Uncategorized

ಪ್ರೀತಿಯ ಶ್ರೀ ವಿನಯ್ ಶಿರಹಟ್ಟಿಮಠ ಅವರಿಗೆ,

ದೀಪದ ಕೆಲಸ ಕೇವಲ ಬೆಳಕು ಕೊಡುವುದಲ್ಲ; ಕತ್ತಲಿನಲ್ಲಿ ಅಡಗಿರುವ ಮುಖಗಳನ್ನೂ ತೋರಿಸುವುದು.
ಇತಿಹಾಸದ ಬೆಳಕೂ ಹಾಗೆಯೇ—ಅದು ಸತ್ಯಕ್ಕೆ ಬೆಳಕು ಕೊಡುತ್ತದೆ; ವಿಕೃತಿಯ ಮುಖವಾಡವನ್ನು ಸುಡುತ್ತದೆ.

ತಾವು ೨೧-೦೮-೨೦೨೬ರಂದು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ—

ವಚನಗಳ ಸಾಕ್ಷ್ಯದಲ್ಲಿ ಲಿಂಗಾಯತ: ಶರಣರ ಲಿಂಗಾಯತ ಧರ್ಮಕ್ಕೆ ವೀರಶೈವ ಲೇಬಲ್ ಏಕೆ? ಷಟ್‌ಸ್ಥಲದ ಸೋಗಿನಲ್ಲಿ ಬಚ್ಚಿಟ್ಟ ಎರಡು ಬೇರೆ ಬೇರೆ ಪ್ರಪಂಚಗಳು

ಎಂಬ ಲೇಖನದಲ್ಲಿ ಹೀಗೆ ಬರೆದಿರುವಿರಿ:

೧೯೦೪ರಲ್ಲಿ ಹಿಂದೂ, ೧೯೪೦ರಲ್ಲಿ ಹಿಂದೂ ಅಲ್ಲ.

ಹಾನಗಲ್ ಮಠದ ಪೀಠಾಧಿಪತಿಗಳು ೧೯೦೪ರಲ್ಲಿ ಒಂದು ನಿಲುವು ತಳೆದರು—ನಾವು ಹಿಂದೂ ಎಂದು. ೧೯೪೦ರಲ್ಲಿ ಆ ನಿಲುವನ್ನು ಬದಲಾಯಿಸಿದರು.

ಶಾಶ್ವತ ಸತ್ಯಗಳು ಮೂವತ್ತಾರು ವರ್ಷಗಳಲ್ಲಿ ಬದಲಾಗುವುದಿಲ್ಲ. ರಾಜಕೀಯ ನಿಲುವುಗಳು ಬದಲಾಗುತ್ತವೆ.”

ಈ ಸಾಲುಗಳನ್ನು ಓದಿದಾಗ ಒಂದು ಪ್ರಶ್ನೆ ಕಿಡಿಯಂತೆ ಎದ್ದು ನಿಲ್ಲುತ್ತದೆ:

೧೯೩೦ರಲ್ಲಿ ಲಿಂಗೈಕ್ಯರಾದ ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ೧೯೪೦ರಲ್ಲಿ ಎದ್ದುಬಂದು ತಮ್ಮ ನಿಲುವನ್ನು ಬದಲಾಯಿಸಿದರೇ?

ಕಾಲವೇ ಇಲ್ಲಿ ಸಾಕ್ಷಿ.
ದಿನಾಂಕವೇ ಇಲ್ಲಿ ತೀರ್ಪುಗಾರ.
ದಾಖಲೆಯೇ ಇಲ್ಲಿ ಬೆಳಕು !.

ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಲಿಂಗೈಕ್ಯರಾದುದು ೧೯೩೦ರಲ್ಲಿ. ಕುಂಭಕೋಣಂನಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯ ಅಧಿವೇಶನ ನಡೆದದ್ದು ೧೯೪೦ರಲ್ಲಿ.

ಈ ಹತ್ತು ವರ್ಷಗಳ ಅಂತರವನ್ನು ಮರೆಮಾಚಿ, ೧೯೪೦ರ ಮಹಾಸಭೆಯ ನಿರ್ಣಯವನ್ನು ೧೯೩೦ರಲ್ಲಿ ಲಿಂಗೈಕ್ಯರಾದ ಗುರುಗಳ ವೈಯಕ್ತಿಕ ನಿಲುವಿನ ಬದಲಾವಣೆ ಎಂದು ಬಿಂಬಿಸುವುದು ಇತಿಹಾಸದ ವ್ಯಾಖ್ಯಾನವಲ್ಲ; ಕಾಲಕ್ರಮದ ಕತ್ತು ಹಿಸುಕಿ, ಲಿಂಗೈಕ್ಯ ಗುರುಗಳ ಬಾಯಲ್ಲಿ ಕಲ್ಪಿತ ರಾಜಕೀಯ ಮಾತುಗಳನ್ನು ಇಡುವ ಬೌದ್ಧಿಕ ದುಸ್ಸಾಹಸ.

ತಾವು ಹೇಳಿರುವ ಒಂದು ಮಾತು ಮಾತ್ರ ಸತ್ಯ:

ಶಾಶ್ವತ ಸತ್ಯಗಳು ಮೂವತ್ತಾರು ವರ್ಷಗಳಲ್ಲಿ ಬದಲಾಗುವುದಿಲ್ಲ.

ಹೌದು, ಸತ್ಯ ಬದಲಾಗುವುದಿಲ್ಲ.
ಆದರೆ ಲೇಖಕರು ದಿನಾಂಕವನ್ನು ಮರೆತರೆ ಸತ್ಯ ಮಸುಕಾಗುತ್ತದೆ.
ವ್ಯಕ್ತಿಯ ಸ್ಥಾನದಲ್ಲಿ ಸಂಸ್ಥೆಯನ್ನು ನಿಲ್ಲಿಸಿದರೆ ಇತಿಹಾಸ ವಿಕೃತಗೊಳ್ಳುತ್ತದೆ.
೧೯೪೦ರ ನಿರ್ಣಯವನ್ನು ೧೯೩೦ರಲ್ಲಿ ಲಿಂಗೈಕ್ಯರಾದ ಗುರುಗಳ ತಲೆಯ ಮೇಲೆ ಹೊರಿಸಿದರೆ ಅದು ಸಂಶೋಧನೆಯಾಗುವುದಿಲ್ಲ—ಅಪವಾದವಾಗುತ್ತದೆ.

ಇತಿಹಾಸದಲ್ಲಿ ಸರ್ವನಾಮಗಳಿಗೂ ಸಾಕ್ಷ್ಯ ಬೇಕು, ವಿನಯ್ ಅವರೇ!

“ಹಾನಗಲ್ ಮಠದ ಪೀಠಾಧಿಪತಿಗಳು” ಎಂದು ಅಸ್ಪಷ್ಟವಾಗಿ ಬರೆಯುವುದರಿಂದ ಕಾಲಕ್ರಮದ ಪ್ರಶ್ನೆ ಮರೆಯಾಗುವುದಿಲ್ಲ. ೧೯೦೪ರಲ್ಲಿ ನಿಲುವು ತೆಗೆದುಕೊಂಡವರು ಯಾರು? ಅದರ ಮೂಲ ನಿರ್ಣಯ ಯಾವುದು? ೧೯೪೦ರಲ್ಲಿ ಅದನ್ನು ಬದಲಿಸಿದವರು ಯಾರು? ಆ ನಿರ್ಣಯದ ಸಂಖ್ಯೆ ಯಾವುದು?

ವ್ಯಕ್ತಿ ಬೇರೆ, ಸಂಸ್ಥೆ ಬೇರೆ.
ಸಂಸ್ಥಾಪಕರು ಬೇರೆ, ಅವರ ಲಿಂಗೈಕ್ಯದ ಹತ್ತು ವರ್ಷಗಳ ನಂತರ ನಡೆದ ಅಧಿವೇಶನ ಬೇರೆ.

ಇವೆರಡನ್ನೂ ಒಂದೇ ವಾಕ್ಯದ ಕುಲುಮೆಯಲ್ಲಿ ಕರಗಿಸಿ, “ರಾಜಕೀಯ ನಿಲುವು ಬದಲಾಯಿತು” ಎಂದು ಸುರಿದರೆ ಅದು ಇತಿಹಾಸವಾಗುವುದಿಲ್ಲ.

ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಸಂಸ್ಥಾಪಿಸಿದ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಿವಯೋಗಮಂದಿರಗಳ ಮೂಲ ನಾಮಕರಣದಲ್ಲಿಯೇ ಶ್ರೀಮದ್ವೀರಶೈವ ಎಂಬ ಗುರುತು ಪ್ರಜ್ವಲಿಸುತ್ತಿದೆ; “ಹಿಂದೂ ಎಂಬ ಹೆಸರಲ್ಲ.

೧೯೦೪ರಲ್ಲಿ ಶ್ರೀ ಕುಮಾರ ಶಿವಯೋಗಿಗಳು ಏಕಾಂಗಿಯಾಗಿ ಸಮಾಜ ಸಂಘಟನೆ ಮಾಡಲಿಲ್ಲ. ಅವರ ಹಿಂದೆ ತ್ಯಾಗ, ತಪಸ್ಸು, ಪಾಂಡಿತ್ಯ ಮತ್ತು ಸಾಮಾಜಿಕ ಕಳಕಳಿಯಿಂದ ತುಂಬಿದ ಬಲಾಢ್ಯ ಸಿಂಹಪಡೆಯೇ ಇತ್ತು.

ಅಂದಿನ ಸಮಾಜಸೇವಕರು ನಿವೃತ್ತಿಯಾದ ಮೇಲೆ ಕಾಲಹರಣಕ್ಕೆಂದು ಸಮಾಜಸೇವೆಗೆ ಬಂದವರಲ್ಲ. ಅಧಿಕಾರ ಕಳೆದುಕೊಂಡ ಮೇಲೆ ಸಮಾಜದ ವೇದಿಕೆ ಹುಡುಕಿದವರೂ ಅಲ್ಲ. ರಾಜಕಾರಣಿಗಳ ನೆರಳಿನಲ್ಲಿ ನಿಂತು ಸಮಾಜಸೇವೆಯ ಮುಖವಾಡ ತೊಟ್ಟವರೂ ಅಲ್ಲ.

ಅವರು ತಮ್ಮ ಬದುಕಿನ ಬೆಳಕನ್ನೇ ಸಮಾಜದ ಕತ್ತಲಿಗೆ ದೀಪವಾಗಿ ಅರ್ಪಿಸಿದವರು. ತಮ್ಮ ಶ್ರಮ, ಸಮಯ, ಸಂಪತ್ತು ಮತ್ತು ಸರ್ವಸ್ವವನ್ನೇ ಸಮಾಜಕ್ಕೆ ಧಾರೆಯೆರೆದವರು.

ಇಂದಿನ ಧರ್ಮಹಂತಕ ರಾಜಕೀಯ ವಾತಾವರಣವನ್ನು ೧೯೦೪ರ ಮೇಲೆ ಹೇರಿಕೊಂಡು, ಯಾರೋ ಬರೆದ ಕುಹಕದ ನಿರೂಪಣೆಯನ್ನು ಇತಿಹಾಸವೆಂದು ಪುನರಾವರ್ತಿಸುವುದು ಆ ಮಹನೀಯರ ತ್ಯಾಗಕ್ಕೆ ಮಾಡುವ ಅವಮಾನ.

ಇನ್ನು ೧೯೪೦ರ ಕುಂಭಕೋಣಂ ಅಧಿವೇಶನದ ದಾಖಲೆಗಳ ಮೇಲೆಯೇ ದೀಪ ಹಚ್ಚೋಣ.

ನಿರ್ಣಯ ಸಂಖ್ಯೆ ೧೫ ಏನು ಹೇಳುತ್ತದೆ?

ಪ್ರತಿ ಲಿಂಗಾಯತರೂ ತಮ್ಮ ಉಪಪಂಗಡ ಏನೇ ಇರಲಿ—

ಲಿಂಗಾಯತ ಅಥವಾ ವೀರಶೈವ

ಎಂದು ನೋಂದಾಯಿಸಿಕೊಳ್ಳಬೇಕೆಂದು ಹೇಳುತ್ತದೆ.

ಅಷ್ಟೇ ಅಲ್ಲ—

ಲಿಂಗಾಯತ ಮತ್ತು ವೀರಶೈವ ಪದಗಳು ಸಮಾನಾರ್ಥಕ

ಎಂದು ಮದ್ರಾಸ್ ಸರ್ಕಾರ ಗಮನಿಸಬೇಕೆಂದೂ, “ವೀರಶೈವ” ಎಂದು ಹೇಳಿಕೊಳ್ಳುವವರನ್ನೂ ಎಲ್ಲ ರೀತಿಗಳಲ್ಲಿಯೂ “ಲಿಂಗಾಯತರು” ಎಂದೇ ಪರಿಗಣಿಸಬೇಕೆಂದೂ ಮನವಿ ಮಾಡುತ್ತದೆ.

ಈ ನಿರ್ಣಯದಲ್ಲಿ ವೀರಶೈವವನ್ನು ತಿರಸ್ಕರಿಸಲಾಗಿದೆಯೇ?
ಲಿಂಗಾಯತ ಮತ್ತು ವೀರಶೈವ ಬೇರೆ ಬೇರೆ ಪ್ರಪಂಚಗಳೆಂದು ಹೇಳಲಾಗಿದೆಯೇ?
ವೀರಶೈವ ಎಂಬುದು ಹೊರಗಿನಿಂದ ಅಂಟಿಸಿದ “ಲೇಬಲ್” ಎಂದು ಎಲ್ಲಿಯಾದರೂ ಬರೆಯಲಾಗಿದೆಯೇ?

ಇಲ್ಲ!

ತಾವು ಲೇಖನದ ಶೀರ್ಷಿಕೆಯಲ್ಲಿ—

ಶರಣರ ಲಿಂಗಾಯತ ಧರ್ಮಕ್ಕೆ ವೀರಶೈವ ಲೇಬಲ್ ಏಕೆ?”

ಎಂದು ಪ್ರಶ್ನಿಸುತ್ತೀರಿ. ಆದರೆ ತಾವು ಆಧಾರವೆಂದು ತೋರಿಸುವ ೧೯೪೦ರ ದಾಖಲೆಯೇ—

ಲಿಂಗಾಯತ ಮತ್ತು ವೀರಶೈವ ಪದಗಳು ಸಮಾನಾರ್ಥಕ

ಎಂದು ತಮ್ಮ ಪ್ರಶ್ನೆಯ ಬುಡಕ್ಕೇ ಬೆಂಕಿ ಹಚ್ಚುತ್ತದೆ.

ತಮ್ಮ ವಾದವನ್ನು ಸೋಲಿಸಲು ಬೇರೆಯವರ ದಾಖಲೆ ಬೇಕಾಗಿಲ್ಲ; ತಾವು ಉಲ್ಲೇಖಿಸುವ ದಾಖಲೆಯೇ ಸಾಕಾಗಿದೆ! (ಕುಂಬಕೋಣಂ ಅದೀವೇಶನದ ಎಲ್ಲ ನಿರ್ಣಯಗಳ ಚಿತ್ರಗಳನ್ನು ಲೇಕನದ ಕೆಳಗೆ ಲಗತ್ತಿಸಿರುವೆ)

ನಿರ್ಣಯ ಸಂಖ್ಯೆ ೧೬ ಏನು ಹೇಳುತ್ತದೆ?

ಲಿಂಗಾಯತ ಸಮುದಾಯಕ್ಕೆ ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಮಹತ್ವದ ಪಾಲು ಇರುವುದರಿಂದ, ಭವಿಷ್ಯದ ಸಂವಿಧಾನಾತ್ಮಕ ಸಂಸ್ಥೆಗಳಲ್ಲಿ ಯೋಗ್ಯ ಪ್ರಾತಿನಿಧ್ಯ ನೀಡಬೇಕು ಹಾಗೂ ರಾಜಕೀಯ, ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಲಿಂಗಾಯತರನ್ನು **“ಮುಖ್ಯ ಅಲ್ಪಸಂಖ್ಯಾತ ಸಮುದಾಯ”**ವೆಂದು ಪರಿಗಣಿಸಬೇಕೆಂದು ಮನವಿ ಮಾಡುತ್ತದೆ.

ಇದು ೧೯೪೦ರ ಬ್ರಿಟಿಷ್ ಭಾರತದ ರಾಜಕೀಯ ಪ್ರಾತಿನಿಧ್ಯದ ಭಾಷೆ.

ಆ ಕಾಲದ ಮುಖ್ಯ ಅಲ್ಪಸಂಖ್ಯಾತ ಸಮುದಾಯ ಎಂಬ ಪದವನ್ನು ಇಂದಿನ ಸಂವಿಧಾನಬದ್ಧ “ಪ್ರತ್ಯೇಕ ಧಾರ್ಮಿಕ ಅಲ್ಪಸಂಖ್ಯಾತ” ಎಂಬ ಅರ್ಥಕ್ಕೆ ಎಳೆದುತಂದು—

“೧೯೪೦ರಲ್ಲಿ ಹಿಂದೂ ಅಲ್ಲ”

ಎಂದು ತೀರ್ಪು ಬರೆಯುವುದು ಕಾಲವ್ಯತ್ಯಾಸದ ವಿಕೃತಿ.

ದಾಖಲೆಯಲ್ಲಿರುವುದನ್ನು ಓದುವುದು ಸಂಶೋಧನೆ;
ತಮ್ಮ ವಾದಕ್ಕೆ ಬೇಕಾದುದನ್ನು ದಾಖಲೆಯೊಳಗೆ ತುರುಕುವುದು ಪ್ರಚಾರ.

ನಿರ್ಣಯ ಸಂಖ್ಯೆ ೨೩ ಏನು ಹೇಳುತ್ತದೆ?

ಬ್ರಿಟಿಷ್ ಭಾರತ ಮತ್ತು ಭಾರತೀಯ ಸಂಸ್ಥಾನಗಳಲ್ಲಿ ಲಿಂಗಾಯತರಿಗೆ ಹಿಂದೂ ಕಾನೂನು ಅನ್ವಯಿಸುವಾಗ ನಡೆಯುತ್ತಿದ್ದ ಅನ್ಯಾಯವನ್ನು ಖಂಡಿಸಿ, ಲಿಂಗಾಯತರಿಗೆ ಪ್ರತ್ಯೇಕ ಕಾನೂನು ಸಂಹಿತೆ ಸಿದ್ಧಪಡಿಸಬೇಕೆಂದು ನಿರ್ಣಯಿಸುತ್ತದೆ.

ಆ ಪ್ರತ್ಯೇಕ ಸಂಹಿತೆಯನ್ನು ಯಾವುದರ ಆಧಾರದ ಮೇಲೆ ರೂಪಿಸಬೇಕೆಂದು ಹೇಳಲಾಗಿದೆ?

ವೀರಶೈವ ಶಾಸ್ತ್ರಗಳು ಮತ್ತು ಶಾಶ್ವತಾಚಾರಗಳ ಆಧಾರದ ಮೇಲೆ.

ಗಮನಿಸಿ—ಅಲ್ಲಿ “ವೀರಶೈವ”ವನ್ನು ಅಳಿಸಿಲ್ಲ.
ಅದನ್ನು ಲೇಬಲ್ ಎಂದು ತಿರಸ್ಕರಿಸಿಲ್ಲ.
ಬದಲಾಗಿ ವೀರಶೈವ ಶಾಸ್ತ್ರಗಳು ಮತ್ತು ಶಾಶ್ವತಾಚಾರಗಳನ್ನೇ ಲಿಂಗಾಯತ ಕಾನೂನು ಸಂಹಿತೆಯ ಮೂಲಾಧಾರವಾಗಿ ಅಂಗೀಕರಿಸಲಾಗಿದೆ.

ಹೀಗಿರುವಾಗ—

“೧೯೦೪ರಲ್ಲಿ ಹಿಂದೂ; ೧೯೪೦ರಲ್ಲಿ ಹಿಂದೂ ಅಲ್ಲ”

ಎಂಬ ಚಮತ್ಕಾರದ ಘೋಷಣೆ ಎಲ್ಲಿಂದ ಬಂತು?

ಹಿಂದೂ ಕಾನೂನಿನ ಅನ್ವಯದಲ್ಲಿ ನಡೆಯುತ್ತಿದ್ದ ಅನ್ಯಾಯವನ್ನು ವಿರೋಧಿಸುವುದಕ್ಕೂ, “ನಾವು ಹಿಂದೂಗಳಲ್ಲ” ಎಂದು ಧಾರ್ಮಿಕ ಘೋಷಣೆ ಮಾಡುವುದಕ್ಕೂ ಬಹುದೊಡ್ಡ ವ್ಯತ್ಯಾಸವಿದೆ. ಆ ವ್ಯತ್ಯಾಸವನ್ನು ಉದ್ದೇಶಪೂರ್ವಕವಾಗಿ ಅಳಿಸಿದರೆ ಮಾತ್ರ ತಮ್ಮ ವಾದ ಉಳಿಯುತ್ತದೆ. ಆದರೆ ವಾದವನ್ನು ಉಳಿಸಲು ಇತಿಹಾಸವನ್ನು ಕೊಲ್ಲಬಾರದು.

ತಮ್ಮ ನಿರೂಪಣೆ ಡಾ. ಎಸ್. ಎಂ. ಜಾಮದಾರ್ ಅವರ ಅಖಿಲ ಭಾರತ ವೀರಶೈವ ಮಹಾಸಭೆಯು ಸತ್ಯವನ್ನು ಅರ್ಥಮಾಡಿಕೊಳ್ಳುವುದೇ?’ ಎಂಬ ಪುಸ್ತಕ ಹಾಗೂ ಅದೇ ನಿಲುವನ್ನು ಆಧರಿಸಿ ಡಾ. ಜೆ. ಎಸ್. ಪಾಟೀಲರು ಪ್ರಸಾರ ಮಾಡಿದ ಅಖಿಲ ಭಾರತ ವೀರಶೈವ ಮಹಾಸಭೆ ಸೃಷ್ಟಿಸಿದ ಗೊಂದಲಗಳು—ಲಿಂಗಾಯತ ಧರ್ಮ ಇತಿಹಾಸ ಮಾಲಿಕೆ–೨೩ ವಿಡಿಯೊದ ಪ್ರತಿಧ್ವನಿಯಂತೆ ಕಾಣುತ್ತದೆ.

ಡಾ. ಜಾಮದಾರ್, ಡಾ. ಜೆ. ಎಸ್. ಪಾಟೀಲ, ಡಾ. ಶಶಿಕಾಂತ ಪಟ್ಟಣ, ಪ್ರೊ. ಸಿದ್ದು ಯಾಪಲಪರವಿ ಮುಂತಾದವರ ನಿರೂಪಣೆಗಳು ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರ ಪವಿತ್ರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನಗಳೆಂದು ನಾನು ದಾಖಲೆಗಳ ಆಧಾರದ ಮೇಲೆ ಹಿಂದಿನಿಂದಲೂ ಪ್ರತಿವಾದಿಸುತ್ತ ಬಂದಿದ್ದೇನೆ.

ಆದರೆ ಒಂದು ಸುಳ್ಳಿಗೆ ಹಲವು ವಿದ್ವಾಂಸರ ಸಹಿ ಬಿದ್ದರೂ ಅದು ಸತ್ಯವಾಗುವುದಿಲ್ಲ.
ಒಂದು ತಪ್ಪು ಸಾವಿರ ಬಾರಿ ಪುನರಾವರ್ತನೆಯಾದರೂ ಅದು ಇತಿಹಾಸವಾಗುವುದಿಲ್ಲ.

ತಮ್ಮ ಬಳಿ ೧೯೦೪ರಲ್ಲಿ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು—

ನಾವು ಹಿಂದೂ

ಎಂದು ನಿರ್ಣಯಿಸಿದ ಮೂಲ ದಾಖಲೆ ಇದ್ದರೆ, ಅದರ ಅಧಿವೇಶನದ ಹೆಸರು, ದಿನಾಂಕ, ನಿರ್ಣಯ ಸಂಖ್ಯೆ, ಮೂಲಪಠ್ಯ, ಪುಟಸಂಖ್ಯೆ ಮತ್ತು ಸಹಿ ಮಾಡಿದವರ ವಿವರಗಳೊಂದಿಗೆ ಸಾರ್ವಜನಿಕವಾಗಿ ಪ್ರಕಟಿಸಿ.

ದಾಖಲೆ ಇದ್ದರೆ ದೀಪದ ಮುಂದೆ ಇಡಿ.
ಇಲ್ಲದಿದ್ದರೆ ಕತ್ತಲಿನಲ್ಲಿ ನೆರಳುಗಳೊಂದಿಗೆ ಯುದ್ಧ ಮಾಡಬೇಡಿ.

ಮೂಲ ದಾಖಲೆ ಇಲ್ಲದಿದ್ದರೆ—

“ಹಾನಗಲ್ ಮಠದ ಪೀಠಾಧಿಪತಿಗಳು ೧೯೦೪ರಲ್ಲಿ ಒಂದು ನಿಲುವು ತಳೆದರು; ೧೯೪೦ರಲ್ಲಿ ಅದನ್ನು ಬದಲಾಯಿಸಿದರು”

ಎಂಬ ವಾಕ್ಯವನ್ನು ಹಿಂಪಡೆದು ಸಾರ್ವಜನಿಕವಾಗಿ ತಿದ್ದುಪಡಿ ಮಾಡುವುದು ತಮ್ಮ ಜ್ಞಾನಕ್ಕೂ, ಬರವಣಿಗೆಗೂ ಸಲ್ಲಿಸುವ ಗೌರವ.

ಇದು ಶ್ರಾವಣ ಮಾಸ.

ಶಿವ ಶಿವ ಎಂದು ಆತ್ಮಾನುಸಂಧಾನ ಮಾಡಿಕೊಳ್ಳಬೇಕಾದ ಪವಿತ್ರ ಕಾಲ. ಹೊರಗೆ ಶಿವನಿಗೆ ದೀಪ ಹಚ್ಚಿ, ಒಳಗೆ ಶಿವಯೋಗಿಯ ಸ್ಮೃತಿಗೆ ಮಸಿ ಎರಚಿದರೆ ಅದು ಯಾವ ಅನುಸಂಧಾನ? ಶಿವನಿಗೆ ಬಿಲ್ವಪತ್ರ ಅರ್ಪಿಸುತ್ತಾ, ಶಿವಯೋಗಿಗಳ ವ್ಯಕ್ತಿತ್ವದ ಮೇಲೆ ಅಪವಾದದ ಮುಳ್ಳು ಎಸೆಯುವುದು ಯಾವ ಭಕ್ತಿ?

 

ಕಳೆದ ಹಲವು ದಿನಗಳಿಂದ ತಾವು ಪ್ರಕಟಿಸುತ್ತಿರುವ ಪ್ರಚೋದನಾತ್ಮಕ ಲೇಖನಗಳು ಮತ್ತು ಅವುಗಳ ಕೆಳಗೆ ಹರಿಯುತ್ತಿರುವ ಅಸ್ವಸ್ಥ ಪ್ರತಿಕ್ರಿಯೆಗಳು ಆರೋಗ್ಯಕರ ಸಂವಾದಕ್ಕೆ ಬೆಳಕು ನೀಡುತ್ತಿಲ್ಲ; ಸಮಾಜದೊಳಗಿನ ಬಿರುಕುಗಳಿಗೆ ಎಣ್ಣೆ ಸುರಿಯುತ್ತಿವೆ. ಇದನ್ನು ನಾನು ಸಾರ್ವಜನಿಕವಾಗಿ, ಆದರೆ ಅತ್ಯಂತ ಗೌರವದಿಂದ ತಮ್ಮ ಗಮನಕ್ಕೆ ತರುತ್ತಿದ್ದೇನೆ.

ವೈಚಾರಿಕ ಭಿನ್ನಾಭಿಪ್ರಾಯ ತಮ್ಮ ಹಕ್ಕು.
ಲಿಂಗಾಯತ ಪ್ರತ್ಯೇಕ ಧರ್ಮವನ್ನು ಪ್ರತಿಪಾದಿಸುವುದೂ ತಮ್ಮ ಸ್ವಾತಂತ್ರ್ಯ.

ಆದರೆ ತಮ್ಮ ವೈಚಾರಿಕ ಅಭಿಮಾನದ ಅವಸರದಲ್ಲಿ ಮತ್ತೊಬ್ಬರ ಆರಾಧ್ಯ ಗುರುಗಳ ಪವಿತ್ರ ವ್ಯಕ್ತಿತ್ವವನ್ನು ಬಲಿಪೀಠಕ್ಕೆ ಏರಿಸುವ ಹಕ್ಕು ಯಾರಿಗೂ ಇಲ್ಲ.

ಗುರುಗಳನ್ನು ಪ್ರಶ್ನಿಸಬಹುದು;
ಆದರೆ ಅವರ ಕಾಲವನ್ನು ಕೊಲ್ಲಬಾರದು.

ಇತಿಹಾಸವನ್ನು ವಿಮರ್ಶಿಸಬಹುದು;
ಆದರೆ ಲಿಂಗೈಕ್ಯರಾದವರ ಬಾಯಲ್ಲಿ ಕಲ್ಪಿತ ಮಾತುಗಳನ್ನು ಇಡಬಾರದು.

ವಾದವನ್ನು ಹರಿತಗೊಳಿಸಬಹುದು;
ಆದರೆ ದಾಖಲೆಗಳ ಕತ್ತು ಹಿಸುಕಬಾರದು.

ದಾಖಲೆಯಿಲ್ಲದ ಆರೋಪ ಹೊಗೆ.
ಸತ್ಯದ ದಾಖಲೆ ಬೆಳಕು.
ಹೊಗೆ ಕೆಲಕಾಲ ಕಣ್ಣು ಮಂಜಾಗಿಸಬಹುದು;
ಆದರೆ ಬೆಳಕಿನ ಎದುರು ಅದು ಬಹುಕಾಲ ಬದುಕುವುದಿಲ್ಲ.

ತಮ್ಮ ಅಭಿಮಾನದ ಅವಸರದಲ್ಲಿ ಮತ್ತೊಬ್ಬರ ಆರಾಧ್ಯ ಗುರುಗಳ ನಿಂದನೆ ತಮ್ಮಿಂದ ಭವಿಷ್ಯದಲ್ಲಿ ಮತ್ತೆ ಜರುಗಬಾರದೆಂದು ಅತ್ಯಂತ ಸ್ಪಷ್ಟವಾಗಿ ಕೇಳಿಕೊಳ್ಳುತ್ತೇನೆ.

 

ಶ್ರೀಕಂಠ ಚೌಕೀಮಠ

ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ.

ಆದಿ ಶ್ರೋತ್ರಂದ್ರಿಯ ನಿ |ರ್ಭೇದ ಶಬ್ದವ ಕೇಳ್ವ

ಮೋದವದು ಸುಪ್ರ- ಸಾದ ಲಿಂಗವು ಎಂದು

ಬೋಧಿಸಿದ ಗುರುದೆ ಕೃಷಿಯಾಗ   ||೧೬೩||

ಐದನೆಯ ಜ್ಞಾನೇಂದ್ರಿಯ ಶ್ರೋತ್ರ, ಅರ್ಥಾತ್ ಕಿವಿ, ಆಕಾಶ ತತ್ವ ಪ್ರಧಾನವಾದುದು ಈ ಶ್ರೋತ್ರೇಂದ್ರಿಯ, ಆಕಾಶವು ಶಬ್ದ ಗುಣಕವಾಗಿರುವದರಿಂದ ಶ್ರೋತ್ರಕ್ಕೂ ಶಬ್ದದ ಅನುಭವವಾಗುತ್ತದೆ. “ಆತ್ಮನಃ ಆಕಾಶ ಸಂಭೂತಃʼʼ ಆತ್ಮನಿಂದ ಆಕಾಶವು ಮೊಟ್ಟಮೊದಲು ಹುಟ್ಟಿದ್ದರಿಂದ ಶಿವಕವಿಯು “ಆದಿ ಶ್ರೋತ್ರೇಂದಿ” ಎಂದು ಪ್ರಯೋಗಿಸಿದ್ದಾರೆ. ಶ್ರೋತ್ರೇಂದಿಯಕ್ಕೆ ಆದಿಪಟ್ಟ  ಬಂದಿದೆ. ಮತ್ತು ಶಿವನು ನಾದ – ಬಿಂದು ಕಲಾಸ್ವರೂಪನು. ಅವರ ಮೊದಲನೇ  ತತ್ವ ”ನಾದ”ವು ಕಿವಿಗೆ ತಾನೇ ವೇದ್ಯವಾಗುವದಿಲ್ಲವೆ !

“ನಿರ್ಭೇದ’ ಶಬ್ದದ ಅರ್ಥ ವಿಧವಿಧವಾಗಿದೆ, (೧) ಎರಡುಮಾಡು ೨) ಒಡೆ ೩) ಬೈಲಿಗೆ ಹಾಕು ೪) ಸ್ಪಷ್ಟಭಾಷಣ ) ೫)ನಾಷ ೬) ಪ್ರಲಯ ಮುಂತಾದವುಗಳು ನಿರ್ಭೇದ ಪದದ ಪರ್ಯಾಯನಾಮಗಳು. ಪ್ರಸ್ತುತ ತ್ರಿಪದಿಯಲ್ಲಿ ನಿರ್ಭೇದಕ್ಕೆ ಸ್ಪಷ್ಟವಾದ ಶಬ್ದವೆಂದೇ ಹೇಳಬೇಕು. ಯಾಕಂದರೆ ಶಬ್ದಗಳು – ಭಿನ್ನ ಭಿನ್ನವಾಗಿರುವದರಿಂದ ಕೇಳುವಿಕೆಯಲ್ಲಿ ಸ್ಪಷ್ಟತೆಯಿರಬೇಕಾಗುವದು. ಮುಖ್ಯವಾಗಿ ಶಬ್ದವನ್ನು ಐದು ತೆರನಾಗಿ ವಿಭಾಗಿಸಬಹುದು. ೧) ತಾಳವಾದ್ಯ ಕಂಸಾಳಾದಿಗಳಿಂದ ಜನ್ಯಶಬ್ದ ೨) ತಂತೀವಾದ್ಯದಿಂದ ಹೊರಡುವ ಶಬ್ದ.೩) ಕುಡುಹು (ಚರ್ಮವಾದ್ಯ) ವಿಡಿದು ಬರುವ ಶಬ್ದ ೪) ಕೊಳಲು, ವಾಸುಗಿ, ನಾಗಸರ, ಶಂಖ ಮೊದಲಾದವುಗಳಿಂದ ಹುಟ್ಟುವ ಶಬ್ದ. ೫) ವಚನ, ಗೀತರೂಪವಾದ ಶಬ್ದ. ಈ ಶಬ್ದಗಳನ್ನು ಪ್ರತ್ಯೇಕವಾಗಿ ಗ್ರಹಿಸುವ ಆನಂದವೇನಿದೆಯೋ ಅದು ಪ್ರಸಾದಲಿಂಗಕ್ಕೆ ಸಲ್ಲುವದೆಂದು ಗುರು ಬೋಧಿಸುತ್ತಾನೆ.

ಸಾಮಾನ್ಯ ಶಬ್ದವು ಪ್ರಸಾದಲಿಂಗಕ್ಕೆ ಸಲ್ಲುತ್ತಿದ್ದರೆ, ವಿಭಾಗಿಸಲ್ಪಡುವ ವಿವಿಧ ಶಬ್ದಗಳು ಪ್ರಸಾದಲಿಂಗದೊಳಗಿನ ಷದ್ವಿಧ ಲಿಂಗಗಳಿಗೆ ಸಮರ್ಪಣವಾಗುವಂತಾಗಬೇಕು. ಅರ್ಥಾತ್ ಸುಜ್ಞಾನದಿಂದ ವಿಭಿನ್ನ ಶಬ್ದಗಳನ್ನು ಗುರುತಿಸಿ ಆಯಾಲಿಂಗಕ್ಕೆ ಶಬ್ದ ಪ್ರಸಾದವನ್ನಾಗಿ ಸಮರ್ಪಿಸುವದು ಶರಣನ ಮಣಿಹವಾಗಿದೆ. ಪ್ರಸಾದಲಿಂಗವು ಶರಣನಿಂದ ಪೂಜೆಗೊಂಬುವಂಥಹದು. ಶರಣಸ್ಥಲಕ್ಕೆ ಏರಿ ನಿಂತವನು ನಿರ್ಭೇದ ಶಬ್ದವನ್ನು ಅರಿಯುತ್ತಾನೆ. ಅಂದರೆ ದೇಹಾವಸಾನದ, ಅರ್ಥಾತ್ ಅಂತಿಮಾವವಸ್ಥೆಯ ಸಾಗರಘೋಷದಂತಹ ಶಬ್ದವನ್ನು ಸಹ ತಿಳಿಯಲು ಸಮರ್ಥನಾಗುತ್ತಾನೆಂದು ಹೇಳಬಹುದು. ಈ ಶರಣನು ತನ್ನ ಶರೀರಾವಸಾನದ ಸೂಚನೆಯನ್ನು ತಿಳಿದು ಕೊಳ್ಳುವನು. ಅಂತೆಯೇ ‘ಶರಣನ ಗುಣ ಮರಣದಲ್ಲಿ ಕಾಣು” ಎಂದು ಅನುಭವಿಗಳು ನುಡಿದುದುಂಟು.

ಚನ್ನ ಬಸವಣ್ಣನವರ ಪ್ರಸಾದಲಿಂಗದ ಮಿಶ್ರಷಡ್ವಿಧ ಲಿಂಗಾರ್ಪಣ ಕೆಳಗಿನಂತಿದೆ. ”ತಾಳ-ಕಂಸಾಳವಿಡಿದು ಹುಟ್ಟಿದ ಶಬ್ದವನರಿವುದು ಆಚಾರಲಿಂಗದಲ್ಲಿ ,ತಂತಿವಿಡಿದು ಹುಟ್ಟಿದ ಶಬ್ದವನರಿವುದು ಗುರುಲಿಂಗದಲ್ಲಿ; ಕುಡುಹುವಿಡಿದು ಹುಟ್ಟಿದ ಶಬ್ದವನರಿವುದು ಶಿವಲಿಂಗದಲ್ಲಿ; ಕೊಳಲು, ವಾಸುಗಿ, ನಾಗಸರ; ಶಂಖದೊಳಗಾದಿಯಾಗಿ ಹುಟ್ಟಿದ ಶಬ್ದವನರಿವುದು ಜಂಗಮಲಿಂಗದಲ್ಲಿ: ವಚನಗೀತದೊಳಗಾದಿಯಾಗಿ ಹುಟ್ಟಿದ ಶಬ್ದವನರಿವುದು ಪ್ರಸಾದಲಿಂಗದಲ್ಲಿ ; ಇಂತಿವೆಲ್ಲದರಲ್ಲಿಯ ಹುಟ್ಟಿದ ಶಬ್ದವನರಿವುದು ಮಹಾಲಿಂಗದಲ್ಲಿ”

ಈ ರೀತಿಯಾಗಿ ಹುಟ್ಟಿದ ಶಬ್ದಗಳನ್ನು ಪ್ರಸಾದಲಿಂಗದೊಳಗಿನ ಆಚಾರಾದಿ ಲಿಂಗದಲ್ಲಿ ಮನನಮಾಡಿಕೊಳ್ಳಬೇಕು. ಶಬ್ದ ಪ್ರಸಾದವನ್ನು ಆಯಾಲಿಂಗಗಳಿಗೆ ಸಮರ್ಪಿಸುವ ಸಾವಧಾನತೆಯನ್ನರಿಯಬೇಕು. ಶಬ್ದವು ನಿಃಶಬ್ದವಾಗಿ ಮಂತ್ರವಾಗ ಬೇಕು. ಆಗ ಸದಾಕಾಲವೂ ಕಿವಿಯಲ್ಲಿ ಪ್ರಸಾದಲಿಂಗದ ಸಾಕ್ಷಾತ್ಕಾರವಾಗುವದು. ಗುರುವೆ ! ಎನ್ನ ಶ್ರೋತ್ರವನ್ನು ಪ್ರಸಾದಲಿಂಗವನ್ನಾಗಿಸುವಂತೆ ಕರುಣಿಸು.

