಕೆಂದು ರುದ್ರಯ್ಯನನ್ನು ತಮ್ಮ ಸೇವಾ ಕಾರ್ಯಗಳಿಗೆ ಮರಿದೇವರಾಗಿ ಇರಿಸಿಕೊಂಡರು. ಶ್ರೀಕುಮಾರಸ್ವಾಮಿಗಳ ಮೊದಲ ದರ್ಶನದಲ್ಲೇ ತನ್ನ ನಿಜ ಗುರುವನ್ನು ದರ್ಶಿಸಿದ್ದ ಧನ್ಯತೆಯಲ್ಲಿ ಶ್ರೀ ಗುರು ಚರಣಕ್ಕೆ ಅಂತರಂಗದಲ್ಲೇ ಸರ್ವಾರ್ಪಣೆ ಮಾಡಿಕೊಂಡಿದ್ದ ರುದ್ರಯ್ಯ ಕೊನೆಗೂ ತನ್ನ ಶ್ರೀ ಗುರುವಿನ ಕೃಪಾಕಂದನಾಗಿ ಅವರ ಆಪ್ತವಲಯದೊಳಗೆ ಸೇರಿದ್ದ……

ಶ್ರೀಕುಮಾರಸ್ವಾಮಿಗಳು ಮಂದಿರದ ವಿದ್ಯಾರ್ಥಿಗಳೊಂದಿಗೆ ರುದ್ರಮುನಿದೇವರನ್ನೂ  ಪರೀಕ್ಷೆಗೆ  ವಿದ್ಯಾರ್ಥಿಯಂದು ನೊಂದಾಯಿಸಿದ್ದರು.ಒಬ್ಬ ಕಾರಕೂನರ ಜೊತೆ ಪರೀಕ್ಷೆ ಕಟ್ಟಿದ್ದ ವಿದ್ಯಾರ್ಥಿಗಳು ರೈಲಿನಲ್ಲಿ ಮುಂಬಯಿಗೆ ಹೋಗಿ ಪರೀಕ್ಷೆ ಬರೆದು ಬಂದಿದ್ದರು.ಫಲಿತಾಂಶ ಬಂದಾಗ ಎಲ್ಲರಿಗೂ ಆಶ್ಚರ್ಯವಾಗಿತ್ತು.ರುದ್ರಮುನಿದೇವರು ಪ್ರಥಮಶ್ರೇಣಿಯಲ್ಲಿ ಉತ್ತೀರ್ಣರಾಗಿ ಎಲ್ಲರಿಗಿಂತ ಹೆಚ್ಚು ಅಂಕ ಗಳಿಸಿದ್ದರು.ಆಗ ಶ್ರೀ ಕುಮಾರಸ್ವಾಮಿಗಳು “ಕರೆ ಮರಿ”  ಎಂದು ರುದ್ರಮುನಿ ದೇವರನ್ನು ಕರೆಯುತ್ತಿದ್ದವರಿಗೆ ಅರಿವಾಗುವಂತೆ “ಇವನು ಕರೆ ಮರಿಯಲ್ಲ ,ಖರೆ ಮರಿ” ಎಂದು ನುಡಿದಿದ್ದರು.

…….. ಶ್ರೀಕುಮಾರಸ್ವಾಮಿಗಳು ತಮ್ಮ ಖರೆ ಮರಿ ರುದ್ರಮುನಿ ದೇವರನ್ನುತಾವು ಸ್ಥಾಪಿಸಿದ್ದ ಕಾಳೇನಹಳ್ಳಿಯ   ಶಿವಯೋಗಾಶ್ರಮಕ್ಕೆ ಕಳುಹಿಸಲು ತಿರ್ಮಾನ ಮಾಡಿದರು……

……ವರುಷಕ್ಕೆರಡು ಮೂರು ಸಲ ಮಲೆನಾಡ ಪ್ರವಾಸಕ್ಕೆ ಬರುತ್ತಿದ್ದ ಶ್ರೀಕುಮಾರಸ್ವಾಮಿಗಳು ತಮ್ಮ ಮಾತನ್ನು ಪಾಲಿಸುತ್ತ ಸಾಧನೆಯಲ್ಲಿರುವ ಶ್ರೀರುದ್ರಮುನಿದೇಶಿಕರನ್ನುಕಂಡು ಆನಂದಗೊಳ್ಳುತ್ತಿದ್ದರು.೪೦೦ ಎಕರೆ ಜಮೀನಿನ ಕೃಷಿಗಾಗಿ ಆಗಿನ್ನೂ ಅಪರೂಪವಾಗಿದ್ದ ಟ್ರಾಕ್ಟರ ತರಿಸಿ ಶ್ರೀಕುಮಾರಸ್ವಾಮಿಗಳು ವ್ಯವಸ್ಥೆ ಮಾಡಿದರು.ಹೀಗೆ ಭೇಟಿಯಿತ್ತು ತಂಗುವ ತಮ್ಮ ನಿಜಗುರುವಿನಲ್ಲಿ ಶ್ರೀರುದ್ರಮುನಿ ದೇಶಿಕರು ಮುಂದಿನ ದೀಕ್ಷೆಗೆ ಪ್ರಾರ್ಥಿಸುತ್ತಿದ್ದರು.”ಇನ್ನೂ ಸಮಯ ಬಂದಿಲ್ಲ ತಾಳಿಕೋ” ಎಂದು ಶ್ರೀಕುಮಾರಸ್ವಾಮಿಗಳು ಒಂದೇ ಒಂದು ಮಾತನ್ನು ಪ್ರತಿಸಲವೂ ಹೇಳುತ್ತಿದ್ದರು.

ಶ್ರೀರುದ್ರಮುನಿ ದೇಶಿಕರು ಶಿವಯೋಗಾಶ್ರಮಕ್ಕೆ ಬಂದು ನಿಂತು ಹತ್ತು ವರುಷ ಉರಳಿದ್ದವು.ಅವರು ಪ್ರಾರ್ಥಿಸುತ್ತಿದ್ದ ಶಿವಯೋಗಮಾರ್ಗದ ಮುಂದಿನ ದೀಕ್ಷೆ ಇನ್ನೂ ಪ್ರಾಪ್ತವಾಗಿರಲಿಲ್ಲ.ಹೀಗಿರುವಾಗಲೇ ಶ್ರೀರುದ್ರಮುನಿ ದೇಶಿಕರ ಸಾಧನೆ ಸುಳಿಯೊಳಗೆ ಸಿಲುಕಿದಂಥ ಆಘಾತದ ಸುದ್ದಿ ಅವರನ್ನು ದಿಕ್ಕೆಡಿಸುವಂತೆ ಮಾಡಿತ್ತು.ತಮ್ಮ ನಿಜಗುರು,ತಮ್ಮ ಭವಕ್ಕಂಟಿದ್ದ ಬಂಧನವನ್ನು ತೊಡೆದುಕೊಳ್ಳಲು ಶಿವಯೋಗ ಮಾರ್ಗದಲ್ಲಿ ತಮ್ಮನ್ನು ತೊಡಗಿಸಿದ್ದ,ತಾವು ಸರ್ವಸ್ವವೆಂದು ನಂಬಿದ್ದ ಶ್ರೀಕುಮಾರ ಸ್ವಾಮಿಗಳು ಲಿಂಗೈಕ್ಯರಾಗಿದ್ದರು.

ತಮ್ಮ ಶ್ರೀಗುರುವಿನ ಅಗಲಿಕೆಯ ದುಃಖ ಶಮನಗೊಳ್ಳಲು ಶ್ರೀರುದ್ರಮುನಿ ದೇಶಿಕರಿಗೆ ಬಹಳಷ್ಟು ದಿನ ಹಿಡಿದವು.ಪೂಜೆಗೆ ಕುಳಿತಾಗ ತಮ್ಮ ನಿತ್ಯದ  ಕಾಯಕದಲ್ಲಿ ಮುಳುಗಿದಾಗ ಶ್ರೀಕುಮಾರೇಶನ ಮೂರ್ತಿ ಕಂಗಳೆದರು ಸುಳಿದು ನಿಲ್ಲುತ್ತಿತ್ತು,ಕಿವಿಯಲ್ಲಿ ಅವರ ನುಡಿಗಳು ಅನುರಣಿಸುತ್ತಿದ್ದವು. “ಹುಟ್ಟುಗುರುಡನಿಗೆ ಕೋಲ ಕೊಟ್ಟು ಕೈ ಬಿಟ್ಟಂತೆ,ಮುಟ್ಟಿ ಅಭಯವಿತ್ತು ಕೈ ಬಿಟ್ಟಿಯಾ ಕುಮಾರೇಶಾ…ನಿಮ್ಮಡಿಯ ಮರೆಸದಂತೆ ಮುನ್ನೆಡಸು ಕುಮಾರೇಶ..” ಎಂದು ಮೊರೆಯಿಡುತ್ತಿದ್ದರು.ಆಗ ಕನಸಿನಲ್ಲಿ ದರ್ಶನವಿತ್ತ ಶ್ರೀಕುಮಾರಸ್ವಾಮಿಗಳು “ಸಾಧಕ ಹೀಗೆ ದುಃಖಿಯಾಗಬಾರದು” ಎಂದಿದ್ದರು.ತಾವು ಸೂಕ್ಷ್ಮ ಕಾಯದಲ್ಲಿರುವ ಸುಳಿವು ನೀಡಿದ್ದರು.

ಮುಂದೆ ಕೆಲವು ದಿನ ಕಳೆಯುವದರಲ್ಲಿ ಶ್ರೀ ಶಿವಬಸವಸ್ವಾಮಿಗಳು ಶಿವಯೋಗಅಶ್ರಮಕ್ಕೆ ಆಗಮಿಸಿದರು.ಶ್ರೀಕುಮಾರ ಸ್ವಾಮಿಗಳ ಜೊತೆಗೂಡಿ ಬರುತ್ತಿದ್ದವರು ಈಗ ಒಬ್ಬರೇ ಬಂದಿರುವದನ್ನು ಕಂಡು ಶ್ರೀ ರುದ್ರಮುನಿ ದೇಶಿಕರಲ್ಲಿ ಮತ್ತೆ ತಮ್ಮ ಶ್ರೀಗುರುವಿನ ಅಗಲಿಕೆ ಪುಟಿದಿದ್ದರೂ ದುಃಖವನ್ನು ಹತ್ತಿಕ್ಕಿಕೊಂಡಿದ್ದರು.ತಮ್ಮ ಕೊನೆ ಕ್ಷಣಗಳಲ್ಲಿ ಶ್ರೀಕುಮಾರಸ್ವಾಮಿಗಳು ಶಿವಯೋಗಮಂದಿರವನ್ನು ,ಸಾಧಕ-ವಟುಗಳನ್ನು ತಮ್ಮ ಮಡಿಲಿಗೆ ಹಾಕಿರುವ ನುಡಿಯನ್ನು ನುಡಿದಿದ್ದು ಶ್ರೀರುದ್ರಮುನಿ ದೇಶಿಕರನ್ನುಕಂಡಾಗ ಶ್ರೀಶಿವಬಸವಸ್ವಾಮಿಗಳಿಗೆ ನೆನಪಾಗಿತ್ತು.ಪೂಜಾದಿಗಳನ್ನು ಮುಗಿಸಿ ಶ್ರೀಶಿವಬಸವ ಸ್ವಾಮಿಗಳು ಒಂದೆರಡು ದಿನ ತಂಗುವದಾಗಿ ತಿಳಿಸಿದರು.ಶ್ರೀರುದ್ರಮುನಿ ದೇಶಿಕರು ದುಗುಡಗೋಳ್ಳದಿರಲು ಹಿತೋಕ್ತಿಗಳನ್ನು ಹೇಳಿದರು.ದೇಶಿಕರು ಮೌನವಾಗಿ ಆಲಿಸಿದರು.

ಶಿವಯೋಗಾಶ್ರಮದಲ್ಲಿ ತಂಗಿದ್ದ ಶ್ರೀಶಿವಬಸವಸ್ವಾಮಿಗಳು ಅಂದು ಬಿಲ್ವ ವೃಕ್ಷದ ಕಟ್ಟೆಯಮೇಲೆ ಆಸೀನರಾಗಿದ್ದರು.

ದೃಷ್ಠಿಕಂಗೆಳೆದುರಿನ ಕುಮುದ್ವತಿಯಲ್ಲಿ ನೆಟ್ಟಿತ್ತು.ತೀಡುವ ಗಾಳಿಯ ಸುಯಿಲು ಕೂಡ ನಿಂತು ನಿಶ್ಚಲವಾಗಿತ್ತು.ತಮ್ಮ ಬೆನ್ನಿನ ಮೇಲೆ  ಯಾರೋ ನಿಧಾನವಾಗಿ ಅಕ್ಷರಗಲನ್ನು ಬರೆಯುತ್ತಿರುವ ಭಾಸವಾಯಿತು.

ಶ್ರೀಶಿವಬಸವ ಸ್ವಾಮಿಗಳು ಧ್ಯಾನಸ್ಥರಾಗಿ ತಮ್ಮ ಬೆನ್ನಿನ ಬರಹವನ್ನು ಗುರುತಿಸಲಾರಂಭಿಸಿದರು.”ರುದ್ರಮುನಿ ದೇಶಿಕರಿಗೆನಿರಂಜನ ಸ್ಥಲ ದೀಕ್ಷೆ ದಯಪಾಲಿಸುವದು” ಸಂದೇಶ ಪೂರ್ಣಗೊಂಡಾಗ ಇದು ಶ್ರೀಕುಮಾರಸ್ವಾಮಿಗಳ ಸೂಚನೆ ಎಂದು ಶ್ರೀಶಿವಬಸವ ಸ್ವಾಮಿಗಳಿಗೆ ಅರಿವಾಗಿತ್ತು. ಶ್ರೀ ರುದ್ರಮುನಿ ದೇಶಿಕರು ಈಗ ನಿಮ್ಮ ಬೆನ್ನು ಬಿದ್ದಿದ್ದಾರೆ ಎನ್ನುವದನ್ನು ಹೀಗೆ  ಶ್ರೀಕುಮಾರಸ್ವಾಮಿಗಳು ತಮಗೆ ತಿಳಿಸಿದ್ದು ಶ್ರೀ ಶಿವಬಸವ ಸ್ವಾಮಿಗಳಿಗೆ ಆಶ್ಚರ್ಯವಾಗಿತ್ತು.

ಈ ವಿಷಯವನ್ನು ಶ್ರೀ ರುದ್ರಮುನಿ ದೇಶಿಕರಿಗೆ ತಿಳಿಸಿದರು. ತಮ್ಮ ಅಂತರಂಗದ ಪ್ರಾರ್ಥನೆ ಫಲಿಸುವಂತೆ ತಮ್ಮನ್ನು ಉದ್ದರಿಸಲು ಶ್ರೀಕುಮಾರ ಸ್ವಾಮಿಗಳು ತೋರಿರುವ ಲೀಲೆ ಶ್ರೀರುದ್ರಮುನಿ ದೇಶಿಕರಿಗೆ “”ಸೂಕ್ಷ್ಮ ಕಾಯದಲ್ಲಿದ್ದೇವೆ”” ಎಂದು ನೀಡಿದ್ದ ಸುಳಿವಿಗೆ ಸಾಕ್ಷಿಯಂತೆ ಕಂಡಿತ್ತು…

ಗ್ರಂಥದ ಲೇಖಕರಾದ ಶ್ರೀಗುರುಕಂದ ಅವರ  ಕಣ್ಣಿಗೆ ಕಟ್ಟುವ ಈ ಸನ್ನಿವೇಷದ ವರ್ಣನೆ ಸರಳ ಭಾಷೆಯಲ್ಲಿ ಬಳಸಿದ ಒಂದು ಅವಿರಳ ಶಬ್ಧ  “ಸೂಕ್ಷ್ಮ ಕಾಯದಲ್ಲಿದ್ದೇವೆ” ಪುಸ್ತಕದ ಪುಟ-ಪುಟಗಳಲ್ಲಿ ಮತ್ತು ಶ್ರೀ ರುದ್ರಮುನಿ ಶಿವಯೋಗಿಗಳ ಲೀಲೆಗಳಲ್ಲಿ ಪ್ರತಿಧ್ವನಿಸಿತು. ಹಾಗೆಯೇ ಶ್ರೀಶಿವಬಸವ ಸ್ವಾಮಿಗಳಿಗಳ ಬೆನ್ನ ಮೇಲೆ ಮೂಡಿದ ಸಂದೇಶ ನನ್ನ ಕೂತೂಹಲದ ವಾಕ್ಯ “ ಪರಮಪೂಜ್ಯ ಹಾನಗಲ್ಲ ಶ್ರೀಕುಮಾರೇಶ್ವರರು ಮತ್ತು ಪರಮಪೂಜ್ಯ ಹಾವೇರಿಯ ಶ್ರೀಶಿವಬಸವ ಮಹಾಸ್ವಾಮಿಗಳು ದೇಹವೆರಡು ,ಆತ್ಮವೊಂದು “ ಎಂಬ ವಾಕ್ಯಕ್ಕೆ ಖಚಿತ ಸಾಕ್ಷಿ ನೀಡಿತು .

  • ಶ್ರೀಕಂಠ.ಚೌಕೀಮಠ

೧೦-೧೦-೨೦೨೩

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,‌

ಸಪ್ಟಂಬರ ತಿಂಗಳು ಪರಮ ಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರು ಭುವಿಗೆ ಅವತರಿಸಿದ ಪವಿತ್ರ ಮಾಸ.

೧೫೬ ನೆಯ ಜಯಂತಿ ಮಹೋತ್ಸವ ಸಂಭ್ರಮಾಚರಣೆಯ ಪರ್ವಕಾಲ.

ಈ ಸಂಧರ್ಭದಲ್ಲಿ ಪ್ರಕಟವಾಗುತ್ತಿರವ  “ಋಣಮುಕ್ತರು” ಎಂಬ ಲೇಖನದ ಆಯ್ದ ಸಾಲುಗಳು ಹೀಗಿವೆ……

ಅನೀತಿ-ಅನ್ಯಾಯ-ಅನಾಚಾರ ಹಾಗೂ ಧರ್ಮಗ್ಲಾನಿಯಾದ ಸಂದರ್ಭದಲ್ಲಿ ಸಿಡಿಲಿನಂತೆ ಸ್ಫೋಟಗೊಂಡು ಆವಿರ್ಭವಿಸಿದ ವಿಭೂತಿ ಪುರುಷರು ಅಜ್ಞಾನಾಂಧಕಾರದಲ್ಲಿ ಮುಳುಗಿದ ಜನತೆಯನ್ನು ಮೇಲೆತ್ತಲೆತ್ನಿಸಿ, ನೂತನ ಪ್ರಜ್ಞಾವಂತ ಸಮಾಜವೊಂದರ ರೂವಾರಿಗಳೆನಿಸುತ್ತಾರೆ. ಸಮಾಜಕ್ಕೆ ತಮ್ಮನ್ನು ಸಮರ್ಪಿಸಿಕೊಂಡು, ಜನಸಾಮಾನ್ಯರ ನೋವನ್ನು ಕಂಡು, ಮರುಗಿ ಸುಮ್ಮನಾಗದೆ, ಅದರಿಂದ ಕಳವಳಗೊಂಡು, ಸಂತಾಪವನ್ನು ತೋಡಿಕೊಂಡು, ತಮ್ಮ ಸಾತ್ವಿಕ ಶಕ್ತಿಯಿಂದ ಅದಕ್ಕೆ ಪರಿಹಾರ ಹುಡುಕಲು ಶ್ರಮಿಸುತ್ತಾರೆ; ಸಮಾಜದಲ್ಲಿ ಧರ್ಮವನ್ನು ನೆಲೆಗೊಳಿಸಿ, ಶೈಕ್ಷಣಿಕ ಕ್ರಾಂತಿಯನ್ನು ಗೈದು ಅದರ ಸರ್ವತೋಮುಖ ಅಭಿವೃದ್ಧಿಗಾಗಿ ಹೆಣಗುತ್ತಾರೆ.

ಸೈಪಿನ ಆಗರವೆನಿಸಿದ ಭರತಭೂಮಿಯಲ್ಲಿ ಅವತರಿಸಿದಷ್ಟು ವಿಭೂತಿ ಪುರುಷರು ಜಗತ್ತಿನ ಮತ್ತಾವ ದೇಶದಲ್ಲೂ ಕಾಣಸಿಗುವುದಿಲ್ಲ. ಭಾರತಾಂಬೆಯ ಜೇಷ್ಠ ಸುಪುತ್ರಿಯೆನಿಸಿದ ಕನ್ನಡಾಂಬೆಯ ಪುಣ್ಯೋದರದಲ್ಲಂತೂ ಅಸಂಖ್ಯ ಶರಣ-ದಾಸ-ಸಂತ-ಮಹಂತರು ಉದಯಿಸಿದ್ದಾರೆ. ಅವರಲ್ಲಿ ಹಾನಗಲ್ಲ ವಿರಕ್ತಮಠದ ಪೀಠಾಧ್ಯಕ್ಷರಾದ ಲಿಂ. ಶ್ರೀ ಮ. ನಿ. ಪ್ರ ಕುಮಾರ ಮಹಾಸ್ವಾಮಿಗಳು  ಈ ಮಾಲಿಕೆಯೊಳಗಿನ ದಿವ್ಯರತ್ನವೆನ್ನಬೇಕು.

ವೀರವಿರಾಗಿಗಳಾಗಿ ಕೆಲವರು, ಶಾಲೆ-ಪಾಠಶಾಲೆಗಳನ್ನು ಸ್ಥಾಪಿಸಿ ವಿದ್ಯಾಪ್ರಸಾರ ಕಾರಕೈಕೊಂಡು ವಿದ್ಯಾಪ್ರೇಮಿಗಳಾಗಿ ಮತ್ತೆ ಕೆಲವರು, ತತ್ವಜ್ಞಾನ ತತ್ವೋಪದೇಶದ ಬೋಧನೆಯ ಪುಣ್ಯಕಾರದಿಂದ ಇನ್ನು ಕೆಲವರು, ಪರಧರ್ಮೀಯರೊಂದಿಗೆ ವಾದಕ್ಕಿಳಿದು ಗೆದ್ದು ಪರವಾದಿಗಳೆನಿಸಿ ಹಲವರು, ಸಮಾಜವನ್ನು ಸಮರ್ಪಕವಾಗಿ ಸಂಘಟಿಸಿ ಯಶಸ್ವಿಯಾದ ಕೆಲವರು ನಮ್ಮಲ್ಲಿದ್ದಾರೆ, ಬಿಡಿಬಿಡಿಯಾಗಿ ಈ ಎಲ್ಲ ಕಾರ್ಯಗಳನ್ನು ಕೈಕೊಂಡು, ಇಡಿಯಾಗಿ ಎಲ್ಲ ಕ್ಷೇತ್ರಗಳಲ್ಲೂ ನಿಷ್ಠೆಯಿಂದ ದುಡಿದೂ, ಅಪರೂಪವಾದುದನ್ನೇ ಸಾಧಿಸಿದ ಹಾನಗಲ್ಲ ಕುಮಾರ ಸ್ವಾಮಿಗಳು ವೀರಶೈವ -ಲಿಂಗಾಯತರೆಲ್ಲರಿಗೂ  ಪರಮಾರಾಧ್ಯರು. ಅವರು ವಟುವತ್ಸಲರು, ಕಲಾಯೋಗಿಗಳು, ಕಾಯಕಪ್ರೇಮಿಗಳು, ನಮಗೆ ಅವರ ವ್ಯಕ್ತಿತ್ವ ಹಾಗೂ ಚಾರಿತ್ರ್ಯ ತುಂಬ ಮುಖ್ಯ.

ವ್ಯಕ್ತಿಯೊಬ್ಬ ಈ ಭೂಮಿಯ ಮೇಲೆ ಹುಟ್ಟುತ್ತಲೇ ಎಷ್ಟೋ ಋಣಗಳನ್ನು ಹೊತ್ತುಕೊಂಡೇ ಹುಟ್ಟಿ ಬರುತ್ತಾನೆ. ಮಾತಾಪಿತರ ಋಣ, ಮಾತೃಭೂಮಿಯ ಋಣ, ಗುರು ಋಣ, ಪರಿವಾರದ ಋಣ, ಅನ್ನದ ಋಣ, ಧರ್ಮದ ಋಣ, ಸಮಸ್ತ ಸಮಾಜದ ಋಣ-ಹೀಗೆ ಋಣದ ಜಾಲವು ಅನಂತವಾಗಿದೆ. ಡಿ.ವಿ.ಜಿ.ಯವರು ಹೇಳುವ-

ಋಣವ ತೀರಿಸಬೇಕು ಋಣವ ತೀರಿಸಬೇಕು

ಋಣವ ತೀರಿಸುತ ಜಗದಾದಿ ಸತ್ವವನು

ಜನದಿ ಕಾಣುತ್ತದರೊಳ್ ಒಂದುಗೂಡಬೇಕು.

ಎಂಬ ಮಾತು ಅತ್ಯಂತ ಗಮನಾರ್ಹವಾಗಿದೆ. ವ್ಯಕ್ತಿ ತಾನು ಹೊತ್ತು ತಂದ ಹಲವು ಹತ್ತು ಋಣಗಳನ್ನು ಹೊತ್ತು ಹೊತ್ತಿಗೆ ತೀರಿಸಿ ಋಣಮುಕ್ತನಾಗ ಬೇಕಾಗುತ್ತದೆ. ಹೀಗೆ ಸಕಾಲಕ್ಕೆ ಸಮಸ್ತ ಋಣಗಳನ್ನು ಅರ್ಥಪೂರ್ಣವಾಗಿ ತೀರಿಸಿ ಋಣವಿಮುಕ್ತರೆನಿಸಿದವರು ಹಾನಗಲ್ಲ ಶ್ರೀ ಗುರು ಕುಮಾರೇಶರು.

ಶ್ರೀಕುಮಾರ ತರಂಗಿಣಿ  ೨೦೨೩ ಸಪ್ಟಂಬರ್  ಸಂಚಿಕೆಯ ಲೇಖನಗಳ ವಿವರ

  1. ಮಂಗಳಾರತಿಯನು ನಾನು ಎತ್ತಿ ಪಾಡುವೆ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೮ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ೬: ಮಾತೆಯ ಆಗಮನ, ಮದುವೆಯ ಆಲೋಚನೆಲೇಖಕರು: ಪೂಜ್ಯ ಜ.ಚ.ನಿ
  4. : ಲೇಖಕರು :ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  5. ಲೇಖಕರು : ಡಾ. ಬಸವರಾಜ ಜಗಜಂಪಿ
  6.   ಲೇಖಕರು : ಬಿ. ಶಿವಮೂರ್ತಿ ಶಾಸ್ತ್ರಿ
  7. ಲೇಖಕರು : ಪಂಡಿತ ನಾಗಭೂಷಣ ಶಾಸ್ತ್ರಿಗಳು
  8.  
  9. ೨ : ಶ್ರೀಕುಮಾರೇಶ್ವರ ಅಭಂಗ

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು

(ರಾಗ – ಜಂಗಲ್)

ಮಂಗಳಾರತಿಯನು ನಾನು ಎತ್ತಿ ಪಾಡುವೆ |

ಪೊಂಗಿ ಶ್ರೀ ಗುರು ಲಿಂಗ

ಜಂಗಮರನು ಬೇಡುವೆ | || ಪ ||

ತುಂಗ ಶಿವನ ಮುಖದಿ ಜನಿಸಿ |

ಮಂಗಲಾತ್ಮನಾಜ್ಞವಹಿಸಿ |

ಲಿಂಗಮೂರ್ತಿ ಅಂಗಗೊಳಿಸಿ |

ಸಂಗ ಶರಣರ ಭೋ ಪುಂಗ ಗುರುವರ |

ಮಂಗಗುಣವ ಕಳೆದು ಜನರ ಹಂಗು ತೊಲಗಿಸೈ || 1 ||

ಭವ್ಯ ಶಿರದ ಲಿಂಗ ಮೂರ್ತಿ |

ಸೇವ್ಯ ಗುರುವರನ ಕೀರ್ತಿ |                                  

ದಿವ್ಯ ತರದ ರೂಪವೆತ್ತಿ |

ಸರ್ವ ಭಕ್ತರ ಭೋ ಗರ್ವಸಂಹರ |

ಪೂರ್ವದೋಷವನ್ನು ಕಳೆದು ಸರ್ವ ಪಾಲಿಸೈ || 2 ||

ದೈನ್ಯ ತನದಿ ಗುರುವು ತಾನು |

ಚೆನ್ನ ಶಿವನ ಪ್ರಾರ್ಥಿಸಿಹನು |

ಶೂನ್ಯ ಚಕ್ರ ಸ್ವಾಮಿಯನ್ನು |

ಎನ್ನ ಪಾಲಿಸೈ ಭೋ ಮುನ್ನ ಲಾಲಿಸೈ |

ಬನ್ನಗುಣವ ಕಳೆದು ಉನ್ನತದಿ ಪೋಷಿಸೈ || 3

ಲೇಖಕರು :

ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ

ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ.