*ಹೃದಯೇಂದ್ರಿಯದಿ ಪಂಚ | ವಿಧ ವಿಷಯ ಸುಖ ಮಿಶ್ರ

ಮುದದಿ ಭೋಗಿಪುದು-ಸದಮಲ ಮಹಲಿಂಗವೆಂ

ಬುದ ಪೇಳ್ದ ಗುರುವೆ ಕೃಪೆಯಾಗು  ||೧೬೪||

ಐದು ಜ್ಞಾನೇಂದ್ರಿಯಗಳ ವಿಷಯಗಳ ತೃಪ್ತಿಯನ್ನು ಪಡೆಯುವದು ಹೃದಯೇಂದ್ರಿಯವು. ಇದು ಆತ್ಮತತ್ವದಿಂದ ಬಂದುದು. ಈ ಹೃದಯದಲ್ಲಿ ಮಹಾಲಿಂಗನ ವಾಸವಿರುವದು. ಘ್ರಾಣದೊಳಗಿನ ಆಚಾರಲಿಂಗಕ್ಕೆ ಗಂಧವು, ಜಿಹ್ವೆಯೊಳಗಿನ ಗುರುಲಿಂಗಕ್ಕೆ ರಸವು, ನೇತ್ರದೊಳಗಿನ ಶಿವಲಿಂಗಕ್ಕೆ ರೂಪವು ,ತ್ವಕ್ಕಿನೊಳಗಿನ ಜಂಗಮಲಿಂಗಕ್ಕೆ ಸ್ಪರ್ಶನವು, ಶ್ರೋತ್ರದೊಳಗಿನ ಪ್ರಸಾದಲಿಂಗಕ್ಕೆ ಶಬ್ದವು ಸಮರ್ಪಿಸಲ್ಪಡುತ್ತಿದ್ದರೆ ಈ ಪಂಚಜ್ಞಾನೇಂದ್ರಿಯಗಳೊಳಗಿನ ಪಂಚಲಿಂಗಗಳಿಗೆ ಸಲ್ಲುವ ಪಂಚಪ್ರಸಾದದ ಮಿಶ್ರತೃಪ್ತಿಯು ಹೃದಯದೊಳಗಣ ಮಹಾಲಿಂಗಕ್ಕೇನೆ ಆನಂದಗೊಳಿಸುವದು. ಇಂದ್ರಿಯಗಳು ಲಿಂಗಮುಖವಾಗಿ ವಿಷಯಗಳನ್ನು ಪ್ರಸಿದ ಗೊಳಿಸಿ ಭೋಗಿಸುವದರಿಂದ ಆತ್ಮನು ಆನಂದಗೊಳ್ಳುವನು. ಇಂಥ ಸುಜ್ಞಾನಿಯಾದ ಶಿವಭಕ್ತನು ಸದಾಕಾಲವೂ ಆನಂದತುಂದಿಲನಾಗಿರುವನು. ಅವನ ಪ್ರಾಣಲಿಂಗಕ್ಕೆ ಸಂತೃಪ್ತಿಯಾಗುವದು. ಪಂಚಜ್ಞಾನೇಂದ್ರಿಯಗಳಲ್ಲಿ ಪಂಚಲಿಂಗಗಳನ್ನು ಸ್ಮರಿಸಿ ಸುಜ್ಞಾನದಿಂದ ಪಂಚ ವಿಷಯಗಳನ್ನು ಪಂಚಪ್ರಸಾದಗಳನ್ನಾಗಿಸಿ ಸ್ವೀಕರಿಸುವದರಿಂದ ಯಾವಾಗಲೂ ಪವಿತ್ರವಾದ ಮಹಾಲಿಂಗವು ಆನಂದ ಹೊಂದುವದು. ಈ ತೆರನಾಗಿ ಭೋಗಿಸುವ ಕಲೆಯನ್ನು ಕರಗತಮಾಡಿಕೊಂಡರೆ ವಿಷಯಗಳ ಪೂರ್ವಾಶ್ರಯವು ಅಳಿಯುವದು. ಅಲ್ಲದೆ ಜ್ಞಾನೇಂದ್ರಿಯಗಳ ಪ್ರಾಕೃತಿಕ ಧರ್ಮವೂ ಬಯಲಾಗಿ ಲಿಂಗಸಂಬಂಧವನ್ನು ಪಡೆಯಬಲ್ಲವು. ಆಗ ಲಿಂಗಭಕ್ತನು ಪ್ರಸಾದಕಾಯನಾಗಿ ಪ್ರಸನ್ನಚಿತ್ತನಾಗುವದರಲ್ಲಿ ಸಂಶಯವಿಲ್ಲವೆಂದು ಗುರುನಾಥನು ಉಪದೇಶಿಸುತ್ತಾನೆ.

ಮಿಶ್ರಾರ್ಪಣದಲ್ಲಿ ಮಹಾಲಿಂಗದ ಮಿಶ್ರಷಡ್ವಿಧ ಲಿಂಗಾರ್ಪಣವನ್ನು ಈ ರೀತಿಯಾಗಿ ವಿವರಿಸಿದ್ದಾರೆ. “ಗಂಧದ ತೃಪ್ತಿಯನರಿಯುವದು ಆಚಾರಲಿಂಗದಲ್ಲಿ, ರಸದತೃಪ್ತಿಯನರಿವುದು ಗುರುಲಿಂಗದಲ್ಲಿ; ರೂಪಿನ ತೃಪ್ತಿಯನರಿವುದು ಶಿವಲಿಂಗದಲ್ಲಿ; ಸ್ಪರ್ಶನತೃಪ್ತಿಯನರಿವುದು ಜಂಗಮಲಿಂಗದಲ್ಲಿ, ಶಬ್ದದ ತೃಪ್ತಿಯನರಿವುದು ಪ್ರಸಾದಲಿಂಗದಲ್ಲಿ, ಇವು ಎಲ್ಲರಲ್ಲಿಯ ತೃಪ್ತಿಯನರಿವುದು ಮಹಾಲಿಂಗದಲ್ಲಿ’ ಮಹಾಲಿಂಗದೊಳಗಿನ ಆಚಾರ ಲಿಂಗವು ಗಂಧಪ್ರಸಾದದ ತೃಪ್ತಿಯನ್ನು, ಗುರುಲಿಂಗವು ರಸಪ್ರಸಾದದ ತೃಪ್ತಿಯನ್ನು, ಶಿವಲಿಂಗವು ರೂಪುಪ್ರಸಾದ ತೃಪ್ತಿಯನ್ನು, ಜಂಗಮಲಿಂಗವು ಸ್ಪರ್ಶಪ್ರಸಾದ ತೃಪ್ತಿಯನ್ನು, ಪ್ರಸಾದಲಿಂಗವು ಶಬ್ದಪ್ರಸಾದ ತೃಪ್ತಿಯನ್ನು ಅನುಭವಿಸುತ್ತವೆ. ಇವೆಲ್ಲವುಗಳ ಸಂತೃಪ್ತಿಯು ಮಹಾಲಿಂಗದೊಳಗಿನ ಮಹಾಲಿಂಗಕ್ಕೆ ಸಲ್ಲುವದು. ಓ ಗುರುವೆ ಇಂಥ ಮಹದಾನಂದವನ್ನು ಹೊಂದುವ ಸೌಭಾಗ್ಯವನ್ನು ಸಮನಿಸುವಂತೆ ಹರಸು

ರಚನೆ :-ಪರಮ ಪೂಜ್ಯ ಲಿಂ.ಹಾನಗಲ್ಲ ಕುಮಾರ ಮಹಾಸ್ವಾಮಿಗಳವರು

 

ಪರ ಶಿವಯೋಗದ ಸಾರ |

ಕರುಣ ವಿಹಾರ | ತೋಂಟದಾರ್ಯ ಹೋ || 1 ||

 

ಮನವು ನೇತ್ರವು ಸುಷುಮ್ನದಿ ಕೂಡಿ |

ತನುವನು ಮೀರಿ ಶಿವಸುಭಾನುತೋಷ |

ಆನಂದಸಕ್ತ ಗುಹದಲಿ ನೀ

ಅನನ್ಯ ವಿಲಾಸ ಹೋ                                   || 2 ||

 

ಶರಣಲೋಕ ಮುನ್ನ ಪರಿದು ಬಂದು ನಿನ್ನ |

ಮರೆಯೊಳು ಸಾರೆ ವರವಿಜ್ಞಾನವನ್ನು |

ಪರಂಪರಾನಂದಭ್ಧಿಯಾ ಕರುಣಿಸಿ |

ಪರಿಪಾಲಿಸೆನ್ನ ಹೋ                                || 3 ||

 

ಸಿದ್ಧಲಿಂಗ ಭೂಷ ಬದ್ಧಜೀವ ಪಾಶ |

ವಿದ್ದುರೆ ಸಾರೆ ಸಿದ್ಧ ಶಿವಯೋಗ ವಾಸ |

ಸಿದ್ಧಾಂತ ಶೇಖರಾವೇಶ ಮುದದೊಳು ನೀ

ಪರಿಪಾಲಿಸೇಶ ಹೋ                              || 4 ||

ಚಿತ್ತರಗಿ-ಇಲಕಲ್‌

ಲೇಖಕರು: ಪ್ರೋ.ಶ್ರೀಮತಿಸುಲೋಚನ.ಶಿ.ಹಿರೇಮಠ.

ಕನ್ನಡ ತಾಯಿಯ ಪುಣ್ಯ ಗರ್ಭವು ಕಾಲ ಕಾಲಕ್ಕೆ ಮಹಾತ್ಮರನ್ನು, ಸಾಧು ಸಂತರನ್ನು, ಶಿವಯೋಗಿಗಳನ್ನು ನೀಡುತ್ತಾ ಬಂದಿದೆ. ಈ ಪುಣ್ಯ ನಾಡಿನಲ್ಲಿ ಚಾಮರಸ ಕವಿ ಹೇಳುವಂತೆ “ನೋಡಿ ಕೆಲರಂ, ಮಾತನಾಡಿ ಕೆಲರಂ, ಮುಟ್ಟಿ ಕೆಲರಂ, ಉದ್ಧರಿಸುವ ಮಹಾನುಭಾವರು ಉದಿಸಿ ಬಂದಿದ್ದಾರೆ.”

ಅಂಥವರ ಸಾಲಿನಲ್ಲಿ ಶ್ರೀ ಮ.ನೀ.ಪ್ರ ವಿಜಯ ಮಹಾಂತ ಶಿವಯೋಗಿಗಳು, ಚಿತ್ತರಗಿ ಇಳಕಲ್ ಸಂಸ್ಥಾನ ಮಠ, ಒಬ್ಬರು. ಕನ್ನಡ ನಾಡಿನಲ್ಲಿ ಚಿತ್ತರಗಿಯ ಹಿರಿಯ ಚೇತನ ಜಂಗಮ ಪುಂಗವರು. ನಾಡಿಗರ ಹೃನ್ಮನಗಳಲ್ಲಿ ನೆಲೆಸಿದವರು, ಜಂಗಮ ಮಹಾಂತರು.

ಬಸವಣ್ಣನವರು ಹೇಳುವಂತೆ,

“ವೀರನಾದೊಡೆ ವೈರಿ ಮೆಚ್ಚಬೇಕು,

ವ್ರತಿಯಾದೊಡೆ ಅಂಗನೆಯರು ಮೆಚ್ಚಬೇಕು,

ಭಕ್ತನಾದರೆ ಜಂಗಮ ಮೆಚ್ಚಬೇಕು,

ಹಾಗೆ ಜಂಗಮನಾದರೆ ಭಕ್ತ ಮೆಚ್ಚಬೇಕು”

ಹಾಗೆಯೇ ಭಕ್ತರು ಮೆಚ್ಚಿ, ಜಂಗಮರಾದವರು ಚಿತ್ತರಗಿಯ ಪೀಠಾಧಿಪತಿಗಳಾಧ ಶ್ರೀ ವಿಜಯ ಮಹಾಂತ ಶಿವಯೋಗಿಗಳು. ಸಹಜ ಯೋಗಿಗಳು, ತ್ಯಾಗಿಗಳು, ವೀರ ವೀರಾಗಿಗಳು, ಕರುಣಾ ಹೃದಯಿಗಳು, ನಿಜ ಶಿವಯೋಗಿಗಳು.

ಶ್ರೀ ವಿಜಯ ಮಹಾಂತ ಶಿವಯೋಗಿಗಳ ವ್ಯಕ್ತಿತ್ವವನ್ನು ಸಂಕ್ಷಿಪ್ತವಾಗಿ ಒಂದು ಮಂಗಳ ಪದ್ಯದಲ್ಲಿ ವಿವರಿಸುವುದರಿಂದ ಪ್ರಾರಂಭಿಸಿ ಒಂದು ಪುರಾಣದವರೆಗೂ ವಿಸ್ತರಿಸಲು ಸಾಧ್ಯ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ರಚಿಸಬಹುದಾಗಿದೆ. ಅದು ಈಗಾಗಲೇ ಸಾಧ್ಯವೂ ಆಗಿದೆ. ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಾದ ವಾರ್ಧಕ ಷಟ್ಪದಿಯಲ್ಲಿ ಪುರಾಣ, ಭಾಮಿನಿ ಷಟ್ಪದಿಯಲ್ಲಿ ಪ್ರಬಂಧ, ಚರಿತ್ರೆ, ಲೀಲೆ, ಗಾನಸುಮನವಾಗಿ , ಕಥೆಯಾಗಿ ಹೊರಹೊಮ್ಮಿದೆ. ಅವುಗಳನ್ನು ಈ ಕೆಳಗಿನಂತೆ ಉಲ್ಲೇಖಿಸಲಾಗಿದೆ .

೧) ದ್ಯಾಂಪುರ ಚನ್ನಕವಿ ಕೃತ ಶ್ರೀ ವಿಜಯ ಮಹಾಂತೇಶ್ವರ ಪುರಾಣ

೨) ಶ್ರೀ ವಿಜಯ ಮಹಾಂತೇಶ ಲೀಲಾಮೃತ. ಲೇಖಕ: ರಾಮರಾವ ಕುಲಕರ್ಣಿ

೩) ಶ್ರೀ ವಿಜಯ ಮಹಾಂತೇಶ್ವರ ಲೀಲೆ, ಕವಿಗಳು: ಕಲ್ಯಾಣಪ್ಪ ಬ್ಯಾಳಿ

೪) ಚಿತ್ತರಗಿ ಚಿಜ್ಯೋತಿ, ಮತ್ತು ಮಹಾತಪಸ್ವಿ ಮಹಾಂತ ಶಿವಯೋಗಿಗಳು, ಜಿ.ಎಚ್, ಹನ್ನೆರಡುಮಠ

೫)  ಚಿತ್ತರಗಿಯ ಚಿನ್ಮಯಿ ವಿಜಯ ಮಹಾಂತ ಶಿವಯೋಗಿಗಳು, ಬಸವರಾಜ ಗವಿಮಠ

 ಮಠಗಳು ವೈಭವದ ಅರಮನೆಗಳಾಗದೇ ಸಮಾಜದ ಧರ್ಮ ಸುಧಾರಣೆಯ ಕೇಂದ್ರಗಳಾಗಲು ಪೀಠದ ಅಧಿಪತಿಗಳಿಂದ ಮಾತ್ರ ಸಾಧ್ಯ ಎನ್ನುವುದನ್ನು ೧೯ ನೇ ಶತಮಾನದಲ್ಲಿ ಕನ್ನಡ ನಾಡಿನ ಅನೇಕ ಮಠಗಳ ಇತಿಹಾಸದಿಂದ ತಿಳಿಯುತ್ತದೆ. ಮಠಾಧಿಪತಿಗಳ ಸತತ ಸಮಾಜ ಮುಖಿ ಸುಧಾರಣೆಗಳನ್ನು ಒಪ್ಪಿ ತಮ್ಮ ಆಚರಣೆಯಲ್ಲಿ ಕಾರ್ಯ ರೂಪಕ್ಕೆ ತಂದಿದ್ದಾರೆ. ತಮ್ಮ ಅರಿವು- ಆಚರಣೆ, ಅನುಭೂತಿಗಳಿಂದ ಸಮಾಜದ ಉನ್ನತಿಯನ್ನು ಹಾಗೂ ಶರಣ ಧರ್ಮ ಪರಂಪರೆಯನ್ನು ಉದ್ಧರಿಸಿದ್ದಾರೆ.

ಧರ್ಮ ಹಾಗೂ ಸಂಸ್ಕೃತಿ ದೃಷ್ಟಿನಿಂದ ಕನ್ನಡ ನಾಡು, ಭಾರತದಲ್ಲಿಯೇ ತನ್ನ ವೈಶಿಷ್ಟ್ಯವನ್ನು ಮೆರೆಯಿಸುತ್ತಾ ಬಂದಿದೆ. ೧೨ ನೇ ಶತಮಾನದ ಮಹಾತ್ಮಾ ಬಸವಣ್ಣನವರು ಶಾಂತವಾದ ಕ್ರಾಂತಿಯನ್ನು ಮಾಡಿ ವೀರಶೈವ ಧರ್ಮವನ್ನು ವಿಶ್ವಮಾನ್ಯವಾಗುವಂತೆ ಶ್ರಮಿಸಿ ಶರಣ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಈ ಸತ್ ಸಂಪ್ರದಾಯ ಜ್ಯೋತಿಯನ್ನು ಇಂದಿಗೂ ನಮ್ಮ ನಾಡಿನ ಅನೇಕ ಮಠಗಳು (ಅರಭಾವಿಯ ದುರುದುಂಡೇಶ್ವರ ಮಠ, ಮಹಾಲಿಂಗಪುರದ ಮಹಾಲಿಂಗೇಶ್ವರ ಮಠ, ಗರಗದ ಮಡಿವಾಳೇಶ್ವರ ಮಠ, ಅಥಣಿಯ ಮುರುಘರಾಜೇಂದ್ರ ಮಠ, ಬಿದಿರಿ ಕುಮಾರೇಶ್ವರ ಮಠ, ಇಳಕಲ್ಲಿನ ವಿಜಯಮಹಾಂತೇಶ್ವರ ಮಠ, ಹಾಳಕೇರೆಯ ಅನ್ನದಾನೇಶ್ವರ ಮಠ, ಹಾನಗಲ್ಲಿನ ಕುಮಾರೇಶ್ವರ ಮಠ, ಹಾವೇರಿಯ ಶಿವಬಸವೇಶ್ವರ ಮಠ, ಧಾರವಾಡದ ಮೃತ್ಯುಂಜಯ ಅಪ್ಪುಗಳು, ಇನ್ನೂ ಅನೇಕ ಶಿವಯೋಗಿಗಳು ತಮ್ಮ ಪಾದ ಸ್ಪರ್ಶದಿಂದ ಕನ್ನಡ ನಾಡನ್ನು ಪವಿತ್ರಗೊಳಿಸಿದ್ದಾರೆ ) ಬೆಳಗಿಸುತ್ತ ಬಂದಿವೆ.

ಇಂತಹ ನಾಡಿನ ಮಠಗಳಲ್ಲಿ ಒಂದಾದ ಚಿತ್ತರಗಿ ಇಳಕಲ್ ಸಂಸ್ಥಾನ ಮಠವು ಒಂದು. ಈ ಮಠವು ಅನೇಕ ಪೀಠಾಧಿಪತಿಗಳನ್ನು ಹೊಂದಿದ ಪರಂಪರೆ ಇದೆ. ಅವರಲ್ಲಿ ೧೬ ನೇ ಪೀಠಾಧಿಪತಿಗಳಾಗಿ ಶ್ರೀ ವಿಜಯಮಹಾಂತ ಎಂಬ ಅಭಿದಾನದಿಂದ ನಿಯುಕ್ತಗೊಳ್ಳುತ್ತಾರೆ. ಇದು ಸಂಸ್ಥಾನ ಮಠವಾದ್ದರಿಂದ ಛತ್ರ, ಚಾಮರ, ಸಿಂಹಾಸನ, ಬೆಳ್ಳಿ ಪಲ್ಲಕ್ಕಿ, ಬೆಳ್ಳಿ ಬೆತ್ತ, ಜಾಗಟೆ, ಕುದುರೆ, ವಂದಿಮಾಗದರುಗಳನ್ನು ಹೊಂದಿರುತ್ತದೆ. ಈ ಪೀಠಕ್ಕೆ ಐವತ್ತಾರು ಶಾಖಾ ಮಠಗಳಿವೆ. ರಾಯಚೂರು, ಸುರುಪುರ, ಬೀದರ, ಯಲಬುರ್ಗಾ, ಲಿಂಗಸೂರು, ಸೊಲ್ಲಾಪುರ, ಕೂಡಲಸಂಗಮ, ಚಿತ್ತರಗಿ, ಕೊಪ್ಪ, ಇದ್ದಲಗಿ, ಬೆಳಗಲ್, ಹುನುಗುಂದ, ಕರಡಿ, ನಂದವಾಡಗಿ  ಹಾಗೂ ಮುಂತಾದದ ಕಡೆಗಳಲ್ಲಿ ಶಾಖಾ ಮಠಗಳ ವ್ಯಾಪ್ತಿಯಿದೆ.

 ನಿಜಾಮರ ಕಾಲಕ್ಕೆ ಕೊಡಮಾಡಿದ ಅನೇಕ ದತ್ತಿಗಳಿವೆ. ಇಂತಹ ವಿಶಾಲ ಪ್ರದೇಶದ ಜನತೆಯ ಕಣ್ಮಣಿಗಳಾಗಿ ವೀರಶೈವ ಧರ್ಮದ ಜಾಗೃತಿಯ ನೇತಾರರಾಗಿ ಈ ಪೀಠದ ಕಾರ್ಯಭಾರವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ. ಕೆಲ ಕಾಲ ಯೋಗ್ಯ ಪೀಠಾಧಿಕಾರಿ ದೊರೆಯದಿದ್ದಾಗ ಪೀಠವು ಶೂನ್ಯತೆಯನ್ನು ಪಡೆಯುತ್ತದೆ. ಅಂತಹ ಸಂದರ್ಭದಲ್ಲಿ ಪಟ್ಟವಿಲ್ಲದೆ ಮಠವನ್ನು ಸುಸ್ಥಿತಿಯಲ್ಲಿ ಮುನ್ನಡೆಸಿಕೊಂಡು ಹೋದ ವಟು ದೇವರುಗಳ ಉದಾಹರಣೆಯು ಇದೆ.

೧೮೫೦ ರಿಂದ ೧೯೫೦ರ ಕಾಲವು ಭಾರತೀಯ ಇತಿಹಾಸದಲ್ಲಿ ಬದಲಾವಣೆಯ ಕಾಲಘಟ್ಟವಾಗಿದೆ. ಬದಲಾವಣೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಮತ್ತು ಐತಿಹಾಸಿಕ ರಂಗಗಳಲ್ಲಿ ಕಂಡುಬರುತ್ತದೆ. ಸ್ವತಂತ್ರ ಆಂದೋಲನಗಳು ಹೋರಾಟ ರೂಪ ತಾಳಿದವು. ಹೋರಾಟಕ್ಕೆ ಸಂಘಟನೆಗಳು, ನೇತಾರರು, ಅವರ ವೈಚಾರಿಕ ನಡತೆಗಳು ಯಶಸ್ಸಿಗೆ ಕಾರಣವಾದವು. ಇಂತಹ ಕಾಲದಲ್ಲಿಯೇ ಮಠಾಧಿಪತಿಗಳು ಸ್ವತಂತ್ರದಕ್ಕಿಸಿಕೊಳ್ಳಲು ಸಮರ್ಥರಾದರು. ಧರ್ಮ ರಕ್ಷಣೆಗಾಗಿ, ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವುದಕ್ಕಾಗಿ , ಶರಣ ಧರ್ಮದ ಸಂಸ್ಕೃತಿಯ ಏಳ್ಗೆಗಾಗಿ, ವೀರಶೈವ ಧರ್ಮದ ಉಳಿವಿಗಾಗಿ, ಹೊಸ ವೈಚಾರಿಕ ಸಮಾಜ ನಿರ್ಮಾಣ ಮಾಡಿದರು. ಸಮಾಜ ಉದ್ಧಾರ ಮಾಡಿದರು. ಅದಕ್ಕಾಗಿ ತಮ್ಮನ್ನು ತ್ಯಾಗ, ವೈರಾಗ್ಯಕ್ಕೆ ಅರ್ಪಿಸಿಕೊಂಡು ಕಾಯಕ ನೀತಿಯ ತಳಹದಿ ಮೇಲೆ ಸಮಾಜವನ್ನು ಕಟ್ಟಿದರು. ಇಷ್ಟಲಿಂಗಾರ್ಚನೆಯ ನಿಷ್ಠಾಭಕ್ತಿಯಿಂದ ಜ್ಞಾನ ದಾಸೋಹ, ಅನ್ನ ದಾಸೋಹ, ಅಕ್ಷರ ದಾಸೋಹದಿಂದ ಸಮಾಜವನ್ನು ಜಾಗೃತಗೊಳಿಸಿದರು. ಇದರಿಂದ ನಾಡಿನಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು, ಮಠದ ಪರಿಶ್ರಮದಿಂದ ತಲೆಯೆತ್ತಿವೆ. ಶಿಶುವಿಹಾರದಿಂದ ಹಿಡಿದು ವಿಶ್ವವಿದ್ಯಾಲಗಳವರೆಗೂ  ಬೆಳೆದು ಹೆಮ್ಮರಗಳಾಗಿವೆ.

ಜ್ಞಾನ ದಾಸೋಹಕ್ಕೆ ಬೇಕಾದ ಅನ್ನದಾಸೋಹ, ಆಶ್ರಯ ದಾಸೋಹಕ್ಕೆ ತಮ್ಮ ತನು ಮನ ಅರ್ಪಿಸಿ ಸಮಾಜಕ್ಕೆ ವೈಚಾರಿಕ ಹೊಸ ದಿಸೆಯನ್ನೇ ತೋರಿಸಿದ್ದಾರೆ. ವೈರಾಗ್ಯ, ತ್ಯಾಗ, ಆಚಾರ ವಿಚಾರ, ನೀತಿ ಶ್ರದ್ಧೆಗಳನ್ನು ಅನುಸರಿಸುವ ನವ ಸಮಾಜ ನಿರ್ಮಾಣವಾಯಿತು. ವೀರಶೈವ ಧರ್ಮ ಪರಂಪರೆಯ ಮಹಾಮಾನವತಾವಾದದ ಕೀರ್ತಿ ಪತಾಕೆಯನ್ನು ಹಾರಿಸುತ್ತ ಮುನ್ನಡೆದಿದೆ. ಇತಿಹಾಸದಲ್ಲಿ ನಾಡಿನ ಉದ್ದಗಲಕ್ಕೂ ಇಂತಹ ಅನೇಕ ಮಹಾತ್ಮರ ಹೆಸರುಗಳು ದೊರಕುತ್ತವೆ. ಅದರಲ್ಲಿ ಸಾಂದರ್ಭಿಕವಾಗಿ ಚಿತ್ತರಗಿ ಇಳಕಲ್ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ.ಮ.ನೀ.ಪ್ರ. ಸ್ವರೂಪಿ ವಿಜಯ ಮಹಾಂತ ಶಿವಯೋಗಿಗಳು ಅಗ್ರ ಗಣ್ಯರು.

ಶ್ರೀ ಹಾನಗಲ್ಲಕುಮಾರ ಶಿವಯೋಗಿಗಳು ಒಂದು ಅಧ್ಯಾತ್ಮಿಕ ಶಾಲೆಯ ಸ್ಥಾಪನೆಯ ಸಂಕಲ್ಪ ಮಾಡಿದರು. ಆ ಅಧ್ಯಾತ್ಮಿಕ ಶಾಲೆ ಶಿವಯೋಗ ಮಂದಿರವಾಗಿ, ಎಲ್ಲಿ, ಹೇಗೆ ರೂಪಗೊಳ್ಳಬೇಕೆಂದು ನಿರ್ಣಯಗೊಳಿಸಲು ವಿಜಯ ಮಹಾಂತರಲ್ಲಿಗೆ ವಿನಂತಿಸಿದಾಗ, ಶ್ರೀ ವಿಜಯ ಮಹಾಂತೇಶ್ವರರ ನೇತೃತ್ವದಲ್ಲಿ ಶಿವಯೋಗ ಮಂದಿರ ಸ್ಥಾನವನ್ನು ಅರಸುತ್ತಾ ಬರುವ ಸನ್ನಿವೇಶ ರೋಮಾಂಚನಕಾರಿಯಾಗಿದೆ. ಒಂದು ವ್ಯಕ್ತಿ ಶಕ್ತಿಯಾಗಿ ಹೇಗೆ ಕಾರ್ಯ ನಿರ್ವಹಿಸುತ್ತಾನೆ ಎಂಬುದಕ್ಕೆ ಅವರ ಶ್ರದ್ದಾಪೂರ್ವಕ ಪ್ರಯತ್ನಗಳೇ ಸಾಕ್ಷಿಯಾಗಿವೆ.

ಜನನ- ಬಾಲ್ಯ

ಮೈಸೂರು ಪ್ರಾಂತದ ಹಾಸನ ಜಿಲ್ಲೆಯಲ್ಲಿ “ಸಸಿವಾಲ” ಎಂಬ ಪುಟ್ಟ ಗ್ರಾಮ. ಅಲ್ಲಿ ಜನರೆಲ್ಲರೂ ದೈವಭಕ್ತರು. ಸತ್ಯ, ಶುದ್ಧ,ಕಾಯಕದಿಂದ ಬಾಳುತ್ತಿದ್ದರು. ಅಲ್ಲಿ ಅನೇಕ ಜಂಗಮ ಕುಟುಂಬಗಳು ನೆಲೆಸಿದ್ದವು. ಆ ಗ್ರಾಮದಲ್ಲಿ ಕೊಳಗಲ್ಮಠದ ವೀರಯ್ಯ, ಗೌರಮ್ಮ ಎಂಬ ದಂಪತಿಗಳು ಇದ್ದರು. ಇವರ ಮನೆಗೆ ಆಗಾಗ ಹತ್ತಿರದಲ್ಲೇ ಇರುವ ಕಲ್ಲಬೆಟ್ಟದ ಶಿವಯೋಗಿಗಳು ದಯಮಾಡಿಸುತ್ತಿದ್ದರು. ಇವರ ಮಠ ದಾನ, ಧರ್ಮ, ಪೂಜೆ, ಜಂಗಮರಾಧನೆಗೆ ಹೆಸರಾಗಿತ್ತು.  ಇವರ ಮಠದಲ್ಲಿ ಆಗಾಗ ಜಂಗಮ ಪಾದ ಪೂಜೆಗಳು ಜರಗುತ್ತಿದ್ದವು.

ಒಮ್ಮೆ ಕೊಳಗಲ್ಮಠಕ್ಕೆ, ನಿಡುವಳ್ಳಿಯ ಮರುಳಸಿದ್ಧ ಶಿವಯೋಗಿಗಳು ಆಗಮಿಸುತ್ತಾರೆ. ಅವರ ಚಿಕ್ಕ ಮನೆಯಲ್ಲಿಯೇ ದಂಪತಿಗಳು ಶ್ರದ್ಧಾ ಭಕ್ತಿಯಿಂದ ಅವರ ಪಾದ ಪೂಜೆಯನ್ನು, ಸಂಭ್ರಮದಿಂದ ಪೂರೈಸುತ್ತಾರೆ. ಪೂಜೆಯ ನಂತರ ಸಂತೃಪ್ತಗೊಂಡ ಶ್ರೀಗಳು ಸಂತಸದಿಂದ “ಇದು ಶಿವನು  ಆರಿಸಿಕೊಂಡ ಮನೆ. ಮುಂದೆ ಅವನು ಇಲ್ಲಿಯೇ ಬರುವನು” ಎಂದು ತುಂಬು ಹೃದಯದಿಂದ ಹರಿಸಿ ನಡೆದರು. ಮುಂದೆ ಕೆಲವು ದಿನಗಳ ನಂತರ ಗೌರಮ್ಮ ಗರ್ಭಿಣಿಯಾದರು. ಮರುಳಸಿದ್ಧ ಶಿವಯೋಗಿಗಳ ಹರಕೆ ಕೈಗೂಡುವುದೆನ್ನುವಂತೆ ಎಂಟು ತಿಂಗಳಲ್ಲಿಯೇ ಗರ್ಭಕ್ಕೆ ಲಿಂಗಧಾರಣೆಯಾಯಿತು. ಮುಂದೆ ಶಿವನೇ ಶಿಶುರೂಪವಾಗಿ ಗಂಡು ಮಗು ಗೌರಮ್ಮನ ಮಡಿಲು ತುಂಬಿತು. ( ಶಾಲೆ ವಾಹನ ಶಖೆ ೧೭೭೨, ಸಾಧಾರಣ ನಾಮ ಸಂವತ್ಸರ ಭಾನುವಾರ. ಕ್ರಿಸ್ತ ಶಕ ೧೮೫೦ರಲ್ಲಿ).

ಮಗು ಜನಿಸಿದ ಹನ್ನೆರಡನೇ ದಿನಕ್ಕೆ, ಸುಮಂಗಲೆಯರು ಮಗುವಿಗೆ “ಮಳೆಯಪ್ಪಯ್ಯ” ಎಂದು ನಾಮಕರಣ ಮಾಡಿದರು. ಶಿಶು ಮಳೆಯಪ್ಪಯ್ಯನ ಬೆಳುವಣಿಗೆಯನ್ನು ಕಂಡಾಗಲೆಲ್ಲ ವೀರಯ್ಯ ಗೌರಮ್ಮ ದಂಪತಿಗಳಿಗೆ, ಮರುಳುಸಿದ್ಧಯ್ಯ ಶಿವಯೋಗಿಗಳ ಹರಕೆ ಕೈಗೂಡಿದಂತೆ ಭಾಸವಾಗುತ್ತಿತ್ತು.

ಮಗು ಬಾಲಕನಾಗಿ ಬೆಳೆಯುತ್ತಲೇ ತಂದೆಯ ನಿಷ್ಠಾಭಕ್ತಿ, ಆಚಾರ ವಿಚಾರ, ತಾಯಿಯ ವಾತ್ಸಲ್ಯ ಕರುಣೆ ಭಕ್ತಿಯನ್ನು ಒಡಗೂಡಿಸಿಕೊಂಡು ಎಂಟು ವರುಷದವನಾದಾಗ ಮರುಳುಸಿದ್ಧ ಶಿವಯೋಗಿಗಳ ಮಠದಲ್ಲಿ ದೀಕ್ಷಾ ಕಾರ್ಯ ನೆರವೇರಿ ಸ್ಥಾನಿಕ ವಿದ್ಯಾಭ್ಯಾಸ ಪ್ರಾರಂಭವಾಯಿತು. ಈತನಲ್ಲಿದ್ದ ವಿಶೇಷ ಗುಣಗಳನ್ನು ಗಮನಿಸಿದ ಶಿವಯೋಗಿಗಳು ಅವನನ್ನು ಸಂಸ್ಕೃತ ವೇದ ಪಾಠಶಾಲೆಗೆ ಕಳುಹಿಸಲು ಸೂಚಿಸಿದರು. ಬಾಲಕನಾದ ಮಳೆಯಪ್ಪಯ್ಯನಲ್ಲಿ ಬರು ಬರುತ್ತಾ ಅನೇಕ ಬದಲಾವಣೆಗಳಾಗತೊಡಗಿದವು. ಏಕಾಂತವಾಗಿರುವುದು, ಜಂಗಮ ಪಾದ ಪೂಜೆ ಪೂರೈಸುವುದು, ಲಿಂಗಧ್ಯಾನದಲ್ಲಿ ಮೈಮರೆಯುವುದು. ಮಿತಭಾಷೆಯಾಗಿರುವುದು,

ಮೌನವನ್ನೇ ಹೆಚ್ಚು ಪ್ರೀತಿಸುವುದು ಮುಂತಾದ ಗುಣಗಳು ಕಂಡುಬಂದವು. ಬಾಲಕನಿಗೆ ತಾಯಿ ಹೇಳಿದ ಶಿವಶರಣರ ಕಥೆಗಳಲ್ಲಿ ಬರುವ ಆಚಾರ ವಿಚಾರ ,ಜಪ ತಪ, ಲಿಂಗನಿಷ್ಠೆ, ಲಿಂಗನಿರೀಕ್ಷೆ ಕುರಿತು ಶ್ರದ್ದೆ ಮೂಡತೊಡಗಿತು. ತಾನು ಹಾಗೆ ಯಾಕೆ ಲಿಂಗಪೂಜಾನಿಷ್ಠನಾಗಿ ಜಪತಪಗಳಿಂದ ಶಿವನನ್ನು ಮೆಚ್ಚಿಸಬೇಕೆಂದು ಹಂಬಲಿಸುತ್ತಿದ್ದನು. ಆ ಸಂದರ್ಭದಲ್ಲಿ ತಾಯಿಯ ಸಲಹೆಯನ್ನು ಕೇಳಿ ಕಲ್ಲಬೆಟ್ಟಕ್ಕೆ ಹೋಗಿ ತಪಸ್ಸು ಮಾಡಿ ಯೋಗಿಯಾಗುವೆ ಎಂದು ಹಂಬಲಿಸುತ್ತಿದ್ದರು. ತಾಯಿ ಅದು ಬಹಳ ದುರ್ಗಮ ಸ್ಥಾನ ಎಂದು ನಿರ್ದೇಶಿಸಿದರೂ, ಹಲವು ಕ್ರೂರ ಪ್ರಾಣಿಗಳ ವಾಸತಾಣವೆಂದು, ಮನುಷ್ಯರು ಅಲ್ಲಿ ಹೋಗಬಾರದೆಂದರೂ, ತಾಯಿ ಪರಿ ಪರಿಯಾಗಿ ಹೇಳಿದರೂ, ಗಮನಿಸದೆ ಮಗು ಒಂದು ಸಲ ಸಸಿವಾಲಕ್ಕೆ ಬಂದ ಒಬ್ಬ ಶಿವಯೋಗಿಯ ಜೊತೆಗೆ ಕಲ್ಲಬೆಟ್ಟಕ್ಕೆ ನಡದೇಬಿಟ್ಟರು. ಅಲ್ಲಿಯೇ ಕೆಲ ಕಾಲ ಬಾಲಕ ತಪೋನಿರತನಾದನು.

ಬಡಕಲ ಶರೀರ, ಜಟಾಧಾರಿ, ಬಿಳಿಯ ಗಡ್ಡ, ಗುಳಿ ಬಿದ್ದ ಕಣ್ಣುಗಳು, ಬೆನ್ನಿಗೆ ಹತ್ತಿದ ಹೊಟ್ಟೆಯ ಅನೇಕ ಕಲ್ಲಬೆಟ್ಟ ಶಿವಯೋಗಿಗಳು ಮಳೆಯಪ್ಪಯ್ಯನನ್ನು ಆಕರ್ಷಿಸಿದರು. ಕಲ್ಲಬೆಟ್ಟ ವಾಸಿಯಾದ ಮಗುವನ್ನು ಕರೆತರಲು ತಂದೆತಾಯಿಗಳು ಎಷ್ಟೇ ಪ್ರಯತ್ನಿಸಿದರೂ ಕಣ್ಣೀರು ಕರೆದರೂ ಮಗ ಅಲ್ಲಿಯೇ ನೆಲೆ ನಿಂತನು. ದುಃಖತಪ್ತರಾದ ತಂದೆ ತಾಯಿಗಳಿಗೆ ಬಸವಲಿಂಗ ಸ್ವಾಮಿಗಳು ಸಾಂತ್ವನ ಹೇಳುತ್ತಾ ನಿಮ್ಮ ಮಗ ಯೋಗಿಯಾಗಲಿ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಶರಣನಾಗಲಿ ಎಂದು ಮಳೆಯಪ್ಪನನ್ನು ಹರಸಿ ತಂದೆ ತಾಯಿಗಳನ್ನು ಸಮಾಧಾನಪಡಿಸಿದರು. ಈ ಹರಕೆಯು ಮುಂದೆ ಸತ್ಯವಾಗಿ ಪರಿಣಮಿಸಿತು.