ಮುಂಡರಗಿ

ಇಂತಪ್ಪ ಲಿಂಗದಾ | ದ್ಯಂತ ಷಡುಸ್ಥಾನದೊಳು

ದಾಂತಾದಿ ಮಾಂತ-ಮಂತ್ರ ಮೂಲವ ತೋರಿ

ದಂತಪ್ಪ ಗುರುವೆ ಕೃಪೆಯಾಗು   ೧೨೬ |

ಮೇಲೆ ವಿವರಿಸಿದಂಥ ಈ ಇಷ್ಟಲಿಂಗದ ಆದ್ಯಂತಗಳೆನಿಸಿದ ವೃತ್ತ, ಕಟಿ ವರ್ತುಳ, ಗೋಮುಖ, ನಾಳ, ಚಿತ್ಪೀಠಗಳೆಂಬ ಆರು ಸ್ಥಾನಗಳಲ್ಲಿ ಕ್ರಮವಾಗಿ ನ ಕಾರ; ‘ಮ’ ಕಾರ; ‘ಶಿ’ ಕಾರ; ‘ವಾ’ ಕಾರ; ‘ಯ’ ಕಾರ; ಹಾಗೂ `ಓಂ’ ಕಾರಗಳೆಂಬ ಷಣ್ಮಂತ್ರವನ್ನು ತೋರಿಸಿದಂತಪ್ಪ ಸದ್ಗುರುವೆ ಕೃಪೆಯಾಗು ಎಂದು ಶಿವಕವಿಯು ಲಿಂಗಷಟ್‌ಸ್ಥಲಗಳಲ್ಲಿ ಷಡಕ್ಷರ ಮಂತ್ರದ ವ್ಯಾಪಕತೆಯನ್ನು ಹಾಗೂ ಮರ್ಮವನ್ನು ವಿವರಿಸಿ ಉಪಸಂಹಾರಗೊಳಿಸಿದ್ದಾನೆ. ಲಿಂಗದ ಷಟ್‌ಸ್ಥಾನಗಳನ್ನು ವಿಭಾಗಿಸಿ ಮಂತ್ರಗಳನ್ನು ಸಂಬಂಧಿಸುವ ಪರಿಯು ಶರಣಕವಿಯ ಮಂತ್ರಮಹತ್ವವನ್ನು ವ್ಯಕ್ತಗೊಳಿಸಿದೆ.

‘ದಾಂತಾದಿ ಮಾಂತ ಮಂತ್ರಮೂಲ’ ವೆಂಬ ವಾಕ್ಯ ಪ್ರಯೋಗದಿಂದ ಷಡಕ್ಷರ ಮಹಾಮಂತ್ರದ ಸುಂದರಸ್ವರೂಪ ಹೊರಹೊಮ್ಮಿದೆ. ಇಲ್ಲಿ ಶಿವಕವಿಯ ವೈಯಾಕರಣದ ಜ್ಞಾನ ವಿಸ್ತಾರತೆಯೂ ವಿಸ್ತೃತಗೊಂಡಿದೆ. ದಾಂತವೆಂದರೆ ತವರ್ಗದ ಅಂತ್ಯಾಕ್ಷರವು ‘ನ’ ಕಾರ. ನಕಾರವೇ ಆದಿಯಾಗಿಯುಳ್ಳ. ಮಾಂತದ ಆದಿಯಾದ ಅಕ್ಷರ ‘ಯ’ ಕಾರವು . ಅರ್ಥಾತ್ ಪವರ್ಗದ ಅಂತಿಮಾಕ್ಷರ ಮಕಾರ. ಈ ಮಕಾರದ ಮೇಲೆ ಆದಿಯಾಗಿ ಬರುವ ಅಕ್ಷರವೇ ಯಕಾರವು . ನಕಾರಾದಿ ಯಕಾರ ಕಡೆಯಾದ ಮಂತ್ರವೆ೦ದಾಗುವದು. ಇನ್ನು ”ಮಂತ್ರ ಮೂಲ’ ವೆಂದರೆ ಈ ಮೇಲಿನ ಪಂಚಾಕ್ಷರಿ ಮಂತ್ರಕ್ಕೆ ಆಧಾರವಾದ ಪ್ರಣವವೇ ಓಂಕಾರವು. ಇಲ್ಲಿ ಈ ದಾರ್ಶನಿಕ ಶಿವಕವಿಯು ವ್ಯಾಕರಣ ಜ್ಞಾನವೂ ಚಮತ್ಕಾರಿಕ ರೀತಿಯಲ್ಲಿ ಪ್ರಕಟಗೊಂಡಿದೆ.

ಈ ಷಡಕ್ಷರ ಮಹಾಮಂತ್ರದ ಷಟ್‌ತತ್ತ್ವವನ್ನು ‘ಶಿವತತ್ತ್ವ ರತ್ನಾಕರದಲ್ಲಿ ಸುಂದರವಾಗಿ ವರ್ಣಿಸಿದ್ದಾರೆ-

ಯಕಾರಃ ಪರಿಪೂರ್ಣತ್ವಂ ವಾಕಾರೋ ನಿತ್ಯಮೇವ ಚ |

 ಆನಂದಶ್ಚ ಶಿಕಾರಃ ಸ್ಯಾತ್ ಮಕಾರಶ್ಚಿತ್ ಸ್ವರೂಪಕಃ ||

ನಕಾರಃ ಸತ್‌ ಸ್ವರೂಪಂ ಚ ಪ್ರಣವೋ ವಿಶ್ವರೂಪಕಃ |

ಶಿವನು ಸತ್, ಚಿತ್, ಆನಂದ, ನಿತ್ಯ, ಪರಿಪೂರ್ಣವಾಗಿ ವ್ಯಾಪಕನಾಗಿರುವಂತೆ ಶಿವಾತ್ಮಕವಾದ ಈ ಮಹಾಮಂತ್ರವೆನಿಸಿದ ಷಡಕ್ಷರವೂ ಶಿವನ ಷಟ್‌ಸ್ವರೂಪಗಳನ್ನು ಒಳಗೊಂಡಿದೆ. ಯಕಾರವು ಪರಿಪೂರ್ಣತ್ವವನ್ನು ಹೊಂದಿದ್ದರೆ ವಾಕಾರವು ನಿತ್ಯತ್ವದ

ದ್ಯೋತಕವಾಗಿದೆ. ಶಿಕಾರವು ಆನಂದಮಯವೆನಿಸಿದರೆ ಮಕಾರವು ಜ್ಞಾನ ಸ್ವರೂಪವುಳ್ಳುದಾಗಿದೆ. ನಕಾರವು ಸತ್‌ಸ್ವರೂಪವನ್ನು ಪಡೆದು ಓಂಕಾರ ಪ್ರಣವವು ವಿಶ್ವವ್ಯಾಪಕತ್ವ ರೂಪವನ್ನು ಧರಿಸಿದೆ. ಅಂತೆಯೇ ಓಂಕಾರದಲ್ಲಿ ಸಕಲವು ಗರ್ಭೀಕರಿಸಿದೆ. ಹೀಗೆ ಷಟ್‌ಪ್ರಣವಗಳಲ್ಲಿ ಒಂದೊಂದು ಶಿವತತ್ತ್ವಸ್ವರೂಪವು ಸನ್ನಿಹಿತವಾಗಿದೆ. ಇಂಥ ಶಿವತತ್ತ್ವಭರಿತವಾದ ಮಹಾಮಂತ್ರವು ಅಸಾಧಾರಣ ಶಕ್ತಿಯುಳ್ಳುದು. ಇಂಥ ಷಣ್ಮಂತ್ರಭರಿತ ಇಷ್ಟಲಿಂಗವೂ ಅನುಪಮವಾದುದು. ಓ ಪರಮ ಗುರುವೆ

ಮಂತ್ರಮಯ ಮಹಾಲಿಂಗವನ್ನು ಅಂಗವಿಸಿಕೊಳ್ಳು ವಂತೆ ಹರಸು.

ತನಯ ಪೇಳುವೆ ನಿನ್ನ    | ತನುವಿನೊಳಗೀ ಲಿಂಗ

ವನು ಧರಿಸಿಕೊಂಬ ಘನ ಚಾರಿತ್ರವ ಕೇಳೆಂ

 ದನಘ ಶ್ರೀಗುರುವೆ ಕೃಪೆಯಾಗು   ||೧೨೭||

ಶ್ರೀಗುರುವು ಶಿಷ್ಯನ ತತ್ತ್ವಜಿಜ್ಞಾಸಾಭಾವವನ್ನು ಅರಿತು ಇಷ್ಟಲಿಂಗದ ಲಕ್ಷಣ-ಸ್ವರೂಪ ಹಾಗೂ ಮಹತ್ವವನ್ನು ತಿಳುಹಿ ಸದ್ಯಃ ಅಂಥ ಲಿಂಗವನ್ನು ಧರಿಸಿ ಕೊಳ್ಳುವ ಸ್ಥಾನವನ್ನು ಮತ್ತು ಯೋಗ್ಯತೆಯನ್ನು ತಿಳಿಸುವವನಾಗುತ್ತಾನೆ.

 “ಸದ್ಗುರು ಕರಕಮಲದಲ್ಲಿ ಸಂಜಾತನಾದ ತನಯನೆ ! ಚಿತ್ತವಿಟ್ಟು ಕೇಳು. ನಾನು ಪೇಳುವ ನುಡಿಗಳಲ್ಲಿ ಪರಮಪಾವನವೂ ದಿವ್ಯವೂ, ಭವ್ಯವೂ ಆದ ಈ ಇಷ್ಟಲಿಂಗವನ್ನು ಯಾವ ಯಾವ ಸ್ಥಾನಗಳಲ್ಲಿ ಯಾವ ಯಾವ ತತ್ತ್ವವನ್ನರಿತು ಘನತೆ ಪಡೆದು ಧರಿಸಿಕೊಳ್ಳಬೇಕೆಂಬ ಘನವಾದ ಚಾರಿತ್ರವಿದೆ. ಇಂಥ ಅನುಪಮ ಚರಿತ್ರವನ್ನರಿಯದೆ ಧರಿಸುವ ಲಿಂಗಧಾರಣೆ ಭಾರವಾದೀತು. ಹಾಗೆ ಧರಿಸಿದರೆ ಯಾವ ಪ್ರಯೋಜನವೂ ಎನಿಸದು. ಅದುಕಾರಣ ಅದರ ಮರ್ಮವನ್ನರಿತು ಧರಿಸುವದು ಪ್ರತಿಯೊಬ್ಬ ವೀರಶೈವನ ಕರ್ತವ್ಯವಾಗಿದೆ. ಅಲ್ಲಿಯೇ ವೀರಪದದ ಸಾರ್ಥಕತೆಯಿದೆ. ದಿವ್ಯತೆಯಿದೆ; ಭವ್ಯತೆಯಿದೆ. ಲಿಂಗಧಾರಣ ಚಾರಿತ್ರತೆಯ ಎಚ್ಚರಿಕೆಯನ್ನರಿತು  ಧರಿಸುವ ಭಕ್ತನೇ ನಿಜ ವೀರಶೈವನಾಗುವನು” ಎಂದ ಮುಂತಾಗಿ ಮಮತೆಯಿಂದ ಅಘ (ಪಾಪ) ರಹಿತನಾದ ಸದ್ಗುರುನಾಥನು ಸದುವಿನಯಶೀಲ ಶಿಷ್ಯನಿಗೆ ಬೋಧಿಸುತ್ತಾನೆ.

 ಲಿಂಗಧಾರಣೆಯ ಅಸಾಧಾರಣತೆಯನ್ನು ಮೈಗೂಡಿಸಿಕೊಂಡ ಶ್ರೀಗುರುವೇ ಅನಘನೆನಿಸುವನು. ಘನತೆವೆತ್ತವನಾಗುವನು. ಲಿಂಗಧಾರಣೆಯ ಸಾರ್ಥಕ್ಯವನ್ನು ಸಾಧಿಸಿದ ಚನ್ನವೀರ ಯತಿಗಳ ಶಿಷ್ಯನೆನಿಸಿದ ಈ ದಾರ್ಶನಿಕ ಶರಣನು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದನೆಂಬುದು ಧ್ವನಿತವಾಗುತ್ತದೆ. ಆತನ ವೀರತ್ವದ ಕೆಚ್ಚು ಮೆಚ್ಚುವಂಥಹದು. ಮುಂದೆ ಕ್ರಮವಾಗಿ ಲಿಂಗಧಾರಣೆಯ ವಿವರವನ್ನು ವಿವರಿಸುತ್ತಾನೆ.

ನರಮಾನವರಿಗೊಮ್ಮೆ | ಕರವೊಡ್ಡಿ ಬೇಡುವಾ-

ಚರಣೆಯನೆ ಉಳಿದು-ಕರಪೀಠದೊಳು ಲಿಂಗ

ಧರಿಸೆಂದ ಗುರುವೆ ಕೃಪೆಯಾಗು   || ೧೨೮ ||

ಶರೀರದಲ್ಲಿ ಲಿಂಗವನ್ನು ಧರಿಸಿಕೊಳ್ಳುವ ಸ್ಥಾನಗಳು ಆರು. ೧) ಕರ, ೨) ಕಕ್ಷೆ, ೩) ಉರ, ೪) ಶಿರ, ೫) ಮುಖಸೆಜ್ಜೆ, ೬) ಅಮಳೈಕ್ಯವೆಂದು ಆರು ಲಿಂಗಧರಿಸುವ ಅವಯವಗಳು. ಕರಪೀಠಾದಿಗಳಲ್ಲಿ ಲಿಂಗವನ್ನು ಧರಿಸಿಕೊಳ್ಳುವ ಯೋಗ್ಯತೆ ಹೇಗಿರಬೇಕೆಂಬ ಮರ್ಮವನ್ನು ಕ್ರಮಶಃ ನಿರೂಪಿಸುತ್ತಾನೆ.

 ಸದ್ಗುರುನಾಥನು ಶಿರದ ಸಹಸ್ರದಳಕಮಲ ಮಧ್ಯದ ಕಳೆಯನ್ನು ತನ್ನ ಭಾವಕ್ಕೆ ಭಾವದಿಂದ ಶಿಷ್ಯನ ಮನದಲ್ಲಿ ತಂದು ಆ ಮನದಿಂದ ನೇತ್ರದ್ವಾರಾ ಕರಕಮಲಕ್ಕೆ ಇಷ್ಟಲಿಂಗವನ್ನಾಗಿ ಮೂರ್ತಗೊಳಿಸುತ್ತಾನೆ. ಪ್ರಾಣ ಮತ್ತು ಭಾವಗಳನ್ನು ಒಳಗೊಂಡ  ಇಷ್ಟಲಿಂಗವನ್ನು ಧರಿಸುವ ಕರವು ಪರಮಪವಿತ್ರವಾಗಿರಬೇಕು. ಹಸ್ತಹಸನವಾಗದೇ ಶಿವನ ಪ್ರಸನ್ನತೆ ಪ್ರಾದುರ್ಭವಿಸುವದಿಲ್ಲ. ಶಿವಲಿಂಗವನ್ನು ಧರಿಸಿಕೊಳ್ಳುವ ಕೈಯು ಬೇರೊಬ್ಬ ನರನನ್ನು ಮರೆತೂ ಬೇಡಬಾರದು. ನರ ಮತ್ತು ಮಾನವ ಶಬ್ದಗಳು ಸಮಾನಾರ್ಥಕವಾಗುವದರಿಂದ ಶಿವಕವಿಯು ದ್ವಿರುಕ್ತಿದೋಷಕ್ಕೆ ಗುರಿಯಾಗಬೇಕಾಗುವದು. ಆದರೆ ನರ ಮತ್ತು ಮಾನವ ಪದಗಳೆರಡನ್ನು ಪ್ರಯೋಗಿಸುವಲ್ಲಿ ಧ್ವನಿಯಿದೆ. ವ್ಯಂಜನವಿದೆ. ಸಾಂಕೇತಿಕತೆಯಿದೆ. ಇಷ್ಟಲಿಂಗವನ್ನು ಧರಿಸಿಕೊಳ್ಳುವ ಭಕ್ತನು ಯಾರೊಬ್ಬರನ್ನು ಕೈಯೊಡ್ಡಿ ಬೇಡಬಾರದೆಂಬ ಅರ್ಥ ವಿಸ್ತಾರವು ವ್ಯಾಪಿಸಿದೆ. ದ್ವಿರುಕ್ತಿ ದೋಷದ ಲವಶೇವೂ ಶಿವಕವಿಗೆ ಸೋಂಕುವದಿಲ್ಲ.

ಆದಾನ-ಪ್ರದಾನಗಳೇ ಕರದ ಕರ್ಮವಾಗಿದ್ದರೂ ಪ್ರದಾನ ಗುಣವೇ ತನ್ನದಾಗಬೇಕು. ಕಾಯಕವನ್ನು ಮಾಡಿ ಗುರು-ಲಿಂಗ-ಜಂಗಮಕ್ಕೆ ಸಲ್ಲಿಸುವ ಕರ್ತವ್ಯ ಭಕ್ತನದಾಗಬೇಕು. ಜೊತೆಗೆ ಆ ಪೂಜ್ಯರಿಂದ ಪಾದೋದಕ ಪ್ರಸಾದಗಳಿಗಾಗಿ ಕೈಯೊಡ್ಡಬೇಕಲ್ಲದೆ ತನ್ನ ಹೊಟ್ಟೆ ಹೊರೆಯಲು ಸತಿ-ಸುತರನ್ನು ಸಲುಹಲು ಕನಸಿನಲ್ಲಿಯೂ ಮಾನವರನ್ನು ಯಾಚಿಸಬಾರದು.

. ಭವಿಗಳನ್ನಂತೂ ಎಂದೂ ಬೇಡಬಾರದು. ಅವರ ಪದಾರ್ಥಗಳು ತನ್ನ ಶಿವಲಿಂಗಕ್ಕೆ ಸಲ್ಲಲಾರವು.  

 ‘’ಧರೆಗೆ ಯಾಚನೆಯಿಂದ ಲಘುತನಮುಂಟೆ ?’’

ನಿಜಗುಣ ಶಿವಯೋಗಿಗಳು ಯಾಚನೆಯ ಲಘುತ್ವವನ್ನು ಪ್ರತಿಪಾದಿಸಿರುವರು. ಬೇಡುವದು ಬಹುಕೀಳುತನ, ಬೇಡುವಕೈಯಿಂದ ಕಾಯಕಮಾಡಿ ದಾಸೋಹಿಯಾಗಿ ನೀಡಿ ಗುರುಪ್ರಸಾದವನ್ನು ಪಡೆಯಬೇಕು. ಲಿಂಗಭಕ್ತನು ಎಂದೂ ಯಾವ ಯಾವ ಕಾಲದಲ್ಲಿಯೂ ಇತರರನ್ನು ಬೇಡಬಾರದೆಂದು ಶರಣರು ಕಾಯಕದ ಕಟ್ಟಳೆಯನ್ನು ಕಟ್ಟಿದರು. ಕಲ್ಯಾಣದಲ್ಲಿ ಬೇಡದ ಜನರಿಲ್ಲವೆಂದೇ ಅಣ್ಣನವರು- “ಬೇಡವವರಿಲ್ಲದೇ ಬಡವನಾದೆನಯ್ಯಾ !” ಎಂದು ಉದ್ಗಾರ ತೆಗೆದರು. ಶರಣ ಸಂತತಿಗೆಲ್ಲ ಕಾಯಕ ನಿಯಮವನ್ನು ಕಲ್ಪಿಸಿಕೊಟ್ಟು ಸಮಾಜವನ್ನು ಸಮೃದ್ಧಗೊಳಿಸಿದರು. ಆರ್ಥಿಕ ಸಮತೋಲನವನ್ನು ತಂದುಕೊಟ್ಟರು. ದುರಾಶೆಯ ದುಷ್ಟ ಬೀಜವನ್ನು ಹುರಿದು ಹಾಕಿದರು. ಸಂತೃಪ್ತಿಯ ಜೀವನದ ಸಂಜೀವಿನಿಯನ್ನು ತಂದುಕೊಟ್ಟರು. ಕಾಯಕವು

ಶರಣರಿಗೆ ಮರುಜೇವಣಿಯಾಯಿತು.

 ಕಾಯಕಲ್ಪದಿಂದ ಕರಸ್ಥಲವೂ ಪರಸ್ಥಲವಾಗಬಲ್ಲುದು. ಜ್ಞಾನನಿಧಿ ಚನ್ನಬಸವಣ್ಣ ನವರು ಕರಸ್ಥಲದ ನಿಜವನ್ನು ನಿಚ್ಚಳವಾಗಿ ತಮ್ಮ ವಚನದಲ್ಲಿ ನಿರೂಪಿಸಿದ್ದಾರೆ-

ಕರಸ್ಥಲದಲ್ಲಿ ಲಿಂಗವ ಧರಿಸಿದ ಬಳಿಕ

ಲಿಂಗದಲ್ಲಿ ಅನಿಮಿಷದೃಷ್ಟಿಯಾಗಿರಬೇಕು.

ತನ್ನ ತಾನೇ ಅನಿಮಿಷನಾಗಿರಬೇಕು.

ಜಂಗಮದ ನಿಲುಕಡೆಯನರಿಯಬೇಕು.

ಪ್ರಸಾದದಲ್ಲಿ ಪರಿಪೂರ್ಣನಾಗಿರಬೇಕು.

ಹಿರಣ್ಯಕ್ಕೆ ಕೈಯಾನದಿರಬೇಕು.

ತನ್ನ ನಿಲುಕಡೆಯ ತಾನರಿಯದಿರಬೇಕು

ಇದು ಕಾರಣ ಕೂಡಲ ಚನ್ನ ಸಂಗಯ್ಯನಲ್ಲಿ

ಕರಸ್ಥಲದ ನಿಜವನರಿವಡೆ ಇದೇ ಕ್ರಮ

ಕರಸ್ಥಲದಲ್ಲಿ ಲಿಂಗಧಾರಣವಾದ ಮೇಲೆ ಲಿಂಗಭಕ್ತನ ಅನಿಮಿಷ ದೃಷ್ಟಿಯಾಗಬೇಕು. ಎಲ್ಲವೂ ಲಿಂಗಮಯವಾಗಿ ಕಾಣಬೇಕು. ಲಿಂಗದ ಹರಣ ಜಂಗಮವೆಂದರಿದು ಕಾಯಕದಿಂದ ದಾಸೋಹ ಮಾಡಬೇಕು. ಜಂಗಮದ ಶೇಷ ಪ್ರಸಾದದ ಮಹತ್ವವನ್ನರಿತು ಪರಿಪೂರ್ಣವಾಗಿ ತೃಪ್ತಮನವುಳ್ಳವನಾಗಿರ ಬೇಕು. ಹೀಗಾದ ಬಳಿಕ ಅನ್ಯರ ಧನಕ್ಕೆ ಕೈಯಾನದಿರಬೇಕು. ಆಶಿಸದಿರಬೇಕು. ಕೇವಲ ತನ್ನತನ (ಸ್ವಾರ್ಥ) ಕ್ಕಾಗಿ ಸಂಗ್ರಹಿಸಿದ ಧನವು ತ್ರಿವಿಧ ದಾಸೋಹವೆನಿಸದು. ತ್ಯಾಗದಿಂದ ಭೋಗವಾಗಬೇಕು. ಅಂದರೆ ತ್ಯಾಗಾಂಗ ಶುದ್ಧಿ. ಪ್ರಸಾದ ಭೋಗದಿಂದ ಭೋಗಾಂಗ ಶುದ್ಧಿಯಾದೀತು. ಇಂಥ ನಿಜಾಚರಣೆಯು ಕರಸ್ಥಲವನ್ನು ಪರಸ್ಥಲ (ಲಿಂಗಸ್ಥಲ) ವನ್ನಾಗಿಸುವದು ಎಂದು ಬೋಧಿಸಿದ ಬೋಧಾಗುರುವೆ ! ಭವದ ಬೇರಾದ ಬೇಡುವಿಕೆಯನ್ನು ಬಹುದೂರಗೊಳಿಸು.

ಬೇಡುವಿಕೆಯು ತೀರ ಸಾಮಾನ್ಯವಾದುದು. ಬೇಡುವ ಕೈಯು ಕೆಳಗಿರುವದಲ್ಲದೆ; ನೀಡುವವನ ಕರ ಮೇಲಾಗಿರುತ್ತದೆ. ಬೇಡುವದರಿಂದ ಜೀವನವೇ ಕೀಳೆನಿಸುವದು. ನೀಡುವವನು ಮೇಲೆನಿಸುವನು. ದಾನಗುಣ ಅವರ್ಣನೀಯವಾದುದು.

ಸಿರಿಬಂದ ಕಾಲಕ್ಕೆ ಕರೆದು ದಾನವ ಮಾಡು |

ಪರಿಣಾಮವಕ್ಕು ಪದವಕ್ಕು ಕೈಲಾಸ

ನೆರೆಮನೆಯು ಅಕ್ಕು ಸರ್ವಜ್ಞ || ಸ. ವ. ೬೦೪ ||

ಕೊಡುವಾತನೇ ಹರನು ಪಡೆವಾತನೇ ನರನು |

ಒಡಲ ಒಡವೆಗಳು ಕೆಡೆದು ಹೋಗದ ಮುನ್ನ

ಕೊಡು ಪಾತ್ರವರಿದು ಸರ್ವಜ್ಞ || ೬೧೯ ||

ಆಗ ಬಾ, ಈಗ ಬಾ, ಹೋಗಿ ಬಾ ಎನ್ನದಲೆ

ಆಗಲೇ ಕರೆದು ಕೊಡುವವನ ಧರ್ಮ ಹೊ-

ನ್ನಾಗದೆ ಬಿಡದು ಸರ್ವಜ್ಞ || ೨೨ ||

ಎಂದು ಮುಂತಾಗಿ ಸರ್ವಜ್ಞ ಕವಿಯು ದಾನದ ಅಪಾರ ಮಹಿಮೆಯನ್ನು ಮುಕ್ತ ಕಂಠದಿಂದ ಬಣ್ಣಿಸಿದ್ದಾನೆ. ಮಾನವನು ಸ್ವಭಾವತಃ ಲೋಭಿಯು. ಲೋಭಗುಣ ಅಂಟಿಕೊಂಡಿರುತ್ತದೆ. ಈ ಆಶಾಪಾಶವು ತೆರಣಿಯ ಹುಳದಂತೆ ಸುತ್ತಿಕೊಂಡು ತನ್ನನ್ನೇ ನಾಶಪಡಿಸುವದು. ಆಶೆಯು ನಿರಾಶೆಯಾಗಿ ಪರಿವರ್ತನ ಹೊಂದಬೇಕಾದರೆ ಬೇಡುವ ಕರ ನೀಡುವಂತಾಗಬೇಕು. ಭಿಕ್ಷೆ ಬೇಡುವ ಭಿಕ್ಷುಕನು ನೀಡುವವರಿಗೆ ಉತ್ತಮ ಉಪದೇಶವನ್ನೇ ನೀಡುತ್ತಾನೆ-ಹಿಂದಿನ ಜನ್ಮದಲ್ಲಿ ನಾನು ಯಾರಿಗೂ ನೀಡಿಲ್ಲವೆಂದು ಇಂದು ಈ ಭಿಕ್ಷಾ ಪಾತ್ರೆಯನ್ನು ಹಿಡಿದು ತಿರುಗುತ್ತಿರುವೆ. ನೀವಾದರೂ  ನನ್ನಂತಾಗ ಬೇಡಿ”ರೆಂದು ಸಾರುತ್ತಾನಂತೆ.