ಕಲ್ಲಬೆಟ್ಟದಲ್ಲಿ ಬಸವಲಿಂಗ ಸ್ವಾಮಿಗಳು ಮಳಿಯಪ್ಪಯ್ಯನನ್ನು ಕಂಡು ಕ್ಷೇಮ ಸಮಾಚಾರವನ್ನು ವಿಚಾರಿಸಿದಾಗ, ಸಂಸ್ಕೃತ ಅಧ್ಯಯನಕ್ಕಾಗಿ ತಾನು ಬೇರೆ ಕಡೆ ಹೋಗಲು ಸಾಧ್ಯವೇ ಎಂದು ಕೇಳಿದನು.

ಆತನ ಅಭ್ಯಾಸದ ಆಸಕ್ತಿಯನ್ನು ಕಂಡು ನೀನು ಬಳ್ಳಾರಿಯಲ್ಲಿರುವ ಸಕ್ರಿ ಕರಡೆಪ್ಪನವರ ವೇದ ಪಾಠ ಶಾಲೆಗೆ ಹೋಗುವುದು ಸೂಕ್ತ, ಅದು ಸಂಸ್ಕೃತ ಅಧ್ಯಯನಕ್ಕೆ ಯೋಗ್ಯವಾದುದು ಎಂದು ಸೂಚಿಸಿದರು.

ಬಳ್ಳಾರಿಯ ಸಕ್ರಿ ಕರಡೆಪ್ಪನವರು ಆಗರ್ಭ ಶ್ರೀಮಂತರು. ಗುರು ಲಿಂಗ ಜಂಗಮ ದಾಸೋಹಿಗಳು ಎಂದು ಪ್ರಸಿದ್ದರಾಗಿದ್ದರು. ಅವರು ಸಂಸ್ಕೃತ ವೇದ ಪಾಠ ಶಾಲೆಯನ್ನು ನಡೆಸುತ್ತಿದ್ದರು. ಆ ಭಾಗದಲ್ಲಿ ಸಂಸ್ಕೃತ ಅಧ್ಯಯನದ ಅವಶ್ಯಕತೆಗಳನ್ನು ಅರಿತು ಒಂದು ಸಂಸ್ಕೃತ ಪಾಠಶಾಲೆ ತೆರೆದು ವಿದ್ಯಾರ್ಥಿಗಳಿಗೆ ಅನ್ನ, ವಸತಿ, ಗ್ರಂಥಗಳನ್ನು ಒದಗಿಸುತ್ತಿದ್ದರಲ್ಲದೆ ಸಂಸ್ಕೃತ ಪಾಠಶಾಲೆಗೆ ಸೂಕ್ತ ಗುರುಗಳನ್ನು ನಿಯಮಿಸಿದ್ದರು. ಹೀಗಾಗಿ ಸಕ್ರಿ ಕರಡೆಪ್ಪನವರ ವೇದ ಪಾಠಶಾಲೆ, ಶ್ರೇಷ್ಠ ಪಾಠಶಾಲೆ ಎಂದು ಪ್ರಸಿದ್ದಿಯನ್ನು ಪಡೆದಿತ್ತು. ಇಲ್ಲದಿದ್ದರೆ ಅಂದಿನ ಕಾಲಕ್ಕೆ ಸಂಸ್ಕೃತ ಅಧ್ಯಯನಕ್ಕಾಗಿ ಕಾಶಿಗೆ ಹೋಗಬೇಕಾಗುತ್ತಿತ್ತು. ಇದು ಸಾಮಾನ್ಯರಿಗೆ ಅಸಾಧ್ಯವಾಗುತ್ತಿತ್ತು. ಗುರುಗಳ ಸಲಹೆಯಂತೆ ಮಳಿಯಪ್ಪನವರು ಸಂತೆ ಸಾರಿಗೆಯವರ ಜೊತೆಗೂಡಿ ಬರಿಗಾಲಲ್ಲಿ ನಡೆದು ಬಳ್ಳಾರಿಗೆ ಬಂದರು.

 ಆಗ ಅವರು ೧೪-೧೫ರ ವರುಷದ ಬಾಲಕರಾಗಿದ್ದರು. ಬಳ್ಳಾರಿಗೆ ಬಂದು ನೇರವಾಗಿ ವೇದಶಾಲೆಯಲ್ಲಿ ಪ್ರವೇಶ ಪಡೆದು ಊರ ಹೊರಗಿನ ಒಂದು ತೋಟದಲ್ಲಿ ನೀರಿನ ಸೌಕರ್ಯವಿರುವ ಪರ್ಣಶಾಲೆಯನ್ನು ಕಟ್ಟಿಕೊಂಡು ವಾಸಿಸಿದರು. ಪ್ರಸಾದಕ್ಕಾಗಿ ಕಂತಿಭಿಕ್ಷೆಯನ್ನು ಅವಲಂಬಿಸಿದರು. ಆ ಶಾಲೆಯಲ್ಲಿ ಅನೇಕ ಪಂಡಿತರು ಗುರುಗಳಾಗಿದ್ದರು. ಅಲ್ಲಿ ವೇದಾಂತ, ವ್ಯಾಕರಣ, ತರ್ಕಶಾಸ್ತ್ರ, ಪುರಾತನರ ವಚನಗಳು, ಶಿವಶರಣ ವಚನ ಸಾಹಿತ್ಯ, ದ್ವೈತ, ಅದ್ವೈತ, ವೀರಶೈವ ಮುಂತಾದ ವಿಷಯಗಳ ಅಧ್ಯಯನ ಸಾಗುತ್ತಿತ್ತು. ಕೇವಲ ಸಾತ್ವಿಕ ವೃತ್ತಿಯಿಂದ ಪ್ರಪಂಚವನ್ನು ಮಾಡುತ್ತ ಗುರು ಲಿಂಗ ಜಂಗಮ ಆರಾಧನೆಯಲ್ಲಿ ತಮ್ಮ ಕಾಲವನ್ನು ಸವೆಸುತ್ತ ಸಕ್ರಿ ಕರಡೆಪ್ಪನವರು ದಾಸೋಹ ತೃಪ್ತರಾಗಿದ್ದರು. ಉದಾರ ವಿದ್ಯಾದಾನದಿಂದ ಶರಣ ಜೀವನವನ್ನು ಸಾಗಿಸುತ್ತಿದ್ದರು.

ಬಳ್ಳಾರಿಗೆ ಬಂದ ಮಳಿಯಪ್ಪಯ್ಯನವರು ಊರ ಹೊರಗಿನ ತೋಟದಲ್ಲಿ ವಾಸವಾಗಿದ್ದ ಸಂಗತಿ ಕರಡೆಪ್ಪನವರ ಗಮನಕ್ಕೆ ಬಂದಿತು. ಸ್ವತಃ ಅವರೇ  ಮಳಿಯಪ್ಪಯ್ಯನವರ ಗುಡಿಸಲಕ್ಕೆ ಬಂದು ಏಕೆ ತಾವು ಅನ್ನ ಛತ್ರದಲ್ಲಿ, ವಸತಿ ಛತ್ರದಲ್ಲಿ ಇರಬಾರದು ಎಂದು ವಿಚಾರಿಸಿದಾಗ ಅಲ್ಲಿ ನನ್ನ ಲಿಂಗ ಪೂಜೆಗೆ ತೊಂದರೆಯಾಗಬಹುದು ಅದಕ್ಕಾಗಿ ನಾನು ಏಕಾಂತವನ್ನು ಬಯಸುತ್ತೇನೆ ಅಧ್ಯಯನಕ್ಕೂ ಇದು ಯೋಗ್ಯವಾದ ಸ್ಥಳವಾಗಿದೆ. ನನಗೆ ಗದ್ದಲ ಹಿಡಿಸುವುದಿಲ್ಲ. ಏಕಾಂತವನ್ನು ಬಯಸುತ್ತೇನೆ ಎಂದು ಸ್ಪಷ್ಟ ಪಡಿಸಿದಾಗ ನಾನು ನಮ್ಮ ಮನೆಯಲ್ಲಿಯೇ ತಮ್ಮ ಏಕಾಂತಕ್ಕೆ ವ್ಯವಸ್ಥೆ ಅಣಿಗೊಳಿಸುತ್ತೇನೆ. ಲಿಂಗ ಪೂಜೆ ನಿರಾಳವಾಗಿ ಸಾಗುತ್ತದೆ. ನಮ್ಮ ಮನೆಯಲ್ಲಿ ನಾನು ಪೂರೈಸಿಕೊಡುತ್ತೇನೆ ಎಂದು ವಿನಮ್ರವಾಗಿ ಭಿನ್ನಯಿಸಿದಾಗ ಅವರ ಮನೆಯ ವಾಸಕ್ಕೆ ಮಳಿಯಪ್ಪಯ್ಯನವರು ಒಪ್ಪಿಕೊಂಡು ಮನೆಗೆ ಬರುತ್ತಾರೆ. ತಮ್ಮ ಪಾದದ ಧೂಳಿನಿಂದ ಸತ್ಸಂಗದಿಂದ ನನ್ನ ಮನೆಯನ್ನು ಹಾಗೂ ನನ್ನನ್ನು ಪಾವನ ಮಾಡಬೇಕೆಂದು ಮಳಿಯಪ್ಪಯ್ಯನವರನ್ನು ಒಪ್ಪಿಸಿಕೊಂಡು ಮನೆಗೆ ಕರೆ ತಂದರು. ತ್ರಿಕಾಲ ಲಿಂಗಾರ್ಚನೆ, ಒಂದೇ ಸಲ ಪ್ರಸಾದ ಸ್ವೀಕರಿಸುತ್ತ ವೇದ ವೇದಾಂತ ಷಡ್ ದರ್ಶನ, ವ್ಯಾಕರಣ, ಅಲಂಕಾರ, ಸಂಸ್ಕೃತ ಕಾವ್ಯ, ಅದ್ವೈತ ಶಾಸ್ತ್ರ, ವಚನ ಸಾಹಿತ್ಯ ಎಲ್ಲ ವಿಷಯವನ್ನು ಗಾಢವಾಗಿ ಅಭ್ಯಸಿಸಿದರು. ಪಂಡಿತ ಮಾನ್ಯ ಜ್ಞಾನಿಗಳಾಗಿ ರೂಪಗೊಳ್ಳತೊಡಗಿದರು. ಅಪಾರ ಜ್ಞಾನಿಗಳು, ತ್ರಿಕಾಲ ಲಿಂಗ ಪೂಜೆ ನಿಷ್ಠರು, ಅಧ್ಯಾತ್ಮದ ಕಳೆ ಹೊತ್ತ ತರುಣ, ಯೋಗಿಯ ಕಳೆ, ತೇಜಸ್ಸಿನಿಂದ ಕಂಗೊಳಿಸುತ್ತಿದ್ದರು.

ಚಿತ್ರ ಸಂಖ್ಯೆ ೧ ಶ್ರೀ ಸಕ್ಕರೆ ಕರಡೆಪ್ಪನವರು ಮತ್ತು ಅವರ ಸಂಸ್ಕೃತ ಪಾಠ ಶಾಲೆ ಬಳ್ಳಾರಿ.

ಒಮ್ಮೆ ಸಕ್ರಿ ಕರಡೆಪ್ಪನವರ ಮನೆಗೆ, ಅಮರಾವತಿಯ ರಾಮಪ್ಪ ದೇಸಾಯಿಯವರು ಭೇಟಿ ನೀಡಿದ್ದರು. ಅವರ ಮನೆಯ ಆದರ ಆತಿಥ್ಯವನ್ನು ಸ್ವೀಕರಿಸಿ ಕುಳಿತ್ತಿದ್ದಾಗ, ಮನೆಯಲ್ಲಿ ತಂಗಿದ್ದ ಯೋಗಿ ಕಳೆಯನ್ನು ಹೊತ್ತ ಮಳಿಯಪ್ಪಯ್ಯನವರನ್ನು ನೋಡಿ ಆಕರ್ಷಿತರಾಗುತ್ತಾರೆ. ಆಗ ಕರಡೆಪ್ಪನವರಿಗೆ ಚಿತ್ತರಗಿಯ ಪೀಠದ ಗುರುಗಳಾದ ಗುರುಮಹಾಂತ ಸ್ವಾಮಿಗಳು ಲಿಂಗೈಕ್ಕ್ಯರಾದರೆಂದು, ಪೀಠದ ಅಧಿಕಾರಕ್ಕೆ ಯೋಗ್ಯ ಪೀಠಾಧಿಕಾರಿಯನ್ನು ಅರಸುತ್ತಿದ್ದೇವೆ ತಾವು ತಮ್ಮ ಪಾಠಶಾಲೆಯ ವಟುದೇವರನ್ನು ಸೂಚಿಸಿದರೆ ಒಳ್ಳೆಯದು ಎಂದು ಕರಡೆಪ್ಪನವರಲ್ಲಿ ವಿನಂತಿಸಿಕೊಂಡರು. ಅದೇ ಹೊತ್ತಿಗೆ ಲಿಂಗ ಪೂಜೆ ಪೂರೈಸಿ ದೇಸಾಯಿಯರೊಡನೆ ಮಾತನಾಡುತ್ತಿದ್ದ ಸಕ್ರಿ ಕರಡೆಪ್ಪನವರು, ಮಳಿಯಪ್ಪಯ್ಯ ದೇವರೇ ಚಿತ್ತರಗಿ ಪೀಠದ ಅಧಿಕಾರಿಯಾಗಬಹುದಲ್ಲವೆ ಎಂದು ಕೇಳಿದಾಗ ದೇಸಾಯಿಯವರು ಆನಂದದಿಂದ ನೀವು ಸೂಚಿಸದವರನ್ನೇ ಪೀಠಾಧಿಕಾರಿಯಾಗಿ ಮಾಡಲು ಸಿದ್ಧ ಎಂದರು. ಆಗ ಕರಡೆಪ್ಪನವರು ಮಳಿಯಪ್ಪಯ್ಯ ದೇವರನ್ನು ಕರೆದು ಚಿತ್ತರಗಿ ಇಳಕಲ್ ಸಂಸ್ಥಾನ ಪೀಠದ ಅಧಿಕಾರವನ್ನು ನೀವು ಏಕೆ ವಹಿಸಿಕೊಳ್ಳಬಾರದು, ನಿಮ್ಮನ್ನು ಅರಸಿ ದೇಸಾಯಿಯವರು ಬಂದಿದ್ದಾರೆ. ಆ ಪೀಠವು ೫೬ ಶಾಖಾ ಮಠಗಳನ್ನು ಹೊಂದಿದ್ದು, ಅಸಂಖ್ಯಾತ ಭಕ್ತರನ್ನು ಹೊಂದಿದೆ.

ಒಳ್ಳೆಯ ಸಂಪತ್ತನ್ನು ಹೊಂದಿದ ಮಠವಾಗಿದೆ. ಆ ಮಠದ ಅಧಿಕಾರವನ್ನು ತಾವು ವಹಿಸಿಕೊಂಡರೆ ಒಳ್ಳೆಯದು ಎಂದು ಬಿನ್ನವಿಸಿದಾಗ ಮಳಿಯಪ್ಪಯ್ಯ ದೇವರು ನನಗೆ ಯಾವ ಪೀಠಾಧಿಕಾರವು ಬೇಡ, ಸಂಪತ್ವೈಭವೂ ಬೇಡ, ಪ್ರಚಾರ ಪ್ರಸಿದ್ಧಿಯು ಬೇಡ ಎಂದು ಸಾರಸಗಟವಾಗಿ ನಿರಾಕರಿಸಿದರು. ದೇಸಾಯಿಯರು ನಿರಾಶದಿಂದ ಮರಳಿದರು.

ಕಾಲಗತಿಸಿದಂತೆ ಆ ಸಿಂಹಾಸನಕ್ಕೆ ಬೇಗನೆ ಒಬ್ಬ ಯೋಗ್ಯ ಪಟ್ಟಾಧಿಕಾರಿಯನ್ನು ತರಬೇಕೆಂದು ದೇಸಾಯಿಯವರಿಗೂ, ಭಕ್ತರಿಗೂ ಆತುರ ಹೆಚ್ಚಾಯಿತು. ಆದ್ದರಿಂದ ರಾಮಪ್ಪ ದೇಸಾಯಿಯವರು ಅನೇಕ ಮಠ ಮಾನ್ಯಗಳಿಗೆ ಸಂದೇಶವನ್ನು ರವಾನಿಸಿದರು. ಚಿತ್ತರಗಿ ಪೀಠಕ್ಕೆ ವಟುವನ್ನು ಹುಡುಕಲು ಅನೇಕ ಮಠ ಆಶ್ರಮಗಳಿಗೆ ಭೇಟಿ ಕೊಟ್ಟು ಅರಸಿದರೂ ಪ್ರಯತ್ನ ಫಲಕಾರಿಯಾಗಲಿಲ್ಲ. ಹೀಗಿರಲಾಗಿ ಕೆಲದಿನಗಳ ನಂತರ ಸಕ್ರಿ ಕರಡೆಪ್ಪನವರು ಶಿವಾಧೀನರಾದರು.

ಅದಾದ ನಂತರ ಪಾಠಶಾಲೆಯು ನಿಂತಿತು. ಪಾಠಶಾಲೆಯಲ್ಲಿ ಇದ್ದಂತ ವಟುಗುಳು ಬೇರೆ ಬೇರೆಕಡೆ ಚದುರಿದರು. ಅಲ್ಲಿ ಇರುವಂತಹ ಶಿಕ್ಷಕರು ತಮ್ಮ ತಮ್ಮ ನೆಲೆ ಅರೆಸಿಕೊಂಡು ಹೋದರು. ಆಗ ಮಳಿಯಪ್ಪಯ್ಯನವರೂ ತಮ್ಮ ಭವಿಷ್ಯದ ಬಗ್ಗೆ ಚಿಂತಿಸುತ್ತ ಕರಡೆಪ್ಪನವರಿಗೂ ತಮಗೂ ಪೀಠದ ಅಧಿಕಾರದ ಬಗ್ಗೆ ಚರ್ಚಿಸುವಾಗ ಅಧಿಕಾರದ ಬಗ್ಗೆ ನೀರಾಕರಿಸಿದ್ದು ನೆನಪಿಗೆ ಬಂತು. ಕರಡೆಪ್ಪನವರ ಮಾತಿಗೆ ತಾವು ನನಗೆ ಲೋಕದ ಸಂಸಾರ ಬೇಡ, ಯಾವ ಅಧಿಕಾರವು ಬೇಡ, ಮೋಹವು ಬೇಡ, ಯಾವ ಪಟ್ಟಾಧಿಕಾರವು ಬೇಡ ಎಂದು ಖಡಾಖಂಡಿತವಾಗಿ ಕರಡೆಪ್ಪನವರಿಗೆ ಹೇಳಿದಾಗ “ನೀವು ಸನ್ಯಾಸಿಗಳಾದರು ಲೋಕದ ಸಂಸಾರಿಗಳು. ಲೋಕದ ಸೇವೆ ಮಾಡಲೇಬೇಕು” ಎಂದು ಅರುಹಿದ ಮಾತುಗಳು ಮರುಕಳಿಸಿದವು. ಅದೇ ಮಾತನ್ನು ಮೆಲಕು ಹಾಕುತ್ತ ವೇದ ಪಾಠಶಾಲೆ ಚದುರಿದಾಗ ಮುಂದೇನು ಎಂಬ ಶೂನ್ಯ ಮಳಿಯಪ್ಪಯ್ಯನವರಿಗೆ ಕಾಡಹತ್ತಿತು. ಅವರಿದ್ದರೆ ಬೇರೆ ಮಾತಾಗುತ್ತಿತ್ತು. ಅವರ ನಿಧನದ ನಂತರ ಲೋಕಸಂಚಾರಿಗಳಾಗಿ ತಮ್ಮ ತ್ರಿಕಾಲ ಪೂಜೆಯಲ್ಲಿ ನಿರತರಾಗಿ ಭವಿಷ್ಯದ ಶೂನ್ಯತೆಯಲ್ಲಿ ಸಾಗಿದರು. ಆಗ ವೇದ ಪಾಠಶಾಲೆಯಲ್ಲಿ ಗುರುವನ್ನರಸಿ ನರೇಗಲ್ಲಿಗೇ ಬರುತ್ತಾರೆ. ಊರ ಹೊರಗಿನ ತೋಟದಲ್ಲಿ ಪರ್ಣಶಾಲೆಯನ್ನು ನಿರ್ಮಿಸಿಕೊಂಡು ಕಂತಿಭಿಕ್ಷೆಯಿಂದ ತಮ್ಮ ತ್ರಿಕಾಲ ಲಿಂಗಪೂಜೆ ನೆರವೇರಿಸಿಕೊಂಡು ಸಾಗುತ್ತಿರವಾಗಲೇ ಒಂದು ವಿಚಿತ್ರ ಜರುಗಿತು. ಅವರಿಗೆ ವಿಪರೀತ ಭೇದಿಯು ಶುರುವಾಯಿತು. ಪ್ರತಿಸಲ ಭೇದಿಗೆ ತೆರಳಿದಾಗ ಬಾವಿ ನೀರನ್ನು ಸೇದಿ ಸ್ನಾನ ಮಾಡುವುದು ಮತ್ತೆ ಭೇದಿಗೆ ಸಾಗುವುದು. ದಿನಕ್ಕೆ ನಲವತ್ತು-ಐವತ್ತು ಸಲ ಭೇದಿಯಾಗಿ, ದೇಹದ ಶಕ್ತಿಯಲ್ಲಾ ಉಡುಗಿ ತಮಗೆ ಸ್ನಾನ ಪೂಜೆ ಮಾಡಲು ಆಗದಂತೆ ಮೈಯಲ್ಲೆಲ್ಲಾ ಉರಿ ಹೊಕ್ಕಂತಾಗಿ ನಿತ್ರಾಣರಾದರು. ಯಾವ ಔಷದಿಯೂ ನಾಟಲಿಲ್ಲ. ಕೊನಗೆ ನಿತ್ರಾಣರಾಗಿ ಪೂಜೆ ಜಪ ತಪ ತಗ್ಗಿ ಕೈ ಕಾಲುಗಳೆಲ್ಲ ಶಕ್ತಿ ಉಡಗಿ ಮೂರ್ಚಿತರಾಗಿ ಬಾವಿಯ ದಡದಲ್ಲಿ ಕುಸಿದರು. ಆ ಸಂದರ್ಭದಲ್ಲಿಯೇ ಸಕ್ರಿ ಕರಡೆಪ್ಪನವರು ಬಂದು ಚಿತ್ತರಗಿ ಪೀಠಕ್ಕೆ ಸಿದ್ಧರಾಗಿರಿ ಎಂದಂತೆ ಭಾಸವಾಗಿತ್ತು. ಇದೆ ಪ್ರಕಾರ ಅಂದೇ ಅಮರಪ್ಪ ದೇಸಾಯಿಯವರ ಸ್ವಪ್ನದಲ್ಲಿ ಕರಡೆಪ್ಪನವರು ಬಂದು ಮಳಿಯಪ್ಪಯ್ಯನವರನ್ನು ಕರೆತರಲು ನರೇಗಲ್ಲಿಗೆ ಹೋಗಿರಿ ಎಂದು ಹೇಳಿದಂತಾಯಿತು. ಮರುದಿನವೇ ರಾಮಪ್ಪ ದೇಸಾಯಿಯವರು ನರೇಗಲ್ಲಿಗೆ ಬಂದು ಮಳಿಯಪ್ಪಯ್ಯನವರ ಸ್ಥಿತಿಯನ್ನು ಕಂಡು ಚಿಂತಾಕ್ರಾಂತರಾಗಿ ವೈದ್ಯರನ್ನು ಕರೆಯಿಸಿ ಔಷದ ಉಪಚಾರದಿಂದ ಉಪಚರಿಸಿದಾಗ ಕಣ್ಣು ಬಿಟ್ಟ ಮಳಿಯಪ್ಪಯ್ಯನವರು ದೇಸಾಯಿಯವರನ್ನು ಕಂಡು ಕರಡೆಪ್ಪನವರ ಅಪ್ಪಣೆ ಮೇಲೆ ಬಂದಿದ್ದಿರೋ ಎಂದು ಕೇಳಿ ಹೌದು ಎಂದಾಗ ನಾನು ಅವರ ಮಾತನ್ನು ಒಪ್ಪಿಕೊಂಡೆ ಹಾಗಾದರೆ ಚಿತ್ತರಗಿಯ ಕಡೆ ತಾವು ಚಿತ್ತಯಸಬೇಕೆಂದು, ಚಿತ್ತರಗಿಯ ಸಂಸ್ಥಾನದ ಪೀಠಾಧಿಕಾರಿಯಾಗಲು ಅನುನಯಸಿ ಒಪ್ಪಿಸಿದರು. ಅದರಂತೆ ದೇಸಾಯಿಯರು ಪಟ್ಟಾಧಿಕಾರದ ಮುಹೂರ್ತ ಹಾಗೂ ಸಮಾರಂಭದ ದಿನಾಂಕವನ್ನು ಭಕ್ತರೊಂದಿಗೆ ಸಮಾಲೋಚಿಸಿ ಪಟ್ಟಾಧಿಕಾರದ ತಯಾರಿಯನ್ನು ನಡೆಸಿದರು. ಅದರಂತೆ ಶಾಲಿವಾಹನ ಶಕೆ ೧೮೦೯ ಪ್ರಮೋಧಿನಾಮ ಸಂವತ್ಸರ, ವೈಶಾಖ ಶುಕ್ಲದ ಚತುರ್ದಶಿ ಸೋಮವಾರ ಪಟ್ಟಾಧಿಕಾರ ನಡೆಯಬೇಕೆಂದು ನಿಗದಿಯಾಯಿತು. ಅದು ಕ್ರಿಸ್ತ ಶತಕ ೧೮೭೯ ಆಗಿತ್ತು. ಅಂದು ಭಕ್ತರೆಲ್ಲ ಕೂಡಿಕೊಂಡು ಒಳ್ಳೆ ವಿಜೃಂಭಣೆಯಿಂದ ಪಟ್ಟಾಧಿಕಾರ ಸಮಾರಂಭ ಜರುಗಿಸಿ ಶ್ರೀ.ಮ.ನೀ.ಪ್ರ ವಿಜಯಮಹಾಂತ ಶಿವಯೋಗಿಗಳೆಂದು ಅಭಿದಾನ ಹೊಂದಿ ಚಿತ್ತರಗಿಯ ಇಳಕಲ್ ಸಂಸ್ಥಾನ ಮಠದ ಪೀಠಾಧಿಪತಿಗಳಾಗಿ ಮುಂದಿನ ಮೂವತ್ತೊಂದು ವರುಷದವರೆಗೆ ಪೀಠಾಧಿಕಾರದ ಹೊಣೆಯನ್ನು ಹೊತ್ತು, ಸಮಾಜೋದ್ಧಾರಕ ಕಾಯಕವನ್ನು ಹೊತ್ತು ತಮ್ಮ ತ್ರಿಕಾಲ ಪೂಜೆ ನಿಷ್ಠೆಯಿಂದ ಭಕ್ತರ ಹೃದಯ ಮಂದಿರದಲ್ಲಿ ನಡೆದಾಡುವ ದೇವರೆಂದೇ ಪರಿಗಣಿತರಾದರು. ಪಟ್ಟವಾದ ನಂತರ ಹನ್ನೆರಡು ವರುಷಗಳ ಕಾಲ ಮೌನಾನುಷ್ಠಾನ ಕೈಗೊಳ್ಳುತ್ತಾರೆ.

ಚಿತ್ರ ಸಂಖೈ೨ : ಚಿತ್ತರಗಿಯ ಮೂಲ ಮಠ

ಶ್ರೀ ವಿಜಯಮಹಾಂತೇಶರನ್ನು ಪಟ್ಟಕ್ಕೆ ಕುಳ್ಳಿರಿಸಿದ ನಾರದ ಗದ್ದೆಯ ತಾತನವರು ಗುರುವಾಗಿ ಎಲ್ಲ ಜನರು ಕೇಳುವಂತೆ ಮಂತ್ರೋಪದೇಶವನ್ನು ಮಾಡಿದರು. ತಾವು ಸಧ್ಭಕ್ತಿ, ಸದ್ವಿವೇಕ, ಸುವಿರಕ್ತಿಯಿಂದ ನಡೆದುದಾರರೇ ತಮಗೆ ಲೋಕದಲ್ಲಿ ಯಾವ ಭಯವು ಬಾರದು. ಶರಣ ಕರಡೀಶ್ವರನ ಪರತರದ ಗರಡಿಯಲ್ಲಿ ಪಳಗಿದ ತಮ್ಮಂಥ ಅಮೂಲ್ಯ ರತ್ನವನ್ನು ರಾಮಪ್ಪ ದೇಸಾಯಿಯವರು ದೊರಕಿಸಿ ತಂದಿರುವುದು ಇಳಕಲ್ ನಾಡಿನ ಮಹಾ ಪುಣ್ಯವೆಂದು ಭಾವಿಸಬೇಕಾಗಿದೆ. ಗುರುಮಹಾಂತೇಶನ ಅನುಕರಣೆ ಮಾಡುತ್ತಾ ಜೀವನವನ್ನು ಪವಿತ್ರವಾಗಿ ಮಾರ್ಪಡಿಸಿಕೊಳ್ಳಿರಿ ಎಂದು ಹೇಳಿ ವಿಜಯಮಹಾಂತೇಶನಿಗೆ “ಕರಣಹಸಿಗೆ, ಮಂತ್ರಗೌಪ್ಯ, ಶೂನ್ಯಸಂಪಾದನೆ, ಬಸವೇಶ್ವರನ ವಚನ ಹೊತ್ತಿಗೆ, ಶತಕ ತ್ರಯ” ಮೊದಲಾದ ಪವಿತ್ರ ಗ್ರಂಥಗಳನ್ನು, ಭಕ್ತಿ, ಕ್ರಿಯಾ, ಜ್ಞಾನಗಳನ್ನು ವಿಕಾಸ ಮಾಡಿಕೊಳ್ಳಲು ಆಶೀರ್ವದಿಸಿದರು. ವಿಜಯಮಹಾಂತೇಶರು ಆ ಗ್ರಂಥಗಳನ್ನು ಭಕ್ತಿಪೂರ್ವಕವಾಗಿ ಸ್ವೀಕರಿಸಿ ಗುರುಗಳ ಶ್ರೀಪಾದಕ್ಕೆ ಅಭಿವಂದಿಸಿದರು. ಮುಂದೆ ಹನ್ನೆರಡು ವರುಷ ಮೌನಾನುಷ್ಠಾನದಲ್ಲಿ ಇದ್ದಾಗ ಈ ಎಲ್ಲ ಗ್ರಂಥಗಳ ಅಧ್ಯಯನಕ್ಕೆ ತೊಡಗಲು ಅದರ ಜ್ಞಾನದಿಂದ ಅವರ ಆತ್ಮೋದ್ಧಾರ, ಸಮಾಜೋದ್ಧಾರ ಎರಡನ್ನು ನಿಭಾಯಿಸಲು ಸಾಧ್ಯವಾಯಿತು.

 ಶ್ರೀ ವಿಜಯಮಹಾಂತೇಶರು ಮೃಷ್ಟಾನ್ನವನ್ನು ಬಯಸದವರು. ಪಲ್ಲಕ್ಕಿಯಲ್ಲಿ ಮೆರೆಯದವರು. ಅವರಿಗೆ ಗಾದಿ ತೆಕ್ಕೆ ತೂಗು ಮಂಚವು ಬೇಡವೇ ಬೇಡ. ಅವರು ದಿನಾಲೂ ಅನ್ನ, ಮುದ್ದೆ, ಬೇಳೆಸಾರು, ಪಲ್ಯ, ಆಕಳ ಹಾಲು ಇಷ್ಟೇ ಪ್ರಸಾದ ರೂಪದಿಂದ ಸೇವಿಸುತ್ತಿದ್ದರು.

ಚಿತ್ತರಗಿ ಇಳಕಲ್ ಮಠವು ಮೂಲ ಸಂಸ್ಥಾನ ಪೀಠವು ಅದಕ್ಕೆ ಛತ್ರ ಚಾಮರ ಪಲ್ಲಕ್ಕಿ ಕುದುರೆ ಸವಾರರು ವಂದಿಮಾಗಧರು ಮೊದಲಾದ ಸರಂಜಾಮು ಇದ್ದರೂ ಅವುಗಳನ್ನು ಉಪಯೋಗಿಸಿಕೊಳ್ಳುತ್ತಿರಲಿಲ್ಲ. ಪೀಠದ ೫೬ ಶಾಖಾ ಮಠಗಳ ವ್ಯವಸ್ಥೆಯನ್ನು ನೋಡಲಿಕ್ಕೆ ಬೇರೆ ಊರುಗಳಿಗೆ ಹೋಗಬೇಕಾದಾಗ ಒಂದು ಬಿಳಿ ಕುದುರೆಯನ್ನು ಮಾತ್ರ ಏರಿ ಹೋಗುತ್ತಿದ್ದರು. ಅವರೇ ಪ್ರೀತಿಯಿಂದ ಸಾಕಿದ ಒಂದು ಗೋವಿಗೆ ಮಹಾಂತಮ್ಮನೆಂದು ಹೆಸರಿಟ್ಟಿದ್ದರು. ಆ ಮಹಾಗೋವಿಗೆ ಶ್ರೀಗಳು ತನ್ನ ಹೊಟ್ಟೆಯ ಮಗುವೊ ಎಂದು ವಾತ್ಸಲ್ಯವನ್ನು ತೋರಿಸುತ್ತಿದ್ದರು.

ಶಿವಯೋಗಮಂದಿರದ ನಿರ್ದೇಶನ

ಕ್ರಿಸ್ತ ಶಕೆ ೧೯೦೮ರಲ್ಲಿ ಬಾಗಲಕೋಟೆಯಲ್ಲಿ ನಾಲ್ಕನೆಯ ವೀರಶೈವ ಮಹಾಸಭೆ ಜರುಗಿತು. ಶ್ರೀಮಂತ ಒಂಟಮುರಿ ದೇಸಾಯಿಯವರ ಅಧ್ಯಕ್ಷತೆಯಲ್ಲಿ ತೆಂಗಿನಮಠದಲ್ಲಿ ನೆರೆವೇರಿತು. ಆ ಅಧಿವೇಶನದಲ್ಲಿ ಗುರು ವಿರಕ್ತಮಠದ ವಟುಗಳನ್ನು ತರಬೇತಿಗೊಳಿಸುವ ಒಂದು ಶಿವಯೋಗಾಶ್ರಮವನ್ನು ಸ್ಥಾಪಿಸಬೇಕೆಂಬ ಠರಾವು ಸರ್ವಾನುಮತದಿಂದ ಸ್ವೀಕೃತವಾಯಿತು. ಆ ಪ್ರಕಾರ ಅಧಿವೇಶನದ ಮರುದಿನವೇ ಸೊಲ್ಲಾಪುರದ ಶ್ರೀ ವಾರದ ಮಲ್ಲಪ್ಪನವರ ಅಧ್ಯಕ್ಷತೆಯಲ್ಲಿ ಅಂತಹ ಪವಿತ್ರ ಸ್ಥಳವನ್ನು ಪರಮಪೂಜ್ಯರಾದ ಶ್ರೀ ಚಿತ್ತರಗಿ ವಿಜಯಮಹಾಂತ ಸ್ವಾಮಿಗಳು ಹುಡುಕಿ ಕೊಡಬೇಕೆಂದು ಅದಕ್ಕಾಗಿ ಪೂಜ್ಯಪಾದರಿಗೆ ಬಿನ್ನವಿಸಿಕೊಳ್ಳಲು ಶ್ರೀ ಹಾನಗಲ್ ಕುಮಾರ ಶಿವಯೋಗಿಗಳನ್ನು ಅಣಿಗೊಳ್ಳಬೇಕೆಂದು ನಿರ್ಧರಿಸಿದರು.