ಜನ-ಜೀವಿಗಳಿಗೆ ಜೀವನವ (ನೀರ) ನ್ನು ನೀಡುವ ಮೋಡಗಳು ಆಕಾಶದಲ್ಲಿ ಮೆರೆದರೆ ಆ ನೀರನ್ನು ಸಂಗ್ರಹಿಸುವ ಸಾಗರ ಕೆಳಗಿದೆ. ಅದುಕಾರಣ ಕೈಯೊಡ್ಡದ ಕರ ಸಾರ್ಥಕತೆಯನ್ನು ಪಡೆಯಬಲ್ಲುದು. ಈ ಸಾಫಲ್ಯತನ ಕಾಯಕಶೀಲದಲ್ಲಿದೆ. ದಾಸೋಹದ ನಿಯಮದಲ್ಲಿದೆ. ಇಂಥ ಕಾಯಕ ಮತ್ತು ದಾಸೋಹ ಕೈಕೊಂಡ ಕರವು ಇಷ್ಟಲಿಂಗವನ್ನು ಧರಿಸಿಕೊಳ್ಳಲು ಸಮರ್ಥವೆನಿಸುವನು. ಲಿಂಗವನ್ನು ದಯ ಪಾಲಿಸುವ ಸದ್ಗುರುನಾಥನು ಶಿಷ್ಯನಿಗೆ ಕರಸ್ಥಲದ ಸಾರ್ಥಕ್ಯವನ್ನು ಬೋಧಿಸುವನು. ನರಮಾನವರನ್ನು ಬೇಡುವ ಆಚರಣೆಯನ್ನು ನಿರಾಕರಿಸುತ್ತ ಕರದ ಪರಾವಲಂಬನೆ ಯನ್ನು ದೂರೀಕರಿಸುತ್ತ; ಸ್ವಾವಲಂಬನೆಯ ಸಿದ್ಧಿಯನ್ನು ದಯಪಾಲಿಸುವನು. ಧನ-ಧಾನ್ಯಾದಿಗಳಿಂದ ದರಿದ್ರನೆನಿಸಿದರೂ ದಾಸೋಹಿಯೆನಿಸುವ ಶಿವಭಕ್ತನಿಗೆ ಶಿವನು ಪ್ರಿಯನಾಗುವನೆಂಬುದನ್ನು ಗುರು ತಿಳಿಸುತ್ತಾನೆ.

ಇಂದ್ರಿಯೇಚ್ಛೆಗೆ ಹರಿವ | ಮಂದಬುದ್ಧಿಯ ನೀಗಿ

ದಂದು ಲಿಂಗವನು – ಕಂದ ಕಕ್ಷೆಯೊಳು ದರಿ-

ಸೆಂದ ಶ್ರೀಗುರುವೆ ಕೃಪೆಯಾಗು      ||೧೨೯ ||

ಶಿವಕವಿಯು-ಕರಸ್ಥಲದಲ್ಲಿ ಲಿಂಗಧಾರಣೆಯ ಮರ್ಮವನ್ನು ತಿಳಿಸಿ ಯಾಚನೆಯನ್ನು ನಿವಾರಿಸಿ ಕಾಯಕ-ದಾಸೋಹ ತತ್ತ್ವಗಳನ್ನು ಮನನ ಮಾಡಿಸಿದ ಸುಜ್ಞಾನ ಮೂರುತಿ ಗುರುದೇವನು ಇಂದ್ರಿಯೇಚ್ಛೆಯನ್ನು ಹರಿದು ಹಾಕುವ ನೀತಿಯನ್ನು

ನಿರೂಪಿಸುವನೆಂಬುದನ್ನು ನಿರ್ವಚಿಸುತ್ತಾನೆ.

ಬಲವಾನ್ ಇಂದ್ರಿಯಗ್ರಾಮಃ ” (ವ್ಯಾಸರ ನುಡಿ)

ಇಂದ್ರಿಯಗಳ ಸಮೂಹವು ಬಲಶಾಲಿಯಾಗಿದೆ. ಇಂದ್ರಿಯ ಶಕ್ತಿಗೆ ಮಣಿಯದವರಿಲ್ಲ. ಇಂದ್ರಿಯಗಳ ಶಕ್ತಿಗೆ ಅಶ್ವಶಕ್ತಿಯನ್ನು ಉಪನಿಷತ್ಕಾರರು ಉಪಮಿಸಿದ್ದಾರೆ. ಭೌತಿಕ ವಿಜ್ಞಾನಿಗಳೂ ಸಹ ಯಾವುದೇ ಎಂಜನ್ನಿನ ಬಲವನ್ನು ಗುರುತಿಸುವಾಗ ಅಶ್ವಶಕ್ತಿಗೆ ತುಲನೆ ಮಾಡುತ್ತಿರುವದು ಯಥೋಚಿತವಾಗಿದೆ. ಕಠೋಪನಿಷತ್ತಿನ ಪ್ರಥಮಾಧ್ಯಾಯದ ಮೂರನೆಯ ವಲ್ಲಿಯಲ್ಲಿ ಯಮಧರ್ಮನು ಧೀರಬಾಲಕ ಆತ್ಮತತ್ತ್ವಜಿಜ್ಞಾಸು ನಚಿಕೇತನಿಗೆ

ಆತ್ಮಾನಂ ರಥಿನಂ ವಿದ್ಧಿ ಶರೀರಂ ರಥಮೇವ ತು |

ಬುದ್ಧಿಂ ತು ಸಾರಥಿಂ ವಿದ್ಧಿ ಮನಃ ಪ್ರಗ್ರಹಮೇವ ಚ || ೩ ||

ಇಂದ್ರಿಯಾಣಿ ಹಯಾನಾಹುರ್ವಿಷಯಾನ್ ತೇಷು ಗೋಚರಾನ್ |

ʼʼಶರೀರವೇ ರಥವು.  ಆತ್ಮನು ರಥಿಕನು.  ರಥದ ಸಾರಥಿಯೇ ಬುದ್ಧಿಯು. ಇಂದ್ರಿಯಗಳು ರಥವನ್ನು ಜಗ್ಗುವ ಕುದುರೆಗಳು.  ಮನವು ಅವುಗಳಿಗೆ ಜೋಡಿಸಿದ ಲಗಾಮು. ಶಬ್ದಾದಿ ವಿಷಯಂಗಳೇ ಪ್ರತ್ಯಕ್ಷ ಗೋಚರಿಸುವ ಪದಾರ್ಥಗಳೆಂದು ತಿಳಿʼʼ ಎಂಬುದಾಗಿ ಬೋಧಿಸಿದ್ದಾನೆ. ರಥದ ಸಾರಥಿಯು ಬುದ್ಧಿವಂತನಾಗಿದ್ದರೆ ರಥಿಕನು ಯೋಗ್ಯ ಗುರಿಯನ್ನು ಗುರುತಿಸಬಲ್ಲನು. ಅಂತೆಯೇ ಬುದ್ಧಿಗೆ ಸಾರಥಿಯ ಸಂಕೇತ ಸಮೀಚೀನವಾಗಿದೆ. ಬುದ್ಧಿಯಿಲ್ಲದ ಸಾರಥಿಯು ರಥವನ್ನು ಗುರಿಯತ್ತ ಸಾಗಿಸಲಾರನು. ರಥವನ್ನೆಳೆಯುವ ಕುದುರೆಗಳು ಅವನ ವಶವರ್ತಿಯಾಗಿ ವರ್ತಿಸಲಾರವು. ಇದರಂತೆ ಆಧ್ಯಾತ್ಮಿಕ ರಥವೆನಿಸಿದ ಶರೀರಕ್ಕೆ ಸಾರಥಿಯಾದ ಬುದ್ಧಿಯು ಮಂದವಾಗಿದ್ದರೆ ಕುದುರೆಗಳೆಂಬ ಇಂದ್ರಿಯಗಳು ತಮ್ಮಿಚ್ಛೆಯಂತೆ ಹರಿಯುತ್ತವೆ. ಸುಬುದ್ಧಿಯುಳ್ಳ ಮಾನವನು ಸುವಿವೇಕದಿಂದ ಇಂದ್ರಿಯಗಳನ್ನು ನಿಗ್ರಹಿಸುತ್ತಾನೆ. ಇಂದ್ರಿಯೇಚ್ಛೆಗೆ ಮನವನ್ನು ಮಾರುಗೊಳಿಸುವದಿಲ್ಲ. ಸುವಿಚಾರದಿಂದ, ಸತ್ಕ್ರಿಯೆಗಳಿಂದ, ಸತ್ಸಂಗದಿಂದ ಇಂದ್ರಿಯಗಳನ್ನು ಹಾಗೂ ಮನವನ್ನು ಉದಾತ್ತೀಕರಿಸಬೇಕು. ಪರಿಪಕ್ವಗೊಳಿಸಬೇಕು. ಈ ರೀತಿಯಾಗಿ ಮನ ಮತ್ತು ಇಂದ್ರಿಯಗಳು ಸುಬುದ್ಧಿಯಿಂದ ಸಮರ್ಥವಾದರೆ ಇಷ್ಟಲಿಂಗವನ್ನು ಕಕ್ಷೆಯಲ್ಲಿ ಧಾರಣ ಮಾಡಬೇಕು.

 ಕಕ್ಷೆಯೆಂದರೆ ಎಡದ ತೋಳು. ಇಂಜಕ್ಷನ್ ಮಾಡುವ ವೈದ್ಯನು ರೋಗಿಯ ಹೃದಯಕ್ಕೆ ಎಣ್ಣೆಯ ಪರಿಣಾಮವು ತೀವ್ರವಾಗಲೆಂದು ಎಡರಟ್ಟಿಗೇನೇ ಮಾರುವಂತೆ ಹೃದಯ ಮಧ್ಯದ ಚಿತ್ಕಳೆಯ ದ್ಯೋತಕವಾಗಿ ಮತ್ತು ಸಾಮೀಪ್ಯ ಸಂಬಂಧವನ್ನು ಸೂಚಿಸುವದಕ್ಕಾಗಿಯೂ ಕಕ್ಷೆಗೆ ಲಿಂಗಧಾರಣ ಮಾಡುವ ಕ್ರಮ ಪುರಾತನಕಾಲದಿಂದಲೂ ಬೆಳೆದುಬಂದಿದೆ. ಎಡರಟ್ಟೆಯಲ್ಲಿ ಲಿಂಗವನ್ನು ಧರಿಸಿಕೊಳ್ಳುವ ಭಕ್ತನ ಬುದ್ಧಿಯ ಮಂದತ್ವವನ್ನು ಕಳೆದುಕೊಂಡರೆ ಇಂದ್ರಿಯಗಳ ಇಚ್ಛೆಯು ಲಿಂಗೇಚ್ಛೆಯಾಗ ಬಲ್ಲುದೆಂದು ಸದ್ಗುರು ಬೋಧಿಸುತ್ತಾನೆ.

ಷಟ್‌ಸ್ಥಲ ಜ್ಞಾನಿ, ಸತ್ಕ್ರಿಯೆಯ ಸುಯಿದಾನಿ ಚನ್ನಬಸವಣ್ಣನರು-

ಕಕ್ಷೆಯಲ್ಲಿ ಲಿಂಗವ ಧರಿಸಿದ ಬಳಿಕ,

ಅನ್ಯಕಾಂಕ್ಷೆ ಇಲ್ಲದಿರಬೇಕು,

ಮಾಯದ ಉಸುರಡೆಯಾಡದಿರಬೇಕು.

ಸಂಸಾರ ಸಂಗವ ಹೊದ್ದದೆ ಮನವು

ಮಹಾಸ್ಥಲವನಿಂಬುಗೊಂಡಿರಬೇಕು.

ಕೂಡಲ ಚೆನ್ನಸಂಗಯ್ಯನಲ್ಲಿ ಏಕಾರ್ಥವಾಗಿರಬೇಕು

ಇದೆ ಕಕ್ಷೆಯಲ್ಲಿ ಲಿಂಗವ ಧರಿಸುವ ಕ್ರಮ || ೯೦೭ II

ಕಕ್ಷೆಯಲ್ಲಿ ಲಿಂಗವನ್ನು ಧರಿಸಿ ಲಿಂಗಭಕ್ತನು ಲಿಂಗದಿಚ್ಛೆಯಲ್ಲದ ವಸ್ತುವನ್ನು ಬಯಸಬಾರದು. ಮಾಯೆಯನ್ನು ಹೊದ್ದದಿರಬೇಕು. ಸಂಸಾರ ಸಂಗವನ್ನು ತ್ಯಜಿಸಿ ಮಹಾಲಿಂಗದಲ್ಲಿ ಮನವು ತಲ್ಲೀನಗೊಳ್ಳಬೇಕು. ಇಂತಾದರೆ ಕಕ್ಷೆಯಲ್ಲಿ ಲಿಂಗ ಧರಿಸಲು ಯೋಗ್ಯಕ್ರಮವೆಂದು ಬೋಧಿಸಿದ್ದಾರೆ.

ಅಂಗದ ಆರವಯವಗಳಲ್ಲಿ ಲಿಂಗವನ್ನು ಧರಿಸುವ ಶಿವಭಕ್ತನು ಸದ್ಗುರು ಬೋಧೆಯಂತೆ ಸದ್ಗುಣಗಳನ್ನು ಅಳವಡಿಸಿಕೊಳ್ಳುವದು ಸಮೀಚೀನವಾಗಿದೆ. ಮುಂದಿನ ತ್ರಿಪದಿಯಲ್ಲಿ ಎದೆಯ ಮೇಲೆ ಲಿಂಗಧಾರಣದ ಅಂತರಾರ್ಥವನ್ನು   ವಿವರಿಸುತ್ತಾನೆ.