ಚಿತ್ರ ಸಂಖ್ಯೆ ೩ : ಶ್ರೀ ಹಾನಗಲ್ ಕುಮಾರ ಶಿವಯೋಗಿಗಳವರು ಚಿತ್ತರಗಿ ಶ್ರೀ ವಿಜಯಮಹಾಂತ ಸ್ವಾಮಿಗಳಲ್ಲಿ ಶಿವಯೋಗಮಂದಿರ ಸ್ಥಳ ಸೂಚನೆಗೆ ಅರಿಕೆ

ಆ ಪ್ರಕಾರ ಶ್ರೀ ಹಾನಗಲ್ ಕುಮಾರ ಶಿವಯೋಗಿಗಳವರು, ಚಿತ್ತರಗಿ ಶ್ರೀ ವಿಜಯಮಹಾಂತ ಸ್ವಾಮಿಗಳ ಬಳಿಗೆ ಬಂದು ನಮಸ್ಕರಿಸಿ ಪರಸ್ಪರ ಯೋಗಕ್ಷೇಮದ ಬಗ್ಗೆ ಮಾತಕತೆ ಆದ ಬಳಿಕ ಶ್ರೀ ಹಾನಗಲ್ ಕುಮಾರ ಶಿವಯೋಗಿಗಳು “ಪೂಜ್ಯರೇ, ಈಗ ವೀರಶೈವರು  ಧರ್ಮಾಚಾರಣೆಯನ್ನು ಬಿಟ್ಟು ಅಜ್ಞಾನದ ಅಂಧಕಾರದಲ್ಲಿ ತೊಳಲಾಡುತ್ತಿರುವರು. ಮಠದ ಪೀಠಾಧಿಕಾರಿಗಳು ಸ್ವತಃ ಷಟಸ್ಥಲ ಜ್ಞಾನವಿಲ್ಲದೆ ಮನಬಂದಂತೆ ಏನೋ ಸಂಪ್ರದಾಯದ ವಶದಿಂದ ಸ್ವಾಮಿಗಳಾಗಿ ನಿಜವಾದ ಯೋಗ್ಯತೆ ಇಲ್ಲದೇ ದರ್ಪದಿಂದ ನಡೆದು ಭಕ್ತರನ್ನು ಅಂಧಾನುಯಾಯಿಗಳಾಗಿ ಶೋಷಿಸುತ್ತಿದ್ದಾರೆ. ಮಠದ ಪೀಠಾಧಿಪತೆಗಳೇ ಅನಾಢ್ಯರಾಗಿರುವಾಗ ಶಿಷ್ಯಕೋಟಿಯು ಸುಧಾರಣೆಯಾಗುವುದು ಹೇಗೆ ಎಂದು ವಿಚಾರಿಸುತ್ತಿರುವಾಗ ಈಗಿನ ಮಠಾಧಿಪತಿಗಳಲ್ಲಿ ನಿಜವಾದ ಲಿಂಗ ನಿಷ್ಠೆ ಕಡಿಮೆ. ಶಾಸ್ತ್ರೋಕ್ತ ಪೂಜಾವಿಧಾನಗಳನ್ನರಿಯರು, ಯೋಗಾಭ್ಯಾಸ ವರ್ಜಿತರು. ಆದುದರಿಂದ ಅಂತಹವರಿಗೆ ತರಬೇತಿ ಕೊಟ್ಟು ಅರ್ಹರನ್ನಾಗಿ ಮಾಡುವ ಶಿವಯೋಗ ಆಶ್ರಮದ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿದರು. ಆದರಿಂದ ಆ ಪೀಠಗಳಿಗೆ ಶಿವಕಳೆ ಕುಂದಿಹೋಗಿದೆ. ಕಾರಣ ತಾವು ಯಾವ ಸ್ಥಳವನ್ನು ಹುಡುಕಿ ನಮಗೆ ತೋರಿಸುವಿರೋ ಅಲ್ಲಿಯೇ ಶಿವಯೋಗಾಶ್ರಮವನ್ನು ರಚಿಸಬೇಕೆಂದು ನಿರ್ಣಯಸಿದ್ದೇವೆ” ಎಂದು ಹಾನಗಲ್ ಕುಮಾರ ಶಿವಯೋಗಿಗಳು  ನುಡಿಯಲು ಶ್ರೀ ವಿಜಯಮಹಾಂತೇಶರು

“ಕುಮಾರ ಯೋಗಿಯೇ, ನೀನು ಬೇರಲ್ಲ, ಶಿವನು ಬೇರಲ್ಲ ನಮ್ಮ ಜನರು ಮಂದಭಾಗ್ಯರು, ಅಜ್ಞಾನ ಅಂಧಕಾರದಲ್ಲಿ ಮುಳುಗಿ ತೊಳಲುತ್ತಿರುವರು ತಮ್ಮಿಂದ ಜ್ಞಾನ ಜ್ಯೋತಿಯು ಬೆಳಗಬೇಕಾಗಿದೆ ನಿನ್ನಿಚ್ಛೆಯೇ ಶಿವನೇಚ್ಛೆಯೂ” ಅದಕ್ಕಾಗಿ ನೀವು ಒಳ್ಳೆಯ ಯೋಜನೆಯನ್ನೇ ಕೈಗೊಂಡಿರುವಿರಿ. ತಮ್ಮ ಕಾರ್ಯಕ್ಕೆ ಶೀಘ್ರವೇ ಯಶಸ್ಸು ದೊರಕುತ್ತದೆ. ನಾನು ಆ ಕಾರ್ಯಕ್ಕೆ ಸದಾ ಸಿದ್ದ. ಸದ್ಯ ಹೊರಡುವೆನು ನಡೆಯಿರಿ ಎಂದು ಹೇಳಿ ತಮ್ಮ ಕುದರೆಯನ್ನೇರಿ ಯೋಗ್ಯ ಸ್ಥಳ ಹುಡುಕಲು ಹೊರಟರು. ಹಾನಗಲ್ ಕುಮಾರ ಶಿವಯೋಗಿಗಳಿಗೆ ತಮ್ಮ ರಥದಲ್ಲಿ ಜೊತೆಗೆ ಬರಲು ತಿಳಿಸಿದರು.  ಈ ಸುದ್ದಿ ಕೇಳಿ ದಾರಿಯುದ್ದಕ್ಕೂ ಹಲವಾರು ಜನ ಭಕ್ತರು, ಸ್ವಾಮಿಗಳು ಹಿಂಬಾಲಿಸಿ ಹೊರಟರು.

ಶ್ರೀಗಳಿಗೆ ದಾರಿಯುದ್ದಕ್ಕೂ ಜನರು ತಳಿರು ತೋರಣಗಳಿಂದ ಮಂಗಳ ವಾದ್ಯಗಳಿಂದ ಪ್ರಭುವಿಗೆ ದೀಪಾರುತಿಯನ್ನು ಬೆಳಗಿ ಭಜನಾ ಮೇಳಗಳು ಜನರ ಜೈಘೋಷದೊಡನೆ ಪ್ರತಿದ್ವನಿಯಾಯಿತು. ಮಲಪಹಾರಿಯ ಗುಂಟ ಹೋರಟ ಶ್ರೀಗಳು ಮೊದಲು ಐಹೊಳೆಗೆ ದಯಮಾಡಿಸಿದರು ಅಲ್ಲಿಯ ಅನೇಕ ಗವಿಗಳು ಸುಂದರ ಶಿಲಾ ಮೂರ್ತಿಗಳು ಮನೋಹರವಾದ ಸೃಷ್ಟಿ ಸೌಂದರ್ಯಕ್ಕೆ ಆಕರ್ಷಣೆಯಾಗಿ ಕೆಲವರು ಆ ಸ್ಥಳವು ಯೋಗ್ಯವೆಂದು ಪೂಜ್ಯರಿಗೆ ಅರಿಕೆ ಮಾಡಿಕೊಂಡರು ಅದಕ್ಕೆ ಶ್ರೀಗಳು ಇಲ್ಲಿ ರಾಮಲಿಂಗೇಶ್ವರ ಗುಡಿಯೂ ಇದೆ. ಪ್ರತಿ ನಿತ್ಯ ಇಲ್ಲಿ ಅನೇಕ ಪ್ರವಾಸಿಗಳು ಬಂದು ಹೋಗುವದರಿಂದ ಏಕಾಂತಕ್ಕೆ ಶಾಂತತೆಗೆ ಆಸ್ಪದ ಇಲ್ಲವಾದುದರಿಂದ ಈ ಸ್ಥಳ ನಿರಾಕರಿಸಿ ಮುಂದೆ ಪಟ್ಟದಕಲ್ಲಿಗೆ ಬರುತ್ತಾರೆ. ಅದು ಹಿಂದೆ ಚಾಲುಕ್ಯ ರಾಜರು ಪಟ್ಟಕ್ಕೆ ಕೂಡ್ರುವ ಸ್ಥಳವಾಗಿದ್ದಿತು. ಅಲ್ಲಿ ರಾಜಮನೆತನದ ಕುರುಹುಗಳು, ದೇವಾಲಯಗಳು ಇದ್ದುದನ್ನು ನೋಡಿ ಕೆಲವರು ಆ ಸ್ಥಾನವು ಏಕಾಂತಕ್ಕೆ ಹಾಗೂ ಶಾಂತತೆಗೆ ಯೋಗ್ಯ ಎಂದು ವಿಜ್ಞಾಪಿಸಿದಾಗ ಆಗ ಶ್ರೀಗಳು ಅತ್ತಿತ್ತ ನೋಡುವಷ್ಟರಲ್ಲಿ ಘಟಸರ್ಪವೊಂದು ಹೆಡೆಯೆತ್ತಿ ಆಡುವುದನ್ನು ಕಂಡು ಜನರಿಗೆ ಅತ್ತ ನೋಡಿರಿ ನಾಗೇಂದ್ರನು ಈ ಸ್ಥಳವು ಬೇಡೆಂದು ಹೆಡೆಯನ್ನು ಅಲ್ಲಾಡಿಸಿ ಹೇಳುತ್ತಿರುವಂತೆ ಭಾಸವಾಯಿತು. ತ್ಯಾಗಿಗಳಾದ ವಿರಕ್ತರಿಗೆ ಈ ಭೋಗದ ರಾಜ್ಯದ ತಾಣವೇ ಬೇಡೆಂದು ಹೇಳಿ ಮುಂದೆ ಸಾಗಿದರು. ಪಟ್ಟದಕಲ್ಲಿನಿಂದ ಕುಮಾರಶಿವಯೋಗಿಗಳ ನೇತೃತ್ವದಲ್ಲಿ ಒಂದು ತಂಡ ಮಹಾಕೂಟದ ಕಡೆಗೆ ಸಾಗುವಂತೆ ಶ್ರೀಗಳು ನಿರ್ದೇಶಿಸಿದರು. ನಾವು ಬಂದು ನಿಮ್ಮನ್ನು ಸೇರುತ್ತೇವೆ ಎಂದು ವಿಜಯಮಹಾಂತ ಶಿವಯೋಗಿಗಳು ಮಲಪಹಾರಿ ಬಲದಂಡೆ ನದಿಯಗುಂಟ ಶಿವಯೋಗ ಮಂದಿರದ ಸ್ಥಳ ಅರಸುತ್ತ ಹೊರಟರು ಜೊತೆಯಲ್ಲಿ ಅನೇಕ ಭಕ್ತರು ಗೋಮಾತೆ ಮಹಾಂತಮ್ಮಳು ಸಾಗಿದಳು.

ವಿಪರೀತವಾದ ಬಿಸಿಲು, ದಟ್ಟವಾದ ಮುಳ್ಳು ಕಂಟಿಗಳಿಂದ ಕೂಡಿದ ಕಾಡು ಪ್ರದೇಶವನ್ನು ದಾಟಿಕೊಂಡು ಬರುವಾಗ ʼನೆಲುವಿಗೆʼ ಎಂಬ ಗ್ರಾಮಕ್ಕೆ ಬಂದಾಗ ಕೃಷಿ ಕೆಲಸದಲ್ಲಿ ತೊಡಗಿದ ಒಬ್ಬ ವ್ಯಕ್ತಿಯನ್ನು ಇಲ್ಲಿ ಎಲ್ಲಿಯಾದರೂ ಪತ್ರಿವನವಿದೆಯೇ? ಎಂದು  ಕೇಳಿದಾಗ , ಆ ವ್ಯಕ್ತಿಯು ಈ ಕುರುಚಲು ಕಾಡಿನ ದುರ್ಗಮ ದಾರಿಯಲ್ಲಿ ಇನ್ನು ಕ್ರಮಿಸಿದರೆ ಅಲ್ಲಿ ಪತ್ರಿ ಗಿಡಗಳ ವನವೇ ಇದೆ ಆದರೆ ದಾರಿಯಲ್ಲೆಲ್ಲ ವಿಪರೀತ ಡಬ್ಗಳ್ಳಿ ಕಂಟಿಗಳು ಇರುವುದರಿಂದ ಸುಲಭವಾಗಿ ಸಾಗುವುದು ಸುಲಭವಲ್ಲ ಎಂದಾಗ, ಅದೇನೇ ಆಗಲಿ, ಆ ಪತ್ರಿ  ವನವನ್ನು ತೋರು ಬಾ ಎಂದು ಕರೆದಾಗ ಒಳ್ಳೆ ಹುಮ್ಮಸ್ಸಿನಿಂದ ದಾರಿಯಲ್ಲಿ ಇರುವ ಮುಳ್ಳು ಕಂಟಿಗಳನ್ನು ಸವರುತ್ತ ಸವರುತ್ತ ಮುಂದೆ ಸಾಗಿದಾಗ ದಟ್ಟವಾದ ಗಿಡಗಳ ಸಮೃದ್ಧಿಯಿಂದ ಕೂಡಿದ ಪ್ರದೇಶವು ಗೋಚರವಾಯಿತು. ಅದಕ್ಕೆ ಕೆಲವರು ಇಂತಹ ದುರ್ಗಮ ಪ್ರದೇಶದಲ್ಲಿ ಹಾಡು ಹಗಲೇ ಕೊಳ್ಳೆಹೊಡೆಯುವ ಕಳ್ಳರಿದ್ದಾರೆ ಇಲ್ಲೇಕೆ ಸ್ವಾಮಿ ಎನ್ನುವಂತಹ ಸಂಶಯವು ಕೆಲವರಲ್ಲಿ ಉದ್ಭವವಾಯಿತು. ಅಂತಹ ದುರ್ಗಮ ಪ್ರದೇಶವನ್ನು ದಾಟಿಕೊಂಡು, ಗುಂಪು ಗುಂಪಾಗಿ ಬೆಳೆದ ಪತ್ರಿ ವನವನ್ನು ಕಂಡರು. ಅಲ್ಲಿಯೇ ಪುಟ್ಟದಾದ ಪುರಾತನವಾದ ಕೊಟ್ಟೂರು ಬಸವೇಶ್ವರನ ದೇವಸ್ಥಾನ ಇದೆ ಎಂದು ಹೇಳಿ ನೆಲವಿಗೆಯ ಆ ವ್ಯಕ್ತಿಯು ನಾವು ಶ್ರಾವಣ ಮಾಸದಲ್ಲಿ ಇಲ್ಲೇ ಬಂದು ಹಣ್ಣು ಕಾಯಿ ಮಾಡಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.

ಚಿತ್ರ ೪ : ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿ ಗಳಿಂದ ಶಿವಯೋಗಮಂದಿರದ ಸ್ಥಳ ಗುರುತು 

ಅಲ್ಲಿಗೆ ಬಂದು ನಿಂತಾಗ ಪುರಾತನ ನಂದಿ ವಿಗ್ರಹವನ್ನು ಕಂಡು ಶ್ರೀಗಳು ನೀ ಕೊಟ್ಟರೂ ಬಸವೇಶ, ಕೊಡದಿದ್ದರೂ ಬಸವೇಶ, ನೀ ಕೊಟ್ಟೂರು ಬಸವೇಶ ಎಂದು ಸಂಭೋದಿಸಿ ಅಲ್ಲೇ ಮುಂದೆ ಇದ್ದ ಕಲ್ಲು ಬಂಡೆಯ ಮೇಲೆ ಕುಳಿತುಕೊಳ್ಳುತ್ತ ಮಹಾಂತಮ್ಮನನ್ನು ಮಂದಿರಕ್ಕೆ ಸರಿಯಾದ ಸ್ಥಳವೇನಮ್ಮಾ ಎಂದಾಗ ಒಳ್ಳೆಯದು ಎಂದು ಮೌನವಾಗಿ ಗೋಣು ಆಡಿಸಿತು. ಅದೇ ಮಹಾಂತಮ್ಮನ ಸಮ್ಮತಿಯೆಂದು, ಅದೇ ಸ್ಥಳ ಶಿವಯೋಗ ಮಂದಿರಕ್ಕೆ ಯೋಗ್ಯವಾದ ಸ್ಥಳವೆಂದು ನಿರ್ಧರಿಸಿ ಮಹಾಕೂಟದಲ್ಲಿ ಇದ್ದ ಹಾನಗಲ್ ಕುಮಾರಶಿವಯೋಗಿಗಳನ್ನು ಕರೆಯಿಸಿದಾಗ ಮಹಾಂತಪ್ಪಗಳು ಒಂದು ಕಲ್ಲು ಬಂಡೆಯ ಮೇಲೆ ಪ್ರಸನ್ನಚಿತ್ತರಾಗಿ ಕುಳಿತಿದ್ದನ್ನು ಕಂಡ ಕುಮಾರಶಿವಯೋಗಿಗಳು ಆನಂದಭರಿತರಾಗಿ ತಾವು ಯೋಗ್ಯವಾದ ಸ್ಥಳವನ್ನೇ ಆಯ್ಕೆ ಮಾಡಿರುವಿರಿ ಎಂದು ಆನಂದದಿಂದ ಕೊಂಡಾಡಿ ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಇಲ್ಲಿಯೇ ಮಂದಿರ ನಿರ್ಮಾಣಕ್ಕೆ ಪ್ರಶಸ್ತವಾದ ಸ್ಥಳ ಎಂದು ಒಪ್ಪಿಕೊಂಡರು. ಆಗ ಬಾಗಲಕೋಟೆಯ ಕೆಲ ಭಕ್ತರು ಇಂತಹ ಗಾಢವಾದ ಅರಣ್ಯದಲ್ಲಿ ಅನೇಕ ಕ್ರೂರ ಪ್ರಾಣಿಗಳಿರುತ್ತವೆ. ಮಂದಿರಕ್ಕೆ ಇದು ಸರಿಯಾದ ಸ್ಥಳವಲ್ಲ ಎಂದು ನಿರಾಕರಿಸಿದರೂ ಕುಮಾರ ಶಿವಯೋಗಿಗಳು ಇದೆ ಮಂದಿರ ಕಟ್ಟಲು ಪ್ರಶಸ್ತ ಮತ್ತು ಪ್ರಶಾಂತ ಸ್ಥಳವೆಂದು ಲಿಂಗ ಮುದ್ರೆಯನ್ನು ಹಾಕಿದರು. ಮುಂದೆ ಅಷ್ಟೇ ಸ್ಥಳ ಸಾಕಾಗದೆಂದು ನೆರೆಯ ಪ್ರದೇಶದ ಒಡೆಯರನ್ನು ಕರೆಯಿಸಿ ಯೋಗ್ಯ ಬೆಲೆಗೆ ಆ ಸ್ಥಳವನ್ನು ಕೊಂಡುಕೊಳ್ಳಲು ವಿಚಾರಾಸಿದಾಗ ೫೦೦ ರೂಪಾಯಿಗಳಿಗೆ ಕೊಡುತ್ತೇನೆ ಎಂದು  ಹೇಳಿದಾಗ ೩೦೦ ರೂಪಾಯಿಗಳಿಗೆ ಕೊಡು ಎಂದು ಹೇಳಿದರು. ಆಗ ಆತನು ನಾನು ಹೊಲವನ್ನು ಮಾರುವುದೇ ಇಲ್ಲ ಎಂದನು ಆಗ ವಿಜಯಮಂಹಾಂತೇಶ ಶ್ರೀಗಳು ಆ ಹೊಲವನ್ನು ಆತನು ಕೊಡದಿದ್ದರೆ ಬಿಡಲಿ, ಲೀಲಾವಿನಲ್ಲಿ ಅದು ನಮಗೆ ಸಿಕ್ಕೇ ಸಿಗುತ್ತದೆ ಎಂದು ಭವಿಷ್ಯ ನುಡಿದರು ಆ ಪ್ರಕಾರ ಆ ಬ್ರಾಹ್ಮಣನು ತಾನು ಮಾಡಿದ ಸಾಲಕ್ಕಾಗಿ, ಆ ಹೊಲವನ್ನು ಸರಕಾರದವರು ಲೀಲಾವಿಗೆ ಹಚ್ಚಲಾಗಿ ೨೦೦ ರುಪಾಯಿಗೆ ಆ ಹೊಲ ಮಂದಿರಕ್ಕೆ ಸೇರ್ಪಡೆಯಾಯಿತು. ಇದಲ್ಲದೆ ಶ್ರೀ ಹಾನಗಲ್ ಸ್ವಾಮಿಗಳು ನೆರೆಯ ಮತ್ತೆರಡು ಹೊಲಗಳನ್ನು ಖರೀದಿಗೆ ತೆಗೆದುಕೊಂಡು ಅಲ್ಲಿ ಶಿವಯೋಗ   ಮಂದಿರವನ್ನು ಸ್ಥಾಪನೆ ಮಾಡಿದರು. ಮುಂದೆ ಅನೇಕ ಮಠಪೀಠಗಳನ್ನು ಬೆಳಗುವ ಚಿಜ್ಯೋತಿಗಳು ಈ ಶಿವಯೋಗ ಮಂದಿರದಿಂದ ಹೊರಹೊಮ್ಮಿದವು.   

ಶ್ರೀ ವಿಜಯಮಹಾಂತ ಶಿವಯೋಗಿಗಳು ಹಾನಗಲ್ ಕುಮಾರ ಶಿವಯೋಗಿಗಳಿಗೆ ಬೆಂಬಲವಾಗಿ ನಿಂತು ಪ್ರೋತ್ಸಾಹಿಸಿದರು. ಹೀಗೆ ೧೯೦೯ರಲ್ಲಿ ಆರಂಭಗೊಂಡ ಶಿವಯೋಗ ಮಂದಿರದ ಕಾರ್ಯ ನಾಲ್ಕೈದು ವರುಷಗಳ ಕಾಲ ಜರುಗಿತು.

ಶ್ರೀ ವಿಜಯಮಹಾಂತ ಶಿವಯೋಗಿಗಳು ಶಕೆ ೧೮೩೩ ವಿರೋಧಿಕೃತ ನಾಮ ಸಂವತ್ಸರದ ಕಾರ್ತೀಕ ಶುದ್ಧ ಪಂಚಮಿಯಲ್ಲಿ ಲಿಂಗೈಕ್ಯರಾದರು ಅದು ಕ್ರೈಸ್ತ ಶಕ ೧೯೧೧ರ ಶುಕ್ರವಾರ ಆಗಿತ್ತು. ಅವರ ಸ್ಥೂಲ ದೇಹವು ನಶ್ವರವಾದರೂ ಅವರ ಚೈತನ್ಯವು ಗದ್ದುಗೆಯ ರೂಪದಿಂದ ಭಕ್ತರನ್ನು ಸದಾ ಕಾಯುತ್ತಲಿದೆ.


          ಚಿತ್ರ ಸಂಖ್ಯೆ ೫ : ಶ್ರೀ ವಿಜಯಮಹಾಂತ ಶಿವಯೋಗಿಗಳ ಗದ್ದುಗೆ ಇಲಕಲ್ಲ

ಚಿತ್ರ ಸಂಖ್ಯೆ ೬ : ಶ್ರೀ ಹಾನಗಲ್‌ ಕುಮಾರ  ಶಿವಯೋಗಿಗಳು ಕಟ್ಟಿಸಿದ  ವಿಜಯಮಹಾಂತ ಶಿವಯೋಗಿಗಳ ಗದ್ದುಗೆ ಇಲಕಲ್ಲ

 

ಲೇಖಕರು: ಪ್ರೋ.ಶ್ರೀಮತಿಸುಲೋಚನ.ಶಿ.ಹಿರೇಮಠ.

ಲೇಖಕರು :

ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ

ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ.

ಮುಂಡರಗಿ

( ಓದುಗರಲ್ಲಿ ವಿಶೇಷ ಸೂಚನೆ ; ಗುರು ಕರುಣ ತ್ರಿವಿಧಿ ಒಂದು ಮಹತ್ವಪೂರ್ಣ ಕೃತಿ ಅದು ಕೇವಲ ಪಾರಾಯಣಕ್ಕೆ ಮಾತ್ರ ಸೀಮಿತವಲ್ಲದ ವಿಶಿಷ್ಟ ಕೃತಿ ೩೩೩ ತ್ರಿಪದಿಗಳ ದಾರ್ಶನಿಕತ್ವ ವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರೂಪಿಸಿರುವ ಪೂಜ್ಯ ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ.ಮುಂಡರಗಿ ಸನ್ನಿಧಿಯವರ  ಸಮಗ್ರ ಸಾಹಿತ್ಯ ಅನುಭಾವ ಸಂಪದ-೧ ಬ್ರಹತ್‌ ಗ್ರಂಥದಿಂದ ವ್ಯಾಖ್ಯಾನ ಗಳನ್ನು ಪ್ರತಿ ತಿಂಗಳೂ ೩-೫ ತ್ರಿಪದಿ ಗಳಂತೆ ಪ್ರಕಟಿಸಲಾಗುವದು. ಅಂತರಜಾಲದ ಸುಕುಮಾರ  ಬ್ಲಾಗ ಕ್ಕೆ ಪ್ರಕಟಿಸಲು ಅನುಮತಿ ಕೊಟ್ಟ ಪೂಜ್ಯ ಜಗದ್ಗುರು ಸನ್ನಿಧಿಗೆ ಭಕ್ತಿಪೂರ್ವಕ ಕೃತಜ್ಞತೆಗಳು )

ಅಕ್ಟೋಬರ  ೨೦೨೧ ರ ಸಂಚಿಕೆ

ಶ್ರೀಗುರುವೆ ಸಕಲ ಬಂಧು-ಬಳಗ

ಎರವು ಮಾಡದೆ ನಿಮ್ಮ | ಗುರುಪುತ್ರರೊಳಗೆನ್ನ

ಕಿರಿಯ ಮಗನೆಂದು – ಗುರುವೆ ನೀ ಕರವಿಡಿದು

ಹರುಷದಿಂದೆನಗೆ ಕೃಪೆಯಾಗು || ೨೭ ||

ಶಿವಕವಿಯು ಗುರುವಿನಲ್ಲಿ ತಂದೆ-ತಾಯಿ, ಅಪ್ಪ-ಅಜ್ಜ, ಬಂಧು-ಬಳಗದ ಆರೋಪವನ್ನು ಮಾಡುತ್ತ ಸದ್ಗುರುವನ್ನು ಅತ್ಯಂತ ಆತ್ಮೀಯವಾಗಿ ಕಾಣುತ್ತಾನೆ. ಸುಮಾರು ಹದಿನಾಲ್ಕು ನುಡಿಗಳಲ್ಲಿ ಗುರುವೇ ಸಕಲ ಬಂಧು-ಬಳಗವೆಂಬುದನ್ನು ವ್ಯಕ್ತಗೊಳಿಸಿದ್ದಾನೆ. ಆತ್ಮೀಯರಲ್ಲಿ ತನ್ನ ಮನದಳಲನ್ನು ದೂರ ಮಾಡಿಕೊಳ್ಳುವಂತೆ ಈ ಶರಣ ಕವಿಯು ತನ್ನ ದುಗುಡದುಮ್ಮಾನವನ್ನು ಗುರುಬಂಧುವಿನಲ್ಲಿ ಬಿಡಿಸಿಕೊಂಡಿದ್ದಾನೆ.

ಎರವು ಮಾಡು= ಭೇದಭಾವ ಮಾಡು, ಭಿನ್ನವಾಗಿ ತಿಳಿ, ಗುರುವೆ ! ನಿಮ್ಮಹಿರಿಯರಾದ ಅನೇಕ ಗುರುಪುತ್ರರೊಳಗೆ ಎನ್ನನ್ನು ಭಿನ್ನವಾಗಿ ತಿಳಿಯಬೇಡ. ನನ್ನಲ್ಲಿಭೇದ ಭಾವವನ್ನು ಮಾಡಬೇಡ. ನಿನ್ನದು ವಿಶಾಲ ಮನೋಭಾವ.

“ಅಯಂ ನಿಜ: ಪರೋ ವೇತ್ತಿ ಗಣನಾ ಲಘುಚೇತಸಾಮ್ |

ಉದಾರಚರಿತಾನಾಂ ತು ವಸುಧೈವ ಕುಟುಂಬಕಮ್’ ||

ಇವನು ನನ್ನವನು, ಅನ್ಯನೆಂದು ಭಾವಿಸುವದು ಸಣ್ಣ ಮನಸ್ಸಿನವನ ವ್ಯವಹಾರ.ಆದರೆ ಉದಾರ ಚರಿತ್ರವುಳ್ಳ, ವಿಶಾಲ ಹೃದಯವುಳ್ಳ ತಮಗೆ ಜಗತ್ತೇ ಕುಟುಂಬವಾಗಿದೆ. ನನ್ನನ್ನು ಎಲ್ಲರೊಳಗೆ ಚಿಕ್ಕಮಗನೆಂದು ಎಣಿಸು. ಚಿಕ್ಕವನು ಏನೇ ತಪ್ಪುಮಾಡಿದರೂ ಅದು ಕ್ಷಮ್ಯವಲ್ಲವೆ ? ಕ್ಷಮಿಸುವದು ತಂದೆಯ ಧರ್ಮ. ನನ್ನ ಕೈಹಿಡಿದು ಭವಸಾಗರದಿಂದ ಮೇಲೆತ್ತು. ಚಿಕ್ಕವನು ಕೈಹಿಡಿಯದೆ ನಡೆಗಲಿಯಲಾರ. ಬೀಳುತ್ತಿದ್ದರೂ ಹಿಡಿದೆತ್ತುವದು ಸದ್ಗುರುವಿನ ಕಾರ್ಯ. ನೀ ಕೈ ಬಿಟ್ಟರೆ ನಾನು ಭವಸಾಗರದಲ್ಲಿಮುಳುಗಿ ಹೋಗುವೆ. ಬೇಸರ ತಾಳದೆ ನನ್ನನ್ನು ಉದ್ಧರಿಸು. ಸಂತೋಷದಿಂದ ಕೃಪೆಮಾಡು.

ಮಾಯಾ ಪಾಶವ ಹರಿದು | ಕಾಯೋ ನೀನೆನ್ನುವನು.

ತಾಯಿ ಜನ್ಮದೊಳು-ಬೇಡಿದುದೀವ ಗುರು-

ತಾಯಿ ನೀನೆಗೆ ಕೃಪೆಯಾಗು || ೨೮ ||

ಜಗತ್ತಿನಲ್ಲಿ ತಾಯಿಗೆ ಅಗ್ರಸ್ಥಾನವಿದೆ. ‘ಮಾತೃ ದೇವೋಭವ’ವೆಂದು ವೇದವು ತಾಯಿಯನ್ನು ಗೌರವಿಸಿದೆ. ತಾಯಿ ಮೊದಲನೆಯ ದೇವರೆಂದು ಎಲ್ಲರೂ ಅದರ ಮಾಡಿದ್ದಾರೆ. ‘ತಾಯಿಗಿಂತ ಬಂಧುವಿಲ್ಲ, ಉಪ್ಪಿಗಿಂತ ರುಚಿಯಿಲ್ಲವೆಂಬ ನಾಣ್ಣುಡಿಯನ್ನು ಬಲ್ಲ ಶಿವ ಕವಿಯು ಗುರುವಿನಲ್ಲಿ ಮೊದಲು ತಾಯಿತನವನ್ನು ಕಾಣುತ್ತಾನೆ.

ಮಾಯಾಕೋಲಾಹಲಿಗಳೆನಿಸಿದ ಅಲ್ಲಮ ಪ್ರಭುಗಳು ಮಾಯೆಯ ವ್ಯಾಖ್ಯೆ ಯನ್ನು ಮಾರ್ಮಿಕವಾಗಿ ಮಾಡಿದ್ದಾರೆ.

ಹೊನ್ನು ಮಾಯೆಯೆಂಬರು, ಹೊನ್ನು ಮಾಯೆಯಲ್ಲ.

ಹೆಣ್ಣು ಮಾಯೆಯೆಂಬರು, ಹೆಣ್ಣು ಮಾಯೆಯಲ್ಲ.

ಮಣ್ಣು ಮಾಯೆಯೆಂಬರು, ಮಣ್ಣು ಮಾಯೆಯಲ್ಲ.

ಮನದ ಮುಂದಣ ಆಶೆಯೇ ಮಾಯೆ ಕಾಣಾ ಗುಹೇಶ್ವರ.

ಹೊನ್ನು, ಹೆಣ್ಣು, ಮಣ್ಣುಗಳನ್ನು ವೇದಾಂತಿಗಳು ಮಾಯೆಯೆಂದು ಭಾವಿಸು ತ್ತಾರೆ. ಆದರೆ ಅವು ನಿಜವಾದ ಮಾಯೆಯಲ್ಲ. ಅವುಗಳೆಲ್ಲ ತನಗೇ ಬೇಕೆಂಬ ಮನದ ಅತಿಯಾಸೆಯೇ ಮಾಯೆಯಾಗಿದೆ. ಮನಸ್ಸಿನ ಕಾಮನೆಗಳೇ ಮಾಯೆಯಾಗಿ ಪರಿಣಮಿಸುತ್ತವೆ. ಮನ ಸುಮನವಾದರೆ ಆಶೆ ನಿರಾಶೆಯಾಗುವದು. ಮಾಯಾಪಾಶಹರಿಯುವದು. ಅಕ್ಕಮಹಾದೇವಿಯೂ ಕೂಡ ತೆರಣಿಯ ಹುಳದ ಉದಹಾರಣೆಯನ್ನು ಕೊಟ್ಟು ಮಾನವನು ಆಶಾ ಪಾಶದಿಂದ ಬಂಧಿತನಾಗಿ ಮನಬಂದಂತೆ ನಡೆಯುವನು. ಈ ಆಶೆಯನ್ನು ದೂರು ಮಾಡೆಂದು ಶ್ರೀ ಗುರುದೇವ ಚನ್ನಮಲ್ಲಿಕಾರ್ಜುನನಲ್ಲಿ ಬೇಡಿ ಕೊಂಡಿದ್ದಾಳೆ.

ಮಾಯೆಯೆಂದರೆ ಅಜ್ಞಾನವೆಂತಲೂ ಅರ್ಥ ಮಾಡಬಹುದು. ಅಜ್ಞಾನದಿಂದ ಪಾರಮಾರ್ಥವನ್ನು ಮರೆತು ಲೌಕಿಕ ವ್ಯವಹಾರದಲ್ಲಿ ಜೀವಾತ್ಮನು ಬಂಧಿತನಾಗುವನು. ಭವಚಕ್ರದಲ್ಲಿ ಸಿಲುಕುವನು.ಈ ಮಾಯಾಪಾಶದಿಂದ ಬಿಡುಗಡೆಯಾಗಬೇಕಾದರೆ ಗುರು ಕೃಪೆ ಮೂಲವಾಗಿದೆ. ಮಾನವನ ತಾಯಿಯ ಗರ್ಭದಲ್ಲಿರುವಾಗ ಈ ತಿಂಗಳಿಗೆ ಪೂರ್ವಜನ್ಮದ ಸ್ಮರಣೆಯಾಗುತ್ತದೆ. ಆಗ ಜೀವನು ತನ್ನ ತಪ್ಪಿನ ಅರಿವಾಗಿ ದೇವರಲ್ಲಿ ಪ್ರಾರ್ಥಿಸುತ್ತಾ… ದೇವಾ ! ಎನ್ನ ತಪ್ಪು ಅನಂತ ನಿನ್ನ  ಸ್ಯೆರಣೆಗೆ ಲೆಕ್ಕವಿಲ್ಲ.

ಇನ್ನು ಮೇಲೆ  ತಪ್ಪದಂತೆ ಇರಿಸು,ನಿನ್ನ ಸ್ಮರಣೆಯನ್ನು ಬಿಡುವುದಿಲ್ಲ. ಈ ಭವ ಬಂಧನವನ್ನು ಸಾಕುಮಾಡು  ಮುಕ್ತನನ್ನಾಗಿಸು  ಲಿಂಗವನ್ನು ಮರೆತ  ಕಾರಣ ಪುನಪುನಃ ಹುಟ್ಟಬೇಕಾಯಿತು ಜಂಗಮನನ್ನು ಜರಿದವಾಗಿ ಮಾಯಾಪಾಶದಿಂದ ಬಂಧಿತನಾದೆ ಶಿವ ಶಿವಾ! ಶರಣ ಮಾರ್ಗವನ್ನು ಕರುಣಿಸಿ ಭವಬಂಧನದಿಂದ ದೂರ ಮಾಡೆಂದು ಬೇಡಿಕೂಳ್ಳುತ್ತಾರೆ.ಆದರೆ ಪ್ರಸೂತವಾಯು ತಾಯಿ ಗರ್ಭಕೋಶದಿಂದ ಹೊರನೂಕಿದಾಗ ಆ ಬೇಡಿಕೆ ,ಆ ಪ್ರಾರ್ಥನೆ ,ಆ ಪೂರ್ವಜನ್ಮದ  ಸ್ಮರಣೆ ಮರೆತು ಬಿಡುತ್ತದೆ . ಜೀವಾತ್ಮನು ಮರೆತರೂ ಸುದ್ಗುರುನಾಥನು ಅದನ್ನೆಲ್ಲ ಕರುಣಿಸುತ್ತಾನೆ.ಜೀವದಾತೆಯಾದ ತಾಯಿಯು ಶಿಶುವಿಗೆ ಬೇಡಿದ್ದನ್ನ ಕೊಟ್ಟು ಸಂತೈಸುತ್ತಾಳೆ. ತಾಯಿ ಕೊಡುವದು ಶಕ್ತ್ಯಾನುಸಾರ ಅದು ಭೌತಿಕ ಬೇಡಿಕೆಗಳನ್ನು  ಮಾತ್ರ .ಗುರು ತಾಯಿ ಕೊಡುವುದು ಅಲೌಕಿಕವಾದುದನ್ನು. ಗುರು ತಾಯಿ ಕೊಡುಗೆಗೆ ಯಾವುದೂ ಸಮಾನವಲ್ಲ.

ಓ ಗುರುವೆ! ಗುರು ತಾಯಿಯೆ !  ನೀ ಕರುಣಿಸು  ನಾನು ನಿನ್ನ ಕಿರಿಯ ಕುವರ  ಚಿಕ್ಕಮಗನು  ತಾಯಿಗೆ ಬಲು ಪ್ರೀತಿಯಲ್ಲವೆ? ಕರುಣೆದೋರಿ ನನ್ನ ಮಾಯಾಪಾಶವನ್ನು ಹರಿದು ಹಾಕು. ಭೌತಿಕ ಬಯಕೆಯನ್ನು  ಕಳೆದು ತಾಯಿಯ ಗರ್ಭದಲ್ಲಿ ಬೇಡಿದ ಬಯಕೆಗಳನ್ನು ಕೈಗೂಡಿಸು.  ನಿನ್ನ ಕರಗರ್ಭದಲ್ಲಿ ನನ್ನನ್ನು  ಪುನರ್ಜಾತನನ್ನಾಗಿ ಮಾಡು. ನಿನ್ನ ಕರಗರ್ಭದಲ್ಲಿ ಉದಯವಾಗುವದರಿಂದ ಸಂಸಾರ ಬಂಧನ ಬಿಡುವದು. ನನ್ನ ಮಲತ್ರಯಗಳನ್ನು ಕಳೆದು ಕರುಣಿಸು . ಮಗುಬೇಡಿದ್ದನೆಲ್ಲಾ ತಾಯಿ ಕೊಡುವಂತೆ ನನ್ನ ಈ ಬೇಡಿಕೆಯನ್ನು ಪೂರೈಸಿ ಗುರುತಾಯಿಯಾಗು . ನಿನ್ನ ಹೃದಯ ವಿಶಾಲವಾದುದು.ಅನುಪಮವಾದುದು. ಈ ಬಳಲುವ ಕಂದನ ಬಂಧನ ಬಿಡಿಸು .ಇದು ನಿಮ್ಮ ಧರ್ಮ.

ಶಿವಕವಿಯು ಹಿಂದೆ ತನ್ನನ್ನು ಕಿರಿಯ ಮಗನೆಂದು ಹೇಳಿಕೊಂಡು ಇಲ್ಲಿ ಗುರು ತಾಯಿಯ ಪ್ರಸ್ತಾಪ ಮಾಡುವದು ಅತ್ಯಂತ ಮಾರ್ಮಿಕವಾಗಿದೆ. ತಾಯಿಗೆ  ಚಿಕ್ಕಮಗನ ಮೇಲೆ ಪ್ರೀತಿ ಹೆಚ್ಚಾಗಿರುತ್ತದೆ. ಇದು  ಲೌಕಿಕ ಅನುಭವ . ಕವಿಯಲ್ಲಿ  ಲೌಕಿಕ  ಮತ್ತು ಪಾರಮಾರ್ಥಿಕ ಅನುಭವ ಸಾಕಷ್ಟಿತ್ತೆಂಬುದು ವ್ಯಕ್ತವಾಗುತ್ತದೆ. ಮತ್ತು ಸದ್ಗುರು ನಾಥನು ತೀವ್ರವಾಗಿ ಕೃಪೆಯನ್ನುಂಟು ಮಾಡಲೆಂಬ ಜಾಣ್ಮೆಯೂ  ಸ್ಪಷ್ಟವಾಗುತ್ತದ.

• ಈಶ್ವರ ಸಣಕಲ್ಲ ( ಲೇಖನ ಸಂಗ್ರಹ)(ಈಶ್ವರ ಸಣಕಲ್ಲ ಇವರು ೧೯೦೬ ಡಿಸೆಂಬರ ೨೦ರಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಯಾದವಾಡದಲ್ಲಿ ಜನಿಸಿದರು. ತಾಯಿ ನೀಲಾಂಬಿಕೆ ; ತಂದೆ ಮಹಾರುದ್ರಪ್ಪ. ಬಾಲ್ಯದಲ್ಲೇ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಂಡು ಅನುಭವಕ್ಕೆ ಅಭಿವ್ಯಕ್ತಿಯ ರೂಪುಕೊಟ್ಟರು. ಅಧ್ಯಾಪಕರಾಗಿ, ಸಂಶೋಧನಾ ಸಹಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಸುಮಾರು ೨೦ ಕೃತಿಗಳನ್ನು ರಚಿಸಿದ್ದಾರೆ. ಮುಂಬಯಿಯಿಂದ ಹೊರಡುತ್ತಿದ್ದ “ಸಹಕಾರ” ಪತ್ರಿಕೆಯ ಸಂಪಾದಕರಾಗಿದ್ದರು.

ಇವರ ಬಟ್ಟೆ ಕಥಾಸಂಕಲನಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಲಭಿಸಿದೆ. ಇವರು ೧೯೮೦ ರಲ್ಲಿ ಬೆಳಗಾವಿಯಲ್ಲಿ ನಡೆದ ೫೨ ನೆಯ ಅಖಿಲ ಭಾರತ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿ ಅಧ್ಯಕ್ಷರಾಗಿದ್ದರು. ಈಶ್ವರ ಸಣಕಲ್ಲರ ಉದಾತ್ತ ಆದರ್ಶವು ಅವರ ಕವನವೊಂದರಲ್ಲಿ ಬರುವ ಈ ಸಾಲುಗಳಿಂದ ವ್ಯಕ್ತವಾಗುತ್ತದೆ: “ ಜಗವೆಲ್ಲ ನಗುತಿರುಲಿ ; ಜಗದಳವು ನನಗಿರಲಿ ” ಈಶ್ವರ ಸಣಕಲ್ಲರು ೧೯೮೪ ಡಿಸೆಂಬರ ೩ರಂದು ತೀರಿಕೊಂಡರು.)

ಅನಾದ್ಯನಂತವಾಗಿ ಹಬ್ಬಿರುವ ಆಕಾಶದಗಲದ ಮಹಾಮೌನದಲ್ಲಿ ಅಖಂಡ ತೇಜಃಪುಂಜವಾದ,ಅವಿರತ ಜ್ಯೋತಿರ್ಮಯವಾದ, ಅಪ್ರತಿಮ ಪ್ರಕಾಶ ಪೂರ್ಣವಾದ ಅಸಂಖ್ಯ ಕೋಟಿ ಗ್ರಹನಕ್ಷತ್ರಗಳುಮೂಡಿ, ಲೀಲೆಯಲ್ಲಿ ಆಡಿ, ವೇಗದಲ್ಲಿ ಪರಿಭ್ರಮಿಸುತೋಡಿ, ನಿರ್ಧಿಷ್ಟ ದೇಹದಲ್ಲಿ ತೀಡಿ, ತಮ್ಮ ಆಯುವನ್ನು ದೂಡಿ, ಮೈದೋರಿ ಮೈಗರೆವ ಮಹಾಸ್ವಪ್ನದಂತೆ ಮರೆಯಾಗುತ್ತವೆ. ಅದೇ ಆಕಾಶದ ಅದೇ ಮೌನದಲ್ಲಿ ಈ ಜ್ಯೋತಿಷ್ಪ್ರಪಂಚದ ಆಚೆ ಆಚೆ, ಮೇಲೆ ಮೇಲೆ, ನಿಬಿಡತಮ ನೀಹಾರಿಕಾವಲಯವು ಮೇರೆ ಮೀರಿ ಹಬ್ಬಿ ಹಿಂಜಿದರಳಿಯ ರಾಶಿಯಂತೆ ರಂಜಿಸಿ, ಮತ್ತೆ, ಮೈದಳೆದ ಭಾವ ಮೈಯಳಿದು ಹೋಗುವಂತೆ, ಕರಗಿ ಹೋಗುತ್ತದೆ. ಅದೇ ಮುಗಿಲಗಲ ಅದೇ ಮೌನಸಾಮ್ರಾಜ್ಯದಲ್ಲಿ ಹಗಲಿರುಳು ಕಣ್ಣುಮುಚ್ಚಾಟ, ಮಳೆಗಾಲದ ಗುಡುಗು ಸಿಡಿಲು ಮಿಂಚು ಮಳೆಗಳ ಹುಚ್ಚಾಟ, ಕಟಗುಡುವ ಚಳಿಗಾಲದ ಕುಳಿರ್ಗಾಳಿಯ, ತೀಟದಲ್ಲಿ ತುಟಿಯ ಕಚ್ಚಾಟ, ಹಿಗ್ಗಿನ ಸುಗ್ಗಿಯ ಕಂಪಿನ, ಇಂಪಿನ, ಜೊಂಪಿನ, ಪೆಂಪಿನ ಬುಗ್ಗೆಯಲ್ಲಿ ಚಿಮ್ಮಿದ ಕಾಮನ ಬಿಲ್ಲಿನ ಸೊಲ್ಲಿನ ಮೆಚ್ಚಾಟ; ಬಲ್ವೇಸಗೆಯ ಬಿರುಬಿಸಿಲ ಬೇಗೆಯ ಕಿಚ್ಚಾಟ-ಇಂತು ಕ್ಷಣ, ದಿನ-ಮಾಸ-ಋತು-ವರ್ಷ-ಯುಗ ಕಲ್ಪಗಳ ಲೀಲಾತಲ್ಪದಲ್ಲಿ, ಕಲ್ಪನೆಯ ವಿವಿಧ ಭಂಗಿಯಲ್ಲಿ, ವಿವಿಧ ವರ್ಣವಿನ್ಯಾಸದಲ್ಲಿ ಲಾಸ್ಯವಾಡಿ, ಹೃನ್ಮಂದಿರದಲ್ಲಿ ಸೃತಿಯ ಮುದ್ರೆಯೊತ್ತಿ, ಮತ್ತೆ ಸರಿದು ಹೋಗುವಳು. ಇಂತು ವಿಶ್ವದ ಮಹಾಪ್ರಪಂಚದ, ಮಾಯಾ ಪ್ರಪಂಚದ, ದ್ವಂದ್ವ ಪ್ರಪಂಚದ ಅಸಂಖ್ಯ ಮುಖಲೀಲೆಗೆ ತನ್ನಲ್ಲಿ ಅವಕಾಶವನ್ನಿತ್ತಿದ್ದರೂ ಅದರಿಂದ ಆ ಆಕಾಶದ ಮಹಾಮೌನವು ಅತೀತ! ನಿರ್ಲಿಪ್ತ !.

ಅಂತೆ ಶ್ರೀ ಶ್ರೀ ಶ್ರೀಮನ್ನಿರಂಜನ ಪ್ರಣವಸ್ವರೂಪಿ ಶ್ರೀ ನಾಗನೂರ ರುದ್ರಾಕ್ಷಿಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು! ಇವರಲ್ಲಿ ಕಲ್ಯಾಣ ದೃಷ್ಟಿಯ ಶಿವನೂ, ಕಾಯಕನಿಷ್ಠೆಯ ಬಸವನೂ ಸಂಗಮಿಸಿ, ಸಂಯಮಿಸಿ ಇವರು ಶ್ರೀ ಶಿವಬಸವ ಮಹಾಸ್ವಾಮಿಗಳಾಗಿಹರು! ಇವರ ದೇಹವು ಎಪ್ಪತ್ತರಾಚೆಗೆ ಸರಿದರೂ, ಇವರ ಉತ್ಸಾಹವು ಇನ್ನೂ ಇಪ್ಪತ್ತರ ಈಚೆಗೇನೇ ಉಳಿದಿದೆ! ಉರುಳುತಿರುವ ಸಂವತ್ಸರಗಳು ಇವರ ಮುಪ್ಪು ಸಾವುಗಳ ಲೆಕ್ಕ ಹಾಕುತ್ತಿದ್ದರೆ, ಅರಳುತ್ತಿರುವ ತಪಸ್ಚೈತನ್ಯವು ಇವರ ಪ್ರಾಯದ ಒಪ್ಪು-ಕಾವುಗಳ ಎಣಿಕೆ ಹಾಕುತ್ತಿದೆ. ಇಂತಹ ಇಳಿವಯಸ್ಸಿನಲ್ಲಿಯೂ ಬಾಗದ ಇವರ ನಡು ಇವರ ಪರಿಶುದ್ಧ ಚರಿತ್ರಕ್ಕೆ ಸಾಕ್ಷಿಯಾಗಿದೆ ! ಎತ್ತರದ ನಿಲವು ! ಭವ್ಯ ವ್ಯಕ್ತಿತ್ವ ಮಾತುಗಾರಿಕೆಯಿರಬಹುದು; ಆದರೆ ಮಾತು ತುಟಿ ಮೀರಿ  ಬಂದುದೇ ವಿರಳ! ಜೀವನದ ಬಹುಭಾಗವೆಲ್ಲ ಮೌನ! ಮಹಾಮೌನ! ಆ ಮೌನದ ಸಂದು ಸಂದುಗಳಲ್ಲಿ, ಕೀಲುಕೀಲುಗಳಲ್ಲಿ ಕೃತಿಯ ಸ್ಪಂದನ! ಸತ್ಮತಿಯ ಸಂಸ್ಕೃತಿಯ ನಂದನ! ಶಿವಾಕೃತಿಯ ಚಂದನ !

ಸೇವಾಧರ್ಮವೇ ಇವರ ಜೀವನ ಮರ್ಮವು “ಮಾನವನ ಹೃದಯದಲ್ಲಿ ಗುಪ್ತವಾಗಿ ಹುದುಗಿರುವ ಪರಿಪೂರ್ಣತೆಯ ಆವಿಷ್ಕಾರವೇ ಶಿಕ್ಷಣವೆಂದು ಬಗೆದು ಅಂತಹ ಶಿಕ್ಷಣವನ್ನು ಪಡೆದು ಲೋಕವೆಲ್ಲಾ ಪರಿಪೂರ್ಣತೆಯ ಎಡೆಗೆ ಸಾಗಲೆಂದು ಯೋಚಿಸಿದರು. ಆ ಯೋಚನೆಗೆ ತಕ್ಕ ಯೋಜನೆ ಆವುದೆಂದು ತರ್ಕಿಸಿದರು. ಹೊಟ್ಟೆಗೆ ಗತಿಯಿಲ್ಲದೆ, ಶಿಕ್ಷಣ ಪಡೆಯಲು ತಕ್ಕ ಸೌಕರ್ಯವಿಲ್ಲದೆ, ಅಸಂಖ್ಯ ಅಸಹಾಯ ಪರಿಸ್ಥಿತಿಯಲ್ಲಿ ತೆವಳಿ ತೊಳಲಾಡುತ್ತಿರುವ ಬಡ ವಿದ್ಯಾರ್ಥಿ ಲೋಕದ ವಿದ್ಯಾರ್ಜನೆಗೆ, ಅಧ್ಯಯನ-ಅಭ್ಯಾಸಗಳಿಗೆ, ವಿವಿಧ ಬಗೆಯ ಶಿಕ್ಷಣ ಸಂಸ್ಥೆಗಳ ಕೇಂದ್ರವಾದ ಬೆಳಗಾವಿಯಂಥ ಪಟ್ಟಣದಲ್ಲಿ ಪ್ರಸಾದ ನಿಲಯ ಸ್ಥಾಪನೆಯೇ ಪರಮಸಾಧನವೆಂದು ನಿಶ್ಚಯಿಸಿದರು.

ಆ ನಿಶ್ಚಯದ ನಿರ್ಣಯವೇ ಇಂದು ಭವ್ಯ ಪ್ರಸಾದ ನಿಲಯವಾಗಿ ರೂಪುಗೊಂಡಿದೆ!ಇಂತು ಪ್ರಸಾದ ನಿಲಯದ ಮುಖಾಂತರವಾಗಿ ಅವರು ಕೈಕೊಂಡ ವಿದ್ಯಾರ್ಥಿಲೋಕಸೇವಾ ಧರ್ಮವೇ ಅವರಿಗೆ ಶಿವನ ಮರ್ಮವನ್ನು ಬಿತ್ತರಿಸಿತು! ಈ ಪ್ರಸಾದ ನಿಲಯದ ಯೋಜನೆಯು, ಅವರ ತಪದ ಮಹಾಮೌನವು ಮಥಿಸಿ ತಂದ ದಿವ್ಯ ನವನೀತ! ಇದನ್ನು ಆಶ್ರಯಿಸಿದವರು,ಸೇವಿಸಿದವರು, ವಿದ್ಯಾಪಾತ್ರರಾದರು! ಮಾನವರಾದರು; ಮಾನವತೆಯಲ್ಲಿ ಪರಿಪೂರ್ಣರಾದರು! ಅಮೃತ ಪುತ್ರರಾದರು!

ಈ ಮೊದಲು ಹೇಳಿದಂತೆ, ಆಕಾಶದ ಮಹಾಮೌನವು ವಿಶ್ವದ ಅನಂತ ನಿರಂತರ ವಿವಿಧ ಲೀಲೆಗಳನ್ನು ಒಳಗೊಂಡು ಅವುಗಳಿಂದ ಅತೀತವೂ, ನಿರ್ಲಿಪ್ತವೂ ಆಗಿರುವಂತೆ, ಈ ಮಹಾಸ್ವಾಮಿಗಳ ಮೌನಾಕಾಶವು ಲೋಕಕಲ್ಯಾಣದ ಇನಿತೆಲ್ಲ ಯೋಚನೆ, ಯೋಜನೆ, ಸತ್ಕೃತಿಗಳನ್ನು ಒಳಗೊಂಡಿದ್ದರೂ ಅವೆಲ್ಲವುಗಳಿಂದ ಅವರು ಅತೀತರು; ನಿರ್ಲಿಪ್ತರು!

ಈ ನಿಸ್ವಾರ್ಥ ಸೇವೆ, ನಿರ್ಲಿಪ್ತತೆ ಒಂದೇ ದಿನದ ಅನಾಯಾಸದ ಗೆಲುವಲ್ಲ! ಜನ್ಮಜನ್ಮಗಳ ತಪದ ಸಾಧನೆಯ ಬಲವು; ಜೊತೆಗೆ ಮಹಾಗುರುವಿನ ಮಹಾಕೃಪೆಯ ಮಹಾನುಗ್ರಹದ ಬಲವು! ಸತ್‌ ಶರಣರ, ಸಜ್ಜನರ, ಸತ್ಸಂಗದ ಸಹವಾಸದ ಫಲವು; ಸಮ್ಮತಿಗಾಗಿ, ಪರಹಿತ ಕಲ್ಯಾಣಕ್ಕಾಗಿ ಮೈದಳೆದ ಉತ್ಕಟ ಸತ್ಸಂಕಲ್ಪ ಶಕ್ತಿಯ ಫಲವು! ಲೋಕದ ಹೊಗಳಿಕೆ-ತೆಗಳಿಕೆ, ಹಿಗ್ಗು-ಕುಗ್ಗು, ಸೋಲು-ಗೆಲುವು, ಸುಖ-ದುಃಖ, ಮಾನ-ಅಪಮಾನ ಈ ಮೊದಲಾದ ದ್ವಂದ್ವಪ್ರಪಂಚವನ್ನು ಮೀರಿ ನಿಂತ ಸುಸ್ಥಿರ-ಸಹಜ ಸಮತೆಯ ನಿಲುವು! ಆನುವಂಶಿಕ ಸಂಸ್ಕಾರದಲ್ಲಿ ಬೆಳಗಿದ ಬೆಳಕಿನ ಹೊಳವು ದಾಸೋಹಂಭಾವದಲ್ಲಿ ಸೋಹಂಭಾವವಲಯಿಸಿ ವಿನಯವೇ ಮೂರ್ತಿವೆತ್ತಂತಿರುವ ಕೈಂಕರ್ಯದ ಸುಳುವು! ಇವೆಲ್ಲವೂ ಸಮನಿಸಿ ನಾಗನೂರು ಶ್ರೀ ಶಕ್ತಿಯಾಯಿತು! ಶಿವಬಸವ ನಿರಂಜನ ವ್ಯಕ್ತಿಯಾಯಿತು!

ಶಿವಯೋಗಮಂದಿರದ ಪುಣ್ಯಪರಿಸರದಲ್ಲಿ .

ಶಿವಯೋಗಮಂದಿರದಲ್ಲಿಯೂ ಅವರ ಮೊದಲಿನ ಜೀವನಕ್ರಮವೇ ಮುಂದುವರಿಯಿತು. ದಿನವೂ ಬ್ರಾಹ್ಮಿ ಮುಹೂರ್ತದಲ್ಲಿ ಶಿವಸ್ಮರಣೆಯೊಂದಿಗೆ ಏಳುವುದು, ಪ್ರಾತರ್ವಿಧಿಗಳನ್ನು ಮುಗಿಸುವುದು,ಸ್ನಾನ, ಶಿವಪೂಜೆ, ಸಂಸ್ಕೃತ ಪಾಠಶಾಲಾಧ್ಯಯನ ಇವುಗಳಲ್ಲಿಯೇ ಇವರ ಮನಸ್ಸು ತನ್ಮಯವಾಯಿತು; ತಲ್ಲೀನವಾಯಿತು. ಅವಿರಳ ಜ್ಞಾನಪಥವಾದ ಅಂತರ್ಮುಖತೆ ಇನ್ನೂ ಬೆಳೆಯಿತು.ಶಕ್ಯವಿದ್ದಷ್ಟೂ ಎಲ್ಲರ ಸಂಗವನ್ನೂ, ಸಂಪರ್ಕವನ್ನೂ ಕಡಿಮೆ ಮಾಡಿಕೊಂಡು, ಕಡಿದುಕೊಂಡು,ಏಕಾಂತ ಪ್ರಶಾಂತ ವಾತಾವರಣದಲ್ಲಿ ಅಧ್ಯಯನಲೀನರಾಗಿ, ಧ್ಯಾನಲೀನರಾಗಿ ಅಂತರ್ಮುಖತೆ-ಯಿಂದ ಅಂತಸ್ಸಮಾಧಿಗೆ ಒಳಗೆ ಒಳಗೆ, ಕೆಳಗೆ ಕೆಳಗೆ ಇಳಿಯತೊಡಗಿದರು. ಹೀಗಾಗಿ ಬಾಹ್ಯ ಪ್ರಪಂಚವು ದೂರವಾಗಿ, ಮರೆಯಾಗಿ ಅಂತಃಪ್ರಪಂಚದ ಬಿತ್ತರವೂ, ಎತ್ತರವೂ, ಆಳವೂ ಗೋಚರಿಸತೊಡಗಿದವು. ಇದರ ಮುಂದೆ ಬಾಹ್ಯ ಪ್ರಪಂಚವು ಅಲ್ಪವೂ, ಕ್ಷುದ್ರವೂ, ಸಂಕುಚಿತವೂ ಎನಿಸತೊಡಗಿತು. ಲೋಕದ ಸ್ಥಾನಮಾನ-ಅಧಿಕಾರ, ಕೀರ್ತಿ, ಕಾಂಚನ, ಪ್ರಶಂಸೆ, ನಿಂದೆ ಈ ಎಲ್ಲವುಗಳಿಂದಲೂ ದೂರವಾಗಿ ಲೋಕದ ದ್ವಂದ್ವದಿಂದ ಅತೀತರಾಗಿ ಇರಲು ಯತ್ನಿಸಿದರು. ಈ ಮೇರೆಗೆ ಒಂದು ದಿವ್ಯಾದರ್ಶವು ಶ್ರೀ ಶಿವಯೋಗಮಂದಿರದ ಪ್ರಶಾಂತವಾತಾವರಣದಲ್ಲಿ ಇವರ ಬಾಳನ್ನು ಇಂತು ರೂಪಿಸುತ್ತಲಿದ್ದಿತು.ಇವರ ಪರಿಶುದ್ಧ ಆಚಾರ, ಉಚ್ಚವಿಚಾರ, ಪವಿತ್ರ ಚಾರಿತ್ರ್ಯ, ಅನನ್ಯ ಭಕ್ತಿ, ಅಪ್ರತಿಮ ದಾಸೋಹಭಾವ, ಅನುಪಮ ಸೇವೆ, ಅವಿಚಲ ಕಾಯಕನಿಷ್ಠೆ, ಅಚಲ ಸಂಯಮಶೀಲ, ಸರ್ವಭೂತದಯಾದೃಷ್ಟಿ, ವಿಶ್ವಮಾನ್ಯಧರ್ಮದೃಷ್ಟಿ ಇವೆಲ್ಲವು ಗಳಿಂದ ಆಕರ್ಷಿತರಾದ ಶ್ರೀ ಶಿವಯೋಗಮಂದಿರ ಸಂಸ್ಥಾಪಕರಾದ ಪೂಜ್ಯ ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳವರ ಕೃಪಾದೃಷ್ಟಿಯು ಇವರ ಮೇಲೆ ಬಿದ್ದಿತು. ಪರಿಣಾಮವಾಗಿ ಇವರು ಅವರ ಪ್ರೀತಿಯ ಶಿಷ್ಯರಾಗಿ ಅನನ್ಯ ಭಾವದಿಂದ ಸೇವೆ ಸಲ್ಲಿಸತೊಡಗಿದರು. ಇವರ ದ್ವಾದಶ ವರ್ಷದ ದೀರ್ಘ ಅವಿರತ ಅವಿಚ್ಛಿನ್ನ ಸೇವೆಗೆ ಮೆಚ್ಚಿ ಪೂಜ್ಯ ಶ್ರೀ ಕುಮಾರ ಸ್ವಾಮಿಗಳು ಇವರನ್ನು ಆಶೀರ್ವದಿಸಿದರು; ಅನುಗ್ರಹಿಸಿದರು. ಇಂತು ಎಲ್ಲರ ಮೆಚ್ಚಿಗೆಗೂ ಪಾತ್ರರಾದರು. ಇವರು ಮಂದಿರದಲ್ಲಿರುವಾಗ ಬೇರೆ ಬೇರೆ ಊರುಗಳ ಅಪಾರ ಉತ್ಪನ್ನವಿರುವ ಅದೆಷ್ಟೋ ಮಠಗಳ ಅಧಿಕಾರ ಸ್ವೀಕಾರಕ್ಕಾಗಿ ಆಯಾ ಊರವರು ಬಂದು ಬಂದು ಇವರನ್ನು ಪ್ರಾರ್ಥಿಸಿಕೊಂಡರು. ಹಾನಗಲ್ಲ  ಊರವರೂ ಬಂದು ಬೇಡಿಕೊಂಡರಂತೆ; ಇವರು ಯಾವುದಕ್ಕೂ ಆಶಿಸಲಿಲ್ಲ; ಜಗ್ಗಲಿಲ್ಲ; ಯಾರ ಬೇಡಿಕೆಗೂ ಸೊಪ್ಪು ಹಾಕಲಿಲ್ಲ. ‘ಉತ್ಪನ್ನವಿಲ್ಲದಿದ್ದರೂ ಅಡ್ಡಿಯಿಲ್ಲ; ಚಿಕ್ಕದಿದ್ದರೂ ಚಿಂತೆಯಿಲ್ಲ; ನನ್ನ ಈಗಿನ ನಾಗನೂರ ಮಠವೇ ನನಗಿರಲಿ’ ಎಂದು ನಿರ್ಧಾರದ ಧ್ವನಿಯಲ್ಲಿ, ಸಂತೃಪ್ತ ಭಾವದಲ್ಲಿ ಉತ್ತರಿಸಿದರು. ಇದನ್ನು ಕಂಡ ಪೂಜ್ಯ ಶ್ರೀ ಕುಮಾರ ಸ್ವಾಮಿಗಳವರು “ಚಿಕ್ಕದಾಗಿ ಕಾಣುವ ಚಿಕ್ಕೆ ಕೋಟಿ ಕೋಟಿ ಯೋಜನೆಗಳಾಚೆಯಿಂದ ತನ್ನ ಥಳಥಳಿಸುವ ಬೆಳಕನ್ನು ಹರಡಿ ವಿಶ್ವದ ಅಂಧ ತಮಂಧವನ್ನು ಸೀಳುವುದು. ಅಂತೆಯೇ ಬಾಳು, ನಿನ್ನ ಮಠವು ಚಿಕ್ಕದಾಗಿದ್ದರೂ ಆ ಮಠದ ಮೂಲದಿಂದ ಅಖಂಡ ಅನಂತ ಪ್ರಕಾಶದ, ಕಣ್ಣು ಕೋರೈಸುವ ಲಕ್ಷೋಪಲಕ್ಷ ಉಜ್ವಲ ಅಕ್ಷಯ ದಿಧಿತಿಗಳು ಅಸಂಖ್ಯ ಹೃದಯಗಳನ್ನು ತಟ್ಟಿ ಮುಟ್ಟಿ, ಅಲ್ಲಿಯ ಕಾರ್ಗತ್ತಲೆಯನ್ನು ಮೆಟ್ಟಿ ಪ್ರಜ್ಞಾನ ಬ್ರಹ್ಮವಾಗಿ ತೊಳಗಿ ಬೆಳಗಬಲ್ಲವು. ಆ ದಿವ್ಯ ಪ್ರಕಾಶದ ಪೂತ ಧವಳ ಪುಣ್ಯ ಪ್ರವಾಹದಲ್ಲಿ ನೀನು ಮಿಂದು ಕರಗಿ ಹೋಗುವಿ, ಆ ಬೆಳಕಿನಲ್ಲಿ ಬೆಳಕಾಗಿ ಬೆಳೆದು ಹೋಗುವಿ! ನಿನ್ನ ಸೇವೆಯಲ್ಲಿಯೇ ಶಿವನ ಸಾಕ್ಷಾತ್ಕಾರವಾಗುವುದು. ನಿನ್ನ ಈ ಸೌಜನ್ಯದ ವಿನಯದ ಕೈಂಕರ್ಯದ ಶೀಲದಲ್ಲಿಯೇ ಜಗದೋದ್ಧಾರದ ಶೀಲವು ಕಾಣುವುದು. ಎಲ್ಲವನ್ನೂ ಪ್ರಸಾದ ಭಾವನೆಯಿಂದ ಕಾಣುವ ನಿನಗೆ ಪ್ರಸಾದವೇ ಪರಮ ಧೈಯವಾಗುವುದು. ಅನುಪಮ ಶ್ರೇಯವಾಗುವುದು. ನಿತ್ಯ ಪ್ರಕಾಶವಾಗುವುದು. ಸತ್ಯ ಪರಮಾತ್ಮವಾಗುವುದು. ಇದರಲ್ಲಿಯೇ ನಿನ್ನ ಜೀವನದ ಸುಳುಹೂ ಇದೆ ಹೊಳಹೂ ಇದೆ ನಿನಗೆ ಶುಭವಾಗಲಿ! ಮಂಗಳ ವಾಗಲಿ!! ಎಂದು ಹೃದಯ ತುಂಬಿ, ಕಂಠ ತುಂಬಿ, ಬಾಯಿತುಂಬಿ ಆಶೀರ್ವದಿಸಿದರು. ಇಂತು ನೀಡಿದ ಆಶೀರ್ವಾದವು ಗಟ್ಟಿಗೊಳ್ಳುವಂತೆ ಕೊಡಗಲಿ ಗವಿಯಲ್ಲಿ ಶ್ರೀ ಶಿವಬಸವ ಸ್ವಾಮಿಗಳನ್ನು ಅನುಷ್ಠಾನಕ್ಕೂ ಕೂಡಿಸಿದರು.

ಇಷ್ಟೇ ಅಲ್ಲ, ತಾವು ಲಿಂಗೈಕ್ಯವಾಗುವ ಕಾಲವನ್ನು ಅಂತರ್ಜ್ಞಾನದಿಂದ ಕಂಡು ಹಿಡಿದ ಪೂಜ್ಯ ಶ್ರೀ ಕುಮಾರ ಸ್ವಾಮಿಗಳು ಅದಕ್ಕಿಂತ ಕೆಲದಿನಗಳ ಪೂರ್ವದಲ್ಲಿ ಈ ಶ್ರೀ ಶಿವಬಸವ ಸ್ವಾಮಿಗಳನ್ನು ಕರೆಯಿಸಿಕೊಂಡು ಇವರಿಗೆ ಶ್ರೀ ಹಾಲಕೆರೆ ಅನ್ನದಾನೀಶ್ವರ ಮಹಾಶಿವಯೋಗಿ ಗಳಿಂದ ಆಶ್ರಮ (ಸ್ಥಳ) ದೀಕ್ಷೆಯನ್ನು ಕೊಡಿಸಿದರು. ಒಂದು ದಿನ ಬಳಿಯಲ್ಲಿ ಕರೆದು “ನೀನು ಲೋಕೋಪಕಾರಿಯಾಗು! ಲೋಕೋದ್ಧಾರಕನಾಗು!” ಎಂದು ಆಶೀರ್ವದಿಸುತ್ತ ತಮ್ಮ ಕೊರಳಲ್ಲಿರುವ ರುದ್ರಾಕ್ಷಿ ಮಾಲೆಯನ್ನು ಇವರ ಕೊರಳಿಗೆ ಹಾಕಿದರು. ಮತ್ತು ತಮ್ಮ ಪವಿತ್ರ ಹಸ್ತದಿಂದ ಆ ಪೂಜ್ಯ ಹಾನಗಲ್ಲ ಮಹಾಸ್ವಾಮಿಗಳು ಇವರಿಗೆ ಕರುಣಿಸಿದ ಭಸ್ಮದ ಘಟ್ಟಿಯೊಂದನ್ನು ಈ ರುದ್ರಾಕ್ಷಿ ಮಾಲೆಯನ್ನು ಈಗಲೂ ಈ ಶ್ರೀಗಳವರು ಗುರುಶಿಷ್ಯರ ಈ ಅನನ್ಯ ಅಭಿನ್ನ ಸಾಮರಸ್ಯದ ಸ್ಮಾರಕವಾಗಿ, ಗುರುವು ಶಿಷ್ಯನ ಮೇಲೆ ಗೆಯ್ದ ಮಹಾಕೃಪೆಯ ಪ್ರತೀಕವಾಗಿ, ಜತನದಿಂದ ಅಚ್ಚಳಿಯದಂತೆ ಕಾಯ್ದಿಟ್ಟಿರುವರು.

ಈ ಮೇರೆಗೆ ಶಿವಯೋಗಮಂದಿರದಲ್ಲಿ ಹನ್ನೆರಡು ವರ್ಷಗಳ ಹರಿಗಡಿಯದ ತಪಃಪ್ರಭಾವದಿಂದ ತಪಃಪ್ರಭೆಯಿಂದ ಆಂತರಿಕ ವಿಕಾಸವನ್ನೂ ಪ್ರಕಾಶವನ್ನೂ ಅಳವಡಿಸಿಕೊಂಡರು. ಅವರ ಬಾಳು ಕೊನರಿ ಚಿಗುರಿ ಹೂತು, ಕಾತು ಈ ತಪಸ್ತೇಜದಲ್ಲಿ ಹಣ್ಣು ಸಾರ್ಥಕತೆಯನ್ನು ಪಡೆಯಿತು. ಧನ್ಯತೆಯನ್ನು ಹೊಂದಿತು.

ಸಂಗ್ರಹ : ಎ. ಎಸ್. ಪಾವಟೆ, ವಿಶ್ರಾಂತ ಪ್ರಾಚಾರ್ಯರು, ಬಾಗಲಕೋಟ

ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿರುವ ಬಾಗಲಕೋಟೆ ಜಿಲ್ಲೆಯು ಅನೇಕ ಐತಿಹಾಸಿಕ, ನೈಸರ್ಗಿಕ, ಸಾಂಸ್ಕೃತಿಕ ತಾಣಗಳಿಂದಾಗಿ ಪ್ರಸಿದ್ಧಿಯನ್ನು ಪಡೆದಿದೆ.

ಬಾಗಲಕೋಟ ಜಿಲ್ಲೆಯ ಬಾದಾಮಿ  ತಾಲೂಕು ಅನೇಕ ವೈಶಿಷ್ಠತೆಯಗಳನ್ನು ಹೊಂದಿದೆ. ಚಾಲುಕ್ಯರ ರಾಜಧಾನಿಯಾಗಿ ಮೆರೆದ ಬಾದಾಮಿಯ ಪರಿಸರ ಅನೇಕ ಕೋಟೆ ಕೊತ್ತಳಗಳು, ಸುಂದರ ಶಿಲ್ಪದಿಂದ ಕೂಡಿದ ದೇವಾಲಯಗಳು, ಶಿಲ್ಪ ಕಲೆಗಾಗಿಯೇ ಪ್ರಸಿದ್ಧವಾದ ‘ಮೇಣ ಬಸದಿ’ ಎಂಬ ತೆರೆದ ಶಿಲ್ಪಕಲಾ ವಸ್ತು ಪ್ರದರ್ಶನದಂತಿರುವ ಗುಹೆಗಳಿಂದ ಕಂಗೊಳಿಸುತ್ತಿದೆ.

 

ಚಿತ್ರ ಸಂಖೈ ೧ : ಬದಾಮಿಯ ಗುಹೆಗಳು (ಮೇಣ ಬಸದಿಗಳು)

ಬಾದಾಮಿಯಿಂದ ನಾಲ್ಕು ಕಿಲೋ ಮೀಟರ್ ಅಂತರದಲ್ಲಿರುವ-‘ಬನಶಂಕರಿ’- ಶ್ರೀ ಬನಶಂಕರಿ ದೇವಿಯ ಮಂದಿರ, ಜುಳು ಜುಳು ಹರಿಯುವ ಸರಸ್ವತಿ ಹಳ್ಳ, ದೇವಾಲಯದ ಎದುರಿಗಿರುವ ಬೃಹದಾಕಾರದ ಕಲ್ಯಾಣಿ, ಸುತ್ತಲೂ ತೋಟಗಳಿಂದ ತುಂಬಿದ ವನಸಿರಿ ಇದೆಲ್ಲ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ಸಂದೇಹವಿಲ್ಲ.

ಎಡ ಬಲದಲ್ಲಿ ತೋಟಪಟ್ಟಿಗಳಿಂದ ಸುತ್ತುವರಿದ ಮಲಪ್ರಭಾ ನದಿಯ ಪರಿಸರ ಸದಾ ಹಸಿರಿನಿಂದ ತುಂಬಿದ ಐಸಿರಿ,  ಇಂಥ ಪರಿಸರದ ಮಧ್ಯದಲ್ಲಿ ಅಲ್ಲಲ್ಲಿ ಈ ಪರಿಸರವನ್ನು ತಮ್ಮ ಕೃಷಿಯಿಂದಾಗಿ ಇನ್ನೂ ಸುಂದರಗೊಳಿಸುವ ನೇಗಿಲ-ಯೋಗಿಗಳಿಂದ ತುಂಬಿದ ಗ್ರಾಮಗಳು.

ಪೂರ್ವಕ್ಕೆ ಹನ್ನೆರಡು ಕಿ.ಮೀ. ಅಂತರದಲ್ಲಿ ‘ಪಟ್ಟದಕಲ್ಲು’-ಪ್ರಸಿದ್ಧ ಶಿಲ್ಪಕಲಾ ದೇಗುಲಗಳ ಕೇಂದ್ರ ಸ್ಥಾನ. ಇಂಥ ಸುಂದರ ಪರಿಸರದಲ್ಲಿ ಒಂದು ಸಣ್ಣ ಗ್ರಾಮ-“ಭದ್ರನಾಯಕನ ಜಾಲಿಹಾಳ”. ಅದು ಜನಪದರ ಬಾಯಲ್ಲಿ ‘ಬಾದನಾಕ ಜ್ಯಾಲ್ಯಾಳ’ ಎಂದಾಗಿದೆ.

ಈ ಭದ್ರನಾಯಕನ ಜಾಲಿಹಾಳದಲ್ಲಿ ‘ಮಡ್ಡೇನವರ’ ಎಂಬ ಕುಟುಂಬ. ಈ ಮನೆತನದ ಮರಿಬಸಪ್ಪ ಮತ್ತು ರುದ್ರವ್ವ ದಂಪತಿಗಳ ಮಗನಾಗಿ ಜನಿಸಿದವನೇ ‘ಮಲ್ಲಣ್ಣ’-‘ಮಲ್ಲಣಾರ‍್ಯ’.

ಚಿಕ್ಕದೊಂದು ಒಣಬೇಸಾಯದ ಭೂಮಿ ಇದ್ದರೂ ಅಲ್ಪ ಸ್ವಲ್ಪ ಕಾಳು-ಕಡಿ ಬರುತ್ತಿದ್ದವು ಅದರಿಂದಲೇ ಉಪಜೀವನ ಸಾಗುತ್ತಿತ್ತು  ಪರಿಸ್ಥಿತಿ ಹದಗೆಟ್ಟಿದ್ದರಿಂದ ಇದ್ದ ಒಂದು ಹೊಲ ಮಾರಿದ-ಮರಿಬಸಪ್ಪ. ಬೇರೆಯವರ ಹೊಲದಲ್ಲಿ ಕೂಲಿಕುಂಬಳಿ ಮಾಡಿ ಜೀವನ ಸಾಗುತ್ತಿದ್ದರು.

ಇಂಥ ಬಡತನದ ಪರಿಸ್ಥಿತಿಯಲ್ಲಿಯೇ ಮರಿಬಸಪ್ಪ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ತೀರಿಕೊಂಡ. ರುದ್ರವ್ವ ಹೌಹಾರಿದಳು. ಮಗನಿಗಾಗಿ ಬದುಕಬೇಕಿತ್ತು, ಸಾವಿರ ನೋವನುಂಡು, ಮಗನನ್ನು ಸಲಹುವಲ್ಲಿ ಹೆಣಗಾಡ ತೊಡಗಿದಳು.

ಇದೇ ಸಮಯಕ್ಕೆ ಬರಗಾಲ ಕಾಣಿಸಿಕೊಂಡಿತು. ಮಳೆ ಬರಲಿಲ್ಲ, ನದೀ ಜಲಾಶಯಗಳು ಬತ್ತಿದವು, ಕುಡಿಯಲು ನೀರಿಲ್ಲ, ಹೊಲಗಳಲ್ಲಿ ಬೆಳೆಯಿಲ್ಲ, ತಿನ್ನಲು ಅನ್ನವಿಲ್ಲ, ಬದುಕು ದುರ್ಭರವಾಯಿತು. ಕಣ್ಣಿರೇ ಗತಿ. ಹಸಿವಿನಿಂದ ಜನ ದಾರಿ ದಾರಿಯಲ್ಲಿ ಸತ್ತರು. ಹೂಳುವವರಿಲ್ಲದೇ ಹೆಣಗಳು ಎಲ್ಲಿ ಬೇಕೆಂದರಲ್ಲಿ ಬಿದ್ದವು, ಪ್ರಾಣಿ ಪಕ್ಷಿಗಳು ದೇಹಗಳನ್ನು ತಿಂದು, ತಲೆಬುರುಡೆ ಎಲ್ಲೆಲ್ಲಿಯೂ ಕಂಡದ್ದರಿಂದ ಇದನ್ನು ‘ಡೋಗಿ ಬರ’ ಎಂದರು.

ಬಾಗಲಕೋಟೆ ನಗರದಲ್ಲಿ ಬರಗಾಲದ ಕಾಮಗಿರಿ ನಡೆದಿದ್ದವು, ರುದ್ರವ್ವ ಸಹ ಗುಳೇ ಹೋಗುವವರೊಂದಿಗೆ ಬಾಗಲಕೋಟೆಗೆ ಬಂದು ಡಾಂಬರ ರಸ್ತೆ ಮಾಡುವಲ್ಲಿ ಕೂಲಿ ಮಾಡ ಹತ್ತಿದಳು. ಜೊತೆಗೆ ಮಗ ಮಲ್ಲಣ್ಣ.

ಶ್ರಾವಣಮಾಸ ಬಂದಿತ್ತು. ಜನರು ಬಾಗಲಕೋಟೆಯ ಸಮೀಪದಲ್ಲಿರುವ ‘ಗುಡ್ಡದ ಮಲ್ಲಯ್ಯʼನ ದರ್ಶನಕ್ಕೆ ನಾಲ್ಕೂ ಸೋಮವಾರ ನಡೆಯುತ್ತ ಹೋಗಿ ದರ್ಶನ ಪಡೆವ ಪ್ರತೀತಿ ಇದೆ.