 ಪರಹೆಣ್ಣಿಗೆದೆಗೊಟ್ಟು |  ಭರದಿಂದಲಪ್ಪುವಾ

ದುರಿತವನೆ ಉಳಿದು-ಉರಸಜ್ಜೆಯೊಳು ಲಿಂಗ

ಧರಿಸೆಂದ ಗುರುವೆ ಕೃಪೆಯಾಗು    || |

ಕರದಲ್ಲಿ ಕಾಣಿಸುವದು ಇಷ್ಟಲಿಂಗ, ಕಕ್ಷೆಯಲ್ಲಿ ಧರಿಸುವದು ಪ್ರಾಣಲಿಂಗ, ಉರದಲ್ಲಿ ಧಾರಣಮಾಡುವದು ಭಾವಲಿಂಗ ದ್ಯೋತಕವೆಂತಲೂ ಭಾವಿಸಬಹುದು. ಸ್ಥೂಲವಾಗಿ ಪ್ರತ್ಯಕ್ಷವಾಗಿ ಪೂಜೆಗೈಯಲು ಅನುಕೂಲವಾದುದು ಇಷ್ಟಲಿಂಗವು. ಶರೀರದ ಎಡಭಾಗದಲ್ಲಿಯೇ ಪ್ರಾಣಪುಪ್ಪುಸವಿರುವದರಿಂದ ಅದನ್ನು ಸೂಚಿಸುವ ಎಡದ ರಟ್ಟೆಯಲ್ಲಿ ಕಟ್ಟುವದು ಪ್ರಾಣಲಿಂಗದ ಪರಿಯಾಯವಾಗ ಬಹುದು. ಹೃದಯದಮೇಲೆ ಧರಿಸುವದು ಭಾವಲಿಂಗವೆನ್ನಬಹುದು. ದುಷ್ಕರ್ಮಗಳ ಭಾವವಳಿದು ಮನಪವಿತ್ರವಾದರೆ ಭಾವಲಿಂಗದ ಅನುಸಂಧಾನ ಸಾಧ್ಯವಾಗುವದು. ಅದು ಕಾರಣ ಉರದಮೇಲೆ ಲಿಂಗವನ್ನು ಧರಿಸುವ ಭಕ್ತನು ಪರರ ಹೆಣ್ಣು ಮಕ್ಕಳನ್ನು ಅಪ್ಪಿಕೊಳ್ಳುವ ಪಾಪವನ್ನು ಪರಿಹರಿಸಬೇಕು. ಲಿಂಗವನ್ನು ಅಪ್ಪಿಕೊಂಡ ಎದೆಯು ಪರಸ್ತ್ರೀಯಳ ಎದೆಯನ್ನು ಸೋಂಕಬಾರದು. ಪಂಚಪಾತಕಗಳಲ್ಲಿ ಪರಸ್ತ್ರೀ ಸಂಗವೊಂದೆಂದು ಅನುಭವಿಗಳು ಸಾರಿದ್ದಾರೆ. ಪರಸ್ತ್ರೀ ಸಂಗದಲ್ಲಿ ಲೋಲುಪನಾದ ಜೀವಿಯು ಅನಂತ ಪಾಪಗಳನ್ನು ಮಾಡುತ್ತಾನೆ. ತನ್ನ ತನುವನ್ನು, ಧನವನ್ನು, ಮನವನ್ನು ಅವಳಿಗಾಗಿ ಸೂರೆಮಾಡುತ್ತಾನೆ. ಸ್ವತಂತ್ರತೆಯನ್ನು ಕಳೆದುಕೊಳ್ಳುತ್ತಾನೆ. ಕಳ್ಳನಂತೆ ಸುಳ್ಳನಾಗಿ ಸುಳಿದಾಡುತ್ತಾನೆ. ಅಪರಾಧಿಯಾಗಿ ಸಜ್ಜನ ಸಹವಾಸದಿಂದ ದೂರಾಗಿ ದುರ್ಜನರ ಸಹವಾಸದಲ್ಲಿ ಬೀಳುತ್ತಾನೆ. ವಿಷಯ ಲಂಪಟತನದಿಂದ ತನ್ನ ಸತಿಸುತರನ್ನು, ಬಾಂಧವರನ್ನು ದುಃಖಕ್ಕೀಡು ಮಾಡುತ್ತಾನೆ. ಇದನ್ನರಿತ ಸದ್ಗುರುನಾಥನು ದಯೆಯಿಂದ ಇಂಥ ದುರಿತದಿಂದ ದೂರಿರಬೇಕೆಂದು ಸಾರುತ್ತಾನೆ. ಸಲಹುತ್ತಾನೆ.

ಪರಧನ ಪರಸ್ತ್ರೀಯನ್ನು ಪರಿಹರಿಸುವ ಶರಣ ಸಾಹಿತ್ಯ ಅಪಾರವಾಗಿದೆ. ಶರಣ ಧರ್ಮಕ್ಕೆ ನೀತಿಯೇ ನೆಲೆಗಟ್ಟಾಗಿದೆ. ಅಣ್ಣಬಸವಣ್ಣನವರು-

ನೋಡಲಾಗದು, ನುಡಿಸಲಾಗದು ಪರಸ್ತ್ರೀಯ, ಬೇಡ ಕಾಣಿರೋ

ತಗರ ಬೆನ್ನಲಿ ಹರಿವ ಸೊಣಗನಂತೆ ಬೇಡ ಕಾಣಿರೋ !

ಒಂದಾಶೆಗೆ ಸಾಸಿರ ವರುಷ ನರಕದೊಳದ್ದುವ ಕೂಡಲ ಸಂಗಮದೇವ

ಚನ್ನ ಬಸವಣ್ಣನವರು-

ದಾಸಿಯರ ಸಂಗ ಕಸನೀರ ಹೊರಸಿತ್ತು.

ವೇಸಿಯರ ಸಂಗ ಎಂಜಲವ ತಿನಿಸಿತ್ತು. 

ಪರಸ್ತ್ರೀಯರ ಸಂಗ ಪಂಚಮಹಾ ಪಾತಕವ ತಂದಿತ್ತು.

ಈ ತ್ರಿವಿಧವು ನಾಸ್ತಿಯಾದಲ್ಲದೆ ಭಕ್ತನಲ್ಲ

ಭಕ್ತಿಯಿಲ್ಲದೆ ಮುಕ್ತಿಗೆ ಸಲ್ಲ ನಮ್ಮ ಕೂಡಲ ಚನ್ನಸಂಗಯ್ಯನಲ್ಲಿ

ದೇವರ ದಾಸಿಮಾರ್ಯರು-

ಈಶನ ಶರಣರು ವೇಶಿಯ ಹೋದರೆ

ಮೀಸಲೋಗರವ ಹೊರಗಿರಿಸಿದಡೆ

ಹಂದಿ ಮೂಸಿನೋಡಿದಂತೆ ಕಾಣಾ ರಾಮನಾಥಾ ?

ಮತ್ತು

ಶಿವಪೂಜೆಯೆತ್ತ ? ವಿಷಯದ ಸವಿಯೆತ್ತ?

ಆ ವಿಷಯದ ಸವಿ ತಲೆಗೇರಿ

ಶಿವಪೂಜೆಯ ಬಿಟ್ಟು ವೇಶಿಯರ ಎಂಜಲ

ಹೇಸದೆ ತಿಂಬ ದೋಷಿಗಳೇನೆಂಬೆನೈ ರಾಮನಾಥಾ ?

ಅಂಬಿಗರ ಚೌಡಯ್ಯ ಶರಣನು-

ಬ್ರಹ್ಮದ ಮಾತನಾಡಿ

ನ್ಯೆಯರ ಕಾಲದೆಸೆಯಲ್ಲಿ ಕುಳಿತಲ್ಲಿ

ಪರಬೊಮ್ಮದ ಮಾತು ಅಲ್ಲಿ

ನಿಂದಿತ್ತೆಂದನಂಬಿಗರ ಚೌಡಯ್ಯ

ಎಂದು ಮುಂತಾಗಿ ಪರಸ್ತ್ರೀಸಂಗವನ್ನು ಶರಣರು ನಿಷ್ಠುರವಾಗಿ ನಿಷೇಧಿಸಿದ್ದಾರೆ. ಪರಸ್ತ್ರೀಸಂಗವನ್ನು ತೊರೆಯದೆ ಉರದಲ್ಲಿ ಲಿಂಗವನ್ನು ಧರಿಸಬಾರದೆಂಬುದೇ ಶಿವ ಕವಿಯ ಸದಾಶಯವಾಗಿದೆ.

ಈ ಉರಸ್ಥಲದ ಹಿರಿಮೆಯನ್ನು ಗರಿಮೆಯನ್ನು ಚನ್ನಬಸವಣ್ಣನವರ ವಚನದಿಂದ ಅರಿತುಕೊಳ್ಳೋಣ-

ಉರಸ್ಥಲದಲ್ಲಿ ಲಿಂಗವ ಧರಿಸಿದ ಬಳಿಕ

ಮನದ ಕೊನೆಯಿಂದ ಲಿಂಗವನಗಲದಿರಬೇಕು

ಉರ ಗುರುಸ್ಥಲ, ಉರ ಲಿಂಗಸ್ಥಲ, ಉರ ಜಂಗಮಸ್ಥಲ,

ಉರ ಪ್ರಸಾದಿಸ್ಥಲ, ಉರ ಮಹಾಸ್ಥಲ,

ಉರ ಅನುಭಾವಸ್ಥಲವೆಂದರಿವುದು.

ಅನ್ಯ ಮಿಶ್ರಂಗಳ ಹೊದ್ದಲಾಗದು

ತಟ್ಟು-ಮುಟ್ಟು-ತಾಗು ನಿರೋಧಂಗಳಿಗೆ ಗುರಿಯಾಗಲಾರದು.

ಇಂದ್ರಿಯಗಳ ಕೂಡಿ ಮನಸ್ತಾಪಗೊಳ್ಳದೆ

ಉರಲಿಂಗ ಸ್ವಾಯತವಾಗಿರ್ದುದು

ಪ್ರಾಣಲಿಂಗಿ ಲಿಂಗಪ್ರಾಣಿಗಿದು ಚಿಹ್ನ

ಕೂಡಲ ಚನ್ನಸಂಗಮದೇವಾ || ೯೦೪ ||

ಉರಸ್ಥಲವು ಗುರು-ಲಿಂಗ-ಜಂಗಮ-ಪ್ರಸಾದಗಳೆಂಬ ಚತುರ್ವಿಧ ಸಾರಾಯ ಸಂಪತ್ತಿಗೆ ಆಶ್ರಯ ಸ್ಥಾನವೆನಿಸಿದ್ದರಿಂದ ಮಹಾಸ್ಥಲವೆಂದೆನಿಸಿದೆ. ಉರದಲ್ಲಿಯೇ ಅನುಭಾವ ಮಡುಗಟ್ಟಬಲ್ಲುದು. ಅದು ಕಾರಣ ಉರಕ್ಕೆ ಅನ್ಯವಸ್ತುಗಳ ಸಂಪರ್ಕ ಹೊಲ್ಲ. ಉರದಿಂದ ಪರಸ್ತ್ರೀಯರ ತಟ್ಟು-ಮುಟ್ಟುಗಳು ದೂರಾಗಬೇಕು. ಉರದ ಮೇಲೆ ಶಿವಲಿಂಗವನ್ನು ಸ್ವಾಯತಗೊಳಿಸಿಕೊಂಡ ಮೇಲೆ ಮನದ ಕೊನೆಯಿಂದ ಲಿಂಗವನಗಲದಂತಿರಬೇಕಲ್ಲದೆ ; ಪ್ರಾಣಲಿಂಗಿ-ಲಿಂಗಪ್ರಾಣಿಯೆನಿಸಬೇಕು. ಇದುವೆ ಉರದಲ್ಲಿ ಲಿಂಗವ ಧರಿಸುವ ಮಹಾ ಸಂಕೇತ.

ಜ.ಚ.ನಿ

ಮಗನು ಬಂದು ಲಿಂಗದಹಳ್ಳಿಯಲ್ಲಿರುವ ಸಮಾಚಾರವು ತಾಯಿಗೆ ತಿಳಿಯಿತು. ಮಗನನ್ನು ನೋಡದೆ ನಾಲೈದು ವರ್ಷಗಳಾಗಿದ್ದವು. ಮಗನಿಗೆ ಮದುವೆಯ ವಯಸ್ಸು ಪ್ರಾಪ್ತವಾಗಿತ್ತು. ಇವನ್ನೆಲ್ಲ ನೆನೆದು ತಾಯಿ ನೀಲಮ್ಮನವರು ತಮ್ಮ  ತವರೂರಾದ ಲಿಂಗದಹಳ್ಳಿಗೆ ಉತ್ಸುಕತೆಯಿಂದ ಬಂದರು. ಓದಿ ಬಂದ ಮಗನನ್ನು ನೋಡಿ ನಲಿದರು. ಮಗನ ಧೈರ್ಯ ಸಾಹಸಗಳನ್ನು ಮನಸಾರೆ ಕೊಂಡಾಡಿದರು. ‘ಮನೆಯಿಂದ ಕುರುಡುಕಾಸನ್ನು ಅಪೇಕ್ಷಿಸದೆ ನಿನ್ನ ಕುಶಲತೆಯಿಂದ ಅನ್ಯರ ಮನಕರಗಿಸಿ ಅವರ ಆಶ್ರಯ ಪಡೆದು ಇಲ್ಲಿಯವರೆವಿಗೂ ಓದಿಬಂದದ್ದೆ ಒಂದು ಹೆಚ್ಚು. ಅದೇ ನನಗೊಂದು ಸಂತೋಷ. ಅದೇ ನನಗೊಂದು ಸಾವಿರ. ಈ ವಿಷಯದಲ್ಲಿ ನಿನ್ನನ್ನು ಎಷ್ಟು ಕೊಂಡಾಡಿದರು ಕಡಿಮೆ ! ಸಾಕು ನಡೆ. ಇನ್ನು ನೀನು ಮಾಸ್ತರನಾಗಿ ಗಳಿಸುವುದು ಬೇಡ. ಮನೆಗೆ ನಡೆ, ವಯಸ್ಸೂ ಆಗಿದೆ. ಮದುವೆ ಮಾಡಲು ಒಂದು ಕನ್ಯೆಯನ್ನು ನೋಡಿ ನಿಶ್ಚಯಿಸಲಾಗಿದೆ, ಲಗ್ನಮಾಡಿಕೊಂಡು ಮನೆಬಾಳಿನ ಭಾರ ನಿರ್ವಹಿಸುವುದು ನಿನ್ನ ಕರ್ತವ್ಯಕೋಟಿಗೆ ಸೇರಿದ ಮಾತಾಗಿದೆ. ಅದಕ್ಕೆ ಮಗನು ‘ತಾಯಿ, ನೀನು ಹೇಳುವುದೆಲ್ಲ ನಿಜ. ಆದರೆ ಇಷ್ಟು ಬೇಗ ಮದುವೆಯಾಗಲು ನನ್ನ ಮನಸ್ಸಿಲ್ಲ: ಮನೆಗೆ ಬಂದಿರಲು ಇಷ್ಟವಿಲ್ಲ. ಒಂದೆರಡು ವರ್ಷ ಕಳೆದು ಬಂದಲ್ಲಿ ಆಗ ಯಾವುದನ್ನು ಖಚಿತವಾಗಿ ಹೇಳುತ್ತೇನೆ. ಈಗ ಸುಮ್ಮನೆ ಬಲವಂತಿಸಬೇಡ.’ ಎಂದು ಹೇಳಿ ತಾಯಿಯನ್ನು ಸಮಾಧಾನ ಮಾಡಿ ಊರಿಗೆ ಕಳುಹಿಸಿದರು.