ಚಿತ್ರ ಸಂಖ್ಯೆ ೨ ಬಾಗಲಕೋಟೆಯ ಸಮೀಪದಲ್ಲಿರುವ ‘ಗುಡ್ಡದ ಮಲ್ಲಯ್ಯ       

ಚಿತ್ರ ಸಂಖ್ಯೆ ೩ ಬಾಗಲಕೋಟೆಯ ಸಮೀಪದಲ್ಲಿರುವ ‘ಗುಡ್ಡದ ಮಲ್ಲಯ್ಯ ದೇವಸ್ಥಾನ

ಒಂದು ಸೋಮವಾರ ದಿನ ರುದ್ರವ್ವ ಮಗನೊಂದಿಗೆ ಮಲ್ಲಯ್ಯನ ಗುಡ್ಡ ಹತ್ತಿದಳು. ಹಸಿವಿನಿಂದ ಬಳಲಿ ಬೆಂಡಾದ ರುದ್ರವ್ವನಿಗೆ ಪೂಜಾರಿ ನೀಡಿದ ಎರಡು ಬಾಳೆಹಣ್ಣುಗಳು ಹೊಟ್ಟೆಗೆ ಶಾಂತಿ ನೀಡಿದವು. ಮಗನಿಗೆ ಬದುಕು ನೀಡೆಂದು ಗುಡ್ಡದ ಮಲ್ಲಯ್ಯನಲ್ಲಿ  ಬೇಡಿಕೊಂಡಳು.

 ಇಳಿ ಹೊತ್ತಾಗಿತ್ತು ಆ ಕಡೆಯಿಂದ ಒಬ್ಬ ಯಜಮಾನರು ತನ್ನ ಇಬ್ಬರು ಹೆಂಡಂದಿರೊಂದಿಗೆ ಬಂದು, ಮಲ್ಲಯ್ಯನ ದರ್ಶನಾಶೀರ್ವಾದ ಪಡೆದು, ದೇವಾಲಯದ ಹೊರಗಿದ್ದ ಕಲ್ಲು ಬಂಡೆಗಳ ಮೇಲೆ ಕುಳಿತು ತಂದ ಫಲಹಾರ ಸೇವನೆಗೆ ಮುಂದಾದಾಗ, ಈ ಮಗು ಮಲ್ಲಣ್ಣನು ಕಣ್ಣಿಗೆ ಬಿದ್ದ.

ಮಗುವನ್ನು ನೋಡಿ ಮನ ಮಿಡಿಯಿತು. ‘ಬಾ ಮಗು’ ಎಂದು ಕರೆದು ಮುದ್ದಾಡಿದರು. ಆ ಯಜಮಾನ ಸಾಲಿ ವಿರುಪಾಕ್ಷಯ್ಯನವರು, ಮನಗೂಳಿ. ಈರವ್ವ, ಮತ್ತು ಹುಚ್ಚವ್ವ ಅವರ ಇಬ್ಬರ ಹೆಂಡಂದಿರು. ಮಕ್ಕಳಾಗಿರಲಿಲ್ಲ ಮಗುವಿನ ಹಂಬಲ ಮೂವರನ್ನೂ ಕಾಡುತ್ತಿತ್ತು. ಈ ಮಗು ಮಲ್ಲಣ್ಣ ಅವರ ಮನಸೆಳೆದ.

ವಿರುಪಾಕ್ಷಯ್ಯನವರು ಮಗುವನ್ನು ತಮಗೆ ನೀಡಿದಲ್ಲಿ ಮಗನನ್ನಾಗಿ ಮಾಡಿಕೊಳ್ಳುತ್ತೇವೆ ಎಂದಾಗ, ತಾಯಿ ರುದ್ರಮ್ಮ ಅಳುತ್ತಲೇ ಮನಸಿಲ್ಲದ ಮನಸ್ಸಿನಿಂದ ಮಗನನ್ನು ಒಪ್ಪಿಸಿದಳು. ವಿರೂಪಾಕ್ಷಯ್ಯ ನೀಡಿದ ಎರಡು ರೂಪಾಯಿ ತೆಗೆದುಕೊಂಡು ಕಣ್ಣೀರಿಡುತ್ತ ರುದ್ರವ್ವ ಹೊರಟು ಹೋದಳು. ಗುಡ್ಡದ  ಮಲ್ಲಯ್ಯನೇ ಕರುಣಿಸಿದ ಮಗು ಮಲ್ಲಣ್ಣನನ್ನು ವಿರೂಪಾಕ್ಷಯ್ಯ ಹಾಗೂ ದಂಪತಿಗಳು ಮಗನಾಗಿ ಪಡೆದುಕೊಂಡು, ಸಾಕಿ ಸಲುಹಿದರು.

ಚಿತ್ರ ಸಂಖ್ಯೆ ೪: ಬಾಗಲಕೋಟೆ ಯಲ್ಲಿನ ಬೆಳೆದು ಬಾಳಿದ  ಶ್ರೀ ಮಲ್ಲಣರ‍್ಯರ ಮನೆ ಇಂದು ಬೇರೆಯವರ ಆಧೀನದಲ್ಲಿ ನವೀಕರಣಗೊಂಡಿದೆ

ಮಲ್ಲಣ್ಣ ಜಾಣನಾಗಿದ್ದ. ಶಾಲಾ ಶಿಕ್ಷಣವಲ್ಲದೇ ಆತನಿಗೆ ಸಂಗೀತದಲ್ಲಿ ಆಸಕ್ತಿ ಇತ್ತು. ಬಹಳ ಸುಂದರವಾದ ಕಂಠಸಿರಿಯಿತ್ತು. ವಿಭೂತಿ ಧರಿಸಿಕೊಂಡು ಹಾಡಲು ಶುರುಮಾಡಿದರೆ ಎಲ್ಲರೂ ಮನಸೋಲುವ ಗಾನ. ಮಲ್ಲಣ್ಣನು ಏಳನೇ ವರ್ಗವನ್ನು ಹೆಚ್ಚು ಅಂಕಗಳಿಸಿ ತೇರ್ಗಡೆಯಾದ  ಕನ್ನಡ, ಸಂಸ್ಕೃತ ಎರಡೂ ಭಾಷೆಗಳು ಚೆನ್ನಾಗಿ ಬರುತ್ತಿದ್ದವು.

ವಿರುಪಾಕ್ಷಯ್ಯನವರು ಜಂಗಮ ದೀಕ್ಷೆ ಕೊಡಿಸಿ ಮಲ್ಲಣ್ಣನನ್ನು ಮಲ್ಲಯ್ಯನವರನ್ನಾಗಿ ಮಾಡಿದರು. ಬಸವ ಪುರಾಣ ಓದಿಕೊಂಡ ಮಲ್ಲಯ್ಯನವರಲ್ಲಿ ಹೊಸ ವಿಚಾರ ಕ್ರಾಂತಿಯಾಯಿತು. ವಚನಗಳನ್ನು ಸುಂದರವಾಗಿ ಹಾಡುತ್ತಿದ್ದರು. ಇದನ್ನರಿತು ವಿರುಪಾಕ್ಷಯ್ಯನವರ ಗೊತ್ತಿನವರೊಬ್ಬರು ಸಂಗೀತ ಕಲಿಯಲು ಅವರನ್ನ್ನು ಮೈಸೂರಿಗೆ ಕಳುಹಿಸಿದರು. ಅಲ್ಲಿ ಎರಡು ವರ್ಷ ಸಂಗೀತ ಅಭ್ಯಾಸವಾಯಿತು. ಅವರು ಬಸವ ಪುರಾಣ ಹೇಳುವ ಶೈಲಿಗೆ ಒಂದು ಹೊಸ ಮೆರಗು ಬಂತು.

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ  ವಿರುಪಾಕ್ಷಯ್ಯ ಸಾಲಿ, ಮನಗೂಳಿ ಸೇವೆಯಿಂದ ನಿವೃತ್ತರಾದರು. ಅವರ ಸ್ಥಾನದಲ್ಲಿಯೇ ಮಲ್ಲಿಕಾರ್ಜುನಯ್ಯ ವಿರುಪಾಕ್ಷಯ್ಯ ಮನಗೂಳಿ ಅವರಿಗೆ ಶಿಕ್ಷಕ ಹುದ್ದೆ ದೊರೆಯಿತು. ಹಿಂದುಸ್ತಾನಿ ಶಾಲೆಯಲ್ಲಿ ೨೧-೧೦-೧೮೯೩ ರಂದು ೭=೦೦ ರೂಪಾಯಿಗಳ ಪಗಾರದ ಮೇಲೆ ಶಿಕ್ಷಕರಾದರು. ಅಲ್ಲಿಯ ಉರ್ದು ಸಹ-ಶಿಕ್ಷಕರ ಸ್ನೇಹದಿಂದ ಉರ್ದು ಭಾಷೆಯನ್ನೂ ಕಲಿತುಕೊಂಡರು.

ತರುಣ ಮಲ್ಲಯ್ಯ ಎಲ್ಲರ ಮನ ಸೆಳೆವ ವ್ಯಕ್ತಿತ್ವ ಹೊಂದಿದ್ದರು. ಸಂಗೀತವನ್ನು ಆಸಕ್ತ ವಿದ್ಯಾರ್ಥಿಗಳಿಗೆ ಕಲಿಸುವ ಹಂಬಲವಿತ್ತು. ಅಂಥ ಸಮಯದಲ್ಲಿ ಶ್ರೀಮಂತರೊಬ್ಬರು ಮಲ್ಲಯ್ಯ ಮಾಸ್ತರನನ್ನು ಕರೆದುಕೊಂಡು ಹೋಗಿ ಒಬ್ಬ ವಿದ್ಯಾರ್ಥಿನಿಯನ್ನು ಪರಿಚಯಿಸಿದರು. ಅವಳು ವೇಶ್ಯೆಯಾಗಿದ್ದಳು ಆದರೆ ಸಂಗೀತ ಕಲಿಯುವ ಹಂಬಲ ಬಲವಾಗಿತ್ತು. ಮಲ್ಲಿಕಾರ್ಜುನಯ್ಯನವರು ಯಾವ ಸಂಕೋಚವಿಲ್ಲದೆ ಗುರುಸ್ಥಾನದಲ್ಲಿ ನಿಂತು ಅವಳಿಗೆ ಸಂಗೀತ ಹೇಳಿದರು. ತಮ್ಮ ಮಗ ವಾರಾಂಗನೆಗೆ ಸಂಗೀತ ಹೇಳುವದು ವೃಧ್ಧ ತಂದೆ-ತಾಯಿಗಳಿಗೆ ನೋವನ್ನುಂಟುಮಾಡಿತು. ಹರೆಯದ ತರುಣ ಹರೆಯದ ಒಬ್ಬ ವೇಶ್ಯೆಗೆ ಸಂಗೀತ ಹೇಳಿಕೊಡುವ ಸಂಗತಿ ಯಾರಿಗೂ ಒಪ್ಪಿತವಾಗಿರಲಿಲ್ಲ. ಅದು ಚಿಂತೆಯ ವಿಷಯವೇ ಸರಿ.

ವಿರುಪಾಕ್ಷಯ್ಯನವರ ಆರೋಗ್ಯ ಹದಗೆಟ್ಟಿತು. ಮನೆಯಲ್ಲಿ ಮಲ್ಲಯ್ಯನವರ ವಿವಾಹ ಪ್ರಸ್ತಾಪವಾಯಿತು. ಮಲ್ಲಿಕಾರ್ಜುನಯ್ಯ ಅದಕ್ಕೆ ಕಿವಿಗೊಡದಾದರು. ತನಗೆ ವಿವಾಹ ಬೇಡ ಎಂದರು. ಜಡ್ಡು ಉಲ್ಬಣಿಸಿದ್ದ ವಿರುಪಾಕ್ಷಯ್ಯನವರು ಊರಿನ ಹಿರಿಯರೂ ಅಧ್ಯಾತ್ಮ ಜೀವಿಗಳೂ ಆಗಿದ್ದ ಶ್ರೀ ಕಿಣಗಿ ಬಸಲಿಂಪ್ಪನವರು ಮತ್ತು ಶ್ರೀ ಗುಡ್ಡದ ವೀರಸಂಗಪ್ಪನವರನ್ನು ಕರೆಸಿ ಲಗ್ನವಾಗುವಂತೆ ಬುದ್ಧಿ ಹೇಳಿಸಿದರೂ ಪ್ರಯೋಜನವಾಗಲಿಲ್ಲ. ‘ನನ್ನನ್ನು ಕ್ಷಮಿಸಿ, ನನ್ನ ಒಳದನಿ ಲಗ್ನವಾಗಲು ಒಪ್ಪುತ್ತಿಲ್ಲ’ ಎಂದು ಹೇಳಿದ ಮೇಲೆ ವಿರುಪಾಕ್ಷಯ್ಯನವರು ಆ ಮಾತುಗಳನ್ನು ಕೇಳಿ ಕೊನೆಯುಸಿರೆಳೆದರು.

ಅವರ ಸಂಸಾರ ಛಿದ್ರವಾಯಿತು. ಇಬ್ಬರೂ ತಾಯಂದಿರು ಬೇರೆ ಬೇರೆ ಇರಹತ್ತಿದರು. ಮಲ್ಲಿಕಾರ್ಜುನಯ್ಯನವರು ಮನೆಬಿಟ್ಟು ಬಾಗಲಕೋಟೆಯ ಬಸವಂತರಾಯ ಸಾಸನೂರ ಇವರ ವಖಾರದಲ್ಲಿಯೇ ಇರುತ್ತಿದ್ದರು. ಒಂದು ದಿನ ಇದ್ದ ನೌಕರಿಯನ್ನು ಬಿಟ್ಟರು.

ಶ್ರೀ ಕಿಣಗಿ ಬಸಲಿಂಗಪ್ಪನವರು ಮತ್ತು ಶ್ರೀ ಗುಡ್ಡದ ವೀರಸಂಗಪ್ಪನವರ ಹತ್ತಿರ ಅಧ್ಯಾತ್ಮಿಕ ಚರ್ಚೆ ಮಾಡುವಲ್ಲಿಯೇ ಹೆಚ್ಚು ಕಾಲ ಕಳೆದುಹೋಗುತ್ತಿತ್ತು.

ಶ್ರಾವಣಮಾಸದ ನಿಮಿತ್ಯ ಪುರಾಣ ಕೇಳುವ ಸಂಪ್ರದಾಯ ಬಾಗಲಕೋಟಯಲ್ಲಿ ಬಹುದಿನಗಳಿಂದ ಇದೆ. ಆ ವರ್ಷದಲ್ಲಿ ಹುನಗುಂದದ ಬಳಿಯಿರುವ ಕೊಡಗಲಿಯ ಪೂಜ್ಯ ಶ್ರೀ ಮಹಾಲಿಂಗ ಸ್ವಾಮಿಗಳಿಂದ ಶ್ರೀ ಮೋಟಗಿ ಬಸವೇಶ್ವರ ದೇವಸ್ಥಾನದಲ್ಲಿ ಪುರಾಣ ಪ್ರಾರಂಭವಾಗಿತ್ತು.

ಮಲ್ಲಿಕಾರ್ಜುನಯ್ಯನವರನ್ನು ನೋಡಿದ ಕೊಡಗಲಿ ಶ್ರೀಗಳು ‘ಧರ್ಮಕಾರ್ಯಕ್ಕಾಗಿ ಹುಟ್ಟಿ ಬಂದು, ವಾರಾಂಗನೆಯರಿಗೆ ಸಂಗೀತ ಹೇಳಿಕೊಡುತ್ತ ಕಾಲಹರಣ ಮಾಡುವದು ಸರಿಯಲ್ಲ’ ಎಂದರು. ಅವರ ಅಧ್ಯಾತ್ಮಿಕ ವಿಚಾರಗಳಿಂದ ಪ್ರೇರಿತನಾದ ಮಲ್ಲಿಕಾರ್ಜುನಯ್ಯನವರು ತಮ್ಮ ಬೆಲೆಬಾಳುವ ವಸ್ತು ಒಡವೆಗಳನ್ನು ಸುಟ್ಟು ಹಾಕಿ, ಕೌಪೀನ ಧರಿಸಿ, ಅವರಿಂದಲೇ ಜಂಗಮದೀಕ್ಷೆಯನ್ನು ಪಡೆದುಕೊಂಡು, ಕಪನಿ. ಬೆತ್ತ, ಜೋಳಿಗೆ, ತಂಬಿಗೆ ಹಿಡಿದುಕೊಂಡು ಜಂಗಮನಾಗಿ ಪರಿವರ್ತಿತರಾದರು. ಮಲ್ಲಿಕಾರ್ಜುನಯ್ಯನವರು “ಮಲ್ಲಣಾರ್ಯರಾಗಿ, ಸಂಗೀತಮಯ ಬಸವಪುರಾಣ ಹೇಳುತ್ತ ಧರ್ಮ ಜಾಗೃತಿಯ ಕಾರ್ಯದಲ್ಲಿ ತೊಡಗಿದರು.

ಇಲಕಲ್ಲಿನ ಪೂಜ್ಯ ಶ್ರೀ ಮಹಾಂತಪ್ಪಗಳಿಗೆ ಬಸವೇಶ್ವರರ ವಚನಗಳೆಂದರೆ ಎಲ್ಲಿಲ್ಲದ ಪ್ರೀತಿ. ‘ಅಪ್ಪನವರ ವಚನಗಳು’ ಎಂದು ಗೌರವದಿಂದ ಕರೆಯುತ್ತಿದ್ದರು. ತಮ್ಮಲ್ಲಿಗೆ ಬಂದ ಮಲ್ಲಣಾರ್ಯರಿಗೆ ವಚನಗಳನ್ನು ಹಾಡಲು ಮತ್ತು ವಿವರಿಸಲು ಶ್ರೀಗಳು ಕೇಳಿಕೊಂಡಾಗ ಅವರ ವೈಖರಿಯನ್ನು ಕಂಡ ಜನರೆಲ್ಲ ಬೆರಗಾದರು.  ವೈರಾಗ್ಯದ ನಡೆ-ನುಡಿಗಳು ಜನಮನ ಸೂರೆಗೊಂಡವು.

ಪೂಜ್ಯ ಶ್ರೀ ವಿಜಯ ಮಹಾಂತೇಶ್ವರ ಸ್ವಾಮಿಗಳ ಅಪ್ಪಣೆಯಂತೆ ಮೂರು ತಿಂಗಳುಗಳ ಕಾಲ ಚಿತ್ತರಗಿಯಲ್ಲಿ ಬಸವ ಪುರಾಣ ನಡೆಯಿತು. ಮುಕ್ತಾಯ ಸಮಾರಂಭಕ್ಕೆ ಶ್ರೀ ವಿಜಯಮಹಾಂತೇಶ್ವರರು, ಶ್ರೀ ಘನಮಠದ ನಾಗಭೂಷಣ ಶಿವಯೋಗಿಗಳು ಮತ್ತು ಮಲ್ಲಣಾರ್ಯರು ಸಂಗಮಿಸಿ, ಮುಕ್ತಾಯ ಸಮಾರಂಭದ ನಂತರ ಹುನಗುಂದದಲ್ಲಿ ಶ್ರೀ ನಾಗರಾಳ ದೊಡ್ಡಪ್ಪನವರನ್ನು ಕಂಡು ಆಶೀರ್ವದಿಸಿದರು.

‘ಬಸವ ಪುರಾಣ ಕೇಳುವದಾದರೆ ಮಲ್ಲಣಾರ್ಯರರಿಂದಲೇ ಕೇಳಬೇಕು’ ಎಂಬ ಮಾತು ಜನಜನಿತವಾಯಿತು.

ವಿದ್ವಾಂಸರು, ಪಂಡಿತರು ಮಲ್ಲಣಾರ್ಯರ ಬೋಧನೆಗಳನ್ನು ಕೇಳಿ, ಅವರ ವೈರಾಗ್ಯದ ನಡೆನುಡಿಗಳನ್ನು ಕಂಡು ಬೆರಗಾದರು.

ಇಂಥ ವೈರಾಗ್ಯನಿಧಿ, ಸಾಮಾಜಿಕ ಕಳಕಳಿಯುಳ್ಳ ಮಲ್ಲಣಾರ್ಯರು ಹಾನಗಲ್ಲ ಮಠಕ್ಕೆ ಬಂದರು.

ಚಿತ್ರ ಸಂಖ್ಯೆ ೫:  ಶ್ರೀ ಮಲ್ಲಣಾರ‍್ಯರು ಮತ್ತು ಪೂಜ್ಯ ಶ್ರೀ ಹಾನಗಲ್ಲ ಕುಮಾರ ಶಿವಯೋಗಿ ಗಳ ಭೇಟಿಯಾದ  ತೈಲ ಚಿತ್ರ ಕಲಾವಿದರು ನಾಡೋಜ ಶ್ರೀ ವಿ.ಟಿ.ಕಾಳೆ ಶಿವಯೋಗಮಂದಿರ ಚಿತ್ರ ಸಂಗ್ರಹಾಲಯ.

ಸಾಯಂಕಾಲದ ಸಮಯ, ಶ್ರೀ ಗುರು ಕುಮಾರ ಶಿವಯೋಗಿಗಳು ಮಠದಲ್ಲಿ ತೂಗು ಮಂಚದ ಮೇಲೆಕುಳಿತಿದ್ದರು. ಅದನ್ನು ಕಂಡ ಮಲ್ಲಣಾರ್ಯರು ಅಲ್ಲಿಯ ಸೇವಕನನ್ನು ಕುರಿತು, ಸ್ವಾಮಿಗಳಿಗೆ ಕೇಳಿಸುವಂತೆ ಉದ್ದೇಶ ಪೂರ್ವಕವಾಗಿ ‘ಇಲ್ಲಿ ಮಠದ ಸ್ವಾಮಿ ಯಾರಿದ್ದಾರೆ?’ ಎಂದು ಏರು ಧ್ವನಿಯಲ್ಲಿ ಕೇಳಿದರು. ಅದಕ್ಕೆ ಸೇವಕ ‘ಇಲ್ಲಿ ಕುಳಿತಿರುವವರೇ ಸ್ವಾಮಿಗಳು’ ಎಂದು ಮೆಲುದನಿಯಲ್ಲಿ ಹೇಳಿದ. ಮಲ್ಲಣಾರ್ಯ ‘ನೀವೇ ಏನು ಮಠದ ಸ್ವಾಮಿಗಳು?’ ಎಂದು ವಕ್ರವಾಗಿ ಕೇಳಿದಾಗ ‘ಜನ ಎನ್ನುತ್ತಾರೆ’ ಎಂದರು ಶ್ರೀಗಳು. ‘ಅವರು ಮೂರ್ಖರು, ಸಮಾಜ ಸೇವೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ, ತನ್ನನ್ನು ತಾನು ಸಮಾಜಕ್ಕಾಗಿ ತೇದುಕೊಳ್ಳುವವನೇ ನಿಜವಾದ ಸ್ವಾಮಿ. ಮೃಷ್ಟಾನ್ನ ಭೋಜನ ಗೈದು ತೂಗು ಮಂಚದ ಮೇಲೆ ಕುಳಿತುಕೊಳ್ಳುವವರು ಸ್ವಾಮಿಗಳಲ್ಲ, ಎಂದು ಬಿರುಮಾತುಗಳನ್ನಾಡಿದಾಗ, ಹಾನಗಲ್ಲ ಕುಮಾರ ಶ್ರೀಗಳಿಗೆ ಎಚ್ಚರಿಕೆಯ ಗಂಟೆ ಬಾರಿಸಿದಂತಾಯಿತು. ಅವರು ಮಲ್ಲಣಾರ್ಯರ ಮಾತಿಗೆ ಕೋಪಗೊಳ್ಳದೇ ಸತ್ಯ ಯಾವಾಗಲೂ ಕಠೋರ ಎಂಬುದನ್ನು ಅರ್ಥಮಾಡಿಕೊಂಡು, ಎದ್ದು ಬಂದು ಆ ಜಂಗಮ ಮೂರ್ತಿಯನ್ನು ಸಮಾಧಾನಪಡಿಸುತ್ತ, ‘ಇದಕ್ಕಾಗಿ ಮಠಾಧೀಶರು ಏನು ಮಾಡಬೇಕಾಗಿದೆ?’ ಎಂದು ಕೇಳಲಾಗಿ, ಮಲ್ಲಣಾರ್ಯರು ‘ಇಂದು ಸಮಾಜ ಇಂಗ್ಲೀಷ ಪ್ರಭಾವಕ್ಕೆ ಒಳಗಾಗಿ ತಮ್ಮ ಧರ್ಮವನ್ನು ಮರೆಯುತ್ತದೆ. ಇದರಿಂದಾಗಿ ಸಮಾಜ ಅಧೋಗತಿಗೆ ಇಳಿದಿದೆ. ಸಮಾಜ ತಿದ್ದುವದಕ್ಕಾಗಿ ಇಂದು ಸ್ವಾಮಿಗಳು ಮಠದಿಂದ ಹೊರಬರಬೇಕಾಗಿದೆ, ಬಸವಾದಿ ಪ್ರಮಥರು ಹಾಕಿಕೊಟ್ಟ ಮಾರ್ಗವನ್ನು ನೆನಪಿಸಿಕೊಡಬೇಕಾಗಿದೆ’ ಎಂದು ಆವೇಶದಿಂದ ಮಾತನಾಡಿದರು. ಇದರಿಂದ ಹಾನಗಲ್ಲ ಶ್ರೀಗಳು ಜಾಗೃತರಾದರು.

ಸಮಾಜಕ್ಕಾಗಿ ಜಂಗಮರನ್ನು, ಗುರುಗಳನ್ನು ಸಿದ್ಧಪಡಿಸುವ ಒಂದು ಧಾರ್ಮಿಕ ವಿದ್ಯಾಸಂಸ್ಥೆಯ ಅವಶ್ಯಕತೆಯಿದೆ, ಅಂಥ ಒಂದು ಸಂಸ್ಥೆಯನ್ನು ತೆರೆಯಬೇಕು ಎಂಬ ಮಾತನ್ನು ಹೇಳಿ ಹಾನಗಲ್ಲಿನಿಂದ ಮಲ್ಲಣಾರ್ಯರು ನಿರ್ಗಮಿಸಿದರು. ಈ ಮಾತುಗಳ ಪ್ರಭಾವ ಶ್ರೀ ಕುಮಾರ ಶಿವಯೋಗಿಗಳ ಮನದಲ್ಲಿ ಅಚ್ಚಳಿಯದೆ ಮೂಡಿನಿಂತಿತು.. ಈ ಮಹತ್ವದ ವಿಚಾರವೇ ನಂತರ ಬಾಗಲಕೋಟ ಜಿಲ್ಲೆಯ, ಬಾದಾಮಿ ತಾಲೂಕಿನಲ್ಲಿ ಶಿವಯೋಗ ಸಾಧಕರನ್ನು ತರಬೇತಿಗೊಳಿಸುವ ‘ಶಿವಯೋಗ ಮಂದಿರ’ದ ಸ್ಥಾಪನೆಗೆ ಕಾರಣವಾಯಿತು. ವೀರಶೈವ-ಲಿಂಗಾಯತ ಧರ್ಮದ ಬೀಜ-ರೂಪದ ಸಂಸ್ಥೆಯಾಯಿತು.

ಮಲ್ಲಣಾರ್ಯರು ಜಂಗಮನಾಗಿ ಬಿರುಗಾಳಿಯಂತೆ ನಾಡತುಂಬೆಲ ಸಂಚರಿಸುತ್ತ ಬಸವ ಪ್ರವಚನಗಳನ್ನು ನೀಡುತ್ತ ಜನಮನ ಶುದ್ಧೀಕರಣ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.

ಮಲ್ಲಣಾರ್ಯರು ಯಾವುದೇ ಮಠದಲ್ಲಿ ವಾಸವಿದ್ದರೂ ಆ ಮಠದಲ್ಲಿ ಸಿದ್ಧಪಡಿಸಿದ ಪ್ರಸಾದವನ್ನು ಸ್ವೀಕಾರ ಮಾಡುತ್ತಿರಲಿಲ್ಲ. ಬೆಳಿಗ್ಗೆ ಸ್ನಾನ, ಲಿಂಗ ಪೂಜೆಗಳನ್ನು ಮುಗಿಸಿಕೊಂಡು, ಐದು ಮನೆ ಭಿಕ್ಷೆಗೆ ಹೋಗುತ್ತಿದ್ದರು. ಭಿಕ್ಷೆಗೆಂದು ಬಾಗಿಲಿಗೆ ಬಂದು ನಿಂತ ತಕ್ಷಣ ಭಕ್ತರು ಭಿಕ್ಷೆ ಹಾಕಬೇಕು, ತಡಮಾಡಿದರೆ ಮುಂದೆ ಹೊರಡುತ್ತಿದ್ದರು. ಇಂಥ ಕಠಿಣ ಜಂಗಮ ವೃತ್ತಿ ಪಾಲಿಸಿದವರು. ಭಿಕ್ಷೆ ಬೇಡಿ ತಂದುದನ್ನು ಮಾತ್ರ ಪ್ರಸಾದವಾಗಿ ಸೇವಿಸುತ್ತಿದ್ದರು ಇದು ಜಂಗಮ ವೃತ್ತಿಯ ಮಾದರಿ.

ಮಲ್ಲಣಾರ್ಯರ  ಈ ಬಗೆಯ ಧರ್ಮ ಸುಧಾರಣಾ ಕಾರ್ಯಕ್ಕೆ ಬೆಂಬಲವಾಗಿ ನಿಂತವರು- ಇಲಕಲ್ಲಿನ ಶ್ರೀ ವಿಜಯ ಮಹಾಂತ ಸ್ವಾಮಿಗಳು ಮತ್ತು ಹಾಲಕೆರೆಯ ಶ್ರೀ ಅನ್ನದಾನಿ ಮಹಾಸ್ವಾಮಿಗಳವರು.

ಗಜೇಂದ್ರಗಡದ ವಿರಕ್ತಮಠಕ್ಕೆ ಮಲ್ಲಣಾರ್ಯ ಬಂದಾಗ ಅಲ್ಲಿಯ ಸ್ವಾಮಿಗಳು ಚಿಂತೆಗೊಳಗಾಗಿದ್ದರು. ಕಾರಣ ಕೇಳಿದಾಗ ಆ ಶ್ರೀಗಳು ತಮಗೆ ಶ್ರೀಮಂತ ಭಕ್ತರೊಬ್ಬರು ಸಾವಿರಾರು ರೂಪಾಯಿ ಬೆಲೆ ಬಾಳುವ ಬೆಳ್ಳಿಯ ಬಟ್ಟಲು  ಚೆರಿಗೆ ಮತ್ತು ವಾಟೆ ಕೊಟ್ಟಿದ್ದರು, ಅವುಗಳನ್ನು ಕಳ್ಳರು ತುಡುಗು ಮಾಡಿದ್ದಾರೆ ಎಂದು ಹೇಳಿದರು. ಮಲ್ಲಣಾರ್ಯರು ಇದನ್ನು ಕೇಳಿ ‘ಸ್ವಾಮಿಗಳೇ, ಅದು ತಾವೇನೂ ದುಡಿದು ತಂದದ್ದಲ್ಲ, ಇದ್ದವರು ಕೊಟ್ಟರು, ಇಲ್ಲದವರು ಒಯ್ದರು ಅದಕ್ಕೆ ನಿಮಗೇಕೆ ಚಿಂತೆ?’ ಎಂದು ತಿಳಿಹೇಳಿ, ಅವರು ಹೊಸ ವಿಚಾರಕ್ಕೆ ಬರುವಂತೆ ಮಾಡಲು ಬಸವೇಶ್ವರರ ಮನೆಗೆ ಕಳ್ಳ ಬಂದಾಗ ಬಸವಣ್ಣ ನಡೆದುಕೊಂಡ ರೀತಿಯನ್ನು ಹೇಳಿದಾಗ, ಅದನ್ನು ಕೇಳಿದ ಸ್ವಾಮಿಗಳ ಮನಸ್ಸು ನಿರ್ಮಲವಾಯಿತು.

ಅಥಣಿಯ ಶ್ರೀ ಮುರುಘೇಂದ್ರ ಶಿವಯೋಗಿಗಳು ಲಿಂಗ ಪೂಜಾ ನಿಷ್ಠರಾಗಿ, ಶಿವ ಸ್ವರೂಪಿಗಳಾಗಿದ್ದವರು. ಅಲ್ಲಿಗೆ ಮಲ್ಲಣಾರ್ಯರು ಬಂದು ‘ಬಸವ ಪ್ರವಚನ’ ಗೈದು ಶಿವಯೋಗಿಗಳಿಗೆ ಆನಂದ ನೀಡಿದರು. ಅವರ ವೈರಾಗ್ಯದ ಮಾತುಗಳು, ಧಾರ್ಮಿಕ ನಡೆ-ನುಡಿಯ ಸತ್ಯತೆಗಳು ಜನ ಮನವನ್ನು ಪರಿವರ್ತಿಸಿದವು. ಮುರುಘೇಂದ್ರ ಶಿವಯೋಗಿ ಗಳು ಮಲ್ಲಣಾರ್ಯರ ಬರುವನ್ನು ಯಾವಾಗಲೂ ಎದುರು ನೋಡುತ್ತಿದ್ದರು.

ಮಲ್ಲಣಾರ್ಯರ ಮಾತುಗಳಲ್ಲಿ ಹೇಳುವದಾದರೆ “ಅಥಣಿ ನನಗೆ ಕಾಶೀ, ಹಾಲಕೆರೆ ರಾಮೇಶ್ವರ, ಇವುಗಳ ದರ್ಶನವಿಲ್ಲದೆ ನನಗೆ ಬದುಕಿಲ್ಲ” ಎನ್ನುತ್ತಿದ್ದರು

ಬಾಗಲಕೋಟೆಯ ಟೀಕಿನಮಠದಲ್ಲಿ ಪ್ರವಚನ ನಡೆದಾಗ ಮಲ್ಲಣಾರ್ಯರು ಅಲ್ಲಿಗೆ ಬಂದರು. ಅಲ್ಲಿ ಅನೇಕ ಹರ ಗುರು ಚರಮೂರ್ತಿಗಳು ವಿರಾಜಮಾನರಾಗಿದ್ದರು. ಮಹಾ ವೈರಾಗ್ಯ ಮೂರ್ತಿಗಳಾಗಿದ್ದ ಬೀಳೂರ ಪೂಜ್ಯ ಶ್ರೀ ನಿ. ಪ್ರ. ಗುರುಬಸವ ಮಹಾಸ್ವಾಮಿಗಳೂ ಅವರ ಮಧ್ಯದಲ್ಲಿದ್ದರು. ‘ಹೆಣ್ಣು ಮಾಯೆ ಎಂಬರು ಹೆಣ್ಣು ಮಾಯೆಯಲ್ಲ, ಹೊನ್ನು ಮಾಯೆ ಎಂಬರು, ಹೊನ್ನು ಮಾಯೆಯಲ್ಲ, ಮಣ್ಣು ಮಾಯೆ ಎಂಬರು, ಮಣ್ಣು ಮಾಯೆಯಲ್ಲ ಮನದ ಮುಂದಣ ಆಸೆ ಮಾಯೆ ಎಂಬ ವಚನವನ್ನು ಪ್ರವಚನಕಾರರು ವಿವರಿಸಿದರು. ಪ್ರವಚನದ ನಂತರ ಮಾತನಾಡಿದ ಮಲ್ಲಣಾರ್ಯರು ಎದ್ದು ಮಾತನಾಡುತ್ತ, ‘ಬೀಳೂರಪ್ಪನವರು ಹೆಣ್ಣಿನ ಮೋಹ ಬಿಟ್ಟರೆ ಹೊರತು, ಮಣ್ಣಿನ ಮೋಹ ಅವರನ್ನು ಬಿಡಲಿಲ್ಲ ಎಂದರುʼ. ಅದಕ್ಕೆ ಶ್ರೀ ಬೀಳೂರ ಗುರುಬಸವ ಮಹಾಸ್ವಾಮಿಗಳು ಕೋಪಗೊಳ್ಳದೆ, ‘ಅದು ನಿಜ, ಆದರೆ ಸಮಾಜದ ಹಿತಕ್ಕಾಗಿ ಕಟ್ಟಡ ಕಾರ್ಯ ಅನಿವಾರ್ಯ’ ಎಂಬ ಮಾತನ್ನು ಹೇಳಿದಾಗ, ಮಲ್ಲಣಾರ್ಯರೂ ತಲೆ ದೂಗಿದರು, ಅವರ ಸಮಾಜ ಪ್ರೇಮವನ್ನು ಕೊಂಡಾಡಿದರು. ಹೀಗೆ ವೈರಾಗ್ಯವೇ ಮೈವೆತ್ತಿ ಬಂದಂತಿದ್ದರು-ಮಲ್ಲಣಾರ್ಯರು. ಜಂಗಮ ಪದಕ್ಕೆ ವ್ಯಾಖ್ಯೆ ಬರೆದಂತಿದ್ದಿತು ಅವರ ನಡೆ-ನುಡಿ, ದಿನಚರಿ,

ಸಾಮಾಜಿಕ, ಧಾರ್ಮಿಕ ಕಳಕಳಿಯ ಚಿಂತಕ ಮಲ್ಲಣಾರ್ಯರು, ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳಲ್ಲಿಗೆ ಬಂದು ಹೊಸ ವಿಚಾರ ಸಾದರಪಡಿಸಿದರು. ಹಾನಗಲ್ಲಿನಲ್ಲಿ ಮತ್ತು ಅಬ್ಬಿಗೇರಿಯಲ್ಲಿ ಒಂದು ಸಂಸ್ಕೃತ ಪಾಠಶಾಲೆ ತೆಗೆಯುವ ವಿಚಾರವನ್ನು ಹೇಳಿ ಇಂದು ಜ್ಞಾನ ಕೆಲವೇ ಜನರ ಸೊತ್ತಾಗಿದೆ. ನಮ್ಮವರು ಜ್ಞಾನವಂತರಾಗುವ ಅವಶ್ಯಕತೆಯಿದೆ ಎಂಬ ವಿಚಾರ ತಿಳಿಸಿ, ಶ್ರೀಗಳನ್ನು ಕರೆದುಕೊಂಡು ಅಬ್ಬಿಗೇರಿಗೆ ಬಂದು, ಅಲ್ಲಿಯ ಊರಪ್ರಮುಖರ ಮುಂದೆ ವಿಚಾರವಿಟ್ಟಾಗ ಜನರು ಸಂತಸದಿಂದ ಭೂಮಿ ದಾನ, ಧನದಾನ ಮಾಡಿದರು. ಅಲ್ಲಿ ಸಂಸ್ಕೃತ ಪಾಠಶಾಲೆ ಪ್ರಾರಂಭಗೊಂಡು ೧೯೩೦ ರ ವರೆಗೆ ಉತ್ಕೃಷ್ಟವಾಗಿ ಕಾರ್ಯ ನಿರ್ವಹಿಸಿತು. ಶ್ರೀ ರಂಭಾಪುರಿ ಜಗದ್ಗುರುಗಳು, ಕೊಪ್ಪಳದ ಗವಿಸಿದ್ಧೇಶ್ವರರು, ಕೋಡಿಕೊಪ್ಪದ ಸ್ವಾಮಿಗಳು ಹೀಗೆ ಅನೇಕ ಶ್ರೀಗಳು ಅಬ್ಬಿಗೇರಿಯ ಸಂಸ್ಕೃತ ಪಾಠಶಾಲೆಯಲ್ಲಿಯೇ ಓದಿದವರು. ಹೀಗೆ ಮಲ್ಲಣಾರ್ಯ ಶುಷ್ಕ ಪ್ರವಚನಕಾರನಾಗಿರದೇ, ಕ್ರಿಯಾಶಿಲ ಜಂಗಮನಾಗಿದ್ದರು.

ಮಲ್ಲಣಾರ್ಯರು ನಿರ್ಭಿಡೆಯಿಂದ ಮಾತನಾಡುವ ವ್ಯಕ್ತಿ. ಇಂಥ ಮಾತುಗಳು ಅವರಿಗೆ ಅನೇಕ ಸಲ ಮುಳುವಾಗಿದ್ದುಂಟು. ಮುಂಡರಗಿಯಲ್ಲಿ ಪ್ರವಚನಗೈಯುತ್ತ, ಸ್ವಾಮಿಗಳು ಸಂಪತ್ತಿನ ಬೆನ್ನ ಹಿಂದೆ ಹೋಗಬಾರದು, ಆಡಂಬರದ ಬೆನ್ನು ಹತ್ತಬಾರದು ಎಂಬ ವಿಷಯವಾಗಿ ಬಿರುಸಿನ ಮಾತನಾಡಿದಾಗ ಅನೇಕ ಬಿಸಿ ರಕ್ತದ ಸ್ವಾಮಿಗಳು ಅವರನ್ನು ಥಳಿಸಿದರು, ಇದೇ ಸ್ಥಿತಿ ಅವರು ಗದುಗಿನದಲ್ಲಿಯೂ ಎದುರಿಸಬೇಕಾಯಿತು. ಅದಕ್ಕೆ ಅವರು ಹೆದರುತ್ತಿರಲಿಲ್ಲ, “ಕ್ವಾಟಿ ಮಲ್ಲ ಹಿಂಗ ಇದು, ಬಾಯಿಗೆ ಬಂದದ್ದನ್ನ ಬೊಗಳತೈತಿ, ಚೊಲೋತಂಗ ಹೊಡಿರಿ” ಎನ್ನುತ್ತಿದ್ದರು. ಆದರೆ ತನ್ನ ನಿಷ್ಠುರತನವನ್ನು ಎಂದೂ ಬಿಡಲಿಲ್ಲ. ‘ನ್ಯಾಯನಿಷ್ಠುರಿ ; ದಾಕ್ಷೀಣ್ಯಪರ ನಾನಲ್ಲ’ ಎಂಬ ದೃಢ ಭಾವ!

ತಮ್ಮ ಕಟು ಮಾತುಗಳನ್ನು ತುಂಬಿದ ಸಭೆಯಲ್ಲಿ ಅಂಜಿಕೆಯಿಲ್ಲದೇ ಆಡುತ್ತಿದ್ದರು. ಇದರಿಂದ ಅನೇಕ ಪರಿವರ್ತನೆಗಳೂ ಆದವು. ಲಂಚಕೋರ ತಹಶಿಲ್ದಾರನೊಬ್ಬ ಇವರ ಪ್ರವಚನ ಕೇಳುತ್ತ ಕೇಳುತ್ತ, ಎಲ್ಲರೆದುರಿಗೆ ಪರಿವರ್ತಿತನಾಗಿ, ಇನ್ನು ಲಂಚ ಸ್ವೀಕರಿಸುವದಿಲ್ಲ ಎಂದು ಪ್ರತಿಜ್ಞೆಗೈದ ಘಟನೆಯೂ ಇದೆ.

ಕಾಯಾ ವಾಚಾ ಮನಸಾ ಪರಿಶುದ್ಧರಾಗಿದ್ದ ಮಲ್ಲಣಾರ್ಯರಿಗೆ ಪಂಚಪರುಷ ಸಿದ್ಧಿ ತಾನಾಗಿಯೇ ಲಭಿಸಿತ್ತು. ಅಬ್ಬಿಗೇರಿಯಲ್ಲಿ ಒಬ್ಬ ಮುದುಕಿ ತನಗೆಲ್ಲ ಸಂತಸದ ಬದುಕಿದೆ,  ಇನ್ನು ದೇವರಪಾದ ಸೇರಬೇಕಾಗಿದೆ, ಕರುಣಿಸು ಎಂದಾಗ , ಮಲ್ಲಣಾರ್ಯರು “ಮುಂದಿನ ಸೋಮವಾರ ಚೆನ್ನಾಗಿದೆ” ಎಂದರು. ಆ ಮುದುಕಿಗೆ ಹೇಳಿದ ಸೋಮವಾರದಿನದಂದು ಮುಕ್ತಿಯಾದ ಉದಾಹರಣೆಯಿದೆ.

ಹುಬ್ಬಳ್ಳಿಯ ಶ್ರೀ ಸಿದ್ಧರೂಢರು ಮತ್ತು ಎಮ್ಮಿಗನೂರ ಶ್ರೀ ಜಡೆ ಸಿದ್ಧೇಶ್ವರರೊಂದಿಗೆ ದ್ವೈತ ಅದ್ವೈತ ವಿಚಾರವಾಗಿ ವಾದ ಮಾಡಿದ್ದುಂಟು. ಬಸವಮಾರ್ಗಾನುಯಾಯಿಯಾಗಿದ್ದ ಮಲ್ಲಣಾರ್ಯರಿಗೆ ಎಲ್ಲ ವಾದ ಪ್ರತಿವಾದಗಳಲ್ಲಿ ಹುರುಳಿಲ್ಲ ಎನ್ನಿಸಿದ್ದು ಅಚ್ಚರಿಯೇನಲ್ಲ.

ಮಲ್ಲಣಾರ್ಯರಿಗೆ ಅನಾರೋಗ್ಯ ಕಾಣಿಸಿಕೊಂಡಿತು. ಹಾನಗಲ್ಲಿಗೆ ಹೋದಾಗ ಶ್ರೀ ಕುಮಾರ ಶಿವಯೋಗಿಗಳಿಗೆ ಇದು ಕೊನೆಯ ಭೇಟಿ ಎಂದು ಹೇಳಿದಾಗ, ಶ್ರೀಗಳ ಕಣ್ಣಂಚಲ್ಲಿ ನೀರು ಹನಿಯಿತು. ಅದೇ ರೀತಿಯಾಗಿ ಕೊನೆಯ ಬಾರಿಗೆ ಎಂಬಂತೆ ಅಥಣಿಯ ಮಠದಲ್ಲಿ ಬಸವ ಪುರಾಣ ಪ್ರವಚನ ಮಾಡಿ, ಇದು ಕೊನೆಯ ಭೇಟಿ ಎಂದು ಶಿವಯೋಗಿಗಳ ಅಪ್ಪಣೆಯನ್ನೂ ಪಡೆದರು.

ಚಿತ್ರ ಸಂಖೈ ೬ : ಪೂಜ್ಯ ಲಿಂ.ಅನ್ನದಾನೇಶ್ವರ ಮಹಾಸ್ಡಾಮಿಗಳು ಹಾಲಕೆರಿ

ಬಾಗಲಕೋಟೆಗೆ ಬಂದ ನಂತರ ಅವರ ಆರೋಗ್ಯ ಸ್ಥಿತಿ ಇನ್ನೂ ಹದಗೆಟ್ಟಿತು. ರಾಚಪ್ಪ ಬಣಗಾರ ಇವರ ವಖಾರದಲ್ಲಿ ಮಲಗಿಕೊಂಡಿದ್ದರು. ಅವರನ್ನು ಭೇಟಿಯಾಗಲು, ಕಿಣಗಿ ಬಸಲಿಂಗಪ್ಪನವರು, ಗುಡ್ಡದ ವೀರಸಂಗಪ್ಪನವರು, ಬಸವಂತಪ್ಪನವರು ಸಾಸನೂರ, ರಾಜಪ್ಪ ರಾಜೂರ, ನಾಶಿ ವೀರಯ್ಯ, ಮೊದಲಾದ ಅನೇಕ ಗಣ್ಯರು ಸೇರಿದ್ದರು. “ಶ್ರೀ ಹಾಲಕೆರೆ ಅನ್ನದಾನೇಶ್ವರ ಸ್ವಾಮಿಗಳ ಪದತಲದಲ್ಲಿ ಪ್ರಾಣಾರ್ಪಣೆಯಾಗಿ, ಮುಕ್ತಿ ಪಡೆಯಬೇಕೆಂಬುದು ಅವರ ಕೊನೆ ಆಶಯವಾಗಿತ್ತು ಅದು ಅಸಾಧ್ಯವೆಂದು ಗಮನಿಸಿದ ಗುಡ್ಡದ ವೀರಸಂಗಪ್ಪನವರು ದೈಹಿಕ ಶಕ್ತಿಗಿಂತ ಮಾನಸಿಕ ಶಕ್ತಿಯ ಸಹಾಯದಿಂದ ಪೂಜ್ಯ ಶ್ರೀ ಹಾಲಕೆರೆ ಅನ್ನದಾನೇಶ್ವರರನ್ನು ನೆನೆ ನೆನೆದು ತಾವು ಮುಕ್ತಾರಾಗಬಹುದೆಂಬ ಉಪಾಯ ಹೇಳಿದಾಗ ಮಲ್ಲಣಾರ್ಯರು ಒಪ್ಪಿ, ದಿನಾಂಕ : ೫-೧೦-೧೯೦೩, ಸೋಮವಾರ ಬೆಳಗಿನ ೫ ಗಂಟೆಗೆ ಲಿಂಗೈಕ್ಯರಾಗಿ ಬಯಲಲ್ಲಿ ಬಯಲಾದರು. ಬಸವ ಬೆಳಗಿನಲ್ಲಿ ಒಂದಾದರು.

ವೈರಾಗ್ಯನಿಧಿ ಮಲ್ಲಣಾರ್ಯರ ಅಂತಿಮ ಯಾತ್ರೆ ಜರುಗಿತು. ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಕಣ್ಣೀರು ಗರೆದುದಲ್ಲದೆ ತಮ್ಮ ಪದ್ಯ ರೂಪದ ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಅಂತಿಮಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ಕೊನೆಗೆ ಬಾಗಲಕೋಟೆಯ ಹೊರಭಾಗದಲ್ಲಿ ಪಶ್ಚಿಮ ದಿಕ್ಕಿನಲ್ಲಿರುವ ಶ್ರೀ ಅಡವೀಸ್ವಾಮಿ ಮಠದ ಆವರಣದಲ್ಲಿ ಅವರ ಅಂತ್ಯಕ್ರಿಯೆ ಜರುಗಿತು. ನಂತರ ಗದ್ದುಗೆಯನ್ನು ನಿರ್ಮಾಣ ಮಾಡಲಾಯಿತು.

ಚಿತ್ರ ಸಂಖ್ಯೆ ೭ : ಶ್ರೀ ಮಲ್ಲಣಾರ್ಯರ ಗದ್ದುಗೆಯು ಅಡವಿಮಠ ಬಾಗಲಕೋಟೆ (ಸದ್ಯ ಮುಳುಗಡೆ ಪ್ರದೇಶದಲ್ಲಿದೆ)

ಮಲ್ಲಣಾರ್ಯರ ಗದ್ದುಗೆಯ ಪ್ರಭಾವಕಂಡವರು ಅನೇಕ ಜನರಿದ್ದಾರೆ. ಮಲ್ಲಣಾರ್ಯರ ಪ್ರಸ್ತಾಪವು ಇಲಕಲ್ಲಿನ ಶ್ರೀ ವಿಜಯ ಮಹಾಂತೇಶ ಪುರಾಣ, ಹಾನಗಲ್ಲ ಗುರುಕುಮಾರ ಶಿವಯೋಗಿಗಳ ಪುರಾಣ, ಶ್ರೀ ಫಲಹಾರೇಶ್ವರ ಪುರಾಣ, ಪೂಜ್ಯ ಶ್ರೀ ಬಿದರಿ ಕುಮಾರ ಸ್ವಾಮಿಗಳ ಪುರಾಣಗಳಲ್ಲಿ, ಮತ್ತು ಶಿವಯೋಗ ಮಂದಿರ ಸ್ಥಾಪನಾ ವರದಿಯಲ್ಲಿ, ಅನೇಕ ಜಾನಪದ ಗೀತೆಗಳಲ್ಲಿ ಕಂಡುಬರುತ್ತದೆ.

ಬಾಗಲಕೋಟೆಯ ವೈರಾಗ್ಯದ ಮಲ್ಲಣಾರ್ಯರು ಸಮಾಜೋಧಾರ್ಮಿಕ ಪರಿವರ್ತನೆಯಲ್ಲಿ ಮಹತ್ವದ ಪಾತ್ರವಾಡಿದ್ದು ಒಂದು ಐತಿಹಾಸಿಕ ದಾಖಲೆಯೇ ಸರಿ. ತಮ್ಮ ನಿಷ್ಠುರ ನಡೆ-ನುಡಿಗೆ ಹೆಸರಾದ ಜಂಗಮ ಪುಂಗವರಾಗಿ ಧ್ರುವ ನಕ್ಷತ್ರದಂತೆ ಚಿರಸ್ಥಾಯಿಯಾಗಿ ಎಂದಿಗೂ ವೀರಶೈವ-ಲಿಂಗಾಯತ ಧರ್ಮಾಕಾಶದಲ್ಲಿ ಮಿನುಗುತ್ತಿರುವರು.

(ಕೃಪೆ :  ಪಿ.ವಾಯ್. ಗಿರಿಸಾಗರ ವಿರಚಿತ ‘ಬಾಗಿಲುಕೋಟೆಯ ಮಲ್ಲಣಾರ‍್ಯರು’ ಪುಸ್ತಕ. ಅನಾಮಿಕ ಪ್ರಕಾಶನ, ಚರಂತಿಮಠ,  ಬಾಗಲಕೋಟೆ ೧೯೯೩ )

• ಸದಾಶಿವ ಒಡೆಯರ, ಧಾರವಾಡ

(ಶಿಕ್ಷಣ  ಕ್ಷೇತ್ರದ ದಕ್ಷ, ಪ್ರಾಮಾಣಿಕ ಆಡಳಿತಾಕಾರಿ, ವಿಶ್ವವಿದ್ಯಾಲಯದ ಕುಲಸಚಿವ, ಸಾಹಿತಿ, ಸದಾಶಿವ ಒಡೆಯರರವರು ಹುಟ್ಟಿದ್ದು ಧಾರವಾಡದ ಮರೇವಾಡ ಗ್ರಾಮದಲ್ಲಿ. ತಂದೆ ಶಿವದೇವ ಒಡೆಯರ, ತಾಯಿ ಗಿರಿಜಾದೇವಿ. ಪ್ರಾರಂಭಿಕ ಶಿಕ್ಷಣ ಹಾವೇರಿ. ಆಟದಲ್ಲಿ ಸದಾಮುಂದು. ಬ್ಯಾಡಮಿಂಟನ್, ಟೇಬಲ್ ಟೆನಿಸ್ ಪ್ರಿಯವಾದ ಆಟಗಳು. ಕಾಲೇಜು ವಿದ್ಯಾಭ್ಯಾಸ ಧಾರವಾಡ. ೧೯೪೫ರಲ್ಲಿ ಬಿ.ಎ. (ಆನರ್ಸ್) ಪದವಿ. ೧೯೪೭ರಲ್ಲಿ ಬೆಳಗಾವಿಯ ಲಾ ಕಾಲೇಜಿನಿಂದ ಎಲ್.ಎಲ್.ಬಿ. ಪದವಿ. ೧೯೪೮ರಲ್ಲಿ ಮುಂಬೈ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ. ಉದ್ಯೋಗಕ್ಕಾಗಿ ಸೇರಿದ್ದು ಅಹಮದಾಬಾದಿನ ಗುಜರಾತ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಎರಡು ವರ್ಷ ಸೇವೆ. ೧೯೪೯ರಲ್ಲಿ ಸ್ಥಾಪಿತವಾದ ಕರ್ನಾಟಕ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ರಿಜಿಸ್ಟ್ರರ್ ಆಗಿ ನೇಮಕ. ೧೯೫೧ರಲ್ಲಿ ಸಹಾಯಕ ಕುಲಸಚಿವ, ೧೯೫೭ರಲ್ಲಿ ಕುಲಸಚಿವರ ಹುದ್ದೆ. ೧೯೬೭-೬೮ರಲ್ಲಿ ಉಪಕುಲಪತಿಗಳಾಗಿ ಕಾರ‍್ಯನಿರ್ವಹಣೆ. ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾದ ಮೇಲೆ ಅಮೆರಿಕಾ ಸರಕಾರದ ಆಹ್ವಾನದ ಮೇರೆಗೆ ಶೈಕ್ಷಣಿಕ, ಸಾಂಸ್ಕೃತಿಕ ಸಂಸ್ಥೆಗಳ ಭೇಟಿ. ಬ್ರಿಟಿಷ್ ಕೌನ್ಸಿಲ್ ಆಹ್ವಾನದ ಮೇರೆಗೆ ಇಂಗ್ಲೆಂಡ್ ಭೇಟಿ. ಇದಲ್ಲದೆ ಫ್ರಾನ್ಸ್, ಜರ್ಮನಿ, ಇಟಲಿ, ಸ್ವಿಡ್ಜರ್‌ಲ್ಯಾಂಡ್, ಈಜಿಪ್ಟ್ ದೇಶಗಳಿಗೂ ಭೇಟಿ. ಅಲ್ಲಿನ ಆಡಳಿತ ಪದ್ಧತಿ, ವಿಧಾನಗಳ ಅಳವಡಿಕೆ. ವಿಶ್ವವಿದ್ಯಾಲಯದ ಉನ್ನತಿಗೆ ಪಟ್ಟ ಶ್ರಮ. ಆಡಳಿತ ಮಧ್ಯೆ ರಚಿಸಿದ ಕೆಲವು ಕೃತಿಗಳು. ‘ಜೀವನ ಕಲೆ’ ಪ್ರಬಂಧ ಸಂಕಲನ, ರವೀಂದ್ರ ದರ್ಶನ, ಇದು ಜೀವನ ಮತ್ತೆರಡು ಚಿಂತನ ಶೀಲ ಸಂಕಲನಗಳಿಂದ ಬರವಣಿಗೆಗೆ ತಂದ ಕಾಂತಿ. ನಾಟಕಗಳು-ಜೋನ್ ಆಫ್ ಆರ್ಕ್ ಮತ್ತು ಇತರ ನಾಟಕಗಳು. ಇಂಗ್ಲಿಷ್‌ನಲ್ಲಿ THE LIGHT OF OTHER DAYS, TRAILING CLOUD. ಸಂಪಾದಿತ- BASAVESHWARA COMMEMORATION VOLUME. ರವೀಂದ್ರ ದರ್ಶನ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಐವತ್ತನೇ ಹುಟ್ಟುಹಬ್ಬಕ್ಕೆ ಹಿತೈಷಿಗಳು ಅರ್ಪಿಸಿದ ಗೌರವಗ್ರಂಥ ‘ಸವಿಸಂಚಯ.’)

ಕ್ರಿ. ಶ. ೧೨ನೇ ಶತಮಾನದಲ್ಲಿ ಕನ್ನಡನಾಡು ಒಂದು ಅಭೂತಪೂರ್ವ ಕ್ರಾಂತಿಯ ಬೆಳಕನ್ನು ಕಂಡಿತು. ಮಹಾತ್ಮಾ ಬಸವೇಶ್ವರ, ಪ್ರಭುದೇವ, ಅಕ್ಕಮಹಾದೇವಿ, ಚೆನ್ನಬಸವಣ್ಣ, ಸಿದ್ದರಾಮರಂಥ ಮಹಾಶರಣ ಶರಣೆಯರು ಈ ನಾಡಿನಲ್ಲಿ ಬದುಕಿದ ಕಾಲ ಅದು. ಸಕಲ ಜೀವಿಗಳ ಕಲ್ಯಾಣಕ್ಕಾಗಿ ಅನವರತ ಚಿಂತಿಸಿದ ಈ ಧರ್ಮ ಜಿಜ್ಞಾಸುಗಳು ತಮ್ಮ ಅನುಭವಗಳನ್ನು ಹಂಚಿಕೊಂಡು, ಚರ್ಚಿಸಿ ನಿಷ್ಕರ್ಷಿಸಲು ಅನುಭವಮಂಟಪದಂಥ ಮಹಾಸಂಸ್ಥೆಯನ್ನು ಕಟ್ಟಿ, ತಮ್ಮ ಅನುಭವಜನ್ಯವಾದ ಅನಿಸಿಕೆಗಳನ್ನು ಸುಲಭ ಹಾಗೂ ಲಲಿತವಾದ ಕನ್ನಡದಲ್ಲಿ ವಚನರೂಪದಲ್ಲಿ ಬರೆದಿಟ್ಟು, ಮುಂದಿನ ಜನಾಂಗಗಳಿಗೆ ದಾರಿದೀಪವಾಗುವಂಥ ಸೂತ್ರಗಳನ್ನು ಒದಗಿಸಿದ ಪುಣ್ಯಜೀವಿಗಳು ಬದುಕಿದ ಕಾಲವದು. ಆ ಉದಾತ್ತ ಪರಂಪರೆಯಲ್ಲಿ ನಾಡಿನಾದ್ಯಂತ ಅನೇಕ ಮಠಮಾನ್ಯಗಳು ಕಾರ್ಯಮಾಡಲು ಆರಂಭಿಸಿದವು. ಇದೇ ಪರಂಪರೆಯ ಅಲ್ಲಮಪ್ರಭು ಸಂಪ್ರದಾಯದ ಸಲ್ಲಲಿತ ಸನ್ಮಾರ್ಗದ ಈ ಪರಂಪರೆ ವಿಜಯಮಹಾಂತೇಶ ನಿಂದ ಮುಂದುವರಿದು ಅನ್ನದಾನೇಶ, ಕೊಟ್ಟೂರೇಶ ಎಂಬ ಶಿಷ್ಯರ ಮೂಲಕ ಪ್ರವಹಿಸಿ ಬಂದಿತು. ಅವರಲ್ಲಿ ಶ್ರೀ ಅನ್ನದಾನೇಶರು ಹಾಲಕೆರೆಯಲ್ಲಿ ನೆಲೆನಿಂತು ಧರ್ಮಪ್ರಸಾರದ ಕಾರ್ಯಕೈಕೊಂಡರು. ಇವರಿಂದ ಮುಂದೆ ಕರಿಸಿದ್ಧಸ್ವಾಮಿ, ಮುಪ್ಪಿನ ಬಸವಲಿಂಗಸ್ವಾಮಿ, ಅನ್ನದಾನ ಸ್ವಾಮಿ, ಕಿರಿಯ ಮುಪ್ಪಿನ ಬಸವಲಿಂಗಸ್ವಾಮಿ, ಹಿರಿಯ ಅನ್ನದಾನೀಶ್ವರ, ಗುರು ಅನ್ನದಾನೀಶ್ವರಸ್ವಾಮಿ, ಮುಪ್ಪಿನ ಬಸವಲಿಂಗಸ್ವಾಮಿಗಳು ಇವರುಗಳ ಮುಖಾಂತರ ಈ ಪರಂಪರೆ ಹರಿದುಬಂದಿತು. ಮುಪ್ಪಿನ ಬಸವಲಿಂಗಸ್ವಾಮಿಗಳ ಕರಸಂಜಾತರಾಗಿ ಮೂಡಿಬಂದವರು ೧ನೇ ಶ್ರೀ ಅನ್ನದಾನ ಮಹಾಸ್ವಾಮಿಗಳವರು. ಈ ಶ್ರೀಗಳವರು ದೀರ್ಘವೂ ಪರಿಪೂರ್ಣವೂ ಆದ ೧೦೨ ವರ್ಷಗಳ ಆಯುಷ್ಯವನ್ನು ಕಳೆದು ಕ್ರಿ.ಶ.೧೯೧೨ರಲ್ಲಿ ಹಾಲಕೆರೆಯಲ್ಲಿ ಲಿಂಗೈಕ್ಯರಾದರು. ಬರ ಕಾಲದಲ್ಲಿಯೇ ಮಠದ ಕೀರ್ತಿ ಬಹುದೂರದವರೆಗೆ ಹರಡಿತ್ತು

.ಕ್ರಿ.ಶ.೧೯೧೦ರಲ್ಲಿ ನಡೆದ ಇವರ ಪಟ್ಟಾಭಿಷೇಕಕ್ಕೆ ಆಗಮಿಸಿದ ಅನೇಕ ಹರ ಗುರು ಚರಮೂರ್ತಿಗಳಲ್ಲಿ, ವೀರಶೈವರಿಗೆಲ್ಲ ಪ್ರಾತಃಸ್ಮರಣೀಯರಾದ ಹಾನಗಲ್ಲ ಕುಮಾರಸ್ವಾಮಿಗಳೂ ಹಾಗೂ ಹಾವೇರಿಯ ಶಿವಬಸವಸ್ವಾಮಿಗಳೂ ಪ್ರಮುಖರು. ಹಾನಗಲ್ಲ ಕುಮಾರಸ್ವಾಮಿಗಳ ಒಡನಾಟದ ಕಾರಣದಿಂದ, ಅನ್ನದಾನಸ್ವಾಮಿಗಳು ಅವರ ಉದಾತ್ತ ವಿಚಾರ, ದೂರದೃಷ್ಟಿ ಹಾಗೂ ಸಮಾಜಕಲ್ಯಾಣ ಕಾರ್ಯಗಳಿಂದ ಅತ್ಯಂತ ಪ್ರಭಾವಿತರಾದರು. ಅವರು ಹಮ್ಮಿಕೊಂಡ ಅನೇಕ ಕಾರ್ಯಗಳಿಗೆ ನೆರವಾಗತೊಡಗಿದರು. ಕುಮಾರಸ್ವಾಮಿಗಳು ಆರಂಭಿಸಿದ ಶಿವಯೋಗಮಂದಿರ ಇವರಿಗೆ ಅತಿ ಮೆಚ್ಚಿನ ಸಂಸ್ಥೆಯಾಯಿತು. ಹಾನಗಲ್ಲ ಕುಮಾರಸ್ವಾಮಿಗಳು ಮಾಡಿದ ಅನೇಕ ಸಮಾಜಕಲ್ಯಾಣ ಕಾರ್ಯಗಳಲ್ಲಿ ಅತ್ಯಂತ ಮಹತ್ವವಾದದ್ದು ಶಿವಯೋಗ ಮಂದಿರದ ಸ್ಥಾಪನೆ. ಎಂದಿನಿಂದಲೂ ವೀರಶೈವ ಧರ್ಮವನ್ನು ರಕ್ಷಿಸುತ್ತ, ಸಮಾಜದ ಜನತೆಯಲ್ಲಿ ದೈವಭಕ್ತಿ, ಧರ್ಮಪ್ರಜ್ಞೆ ಹಾಗೂ ನೀತಿಯುತ ನಡೆ-ನುಡಿಗಳನ್ನು ಪೋಷಿಸಿಕೊಂಡು ಬಂದ ಸಂಸ್ಥೆಗಳೆಂದರೆ ಮಠಗಳು. ಈ ಮಠಗಳಿಗೆ ಯೋಗ್ಯ ಮರಿಗಳನ್ನು ಆರಿಸಿ ಅವರಿಗೆ ಅವಶ್ಯವಾದ ಧಾರ್ಮಿಕ, ತಾತ್ವಿಕ ಹಾಗೂ ಸಾಹಿತ್ಯಕ ತರಬೇತಿಯನ್ನು ಪವಿತ್ರವಾದ ಪರಿಸರದಲ್ಲಿ ಒದಗಿಸಿ, ಅವರನ್ನು ಒಳ್ಳೆ ಸ್ವಾಮಿಗಳಾಗು ವಂತೆ ತರಬೇತಿಗೊಳಿಸಲು ಅವಶ್ಯವಾದ ಸೂಕ್ತಶಿಕ್ಷಣ ಕೊಡುವಂಥ ಸಂಸ್ಥೆ ಸಮಾಜಕ್ಕೆ ಅವಶ್ಯವಾಗಿ ಬೇಕಾಗಿತ್ತು ಇದರ ಬಗ್ಗೆ ಬಹಳ ಮುಂದಾಲೋಚನೆಯಿಂದ ವಿಚಾರ ಮಾಡಿ, ಅತ್ಯಂತ ಪರಿಶ್ರಮದಿಂದ ಅದಕ್ಕೆ ಸೂಕ್ತವಾದ ನದಿಯ ದಂಡೆಯಲ್ಲಿಯ ಸುಂದರ ನಿವೇಶನವನ್ನು ಆರಿಸಿ, ಶಿವಯೋಗಮಂದಿರವೆಂಬ ಮಹಾಸಂಸ್ಥೆಯನ್ನು ಹಾನಗಲ್ಲ ಕುಮಾರಸ್ವಾಮಿಗಳು ಆರಂಭಿಸಿ ಸಮಾಜಕ್ಕೆ ಮಹದುಪಕಾರ ಮಾಡಿದರು. ಕ್ರಿ.ಶ.೧೯೪೨ರಲ್ಲಿ ಈ ಭಾಗದಲ್ಲಿ ವ್ಯಾಪಿಸಿದ ಭೀಕರ ಕ್ಷಾಮದ ಪರಿಣಾಮ ಒದಗಿದ ಆರ್ಥಿಕ ತೊಂದರೆಯಿಂದಾಗಿ ಶಿವಯೋಗಮಂದಿರವು ಮುಂದುವರೆಯದ ಸಂಧಿಗ್ಧ ಪರಿಸ್ಥಿತಿಯಲ್ಲಿತ್ತು. ಆಗ ಅನ್ನದಾನಸ್ವಾಮಿಗಳು ಅದರ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡು, ೫-೬ ವರ್ಷಗಳಲ್ಲಿ ಸುಮಾರು ೮೦ ಸಾವಿರ ರೂಪಾಯಿಗಳ ವಿನಿಯೋಗದಿಂದ ಬಂದಂತಹ ಆರ್ಥಿಕ ಸಂಕಷ್ಟವನ್ನು ದೂರಿಕರಿಸಿ ಮುಂದುವರೆಸಿದರು. ಶಿವಯೋಗ ಮಂದಿರದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾಸಭೆಯ ೧೭ನೇ ಅಧಿವೇಶನ ಜರುಗಿದಾಗ ಅನ್ನದಾನಸ್ವಾಮಿಗಳು ೪೦೦ ಚೀಲ ಅಕ್ಕಿಯನ್ನು ಮಂದಿರದ ದಾಸೋಹಕ್ಕೆ  ಸಲ್ಲಿಸಿದ್ದಲ್ಲದೇ  ಪ್ರಸಾದ ವಿನಿಯೋಗ ಕಾರ್ಯವನ್ನು ಶ್ರೀಗಳು ಒಬ್ಬರೇ ವಹಿಸಿಕೊಂಡಿದ್ದರು. ಈ ಕಾರ್ಯ ಲಕ್ಷಾಂತರ ಜನರನ್ನು ಬೆರಗುಗೊಳಿಸುವಂತೆ ಮಾಡಿತು.

ಶಿಕ್ಷಣದಲ್ಲಿ ಶ್ರೀಗಳಿಗೆ ಎಂದಿನಿಂದಲೂ ವಿಶೇಷ ಆಸಕ್ತಿಇದ್ದಿತ್ತು. ಹಾಗಾಗಿ ಹಾಲಕೆರೆಗೆ ಸಮೀಪದ ನಗರವಾದ ನರೇಗಲ್ಲಿನಲ್ಲಿ ಒಳ್ಳೆ ಶಿಕ್ಷಣ ಸಂಸ್ಥೆಗಳು ಬೆಳೆಯಬೇಕೆಂಬುದು ಅವರ ಅಭಿಲಾಷೆಯಾಗಿತ್ತು. ನರೇಗಲ್ಲಿನ ಶ್ರೀ ಅನ್ನದಾನ ವಿಜಯ ಗಂಡುಮಕ್ಕಳ ಮಾಧ್ಯಮಿಕ ಶಾಲೆ’ಯು ಈ ಭಾಗದ ವಿದ್ಯಾಸಂಸ್ಥೆಗಳಲ್ಲಿ ಮಾತೃಸ್ಥಾನದಲ್ಲಿರುವ ಸಂಸ್ಥೆಯಾಗಿದೆ. ಕ್ರಿ.ಶ.೧೯೧೯ರಲ್ಲಿ  ಸ್ಥಾಪನೆಗೊಂಡ ಈ ಶಾಲೆ ಕ್ರಿ.ಶ.೧೯೪೬ರಲ್ಲಿ ಸರಕಾರದಿಂದ ಮನ್ನಣೆ ಪಡೆಯಿತು. ಮೊದಮೊದಲು ಗ್ರಾಮಸ್ಥರ ಆಡಳಿತದಲ್ಲಿದ್ದ ಈ ಶಾಲೆ ಕೆಲವೊಂದು ತಾಪತ್ರಯಗಳಿಂದ ಕ್ರಿ.ಶ.೧೯೫೫ ರಲ್ಲಿ ಶ್ರೀಗಳವರ ಕೈಸೇರಿತು. ಶ್ರೀಗಳ ಪರುಷ ಹಸ್ತಸ್ಪರ್ಶದಿಂದ  ಈ ಸಂಸ್ಥೆಯು ಮುಂದೆ ಉಜ್ವಲವಾಗಿ ಬೆಳೆಯಿತು. ಈಗ ಈ ಸಂಸ್ಥೆ ಅತ್ಯಂತ ಗುನಮಟ್ಟದ ಶಿಕ್ಷಣ ನೀಡುವಲ್ಲಿ ನಾಡಿನ ಪ್ರಮುಖ ವಿದ್ಯಾಸಂಸ್ಥೆಯಾಗಿ ಕಾರ್ಯಮಾಡುತ್ತಿದೆ. ಸುಮಾರು ಮೂರುಲಕ್ಷ ರೂ.ಗಳ ಖರ್ಚಿನಿಂದ ಕಟ್ಟಿಸಿದ ಕಟ್ಟಡವನ್ನು ಶಾಲೆ ಪಡೆದುಕೊಂಡಿದೆ.

ಸಂಸ್ಕೃತ ಭಾಷೆ ಭಾರತದ ಜ್ಞಾನನಿಧಿಯ ಅಕ್ಷಯ ಭಾಂಡಾರ. ಅದು ನಮ್ಮ ಸಂಸ್ಕ್ರತಿಯ ಉಗಮದ ಸೆಲೆಯಾಗಿದೆ.. ನಮ್ಮ ತತ್ವಜ್ಞಾನ, ಧರ್ಮದ ವಿಚಾರಗಳನ್ನು ಅರಿಯಬೇಕಾದರೆ ಅದರ ಜ್ಞಾನ ನಮಗೆ ಅತ್ಯಂತ ಅವಶ್ಯವಾದದ್ದೆಂದು  ಅರಿತ ಶ್ರೀಗಳವರು ಕ್ರಿ.ಶ.೧೯೬೨ನೇ ಇಸ್ವಿಯಲ್ಲಿಯೇ ನರೇಗಲ್ಲಿನಲ್ಲಿ ‘ಮಲ್ಹಣಾರ್ಯ ಸಂಸ್ಕೃತ ಪಾಠಶಾಲೆ’ ಯನ್ನು ಆರಂಭಿಸಿದರು. ಇಲ್ಲಿ ಅನೇಕ ವಿದ್ಯಾರ್ಥಿಗಳು ಸಂಸ್ಕೃತ ಅಭ್ಯಾಸಮಾಡಿ ನಾಡಿನ ತುಂಬೆಲ್ಲ ತಮ್ಮ ವಿದ್ವತ್‌ ಪ್ರದರ್ಶನ ಮಾಡುತ್ತ ಖ್ಯಾತರಾಗಿದ್ದಾರೆ.

ಈ ಭಾಗದಲ್ಲಿ ಉಚ್ಚ ಶಿಕ್ಷಣ ಸಂಸ್ಥೆಗಳ ಅಭಾವವು ಶ್ರೀಗಳನ್ನು ವಿವಂಚನೆಗೆ ಈಡು ಮಾಡಿದ್ದಿತು. ಅದಕ್ಕಾಗಿ ಈ ಭಾಗದ ಜನತೆಯಲ್ಲಿ ಇಂಥ ಸಂಸ್ಥೆಗಳ ಅವಶ್ಯಕತೆಯ ಬಗ್ಗೆ ಜಾಗೃತಿಯನ್ನುಂಟುಮಾಡಿ ಗಜೇಂದ್ರಗಡ, ರೋಣ, ಹಾಗೂ ಸುತ್ತಮುತ್ತಲಿನ ಊರುಗಳಲ್ಲಿ ಸಂಚಾರ ಕೈಕೊಂಡು, ಹಣ ಸಂಗ್ರಹಿಸಿ ನರೇಗಲ್ಲಿನಲ್ಲಿ ಕಾಲೇಜನ್ನು ಆರಂಭಿಸಿದರು. ‘ಅನ್ನದಾನೇಶ್ವರ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ’ ಎಂಬ ಅಭಿದಾನವನ್ನು ಪಡೆದ ಈ ಕಾಲೇಜು, ದಿನಾಂಕ ೨೦-೯-೧೯೬೭ ರಂದು ಆರಂಭ ವಾಯಿತು. ಇದರ ಪ್ರಾರಂಭೋತ್ಸವವು ಅಂದಿನ ವಿಧಾನ ಪರಿಷತ್ತಿನ ಅಧ್ಯಕ್ಷರಾಗಿದ್ದ ಶ್ರೀ ಹಳ್ಳಿಕೇರಿ ಗುದ್ದೆಪ್ಪನವರ ಅಧ್ಯಕ್ಷತೆಯಲ್ಲಿ, ಕರ್ನಾಟಕವಿಶ್ವವಿದ್ಯಾಲಯದ ಅಂದಿನ ಧೀಮಂತ ಕುಲಪತಿಗಳಾಗಿದ್ದ ಮಹಾಮೇಧಾವಿ ಡಾ.ಡಿ.ಸಿ. ಪಾವಟೆ ಯವರಿಂದ ನೆರವೇರಿಸಲ್ಪಟ್ಟಿತು. ಹಳ್ಳಿಗಾಡಿನ ಜನರು ಮಕ್ಕಳ ವಿದ್ಯಾಭ್ಯಾಸಕ್ಕೆಂದು ದೊಡ್ಡ ಊರುಗಳಿಗೆ ವಲಸೆಹೋಗುತ್ತಿದ್ದರು. ಮತ್ತು ಅನೇಕ ಅನಾನುಕೂಲತೆಗಳನ್ನು ಮತ್ತು ತೊಂದರೆಗಳನ್ನು ಅನುಭವಿಸಿ ಮಕ್ಕಳನ್ನು ದೊಡ್ಡ ಊರಿನಲ್ಲಿ ಇಟ್ಟು ವಿದ್ಯಾಭ್ಯಾಸಮಾಡಿಸುತ್ತಿದ್ದರು. ಇವುಗಳನ್ನು ಕಂಡ ಶ್ರೀಗಳು ಹಳ್ಳಿಗಾಡಿನಲ್ಲಿಯೇ ಇಂಥ ಸಂಸ್ಥೆಯನ್ನು ನಿರ್ಮಿಸಬೇಕೆಂದು ಶ್ರಮಿಸಿದರು. ಇಂದು ಈ ಕಾಲೇಜು ಸುಮಾರು ನಾಲ್ಕುಲಕ್ಷ ರೂಪಾಯಿ ಖರ್ಚಿನಿಂದ ಕಟ್ಟಿಸಲ್ಪಟ್ಟ ಕಟ್ಟಡವನ್ನು ಹೊಂದಿದೆ. ಈ ಕಟ್ಟಡದ ನಕ್ಷೆಯನ್ನು ಪೂಜ್ಯ ಶ್ರೀಗಳೇ ಸ್ವತಃ ತಮ್ಮ ಬೆತ್ತದಿಂದ ತಯಾರಿಸಿದರು. ಶಿಲ್ಪಶಾಸ್ತ್ರದಲ್ಲಿ ಅವರಿಗೆ ವಿಶೇಷವಾದ ಗತಿಯಿದ್ದಿತು. ಲಕ್ಷಣವಾದ ವಿನ್ಯಾಸವನ್ನು ಹೊಂದಿದ ಕಟ್ಟಡವನ್ನು ನೋಡಿದಾಗ ಶ್ರೀಗಳ ಶಿಲ್ಪಶಾಸ್ತ್ರಜ್ಞಾನ ಹಾಗೂ ಸೌಂದರ್ಯಪ್ರಜೆಯ ಕಲ್ಪನೆಯು ನಮ್ಮೆದುರಿಗೆ ಮೂಡುತ್ತದೆ. ಈ ಕಾಲೇಜು ಸುಮಾರು ೩ ಲಕ್ಷ ಕಿಮ್ಮತ್ತಿನ ವಸತಿಗೃಹವನ್ನೂ ಹೊಂದಿವೆ. ಈ ಕಾಲೇಜು ಶ್ರೀ ಟಿ.ಕೆ.ಪಾಟೀಲ, ಎಂ.ಎ (ಲಂಡನ್) ಹಾಗೂ ಡಾ.ಡಿ.ಎಸ್. ಕರ್ಕಿಯವರಂಥ ಅನುಭವಿ ಹಾಗೂ ಸಮರ್ಥ ಹಾಲಕೆರೆ ಸನ್ನಿಧಾನ ಪ್ರಿನ್ಸಿಪಾಲರನ್ನು ಪಡೆದುಕೊಂಡಿತ್ತು. ಶ್ರೀ.ಟಿ.ಕೆ.ಪಾಟೀಲರು ಪ್ರಿನ್ಸಿಪಾಲರಾಗಿದ್ದಾಗ, ಕರ್ನಾಟಕ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿಯೂ ಗಣನೀಯ ಸೇವೆ ಸಲ್ಲಿಸಿದರು. ಡಾ.ಕರ್ಕಿಯವರು ಉದ್ಧಾಮ ಕವಿಗಳೂ ಭಾಷಾವಿಜ್ಞಾನ ಪಂಡಿತರೂ ಆಗಿದ್ದರು. ಕಾಲೇಜಿನ ಆರಂಭದ ದಿನಮಾನಗಳಲ್ಲಿ ಅವರು ಉತ್ತಮ ಕಕ್ಷೆಯಲ್ಲಿಯ ಪರಂಪರೆಗಳನ್ನು ಹಾಕಿಕೊಟ್ಟರು. ಇಂದು ನರೇಗಲ್ಲಿನ ಕಲಾ ಮತ್ತು ವಿಜ್ಞಾನ ಕಾಲೇಜು ಕರ್ನಾಟಕ ವಿಶ್ವವಿದ್ಯಾಲಯದ ಗ್ರಾಮೀಣಮಟ್ಟದ ಅತ್ಯುತ್ತಮ ಕಾಲೇಜುಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.