ಸದಾಶಿವಯ್ಯನವರು ಎಂದಿಗಿಂತ ಊರಿನ ಮಕ್ಕಳಿಗೆ ವಿದ್ಯಾಭ್ಯಾಸವನ್ನು ದಕ್ಷತೆಯಿಂದ ಮಾಡಿಸತೊಡಗಿದರು. ಊರಿನವರಿಗೆಲ್ಲ ಅಚ್ಚುಮೆಚ್ಚಿನವರಾಗಿದ್ದರು. ಅಂದಿನ ಅನಾಗರಿಕತೆಯ  ಕಾಲದಲ್ಲಿಯೂ ಸಹ ಹಳ್ಳಿಯ ಹುಡುಗರು  ಪ್ರೇಮೋತ್ಸಾಹಗಳಿಂದ ಶಾಲೆಗೆ ಬರುತ್ತಿದ್ದರೆಂಬುದು ಶಿಕ್ಷಕರಿಗೆ ಶಿಕ್ಷಣದಲ್ಲಿರುವ ವಿಚಕ್ಷಣತೆಯ ಕುರುಹಲ್ಲವೆ ? ಬುದ್ಧಿಬಲ್ಲವರಿಗೆ ವಿದ್ಯೆ ಕಲಿಸುವುದು ಒಂದು ಹೆಚ್ಚಲ್ಲ. ಏನೂ ತಿಳಿಯದ ಎಳೆ ಕಂದರಿಗೆ ವಿದ್ಯಾಭ್ಯಾಸ ಮಾಡಿಸುವುದು ತುಂಬಾ ಕಷ್ಟದ ಕೆಲಸ.  ಮಕ್ಕಳ ಮನಸ್ಸಿನಂತೆ ಹೋಗಿ ಮಕ್ಕಳನ್ನು ಒಲಿಸಿ ಅಕ್ಕರಿಗರನ್ನು ಮಾಡುವ ಹೊಣೆಗಾರಿಕೆಯ ಕೆಲಸವನ್ನು ಮಾಡಿ ಅನುಭವಿಸಿದವರಿಗೆ ಗೊತ್ತು ಅದರ ಕಷ್ಟ- ಕಾರ್ಪಣ್ಯ, ಪ್ರಾಥಮಿಕ ಶಿಕ್ಷಣವು ನಿಜಕ್ಕು ತುಂಬಾ ಪ್ರಯಾಸಕರವಾದುದು. ಮಕ್ಕಳನ್ನು ಮುಂದಿನ ಮಹಾಜನಗಳನ್ನಾಗಿ ಮಾಡುವ ಮೊದಲನೆಯ ಹೊಣೆಗಾರಿಕೆಯದು. ಅದನ್ನು ತೃಪ್ತಿಕರವಾಗಿ ತಾಳ್ಮೆಯಿಂದ ಜಾಣ್ಮೆಯಿಂದ ನೆರವೇರಿಸುವವನೆ ನಿಜವಾದ ಶಿಕ್ಷಕ, ಸದಾಶಿವಯ್ಯನವರು ಅಂತಹ ಸಮರ್ಥರಾಗಿದ್ದರು. ಸೂಕ್ತ ಶಿಕ್ಷಣ ಕೊಡುತ್ತಿದ್ದರು.

ಊರಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುತ್ತಿದ್ದಂತೆ, ತಾವೂ ಸಹ ವೇದಾಂತ ವಿದ್ಯಾವಂತರಾಗುತ್ತಿದ್ದರು. ಅದಾಗಳೆ ಅದೆಷ್ಟೋ ಆಗಿದ್ದರು. ಅಷ್ಟಕ್ಕೆ ನಿಲ್ಲಿಸದೆ ವೇದಾಂತ ಜಿಜ್ಞಾಸೆಯನ್ನು ಮುಂದುವರಿಸಿದ್ದರು. ನಿಜಗುಣರ ಗ್ರಂಥಗಳನ್ನು ಬಿಟ್ಟು ನಿಮಿಷವೂ ಇರುತ್ತಿರಲಿಲ್ಲ. ೧. ಕೈವಲ್ಯ ಪದ್ಧತಿ, ೨. ಪರಮಾನುಭವ ಬೋಧೆ, ೩. ಪರಮಾರ್ಥ ಗೀತೆ, ೪. ಪರಮಾರ್ಥ ಪ್ರಕಾಶಿಕೆ, ೫. ಅನುಭವಸಾರ, ೬. ವಿವೇಕ ಚಿಂತಾಮಣಿ ಇವೇ ಅವರ ಸೊತ್ತು. ಇವೇ ಅವರ ಗೊತ್ತು. ಅವುಗಳಿಗಾಗಿ ಅವರ ಮನಸ್ಸು ಮಾರುಹೋಗಿತ್ತು. ಆ ಆರು ಗ್ರಂಥಗಳ ಅವರಿಗೆ ಆರು ಮಂದಿ ಆಪ್ತ ಸ್ನೇಹಿತರಾಗಿದ್ದರು. ಯಾವಾಗಲೂ ಅವುಗಳಡೊನೆಯೆ ಕಾಲ ಕಳೆಯುತ್ತಿದ್ದರು. ರಾತ್ರಿ ಹನ್ನೆರಡು ಹೊಡೆಯುವವರೆವಿಗೂ ಬಿಡದೆ ಅವನ್ನು ಓದುತ್ತಿದ್ದರು. ಸಮಯ ಸಿಕ್ಕಾಗಲೆಲ್ಲ ಸಮಾಳದ ಬಸವಯ್ಯನವರಲ್ಲಿಗೆ ಹೋಗಿ ವಿಚಾರವಿನಿಮಯ ಮಾಡುತ್ತಿದ್ದರು; ವಿಶೇಷ ವಿಷಯಗಳನ್ನು ಪರಿಗ್ರಹಿಸುತ್ತಿದ್ದರು. ಆರು ಗ್ರಂಥಗಳಲ್ಲಿ ಮೊದಲನೆಯದಾದ ಕೈವಲ್ಯ ಪದ್ಧತಿಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದುತ್ತಿದ್ದರು. ಪ್ರತಿಪದ್ಯದಲ್ಲಿ ಬುದ್ಧಿ ಮನಸ್ಸುಗಳನ್ನಿಟ್ಟು ಅರ್ಥವಿಸುತ್ತಿದ್ದರು. ಅವುಗಳಲ್ಲಿ ಈ ಪದ್ಯವು ಅವರ ಮನಸ್ಸಿನಲ್ಲಿ ನೇರವಾಗಿ ನಾಟಿತು.

ಸುಮ್ಮನಾಗದು ಅರಿವಿನಿಂದವೆ ಮುಕುತಿ

 ನೆಮ್ಮಿ ಲೇಸೆನಿಸುವ ಗುಣಗಣವಿಲ್ಲದವನಿಗೆ

ಗುರುಪಾದ ಸೇವೆ ಶರಣರ ಸಂಗ ಹರಪೂಜೆ

ಕರುಣ ವಿನಯ ನಿಜಸಮಯ ನಿಷ್ಠೆ

ವಿರತಿ ವಿವೇಕ ವಿದ್ಯೆ ಶಮೆ ದಮೆ ಸತ್ಯ ಧರ್ಮ

ವರಭಕ್ತಿ ನೀತಿಗಳ ಬಲವಿಲ್ಲದವನಿಗೆ

 ನಿಗಮಾಗಮದೊಳು ನಂಬುಗೆ ನಿತ್ಯವಿಧಿಗಳ

 ನಗಲದೆಚ್ಚರು ದೇಹದೊಳು ವಿಮೋಹ

 ಜಗದಪವಾದದೆಡೆಯೊಳು ಭೀತಿ, ಸುಜನರ

ಬಗೆಗೊಳಿಸುವ ನಡೆನುಡಿಯಿಲ್ಲದವನಿಗೆ

ಕಾವನಲರಂಬಿಗೆದೆಗೊಡದ ಬಲುವೆ ಜೀವ

 ಭಾವವೆಳ್ಳನಿತು ದೋರದಮಳಯೋಗ

 ತೀವಿದನುಭವ ಸುಖರೂಪನಾದ ಶಂಭುಲಿಂಗ

ವಾವರಿಸಿ ಕೀಟಭೃಂಗನ್ಯಾಯವಿಲ್ಲದವನಿಗೆ

ಈ ಪದ್ಯದ ಪ್ರತಿಶಬ್ದದ ರೂಪವೆ ತಾವಾಗಲು ಸದಾಶಿವಯ್ಯನವರು ಸಂಪೂರ್ಣ ಮನಸ್ಸು ಮಾಡಿದರು. ಈ ಪದ್ಯಬೀಜವು ಅವರ ಮನೋಭೂಮಿಕೆಯಲ್ಲಿ ಮೊಳಕೆಯಾಗಿ ಮೂಡಿತು. ಒಂದೆರಡು ವರ್ಷಗಳಲ್ಲಿ ಹೆಮ್ಮರವಾಗಿ ಚೆನ್ನಾಗಿ ಬೇರೂರಿತು. ಹೂ ಹಣ್ಣಾಗಿಸುವ ಬಯಕೆ ಹೆಬ್ಬಯಕೆಯಾಗಿ ನೆಲೆನಿಂತಿತ್ತು.

 ಈ ಸಮಯದಲ್ಲಿ ಇತ್ತ ತಾಯಿಯವರು ಮಗನ ಮದುವೆಯ ಮಾತನ್ನು ಮತ್ತೆ ನೆನಪಿಸಿಕೊಂಡರು. ನೆನವಿನೊಡನೆ ಬಡತನದ ಬಾಳಿನ ಚಿತ್ರವೂ ಎದುರು ನಿಂತಿತು. ಅದು ರಕ್ತವಿಲ್ಲದ ಚಿತ್ರ, ಶಕ್ತಿಯಿಲ್ಲದ ಚಿತ್ರ, ನೋಡಲಾಗದು, ನಿತ್ತರಿಸಲಾಗದು. ಬಡತನದ ಆ ಭಯಾನಕ ಚಿತ್ರ ಮದುವೆಯ ಮಾತನ್ನು ನಸುಹಿಂದೂಡಲೆಳಸಿತು. ಆದರೆ ಮಾತೆಯ ಮನಸ್ಸು ಅದಕ್ಕೆ ಒಳಪಡಲಿಲ್ಲ. ಈ ಬಡತನ ನಮಗೆ ಎಂದಿನಿಂದಲು ಇದ್ದದ್ದೆ: ಯಾವ ಕಾಲಕ್ಕು ತೀರದ್ದೆ : ಏನಾದರಾಗಲಿ ಮಗನ ಮದುವೆಯನ್ನು ಈ ಸಲ ನಿಲ್ಲಿಸಬಾರದು. ನೆರವೇರಿಸಿಯೇ ತೀರಬೇಕು.  ಬಡತನಕ್ಕೆ ಮಗನ ಮದುವೆಯನ್ನು ಮಾಡಿದಿರಲು ಸಾಧ್ಯವೆ ? ಅಲ್ಲದೆ ಮಗನು ಸಹ ಆ ದಿನ ಒಂದೆರಡು ವರ್ಷ ಬಿಟ್ಟು ಬಾ’ ಎಂದು ಹೇಳಿದ್ದಾನೆ. ಅದರಂತೆ ಎರಡು ವರ್ಷಗಳು ಕಳೆದವು. ಅಂದು ಕೊಟ್ಟು ಬಂದ ಮಾತನ್ನು ನೆರವೇರಿಸದೆ ಇರುವುದು ಹೇಗೆ ? ಮಗನಾದರೂ ಏನೆಂದುಕೊಂಡಾನು? ಏನಾದರಾಗಲಿ, ಈ ಸಲ ಮದುವೆ ಮಾಡಿಬಿಡುವುದೇ ನಿರ್ಧಾರ ಎಂದು ಆಲೋಚಿಸಿದಳು.

ಆದರೆ ನೀಲಮ್ಮ ತಾಯಿಯವರು ಎಣಿಸಿದಷ್ಟು ಮಗನ ಮದುವೆ ಸುಲಭವಾಗಿರಲಿಲ್ಲ. ಹಣ ಹೇಗಾದರು ಮಾಡಬಹುದಾಗಿತ್ತು. ಮಗನ ಮನಸ್ಸನ್ನು ಒಪ್ಪಿಸುವುದು ಆಗದ ಕೆಲಸವಾಗಿತ್ತು. ಈಚೆಗೆ ಉಂಟಾದ ಮಗನ ಮನದ ಉಪರತಿಯ ವಿಷಯ ಅವರಿಗೇನು ಗೊತ್ತು? ಸರ್ವಸಾಮಾನ್ಯ ಮಕ್ಕಳಂತೆ ತನ್ನ ಮಗನು ಒಪ್ಪಬಹುದೆಂದೆ ಅವರ ತಿಳುವಳಿಕೆ; ಹೃದಯ ಹರಕೆ, ಆ ಮನದ ಬಯಕೆಯಿಂದ ತಾಯಿ ಮಗನ ಬಳಿಗೆ ಬಂದಳು.

ಬಂದು ಮಗನನ್ನು ಕರೆದರು. ಮದುವೆಯ ಮಾತೆತ್ತಿದರು. ಮಗನು ನನಗೆ ಮನೆಯೂ ಬೇಡ, ಮದುವೆಯೂ ಬೇಡ’ ಎಂದನು. ಆ ಮಾತನ್ನು ಕೇಳಿ ಮಾತೆಯ ಮನಸ್ಸು ಕಸಿವಿಸಿಗೊಂಡಿತು ಕಳವಳಗೊಂಡಿತು. ಚಿತ್ತಸ್ಥೈರ್ಯ ತಂದುಕೊಂಡು ಮಗನ ಮನಸ್ಸು ಒಲಿಸಲು ಸಾಹಸ ಮಾಡಿದರು; ಸಾಧ್ಯವಿದ್ದಷ್ಟು ಹೇಳಿದರು. ಮತ್ತೊಬ್ಬರಾದರೆ ಮನಸ್ಸು ಆಗಳೆ ತವಕಿಸುವಷ್ಟರ ಮಟ್ಟಿಗೆ ಹೇಳಿದರು. ಹೇಳಿದರೇನು ಪ್ರಯೋಜನವಾಗಲಿಲ್ಲ. ಪ್ರತಿಯಾಗಿ ಅಮ್ಮಾ! ಅದಾಗದು. ಅಜೀರ್ಣ ಆದವನಿಗೆ ಅಮೃತವು ವಿಷವಾಗುವುದಿಲ್ಲವೇನಮ್ಮ. ಹೀಗಿರುವಾಗ ವಿಷ ಕುಡಿಸಿದರೇ ಬದುಕವರೇನಮ್ಮ ಇರುಳು ಕಂಡ ಬಾವಿಯಲ್ಲಿ ಹಗಲು ಬೀಳುವರೇನಮ್ಮ. ಬೀಳದವರನ್ನು ಬಲವಂತದಿಂದ ನೂಕಿ ಬೀಳಿಸುವರೇನಮ್ಮ! ಅದರಲ್ಲಿಯೂ ತಾಯಿಯಾದವರು ಈ ಹಾಳುಭಾವಿಯಲ್ಲಿ ತಬ್ಬುವರೇನಮ್ಮ! ಬೇಡ, ಅಂತಹ ಅಕರುಣೆಯ ಅಕೃತ್ಯವನ್ನು ಮಾಡಬೇಡ. ಆಲೋಚಿಸದೆ ದುಡುಕಬೇಡ, ನೀನು ಹೇಳುವುದು ಮೂರು ದಿನದ ಸಂಸಾರ, ನಾಲ್ಕನೆಯ ದಿನಕ್ಕೆ ದುಃಖದ ಸಾಗರ. ಇದರಲ್ಲಿಲ್ಲ ಸತ್ಯಸುಖದ ಸಾರ, ಇದರಲ್ಲಿ ನನ್ನನ್ನು ಸರ್ವಥಾ ಕೆಡುವ ಬೇಡ, ಈ ನಶ್ವರವಾದ ಶರೀರದಿಂದ ನಿತ್ಯ ಶಾಂತಿಯನ್ನು ಸಂಪಾದಿಸಬೇಕಾಗಿದೆ. ಈ ಕತ್ತಲೆಯ ಕೋಣೆಯಲ್ಲಿ ಕೊನೆಯಿಲ್ಲದೆ ಕಾಂತಿಯನ್ನು ಹಚ್ಚಬೇಕಾಗಿದೆ. ಆ ಅಚ್ಚಳಿಯದ ಬೆಳಗಿನಲ್ಲಿ ಅನೇಕ ಜೀವರು ಕಣ್ಣರಳಿಸಬೇಕಾಗಿದೆ. ಬಾಳ ಬಗೆಗಳನ್ನು ಕಣ್ಣಾರ ಕಾಣಬೇಕಾಗಿದೆ. ಅದಿರಲಿ ಈಗ ಈ ಕಾಯವೆಂಬ ಕಾಡಿನಲ್ಲಿ ಕಾಲನು ಶಾರ್ದೂಲ ವಿಕ್ರೀಡಿತವ, ಕಾಮನು ಮತ್ತೇಭವಿ ಕ್ರೀಡಿಗವ ಮಾಡಹತ್ತಿದ್ದಾರೆ. ಇವರನ್ನು ಸೆದೆಬಡೆಯಲು ಕಾಲಾರಿಯು ಕಾಮಾರಿಯು ಆದ ಶಿವನನ್ನು ಆರಾಧಿಸಬೇಕಾಗಿದೆ. ಅದಕ್ಕಾಗಿ ನನ್ನ ಹೃದಯ ಹಂಬಲಿಸುತ್ತಿದೆ; ಹಾತೊರೆಯುತ್ತಿದೆ. ಅದಕ್ಕಾಗಿಯೇ ನಿನ್ನನ್ನು ನಿರೀಕ್ಷಿಸಿಕೊಂಡಿದ್ದೆನು. ನೀನು ಬಂದದ್ದು ಲೇಸಾಯಿತು ಮಾತೆ, ಜನ್ಮದಾತೆ ! ಇಲ್ಲಿಯವರೆವಿಗೂ ನನ್ನ ಸರ್ವಸ್ವ ನೀನಾಗಿದ್ದೆ. ನನ್ನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿಕೊಟ್ಟೆ. ನೀನು ಸುಮ್ಮನಿರದೆ ನನ್ನನ್ನು ಊರಿಗೆ ಕರೆಯಿಸಿಕೊಂಡು ಮನೆಯ ಬಾಳಿಗೆ ನೂಕಿದ್ದರೆ ನಾನೆಲ್ಲಿ ಇಷ್ಟಾದರೂ ಓದುತ್ತಿದ್ದೆನು. ಈಗ ಓದಿದ್ದು ನಿನ್ನ ಕೃಪೆ. ಈಗ ಅರಿತಿದ್ದುದು ನಿನ್ನ ಆಶೀರ್ವಾದ. ತಾಯೆ, ತಿರುಗಿ ಆ ಸಂಸ್ಕೃತಿಗೆ ಎಳೆಯಬೇಡ, ಮುನ್ನೋಡುವ ಕಾಲಿಗೆ ತೊಡಕ ಸುತ್ತಬೇಡ. ನಿನಗೆ ಇನ್ನೂ ಒಬ್ಬ ಹಿರಿಯ ಮಗನು ಇದ್ದಾನೆ. ಅವರಿಂದ ಸಂಸಾರ ನಿರ್ವಹಣೆಯಾಗುತ್ತದೆ. ನನ್ನನ್ನು ವೃಥಾ ಆಶಿಸಬೇಡ, ಶೋಕಿಸಬೇಡ, ಎಷ್ಟಾದರು ತಾಯಿ ಋಣ ದೊಡ್ಡದು. ಅದನ್ನು ತೀರಿಸಿದಲ್ಲದೆ ಮುಂದಾರಿಯಿಲ್ಲ. ಅದಕ್ಕಾಗಿ ಈ ಒಂದೆರಡು ವರ್ಷಗಳಲ್ಲಿ ಶಿಕ್ಷಕವೃತ್ತಿಯಿಂದ ಸಂಪಾದಿಸಿದ ಈ ಮುನ್ನೂರು ರೂಪಾಯಿಗಳನ್ನು ನಿನ್ನ ಉಡಿಯಲ್ಲಿ ಹಾಕುತ್ತೇನೆ. ಇಷ್ಟರಿಂದ ತೃಪ್ತಳೂ ಶಾಂತಳೂ ಆಗು. ಇನ್ನು ಮೇಲೆ ನೀನು ತಾಯಿಯೆಂಬ ಮಮತೆ ನನ್ನಲ್ಲಿಯು ನಾನು ಮಗನೆಂಬ ಮಮತೆ ನಿನ್ನಲ್ಲಿಯು ಖಂಡಿತವಾಗಿ ಇರಕೂಡದು. ಸಂತೋಷವಾಗಿ ಹರಸು” ಎಂದು ಹೇಳಿ ನಮಸ್ಕರಿಸಿ ಹಾಗೆಯೇ ಹೊರಟು ಬಿಟ್ಟರು; ದೂರ ಹೋದ ಮೇಲೆ ಕಣ್ಣಿಗೆ ಕಾಣದಂತಾದರು. ಜನತಾ ಜನಾರ್ದನನು ಕಡೆಗು ತನ್ನ ಭಿಕ್ಷವನ್ನು ಕೊಂಡೊಯ್ದೆ ಬಿಟ್ಟನು.   

 ತಾಯಿ ನೀಲಮ್ಮನವರಿಗೆ ದಿಕ್ಕು ತೋಚದಂತಾಯಿತು. ತಾನು ಯೋಚಿಸಿದ ಯೋಚನೆಗಳನ್ನೆಲ್ಲ ಕನಸಿನಲ್ಲಿ ಕಂಡಂತಾಯಿತು. ಕಣ್ಣಿಗೆ ಕತ್ತಲು ಕವಿದಂತಾಯಿತು. ತುಂಬು ಹರೆಯದ ಹುಡುಗ ಹೀಗೆಲ್ಲ ಮಾಡುತ್ತಾನೆಂದು ಅವಳು ಬಯಸಿರಲಿಲ್ಲ; ಭಾವಿಸಿರಲಿಲ್ಲ. ಅನಿರೀಕ್ಷಿತವಾಗಿ ಮರಕ್ಕೆ ಸಿಡಿಲು ಬಡಿದಂತಾಯಿತು. ಹೃದಯ ತಳಮಳಿಸಿತು. ಮನಸ್ಸು ಮರಗಿತು. ಕಣ್ಣೀರು ಕಾಲುವೆಯಾಗಿ ಹರಿಯಿತು. ಕಾರ್ಗತ್ತಲೆ ಕವಿದಂತಾಯಿತು. ಮುಂದಾಲೋಚನೆ ಹರಿಯದಂತಾಯಿತು. ಬಾಳಿನ ಭಾಗ್ಯ ಸಾಗಿ ಹೋದಂತಾಯಿತು. ಹರುಷದ ಹೊಳೆ ಹರಿದು ಹೋದಂತಾಯಿತು. ಬೆಳಗುವ ಜ್ಯೋತಿ ನಂದಿದಂತಾಯಿತು. ಕೊನರುವ ಮರ ಕಮರಿದಂತಾಯಿತು. ಈ ದುರ್ದಮ್ಯ ವಾತಾವರಣದಲ್ಲಿ ಕೊಂಚಕಾಲ ಆ ತಾಯಿ ಅಚಲದೆ ಕುಳಿತಳು. ಬಾಹ್ಯಸ್ಮೃತಿಯಿಲ್ಲದಾದಳು. ಆಮೇಲೆ ಎಚ್ಚೆತ್ತು ನಿಡುಸುಯ್ದು ನೋಡುತ್ತಾಳೆ. ಕುಮಾರನಿಲ್ಲ. ಶೂನ್ಯವಾದ ಮನೆ. ಮೌನವಾತಾವರಣ. ಏನನ್ನು ನೋಡುವುದು, ಯಾರನ್ನು ಕೇಳುವುದು? ಸಾಗಿ ಹೋದ ಕುಮಾರನನ್ನು ಅಗಲಿ ಹೋದ ಕುಮಾರನನ್ನು ಕರೆದು ತಂದು ತೋರುವರಾರು ? ತಾನು ಹೆತ್ತ ಕುಮಾರನನ್ನು ತನ್ನ ಕಣ್ಣಮುಂದಿದ್ದ ಕುಮಾರನನ್ನು ಕೊಂಡೊಯ್ದವರಾರು? ಸ್ವಪ್ನದ ಸಾಧುವೆ? ಜಾಗೃತದ ಜೋಗಿಯೆ? ಇದೇನು ಜಾದು ಆಟವೆ? ಮಾಯೆ ಮಾಟವೇ? ಯಾವ ಜಾಯಮಾನವಿದು? ಕಾಲ ಜರಡಿಯಲ್ಲಿ ಪತಿದೇವರು ಮಾವಂದಿರು ಸೋಸಿ ಹೋದರು. ಜನತಾ ಜೋಗಿಯ ಜೋಳಿಗೆಗೆ ಮಗನು ಮಾರುಹೋದನು. ಕಣ್ಣಿನ ಹಬ್ಬ ಕಳೆದುಹೋಯಿತು. ಇಲ್ಲಿದ್ದು ಮಾಡುವುದೇನು ಎಂದು ನಿರ್ವಾಹವಿಲ್ಲದೆ ನಿಧಾನವಾಗಿ

ಎದ್ದು ಊರದಾರಿ ಹಿಡಿದಳು. ದಾರಿಯುದ್ದಕ್ಕೆ ಆ ತಾಯಿಯ ಕೋಮಲ ಹೃದಯದಲ್ಲಿ ಚಿಂತೆ ವ್ಯಥೆ ಕಥೆ ತಾಂಡವಾಡಿದವು. ತೀರದ ನೋವಿನಿಂದ ನೊಂದಳು. ತಾಗದ ಉರಿಯಿಂದ ಬೆಂದಳು. ಹಾಗು ಹೀಗು ಮನೆ ಬಂದು ಸೇರಿದಳು. ಮಕ್ಕಳನ್ನು ನೋಡಿ

ಮತ್ತೆ ದುಃಖ ಇಮ್ಮಿಗಿಲಾಯಿತು. ನಡೆದುದನ್ನೆಲ್ಲ ತೋಡಿದಳು. ತನ್ನ ದೌರ್ಭಾಗ್ಯವನ್ನು ಬಿಚ್ಚಿ ತೋರಿದಳು; ಮಕ್ಕಳನ್ನು ಅತ್ತು ತೋರಿದಳು. ದುಃಖದಲ್ಲಿ ಮುಳುಗಿಸಿದಳು. ಅಂದಿನ ದಿನ ಆ ಮನೆಯೆ ಶೋಕಸಾಗರದಲ್ಲಿ ಮುಳುಗಿದಂತಿತ್ತು. ಅವರಿಗೇನು ಗೊತ್ತು ಹೀಗಾದುದು ಮುಂಬೆಳಸಿನ ಬಿತ್ತು ಎಂಬುದು. ಬಿತ್ತಿದ ಬೀಜ ಕೈ ಬಿಟ್ಟುಹೋಯಿತೆಂದು ಮರುಗಿದಂತಾಯಿತು; ಕೊರಗಿದಂತಾಯಿತು. ಪ್ರೇಮ ಕುರುಡೆಂಬ ಮಾತು ಸಾರ್ಥಕವಾಗಬೇಕಲ್ಲವೆ? ಸಂಭವವಾಗಬೇಕಲ್ಲವೆ?

ಸದಾಶಿವಯ್ಯನವರು ಸತ್ಯ ಸಂಕಲ್ಪದಿಂದ ಕಾಯಕಷ್ಟದಿಂದ ಸಂಪಾದಿಸಿ ಕೊಟ್ಟ ಆ ಸ್ವಲ್ಪ ಸಂಪದವೆ ಮನೆತನದ ಮೂಲನಿಧಿಯಾಯಿತು. ಅದರಿಂದಾಗಿ ಮನೆಯ ಬಾಳು ಯಾವ ತೊಂದರೆಯಿಲ್ಲದೆ ಸಾಗಿತು. ವಿವೇಕಾನಂದರು ತಮ್ಮ ಮನೆಯಲ್ಲಿರುವ ಅನ್ನ ಬಟ್ಟೆಗಳ ಕೊರತೆಯನ್ನು ಗುರು ಮುಖಾಂತರ ಕೇಳಿ ಪಡೆದರು. ನಮ್ಮ ಸದಾಶಿವ ಸ್ವಾಮಿಗಳವರು ತಮ್ಮ ಕಷ್ಟಾರ್ಜಿತವನ್ನೇ ಕೊಟ್ಟು ಹರಿಸಿದರು; ಕಷ್ಟ ಹರಿಸಿದರು.