ಶ್ರೀಗಳು ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿಯುಳ್ಳವರಾಗಿದ್ದರು. ಆದ್ದರಿಂದಲೇ ಅವರು ಕ್ರಿ.ಶ.೧೯೭೧ರಲ್ಲಿ ನರೇಗಲ್ಲಿನಲ್ಲಿ ಶ್ರೀ ಅನ್ನದಾನ ವಿಜಯ ಮಾಧ್ಯಮಿಕ ಬಾಲಿಕೆಯರ ಶಾಲೆ’ಯನ್ನು ಆರಂಭಿಸಿದರು. ಈ ಶಾಲೆಯಲ್ಲಿ ಈಗ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಿದ್ಯಾದ್ಯಯನ ಮಾಡಿ ಸುಶಿಕ್ಷಿತೆಯರಾಗಿದ್ದಾರೆ.

ಇದಲ್ಲದೆ ನಿಡಗುಂದಿಯಲ್ಲಿ ‘ಶ್ರೀ ಅನ್ನದಾನೇಶ್ವರ ಮಾಧ್ಯಮಿಕ ಶಾಲೆ ನಿಡಗುಂದಿ’ ಎಂಬ ಹೆಸರಿನ ಶಾಲೆಯನ್ನು ಶ್ರೀಗಳು ಕ್ರಿ.ಶ.೧೯೬೭ರಲ್ಲಿ ಆರಂಭಿಸಿದರು. ಈಗ ಈ ಶಾಲೆಯಲ್ಲಿ ಸುಮಾರು ೧೨೦ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲಿ ಪ್ರಸಾದನಿಲಯದ ಏರ್ಪಾಟನ್ನೂ ಮಾಡಿದ್ದಾರೆ. ಇದರ ಬೃಹತ್ ಕಟ್ಟಡವೂ ನಿರ್ಮಾಣ ಹಂತದಲ್ಲಿದೆ.

ಹಾಗೆಯೇ ಅಬ್ಬಿಗೇರಿಯಲ್ಲಿ ಶ್ರೀ ಅನ್ನದಾನೀಶ್ವರ ಮಾಧ್ಯಮಿಕ ಶಾಲೆ, ಅಬ್ಬಿಗೇರಿ’, ಎಂಬ ಹೆಸರಿನ ಶಾಲೆಯನ್ನು ಕ್ರಿ.ಶ.೧೯೭೨ರಲ್ಲಿ ಆರಂಭಿಸಿದರು. ಇಲ್ಲಿ ಈಗ ಸುಮಾರು ೧೦೦ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಮಠದ ಉಚ್ಚ ಪರಂಪರೆಯನ್ವಯ ವಿದ್ಯಾರ್ಥಿಗಳಿಗೆ ವಿದ್ಯಾದಾನದ ಜೊತೆಗೆ ವಸತಿ ಹಾಗೂ ಅನ್ನದಾನದ ವ್ಯವಸ್ಥೆಯಾಗಬೇಕೆಂಬುದನ್ನು ಸ್ವಾಮಿಗಳು ಚೆನ್ನಾಗಿ ಅರಿತಿದ್ದರು. ಅದಕ್ಕಾಗಿಯೇ ನರೇಗಲ್ಲಿನಲ್ಲಿ ೫೨ ಕೋಣೆಗಳುಳ್ಳ ಶ್ರೀ ಅನ್ನದಾನ ವಿಜಯ ವಿದ್ಯಾರ್ಥಿಗಳ ವಸತಿಗೃಹ’ ವನ್ನು ಶ್ರೀಗಳು ಕ್ರಿ.ಶ.೧೯೬೫ರಲ್ಲಿ ನರೇಗಲ್ಲಿನಲ್ಲಿ ಸ್ಥಾಪಿಸಿದರು. ಈ ವಸತಿಗೃಹದ ಉದ್ಘಾಟನೆಯನ್ನು ಆಗಿನ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಶ್ರೀ ಎಸ್. ನಿಜಲಿಂಗಪ್ಪನವರು ೩೦-೬-೧೯೬೫ರಂದು ನೆರವೇರಿಸಿದರು.

ಅನ್ನದಾಸೋಹಕ್ಕಾಗಿ ನರೇಗಲ್ಲಿನಲ್ಲಿ ಶ್ರೀ ಕೋಡೀಕೊಪ್ಪದ ವೀರಪ್ಪಜ್ಜನವರ ಬಾಗಲಕೋಟ ಶ್ರೀ ಮಲ್ಲಣಾರ್ಯರ ಉಚಿತ ಪ್ರಸಾದ ನಿಲಯ’ವೆಂಬ ಉಚಿತ ಪ್ರಸಾದ ನಿಲಯಗಳನ್ನು ಸ್ಥಾಪಿಸಿ, ಸುಮಾರು ೫೦೦ ವಿದ್ಯಾರ್ಥಿಗಳಿಗೆ ಪ್ರಸಾದದ ಅನುಕೂಲತೆಯನ್ನು ಶ್ರೀಗಳು ಒದಗಿಸಿದರು. ಮರಣ ಹಾಗೂ ಅವುಗಳಿಗೆ ಸಂಬಂಧಿಸಿದ ಸಂಶೋಧನೆಗಾಗಿ ಬಸವರಾಜಶಾಸ್ತ್ರಿಗಳು ಸನ್ನಿಧಿಯ ಅಪ್ಪಣೆಯಂತೆ ಧರ್ಮಗ್ರಂಥಗಳ ಪರಿಷ್ಕರಣ ಹಾಗೂ ಅವುಗಳಿಗೆ ಸಂಬಂಧಿಸಿದ ಆಕರಗಳ ಅನುಕೂಲತೆಗಳನ್ನು ಒದಗಿಸಿದರು.

ಧರ್ಮಗ್ರಂಥಗಳ ಪರಿಶೋಧನೆಗಾಗಿ ಪಂಡಿತರನ್ನು ಬೇರೆ ಬೇರೆ ಸ್ಥಳಗಳಿಗೆ ಕಳಿಸಿ ಪರಿಷ್ಕರಿಸಲ್ಪಟ್ಟು ಹಲವಾರು ಗ್ರಂಥಗಳನ್ನು ಶ್ರೀಮಠವು ಪ್ರಕಾಶನ ಗೊಳಿಸಿದೆ  6-1-1925  ರಂದು ಪಂಡಿತ್ ಬಸವರಾಜ ಶಾಸ್ತ್ರಿಗಳು ಸನ್ನಿಧಿಯ ಅಪ್ಪಣೆಯ ಮೇರೆಗೆ ಮದ್ರಾಸಿಗೆ ಹೋಗಿ ಅಲ್ಲಿ 5 ತಿಂಗಳವರೆಗೆ ಇದ್ದು ಕೆಲವು ಧರ್ಮಗ್ರಂಥಗಳನ್ನು ಶೋಧಿಸಿ ಹಾಲಕೆರೆ ಮಠದಲ್ಲಿ ಅವುಗಳ ಪರಿಷ್ಕಾರ ಕಾರ್ಯವನ್ನು ಕೈಕೊಂಡರು ಸ್ವಾಮಿಗಳ ಆಶ್ರಯದಲ್ಲಿ ಇಂಥ ಬೇರೆಬೇರೆ ಪಂಡಿತರಿಂದ ಬೆಳಕು ಕಂಡ ಕೃತಿಗಳೆಂದರೆ 1) ಶಂಕರಲಿಂಗ ಶತಕ

2) ಕ್ಷಮಾಪರಾಧ ಸ್ತೋತ್ರ 3) ಯೋಗಿರಾಜ ವಿಜಯ 4) ಶ್ರೀ ಅನ್ನಧಾನ ಮಹಾಸ್ವಾಮಿಗಳ ಪುರಾಣ

, ಹೀಗೆ ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಸಾದ ನಿಲಯಗಳನ್ನು ನಡೆಯಿಸುವದು, ಇಂಥ ಉಳಿದ ಸಂಸ್ಥೆಗಳಿಗೆ ನೆರವಾಗುವುದು, ಸಂಶೋಧನೆ ಹಾಗೂ ಧರ್ಮ ಗ್ರಂಥಗಳ ಪ್ರಕಟನೆ ಕೈಕೊಳ್ಳುವುದರ ಮುಖಾಂತರ ಶ್ರೀಗಳು ವಿದ್ಯಾಕ್ಷೇತ್ರದಲ್ಲಿ ಬಹಳ ಉಪಯುಕ್ತವಾದ ಸೇವೆ ಸಲ್ಲಿಸಿದರು. ಹಲವಾರು ಪ್ರಸಂಗಗಳಲ್ಲಿ ನಾನು ಶ್ರೀಗಳ ದರ್ಶನ ಪಡೆಯುವ ಅವಕಾಶ ದೊರೆಯಿತು. ಆಗ ಅವರಿಗೆ ಆಗಲೇ ಬಹಳ ವಯಸ್ಸಾಗಿತ್ತು ಮೈತುಂಬ ಕ್ಯಾವಿಯ ಬಟ್ಟೆ, ದೊಡ್ಡ ಕೋಲು, ಮೈಮೇಲೆ ದೊಡ್ಡ ದೊಡ್ಡ ರುದ್ರಾಕ್ಷಿಗಳ ದೊಡ್ಡ ಸರ, ವಿಶಾಲವಾದ ಮುಖದ ಹಣೆಯ ತುಂಬ ಢಾಳವಾಗಿ ಧರಿಸಿದ ವಿಭೂತಿ ಇವುಗಳು ಅವರ ದರ್ಶನವನ್ನು ಅವಿಸ್ಮರಣೀಯವಾಗಿ ಮಾಡುತ್ತಿದ್ದವು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ಎಸಗಿದ ಕಾರ್ಯ ಎಷ್ಟು ಮಹತ್ತರವಾಗಿತ್ತೋ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅಷ್ಟೇ ಮಹತ್ವದ್ದಾಗಿತ್ತು ಶಿಕ್ಷಣ ಕ್ಷೇತ್ರದಲ್ಲಿ ಪೂಜ್ಯ ಶ್ರೀಗಳು ಮಾಡಿದ ಪ್ರಮುಖ ಕಾರ್ಯಗಳನ್ನು ಸಂಕ್ಷಿಪ್ತದಲ್ಲಿ ಹೇಳುವುದಾದರೆ, ಅವುಗಳನ್ನು ಹೀಗೆ ವಿಂಗಡಿಸಿ ಎತ್ತಿ ಹೇಳಬಹುದು : ೧)ಹಳ್ಳಿಗಾಡಿನಲ್ಲಿ ಅಲ್ಲಿಯ ಜನತೆಯ ಸಲುವಾಗಿ, ಅದರಲ್ಲಿಯೂ ಬಡವರ ಅನುಕೂಲಕ್ಕಾಗಿ ವಿದ್ಯಾಸಂಸ್ಥೆಗಳನ್ನು ಆರಂಭಿಸಿ ಅವರಲ್ಲಿ ವಿದ್ಯಾಪ್ರಸಾರಕ್ಕೆ ಅನುವು ಮಾಡಿಕೊಟ್ಟಿದ್ದು. ೨) ಹಳ್ಳಿಗಾಡಿನ ಹಾಗೂ ದೀನದಲಿತರ ಮಕ್ಕಳ ವಿದ್ಯಾಭ್ಯಾಸ ಅನುಕೂಲಕ್ಕಾಗಿ ಉಚಿತ ಪ್ರಸಾದ ನಿಲಯ ಆರಂಭಿಸಿ ಅವರಿಗೆ ಬಿಸಿಊಟದ ಅನುಕೂಲತೆಗಳನ್ನು ಒದಗಿಸಿದ್ದು, ೩) ಭಾರತದ ಪ್ರಾಚೀನ ಭಾಷೆಯಾದ ಸಂಸ್ಕೃತ ಅಭ್ಯಾಸದ ಮಹತಿಯನ್ನು ಗುರುತಿಸಿ ಅದರ ಅಗತ್ಯ ಜ್ಞಾನವನ್ನುಪ್ರಸುರಪಡಿಸಿದ್ದು, ೪) ಹೆಣ್ಣು ಮಕ್ಕಳ ಶಿಕ್ಷಣ ಅವಶ್ಯಕತೆಯನ್ನು ಮನಗಂಡು ಅವರಿಗಾಗಿ ವಿದ್ಯಾಸಂಸ್ಥೆ ಆರಂಭಿಸಿದ್ದು, ೫) ಧರ್ಮ ಗ್ರಂಥಗಳ ಪರಿಷ್ಕರಣೆ, ಸಂಶೋಧನೆ ಹಾಗೂ ಅವುಗಳ  ಪ್ರಕಟನೆಗೆ ಅವಕಾಶ ಕಲ್ಪಿಸಿದ್ದು. ೬) ವ್ಯಾಸ ಕ್ರಮದಲ್ಲಿ ಯೋಗ ಶಿಕ್ಷಣದ ಮಹತಿಯನ್ನರಿತು ಅದನ್ನು  ವಿದ್ಯಾಭ್ಯಾಸ ಕ್ರಮದಲ್ಲಿ  ಸೇರಿಸಿ ಅದರ ಅಭ್ಯಾಸದ ಅನುಕೂಲತೆಗಳನ್ನು ಎಡೆಮಾಡಿಕೊಟ್ಟಿದ್ದು. ೬)ಇವೆಲ್ಲಕ್ಕಿಂತ ಹೆಚ್ಚಾಗಿ ಸಮಾಜದ ಉಳಿವಿಗೆ ಅತಿ ಅವಶ್ಯವಾದ ಶಿವಯೋಗ ಮಂದಿರದಂಥ ಉದಾತ್ತ ವಿದ್ಯಾಸಂಸ್ಥೆಗೆ ಅನೇಕ ರೀತಿಯಿಂದ ನೆರವಾದದ್ದು. ಇವೆಲ್ಲವುಗಳನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ ಅನ್ನದಾನ ಸ್ವಾಮಿಗಳು ಶಿಕ್ಷಣ ಕ್ಷೇತ್ರಕ್ಕೆ ಅಮೋಘವಾದ ಸೇವೆ ಸಲ್ಲಿಸಿದರೆಂದು ಹೇಳಿದರೆ ಅದು ಅತಿಶಯೋಕ್ತಿಯಾಗಲಾರದು.

 ಆಧಾರ ಗ್ರಂಥಗಳು : ೧. ‘ಶ್ರೀ ಗುರು ಅನ್ನದಾನೇಶ್ವರ ಚರಿತಾಮೃತ” – ವೇ.ಪಂ.ಜಿ.ಎಂ.ಚಂದ್ರಶೇಖರ

ಶಾಸ್ತ್ರಿಗಳು ಇಜಾರಿ ಲಕಮಾಪುರ (ಹಾವೇರಿ). ೨. “ಹಾಲಕೆರೆಯ ಶ್ರೀ ಅನ್ನದಾನ ಮಹಾಸ್ವಾಮಿದ್ವಯರು ” – ಡಾ. ಬಿ. ವಿ.

ಶಿರೂರ.

ಲೇಖಕರು: ಪ್ರಕಾಶ ಗಿರಿಮಲ್ಲನವರ

 ನಾಗನೂರು ರುದ್ರಾಕ್ಷಿಮಠದ ೭ನೆಯ ಅಧಿಪತಿಗಳಾಗಿ ಬಂದ ಪೂಜ್ಯಶ್ರೀ ಶಿವಬಸವ ಮಹಾಸ್ವಾಮಿಗಳ ಕಾಲ ಸುವರ್ಣಕಾಲವೆಂದೇ ಹೇಳಬೇಕು.  ಗಡಿಭಾಗದಲ್ಲಿ  ಶ್ರೀಗಳು ಮಾಡಿದ ಧಾರ್ಮಿಕ-ಶೈಕ್ಷಣಿಕ ಕ್ರಾಂತಿ ಅಭೂತಪೂರ್ವವಾದುದು. ೧೯೨೨ ರಲ್ಲಿ ಹಾನಗಲ್ಲ ಗುರು ಕುಮಾರ ಶಿವಯೋಗಿಗಳವರ ಆಶೀರ್ವಾದದಿಂದ ಶ್ರೀಮಠದ ಕರ್ಣಧಾರತ್ವವನ್ನು ವಹಿಸಿಕೊಂಡು ಪೂಜ್ಯರು “ಶಿಕ್ಷಣವೇ ಶಕ್ತಿ” ಎಂಬುದನ್ನರಿತು ಶೈಕ್ಷಣಿಕ ಸಂಸ್ಥೆಗಳ ಮೂಲಕ ನಮ್ಮ ನಾಡವರ ಬಡತನ ಹಾಗು ಅಜ್ಞಾನ ನಿವಾರಣೆಗೆ ಹಗಲಿರುಳೂ ಶ್ರಮಿಸಿದವರು ಲಿಂ. ಡಾ|| ಶಿವಬಸವ ಮಹಾಸ್ವಾಮಿಗಳು.

ಪೂಜ್ಯಶ್ರೀ ಶಿವಬಸವ ಸ್ವಾಮಿಗಳವರ ಶೈಕ್ಷಣಿಕ ಕ್ರಾಂತಿ:

  ಕ್ರಿ.ಶ. ೧೯೩೨ರಲ್ಲಿಯೇ ಪ್ರಸಾದ ನಿಲಯ ಸ್ಥಾಪಿಸಿ ಜಾತಿ ಮತ ಪಂಥಗಳ ಭೇದವಿಲ್ಲದೆ ನಾಡ ಬಡಮಕ್ಕಳಿಗೆ ಅನ್ನ-ಆಶ್ರಯಗಳನ್ನಿತ್ತು ಸಲುಹಿದ ಅವರು ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯನ್ನು ಕ್ರಿ.ಶ. ೧೯೭೫ ರಲ್ಲಿ ಸ್ಥಾಪಿಸುವ ಮೂಲಕ ಅನ್ನದಾಸೋಹದ ಜೊತೆಗೆ ಜ್ಞಾನ ದಾಸೋಹದ ಕೈಂಕರ್ಯವನ್ನು ಪ್ರಾರಂಭಿಸಿದರು. ಅವರು ಸ್ಥಾಪಿಸಿದ ಪ್ರಸಾದ ನಿಲಯವು ಸಾರ್ಥಕ ೭೮ ವಸಂತಗಳನ್ನು ಪೂರೈಸಿದೆ. ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯು ಕಳೆದ ಮೂರು ದಶಕಗಳ ಅವಧಿಯಲ್ಲಿ ಹಲವಾರು ಅಂಗಸಂಸ್ಥೆಗಳನ್ನು ಹೊಂದಿ ಹೂವು-ಹಣ್ಣುಗಳಿಂದ ಕೂಡಿದ ಸುಂದರ ವೃಕ್ಷದಂತೆ ಕಂಗೊಳಿಸುತ್ತಿದೆ.

 ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಿತ್ಯ ೫-೬ ಸಾವಿರ ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಉತ್ತರ ಕರ್ನಾಟಕದ ಬೀದರ, ಗುಲಬರ್ಗಾ, ರಾಯಚೂರು, ಬಳ್ಳಾರಿ, ವಿಜಾಪುರ ಮುಂತಾದ ಜಿಲ್ಲೆಗಳ ಗ್ರಾಮಾಂತರ ಪ್ರದೇಶದ ಸಾವಿರಾರು ಬಡಮಕ್ಕಳು ಪ್ರಸಾದದ ಜೊತೆಗೆ ಸಂಸ್ಕಾರಯುಕ್ತ ಶಿಕ್ಷಣವನ್ನು ಪಡೆದು ನಾಡು-ನುಡಿಯ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ನಗರ ಮಧ್ಯದಲ್ಲಿ ೧೬ ಎಕರೆ ವಿಸ್ತಾರದ ಪ್ರಶಾಂತ, ಸುಂದರ ಹಾಗು ಅಧ್ಯಾತ್ಮಿಕ ಪರಿಸರದಲ್ಲಿ ಪ್ರಾಚೀನ ಆದರ್ಶಗಳ ಜೊತೆಗೆ ಆಧುನಿಕ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಶಿಸ್ತು, ಸಹನೆ, ಧೈರ್ಯ, ಸಾಹಸ ಮತ್ತು ಆತ್ಮವಿಶ್ವಾಸಗಳನ್ನು ರೂಢಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತಿದ್ದಾರೆ.

 ಹಲವಾರು ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಮಹಾವಿದ್ಯಾಲಯ, ಡಿ.ಇಡಿ; ಬಿ.ಇಡಿ ಮಹಾವಿದ್ಯಾಲಯ, ತಾಂತ್ರಿಕ ವಿದ್ಯಾಲಯ ಹಾಗು ಕೈಗಾರಿಕಾ ತರಬೇತಿ ಕೇಂದ್ರಗಳನ್ನು ನಡೆಸುತ್ತಿರುವ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯು ವಿಜ್ಞಾನ, ಕಲೆ, ಸಾಹಿತ್ಯಕ್ಕೆ ಸಂಬಂಧಿಸಿದ ವಿಪುಲ ಗ್ರಂಥಗಳು, ವಿಶ್ವಕೋಶಗಳು, ಪತ್ರಿಕೆಗಳಿಂದ ಸಮೃದ್ಧವಾದ ಗ್ರಂಥಾಲಯ, ಸಮರ್ಥ ಹಾಗು ಸಮರ್ಪಿತ ಸಿಬ್ಬಂದಿ, ಸುಸಜ್ಜಿತ ಪ್ರಯೋಗಾಲಯಗಳನ್ನು  ಹೊಂದಿ ಶ್ರೀಸಾಮಾನ್ಯನಿಗೂ ಉನ್ನತ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಆದರ್ಶ ಸಂಸ್ಥೆಯಾಗಿದೆ. ಶಿಕ್ಷಣ ಪ್ರಸಾರದ ಮೂಲಕ ಸಾಮಾಜಿಕ ಪರಿವರ್ತನೆಗೆ ಕಾರಣವಾಗಿರುವ ಈ ಸಂಸ್ಥೆ ಗಡಿಕನ್ನಡಿಗರಿಗೆ ವರದಾನವಾಗಿದೆ.

ಸ್ವಾತಂತ್ರ್ಯ ಚಳುವಳಿ ಮತ್ತು ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಶ್ರೀಗಳ ಪಾತ್ರ:

 ಭಾರತ ಸ್ವಾತಂತ್ರ್ಯ ಸಂಗ್ರಾಮ ಮತ್ತು ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಶಿವಬಸವ ಸ್ವಾಮಿಗಳವರು ನಿರ್ವಹಿಸಿದ ಪಾತ್ರ ಅವಿಸ್ಮರಣೀಯವಾದುದು. ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲ ನಿರಂತರ ಅನ್ನ ಆಶ್ರಯಗಳನ್ನು ಕಲ್ಪಿಸಿದ್ದ ಶ್ರೀಗಳು  ಕೆಲವು ಕಾಲ ಭೂಗತರಾಗುವ ಸಂದರ್ಭವೂ ಉಂಟಾಗಿತ್ತು. ೧೯೩೭ರಲ್ಲಿ ಗಾಂಧೀಜಿ ಬೆಳಗಾವಿ-ಹುದಲಿ ಗ್ರಾಮಗಳಿಗೆ ಬಂದ ಸಂದರ್ಭದಲ್ಲಿ ಶ್ರೀಗಳು ಅವರನ್ನು ಕಂಡು ಮಾತನಾಡಿದರು. ಗಾಂಧೀಜಿಯವರ ಆದರ್ಶ-ಹೋರಾಟದ ಬದುಕು ಶ್ರೀಗಳಿಗೆ ಹಿಡಿಸಿತು. ಗಾಂಧೀಜಿಯವರಿಂದಲೇ ಶ್ರೀಗಳು ಖಾದಿ ದೀಕ್ಷೆ ಪಡೆದರು. ಅಂದಿನಿಂದ ಬದುಕಿನ ಕೊನೆಯುಸಿರುವರೆಗೂ ಖಾದಿಧಾರಿಗಳಾಗಿದ್ದರು. ಬೆಳಗಾವಿ ಗಡಿ ಸಮಸ್ಯೆ ಕುರಿತು ಸಮೀಕ್ಷೆಗಾಗಿ ಬಂದ ಫಜಲಿ ಆಯೋಗ, ಮಹಾಜನ ಆಯೋಗಗಳ ಮುಂದೆ ಶ್ರೀಗಳು ಬೆಳಗಾವಿ ಎಂದೆಂದೂ ಕರ್ನಾಟಕದ್ದು ಎಂದು ಬಲವಾಗಿ ಪ್ರತಿಪಾದಿಸಿದರು. ಅವರ ಅವಿಶ್ರಾಂತ ಹೋರಾಟ ಮತ್ತು ಕನ್ನಡ ಕಟ್ಟುವ ಕಾರ್ಯಗಳಿಂದಾಗಿ ಇಂದು ಬೆಳಗಾವಿ ಕರ್ನಾಟಕದಲ್ಲಿ ಉಳಿದಿದೆ ಎಂದರೆ ಅತಿಶಯೋಕ್ತಿಯಲ್ಲ.

ಗೌರವ ಸಮ್ಮಾನಗಳು :

 ಸುಮಾರು ಏಳು ದಶಕಗಳ ಕಾಲ ಸಮಾಜ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡ ಪೂಜ್ಯ ಶ್ರೀಗಳು ಭಿಕ್ಷೆ ಬೇಡಿ, ನಾಡಿನ ಅಸಂಖ್ಯಾತ ಬಡಮಕ್ಕಳಿಗೆ ಅನ್ನ-ಆಶ್ರಯ ನೀಡಿ ಅವರ ಬಾಳಿಗೆ ಬೆಳಕು ನೀಡಿದ್ದು ಯಾವ ಸ್ವಾರ್ಥಕ್ಕಾಗಿ. ಅವರೆಂದೂ ಪದವಿ-ಪ್ರಶಸ್ತಿಗಳು ದೊರೆಯುತ್ತವೆ ಎಂದು ಆಶೆಗಾಗಿ ಯಾವ ಕಾರ್ಯವನ್ನೂ ಮಾಡಿದವರಲ್ಲ. ಪೂಜ್ಯಶ್ರೀಗಳ ಈ ಬಹುಮುಖ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯನ್ನು ಗಮನಿಸಿದ ಕರ್ನಾಟಕ ವಿಶ್ವವಿದ್ಯಾಲಯ ೧೯೮೯ರಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.  ಆದರೆ ಗೌರವ ಡಾಕ್ಟರೇಟ ಎಂಬ ಪದವಿ ಎಂದರೇನು ಎಂಬುದೇ ಶ್ರೀಗಳಿಗೆ ಗೊತ್ತಿರಲಿಲ್ಲ. ವೇದಿಕೆ ಮೇಲೆ ರಾಜ್ಯಪಾಲರು ಕೊಡಮಾಡುವ ಪ್ರಶಸ್ತಿಯನ್ನು ಕರಿಕೋಟು ಹಾಕಿಕೊಂಡು ಸ್ವೀಕರಿಸುವುದು ಅವರಿಗೆ ಬೇಡವಾಗಿತ್ತು. ನೂರು ವರ್ಷದ ಸಂಭ್ರಮದಲ್ಲಿದಾಗ ಈ ಗೌರವ ಡಾಕ್ಟರೇಟ ಪೂಜ್ಯರಿಗೆ ಬಂದಿತ್ತು. ಆ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಪ್ರತಿಷ್ಠಿತ ಮಠಾಧೀಶರೊಬ್ಬರು ಈ ಪದವಿಗಾಗಿ ವಿಪರೀತ ಲಾಭಿ ನಡೆಸಿದ್ದರು. ಅವರಿಗೆ ದೊರೆಯದ ಪ್ರಶಸ್ತಿ ಯಾವುದಕ್ಕೂ ಆಸೆಪಡದ ಶಿವಬಸವ ಸ್ವಾಮಿಗಳ ಪದತಲಕ್ಕೆ ಬಂದಿತ್ತು. ಆಗ ಶಿವಬಸವ ಸ್ವಾಮಿಗಳು ಸಹಜವಾಗಿಯೇ ಬಂದ ಭಕ್ತರೆದುರು ‘ನಮಗೇಕೆ ಈ ಪ್ರಶಸ್ತಿ ಕೊಡುತ್ತಾರೋ, ತಿಳಿಯದು, ಬೇಡುವವರಿಗೆ ಈ ಪ್ರಶಸ್ತಿ ಕೊಡಬೇಕಾಗಿತ್ತು’ ಎಂದು ಹೇಳಿದ್ದರು.

 ೧೯೯೨ರಲ್ಲಿ ಕರ್ನಾಟಕ ಘನ ಸರಕಾರದ ‘ರಾಜ್ಯೋತ್ಸವ ಪ್ರಶಸ್ತಿ’ ಪೂಜ್ಯರ ಮಡಿಲಿಗೆ ಬಂದಿತು. ಆದರೆ ಸ್ವೀಕರಿಸಲು ಅವರು ಬೆಂಗಳೂರಿಗೆ ಹೋಗಲಿಲ್ಲ. ಕೊನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಬೆಳಗಾವಿಯಲ್ಲಿ ಒಂದು ಅದ್ದೂರಿ ಸಮಾರಂಭ ನೆರವೇರಿಸಿ, ಪ್ರಶಸ್ತಿ ಕೊಡಮಾಡಿದರು. ಪ್ರಶಸ್ತಿಯನ್ನು ಸ್ವೀಕರಿಸುವಾಗ ಶ್ರೀಗಳ ಮುಖದಲ್ಲಿ ಯಾವ ಬದಲಾವಣೆಗಳು ಆಗಿರಲಿಲ್ಲ. ಪ್ರಶಸ್ತಿ ಬಂದಿತ್ತೆಂಬ ಮಮಕಾರ ಅವರಲ್ಲಿರಲಿಲ್ಲ, ಅಷ್ಟು ನಿರ್ಲಿಪ್ತರಾಗಿ ಪ್ರಶಸ್ತಿಯನ್ನು ತಗೆದುಕೊಂಡರು.

ಜನ್ಮ ಶತಮಾನೋತ್ಸವ

 ಪೂಜ್ಯಶ್ರೀ ಶಿವಬಸವ ಸ್ವಾಮಿಗಳವರಿಗೆ ೧೯೮೯ರಲ್ಲಿ  ನೂರು ವರ್ಷಗಳು ತುಂಬಿದವು. ಅವರ ಅಸಂಖ್ಯಾತ ಭಕ್ತಸಮೂಹ ಜನ್ಮಶತಮಾನೋತ್ಸವವನ್ನು ಅದ್ದೂರಿಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದರು.

 ಹೊಸಪೇಟೆ ಕೊಟ್ಟೂರುಸ್ವಾಮಿಮಠದ ಪೂಜ್ಯ ಜಗದ್ಗುರು ಸಂಗನಬಸವ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚನೆಯಾಯಿತು. ಅನೇಕ ಸಮಿತಿ-ಉಪಸಮಿತಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಂಡವು. ನಾಗನೂರಿನಲ್ಲಿ ಮೂರುದಿನಗಳ ಕಾಲ ಶತಮಾನೋತ್ಸವ ಸಮಾರಂಭ ನಾಡಿನ ಅನೇಕ ಗಣ್ಯರ-ಮಠಾಧಿಪತಿಗಳ ಸಮ್ಮುಖದಲ್ಲಿ ಸಾಂಗವಾಗಿ ಜರುಗಿತು. ಈ ಸಂದರ್ಭದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂಥ ಗ್ರಂಥಗಳ ಲೋಕಾರ್ಪಣೆಗೊಂಡುದು ವಿಶೇಷವೆನಿಸಿತು. ಗುಬ್ಬಿಯ ಮಲ್ಲಾಣಾರ್ಯ ರಚಿತ ವೀರಶೈವಾಮೃತ ಮಹಾಪುರಾಣ,   ಬಸವಣ್ಣನವರ  ವಚನಗಳ ಮರಾಠಿ ಅನುವಾದ, ಮತ್ತು ‘ಶಿವದೀಪ್ತಿ’ ಶಿವಬಸವ ಸ್ವಾಮಿಗಳ ಶತಮಾನೋತ್ಸವ ಅಭಿನಂದನ ಗ್ರಂಥಗಳು ಬಿಡಗಡೆಯಾದವು.  ಬೆಳಗಾವಿ ಭಕ್ತರಿಗೆ ಪ್ರತ್ಯೇಕ ಶತಮಾನೋತ್ಸವ ಕಾರ್ಯಕ್ರಮ ಆಚರಿಸಬೇಕೆಂದು ನಿರ್ಧರಿಸಿ, ಬೆಳಗಾವಿಯಲ್ಲಿಯೂ ಫೆಬ್ರವರಿ ೧೯೯೦ ರಲ್ಲಿ ಅದ್ದೂರಿಯಿಂದ ಶತಮಾನೋತ್ಸವ ಸಮಾರಂಭ ಆಚರಿಸಿದರು.

ಕನ್ನಡದ ಶಕ್ತಿಕೇಂದ್ರ

ಅಖಿಲ ಭಾರತ ಶಿವಾನುಭವ ಸಮ್ಮೇಳನದ ೧೭ನೇ ಅಧಿವೇಶನವನ್ನು  ದಿನಾಂಕ ೬,೭ ನವೆಂಬರ್ ೬೩ ರಂದು  ಬೆಳಗಾವಿ ಶಹಪೂರ ಭಕ್ತ ಜನರು ಶ್ರೀ ಮಹಾಸ್ವಾಮಿಗಳನ್ನು ಮುಂದೆ ಮಾಡಿಕೊಂಡು ಬೆಳಗಾವಿ ಲಿಂಗರಾಜ ಕಾಲೇಜಿನ ಭವ್ಯ ಮಂಟಪದಲ್ಲಿ ಶ್ರೀ ಸಿದ್ಧಗಂಗಾಮಠಾಧ್ಯಕ್ಷರಾದ ಶ್ರೀ ಶಿವಕುಮಾರ ಸ್ವಾಮಿಗಳವರ ಘನ ಅಧ್ಯಕ್ಷತೆಯಲ್ಲಿ ಧಾರವಾಡದ ಮುರುಘಾಮಠದ ತ್ರಿವಿಧ ದಾಸೋಹ  ಮೂರ್ತಿಗಳಾದ ಲಿಂಗೈಕ್ಯ ಮೃತ್ಯುಂಜಯ ಸ್ವಾಮಿಗಳ ಸಮರ್ಥ ನೇತೃತ್ವದಲ್ಲಿ ಏರ್ಪಡಿಸಿದರು. ಬೆಳಗಾವಿಯ ಸಾಮಾಜಿಕ ಇತಿಹಾಸದಲ್ಲಿ ಈ ಸಮಾರಂಭವು ಒಂದು ಸ್ಮರಣಾರ್ಹವಾದ  ಘಟನೆಯಾಗಿದೆ. ಇದರಿಂದ ಬೆಳಗಾವಿಯಲ್ಲಿ ನಮ್ಮ ಸಮಾಜದ ಸಂಘಟನೆ ಹಾಗು ಸ್ಥಾನಮಾನಗಳ ಅರಿವು ಸಾರ್ವಜನಿಕರಿಗಾಯಿತು.

ಪ್ರತಿವರ್ಷವೂ ಗಣೇಶಚವತಿ, (ಗಣೇಶ ಚವತಿ ಎಂದೇ ನಾಗನೂರು ರುದ್ರಾಕ್ಷಿಮಠದಲ್ಲಿ ಸಿದ್ಧರಾಮೇಶ್ವರ ರಥೋತ್ಸವ ಜರುಗುವುದು. ಅಂದೇ ಪೂಜ್ಯಶ್ರೀ ಶಿವಬಸವ ಸ್ವಾಮಿಗಳವರು ಅಂದೇ ಲಿಂಗೈಕ್ಯರಾದುದರಿಂದ ಅವರ ಪುಣ್ಯಸ್ಮರಣೆಯು ಜರುಗುವುದು ಒಂದು ಯೋಗಾಯೋಗ) ನಾಡಹಬ್ಬ ಈ ಮೊದಲಾದ ಉತ್ಸವಗಳನ್ನು ಏರ್ಪಡಿಸಿ, ಸಾಹಿತ್ಯ ಸಾಂಸ್ಕೃತಿಕ ಮನೋರಂಜಕ ಕಾರ್ಯಕ್ರಮಗಳನ್ನು ಹಮ್ಮಿ ಆಯಾ ವಿಷಯತಜ್ಞರ ವ್ಯಾಖ್ಯಾನಗಳ ಮೂಲಕ ವಿದ್ಯಾರ್ಥಿಗಳಲ್ಲಿ ಒಂದು ಬಗೆಯ ಜಾಗೃತಿಯನ್ನೂ ನವಚೈತನ್ಯವನ್ನೂ ಹುಟ್ಟಿಸಿ ಅವರಿಗೆಲ್ಲ ಈ ಉತ್ಸವಗಳ ಮೂಲಕ ಜ್ಞಾನ ಪ್ರಸಾದವನ್ನು ಹಂಚುತ್ತ ಕನ್ನಡ ನಾಡನುಡಿಗಳ ಸೇವೆಗೆ ಶ್ರೀಮಠ ಕೇಂದ್ರಶಕ್ತಿಯಾಗಿದೆ.